Home / ಕವನ / ಕವಿತೆ / ಯುದ್ಧಕ್ಕೆ ಹೋದ ಮಗನನ್ನು ಕುರಿತು

ಯುದ್ಧಕ್ಕೆ ಹೋದ ಮಗನನ್ನು ಕುರಿತು

ನಟ್ಟಿರುಳು ಚಳಿ ಮೌನ, ಸಣ್ಣಗೆ ಅಳುವ ದೀಪ
ಕೋಣೆ ಮೂಲೆಯ ಕಡ್ಡಿಚಾಪೆ ಮೇಲೆ
ನಿದ್ದೆಯಿಲ್ಲದೆ ಹಸಿದ ಹೊಟ್ಟೆಯಲ್ಲಿ ಹೊರಳುವ ತಾಯಿ
ಕಪ್ಪಿಟ್ಟ ಮುಖ, ಸುಕ್ಕುಕೆನ್ನೆ, ನಿಟ್ಟುಸಿರು
ಚಿಂತೆ ಮಡುನಿಂತಂತೆ ಕಣ್ಣು
ಯೋಚಿಸುತ್ತಾಳೆ ತಾಯಿ ಯುದ್ಧಕ್ಕೆ ನಡೆದ
ಮಗನನ್ನು ಕುರಿತು
ಯೋಚಿಸುತ್ತಾಳೆ ಇರುಳ ಕಂದರಕ್ಕೇ ಜಿಗಿದ
ಉರಿವ ಧಗಧಗ ಪಂಜು ಕುರಿತು.

“ಚಿಕ್ಕಂದಿನಿಂದಲೂ ಅವನ ರೀತಿಯೆ ಹಾಗೆ
ಮಗುವಾಗಿದ್ದಾಗ ಮರಿ ಹುಲಿಯೇ!
ಕವುಚಿ ತೆವಳುತ್ತ ಹೂಂಕರಿಸುತ್ತ ತಲೆಯೆತ್ತಿ
ಹೆಡೆ ತೂಗುತ್ತಿದ್ದದೋ
ಬಾಚಿ ಹಿಡಿದರೆ ಹೊರಳಿ ಜಿಗಿಯುತ್ತಿದ್ದದ್ದೋ
ಛೀ ಪುಂಡ ಎಂದು ಸೆಳೆದಪ್ಪಿದರೆ ಮುಖವನ್ನೆ
ಕಚ್ಚುತ್ತಿದ್ದದ್ದೋ –
ಹೊಟ್ಟೆಯುರಿಸುವ ನೆನಪು ಉಕ್ಕಿ ಕಾಡುತ್ತದೆ
ತೊಡೆ ಮೇಲೆ ಹಾಗೆ ಥಕ ಥೈ ಕುಣಿವ ಮುದ್ದುಮಗು
ಈಗ ಎಲ್ಲಿ?
ಸಾವಿನ ಕರಾಳಬಾಯಿ ಜೀವ ಮೇಯುವ
ಯಾವ ಜಾಗದಲ್ಲಿ ?

“ಹೇಗೆ ಬೆಳೆದ ಹುಡುಗ ಕೆಚ್ಚು ಬೆಳೆದಂತೆ!
ಕಟ್ಟಿಗೆಯಲ್ಲಡಗಿದ್ದ ಕಿಚ್ಚು ಎದ್ದಂತೆ.
ಕ್ರಿಕೆಟ್ ಕೊಕ್ಕೋ ಅಂತ ಊರು ತಿರುಗಿದ್ದೇನು
ಹೋದಲ್ಲೆಲ್ಲ ಕಪ್ಪು ಷೀಲ್ಡು ಬಾಚಿದ್ದೇನು
ಚೆಂಡು ತೂರುವ ಕಪಿಲ್, ಬ್ಯಾಟು ಬೀಸುವ ಸುನೀಲ್
ಮನೆಗೋಡೆ ಮೇಲೆಲ್ಲ ‌ಚಿತ್ರ ತೂಗಿದ್ದೇನು

ಶಕ್ತಿಯ ಆರಾಧನೆಯೆ ಕೌಮಾರ್‍ಯವಲ್ಲ!
ಯುದ್ಧಕ್ಕಾಗೇ ನಡೆದ ಪೂರ್ವ ಸಿದ್ಧತೆ, ಆಗ ತಿಳಿಯಲೇ ಇಲ್ಲ.
ಆಡಿ ಹಸಿದು ಬಂದು
ಅಮ್ಮಾ ಕೈ ತುತ್ತು ಎಂದು
ಇನ್ನೂ ಬೇಕೆಂದು ಮುಕ್ಕಿ ಉಣ್ಣುತ್ತಿದ್ದ ಹುಡುಗ
ಈಗ ಎಲ್ಲಿ?
ಸಾವಿನ ಕರಾಳಬಾಯಿ ಜೀವ ಮೇಯುವ
ಯಾವ ಜಾಗದಲ್ಲಿ?

“ಬೆಚ್ಚನೆಯ ಮನೆರಕ್ಷೆ ಇತ್ತು ಆಗ
ಹೇಗಿರಬಹುದು ಈಗ ಇರುವ ಜಾಗ ?
ಕತ್ತಲ ಹೊಟ್ಟೆ ತಿವಿವ ಹಿಮದ ದಿಬ್ಬಗಳು
ಹೆಪ್ಪುಗಟ್ಟಿದ ಥಂಡಿ ಸುತ್ತಮುತ್ತ,
ಸಿಳ್ಳು ಹಾಕುತ್ತ ಮೈಯ ಒತ್ತಿ ತಳ್ಳುವ ಗಾಳಿ,
ಮೈಗೆ ಫಟ್ಟೆಂದು ಬಡಿದು ಬೊಬ್ಬೆ ಹೊಡೆಸುವ ಬಂಡೆ
ಉಂಡದ್ದು ನಿನ್ನೆ ಮಧ್ಯಾಹ್ನ, ಹಿಡಿಯಷ್ಟು
ಆದರೂ ……… ಆದರೂ
ಹತ್ತಲೇಬೇಕು ಕತ್ತಲಲ್ಲೂ ಕೂಡ
ಶಸ್ತ್ರಾಸ್ತ್ರ ಹೊತ್ತು ತಡಕುತ್ತ ತೆವಳುತ್ತ;
ಏರಬೇಕು, ಏರಿ ಹೋಗಬೇಕು
ದಿಟ್ಟ ಪತಾಕೆಯಂತೆ ಸೆಟೆದು ತಲೆಯೆತ್ತಿ
ಸಿಡಿಸಬೇಕು ತುಪಾಕಿ,
ಉರಿವ ಶೆಲ್ಲುಗಳನ್ನು ವೈರಿ ಠಾಣೆಯ ಮೇಲೆ
ಸುರಿಸಬೇಕು,
ಸಾಯಲೂ ನೋಯಲೂ ವೈರಿ ಕೈಸೇರಲೂ
ಊನಾಗಿ ಬಾಳಲೂ ಸಿದ್ಧನಿರಬೇಕು.

“ಯುದ್ಧವಂತೆ ಯುದ್ಧ !
ಯಾಕಾಗಿ ಈ ಯುದ್ಧ?
ಮನುಷ್ಯ ಮುಖ ಹೊತ್ತ ಯಾವ ದೆವ್ವಗಳನ್ನು ತಣಿಸಲಿಕ್ಕೆ,
ಯಾವ ಅವಿವೇಕಿ ಮುಟ್ಠಾಳ ಕೊಳಕರ ರಾಜಕಾರಣ ಕುತಂತ್ರಕ್ಕೆ?
ಎಂದೂ ಕಾಣದ ಯಾವನನ್ನೊ ದ್ವೇಷವೆ ಇರದೆ
ಇರಿದು ಕೊಲ್ಲುವುದು.
ಗೊತ್ತೇ ಇರದ ಯಾವ ಮಗನನ್ನೊ ಪತಿಯನ್ನೊ
ತುಪಾಕಿಗುಣಿಸಿ
ನಗುತ್ತಿದ್ದ ಮನೆಯ ಸುಡುಗಾಡು ಮಾಡುವುದು.
ಸಾಕು ದೇವರೆ ಹೀಗೆ
ಬೆಳೆದ ಹುಡುಗರ ಮೈಗೆ ಉರಿ ಹಚ್ಚಿ ಸುಡುವ ರೋಗ
ಯುದ್ಧಕ್ಕೆ ಮೂಲ ಕಾರಣ ಯಾರೊ ಅವನ ಮನೆ
ಹಾಳಾಗಿ ಹೋಗ!

ಲೋಕಕ್ಕೆಲ್ಲ ಬೆಳಕ ಕರುಣಿಸುವ ದೇವರೇ
ಹಚ್ಚಿಡುವೆ ನಿನಗೆ ಕಂಪಿಡುವ ಧೂಪ,
ಬೆಳಗುತ್ತಲೇ ಇರಲಿ ಎಲ್ಲೆ ಇದ್ದರು ಸದಾ
ನನ್ನ ಹುಡುಗನ ಕಣ್ಣ ದೀಪ,
ಮುಕ್ಕಾಗದಿರಲಿ ಎಂದೂ ಅವನ ಮೈಮಾಟ.
ನಾಡ ಕೇಡನ್ನು ಅವನು ಮೆಟ್ಟಿ ಬರಲಿ
ಕಿರುಬಗಳ ಗಡಿಯಾಚೆ ಅಟ್ಟಿ ಬರಲಿ
ಮ್ಯತ್ಯುವಿನ ಕಣದಲ್ಲೆ ಕಾದಿ ಗೆದ್ದು
ಮತ್ತೆ ನಚಿಕೇತ ಮನೆಗೆ ಬರಲಿ”.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...