Home / ಕವನ / ಕವಿತೆ / ಸೀನಿಯರ್ ಕ್ರಿಕೆಟಿಗನ ಸಂಜೆ

ಸೀನಿಯರ್ ಕ್ರಿಕೆಟಿಗನ ಸಂಜೆ

ಕಿವಿ ಬಿರಿವ ಬೊಬ್ಬೆ, ಭೋರಿಡುವ ಜನಸಾಗರ.
ಓವರಿಗೆ ಎರಡೆರಡು ಫೋರುಗಳ ಗುಡುಗು
ನಡುವೆ ಸಿಕ್ಸರ್ ಸಿಡಿಲು,
ಸೃಷ್ಟಿಯಾಗುತ್ತಿದೆ ಮಿಂಚಿನೋಟದ ಕವಿತೆ
ಮೈದಾನದಲ್ಲೆ ಕಣ್ಣಿದಿರು!
ಕಣ್ಣು ಹರಿದಲ್ಲೆಲ್ಲ ಬಾವುಟದ ಆವುಟ
ಕುಣಿದು ಧೀಂಕಿಡುವ ಸಹಸ್ರಾರು ಭಕ್ತರ
ಆನಂದ ನೃತ್ಯ!
ಚಿತ್ರ ಕ್ಲಿಕ್ಕಿಸುತ್ತಿರುವ ಥರಾವರಿ ಕ್ಯಾಮೆರಾ,
ಲಾಠಿ ಬೀಸುವ ಖಾಕಿ ಟೊಣಪರನ್ನೂ ತಳ್ಳಿ
ಫೀಲ್ಡಿನೊಳಕ್ಕೆ ನುಗ್ಗಿ ಮುಟ್ಟಿ ಓಡುವ ಪಡ್ಡೆ ಹುಡುಗು ಹೋರಿಗಳು,
ಮೆಚ್ಚಿ ಮನಸ್ಸಿನಲ್ಲೆ ಬಾಚಿ ಮುತ್ತಿಡುವ
ಕಾಲೇಜು ಬೆಡಗಿಯರು;
ಟಿ.ವಿ.ಗೆ ಅಂಟಿಕೂತ ಲಕ್ಷಲಕ್ಷಜನಕ್ಕೆ
ಆನಂದೊದ್ರೇಕ;
ಕಣ್ಣಂಚಿನಲ್ಲಿ ಕೊಂಚ ತುಳುಕು, ಗದ್ಗದ ಕಂಠ.
ಮಾರನೆ ಬೆಳಿಗ್ಗೆ
ವೃತ್ತಪತ್ರಿಕೆಗೆ ಪರದಾಟ, ಸುದ್ದಿಗೆ ಸುಗ್ಗಿ
ಬ್ಯಾಟು ಬೀಸುತ್ತಿರುವ ಅರ್ಜುನ ಪರಾಕ್ರಮದ
ದಿಟ್ಟ ಭಂಗಿಯ ಚೀರುಚಿತ್ರ,
ಆಳುವ ಪ್ರಧಾನಿಗೇ ಅಬ್ಬ ಎನ್ನಿಸುವ ಜಯಕಾರ ಸತ್ಕಾರ;
ರಾಜಕಾರಣಿಗೆ ಸಲ್ಲುವ ನಕಲಿ ಮಾಲಲ್ಲ,
ನೂರಕ್ಕೆ ನೂರು ಎಲ್ಲ ಹೃತ್ಪುರ್ವಕ
ತಟ್ಟತಳ ತನಕ.

ಆ ಎಲ್ಲ ವೈಭವ ಕಳೆದ ಕಾರ್ತಿಕದಲ್ಲಿ.
ಹಿಂದಿದ್ದ ಹದ್ದುಗಣ್ಣಿನ ಹರಿತ ಈಗೆಲ್ಲಿ ?
ಸಿಡಿಗುಂಡಿನಂತೆ ಭರ್ರೆಂದು ನುಗ್ಗುವ ಚೆಂಡು
ಬಳಿ ಬರುವ ತನಕ ಸುಳಿವೇ ಸಿಗುವುದಿಲ್ಲ;
ಬ್ಯಾಟಿನಂಚಿಗೆ ಬಡಿದು ಸ್ಲಿಪ್ಪಲ್ಲೆ ಕ್ಯಾಚು,
ಮುನ್ನುಗ್ಗಿ ಬೀಸಿದರೆ ಕಣ್ಣು ತಪ್ಪಿಸಿ ಚೆಂಡು ಬೆನ್ನಲ್ಲೆ ಸ್ಟಂಪು,
ಕೆಲವೇ ನಿಮಿಷ, ಮತ್ತೆ ಪೆವಿಲಿಯನ್ ಕಡೆ ಪಯಣ!
ತಗ್ಗಿಸಿದ ತಲೆ, ನೀರು ತುಂಬುತ್ತಿರುವ ಕಣ್ಣು,
ಕೆನ್ನೆಗೆ ಛಟೀರೆಂದು ಬಾರಿಸಿದಳೆಂಬಂತೆ
ಇರಿದು ನೋಡುವ ಹೆಣ್ಣು,
ಸುತ್ತ ಗ್ಯಾಲರಿಯಿಂದ ಅಟ್ಟಿ ಹೀಯಾಳಿಸುವ
ಗೇಲಿ, ವ್ಯಂಗ್ಯದ ಕೂಗು,
ಮೂದಲಿಕೆ ಚೂರಿನುಡಿ, ಎಲ್ಲವೂ ಕೇಳಿಸುವಂತೆ,
“ದಿಟ್ಟ ಹೋರಾಟಗಳ ಸಾರಿ ಸಾವಿರ ಬಾರಿ
ಗೆದ್ದು, ಯಾವಾಗಲೋ ಒಮ್ಮೆ ಬಿದ್ದರೆ ಮಲ್ಲ
ಗೌರವದ ಶಿಖರದಿಂದುರುಳಿ ಗೋರಿಗೆ ದಾರಿ
ಹೊಳೆಯಲ್ಲಿ ಹುಣಿಸೆ ತೊಳೆದಂತೆ ಹಿಂದಿನದೆಲ್ಲ”

ಆದರೆ ಇದಂತು ನಿಜ
ಹಿಂದೆ ಕೈ ಹಿಡಿದಿದ್ದ ಮ್ಯಾಜಿಕ್ ಕೈಕೊಟ್ಟಿದೆ
ಕಿತ್ತುಹಾಕುವ ಮೊದಲು ಭರತವಾಕ್ಯದ ಮಾತು
ಆಡಿ ಬಿಡು ನೀನೇ;
ಕ್ಯೂನಲ್ಲಿ ನಿಂತು ನಿನ್ನನ್ನೇ ನೋಡುತ್ತ
ಕಾಯುತ್ತಿರುವ ಹುಡುಗ
ಬರಲಿ ಟೀಮಿನ ಒಳಗೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...