Home / ಕವನ / ಕವಿತೆ / ಕೃಷ್ಣಭಕ್ತರ ಕುಣಿತ

ಕೃಷ್ಣಭಕ್ತರ ಕುಣಿತ

ಯಾವ ಘೋಷ ಇದು ಇದಕ್ಕಿದ್ದಂತೆ ಈ ಕನಕಾಂಬರಿ ಸಂಜೆಯಲಿ ?
ತೇಲಿ ಹಾಯುತಿದೆ ಪರಿಮಳದಂತೆ ತುಂಬಿ ಹರಿವ ಈ ಗಾಳಿಯಲಿ
ತಾಳಮೃದಂಗದ ಬಡಿತ ಹಬ್ಬುತಿದೆ ಹೃದಯಕೆ ಲಗ್ಗೆಯ ಹೂಡುತಿದೆ
ಮೋಹಕ ಗಾನದ ಕಂಠದೇರಿಳಿತ ಜೀವಕೆ ಮರುಳನು ಕವಿಸುತಿದೆ
ಯಾವ ಅಲೌಕಿಕ ಶ್ರುತಿಯಿದು, ಇದಕ್ಕೆ ಲೋಕವ ಹೂಡಿದರೇತಕ್ಕೆ?
ಆರಿಹೋಗುತಿದೆ ಎಲ್ಲ ಧಗೆ ಈ ಪ್ರಾಣವೀಣೆಯ ನುಡಿತಕ್ಕೆ-
“ರಾಮಹರೇ ರಾಮಹರೇ, ರಾಮ ರಾಮ ಜಯರಾಮ ಹರೇ
ಕೃಷ್ಣ ಹರೇ ಕೃಷ್ಣ ಹರೇ, ಕೃಷ್ಣ ಕೃಷ್ಣ ಜಯ ಕೃಷ್ಣ ಹರೇ”

ಕುಣಿಯುತ ಬಂದರು ಕೈಗಳನೆತ್ತಿ ಕೃಷ್ಣ ಭಕ್ತರು ಬೀದಿಯಲಿ
ಆನಂದದ ಉದ್ರೇಕಕೆ ತುಳುಕಿದೆ ಕಂಬನಿಧಾರೆ ಕೆನ್ನೆಯಲಿ
ಹೊಳೆಯುವ ನುಣ್ಣನೆ ತಲೆ, ಹಿಂಬದಿಯಲಿ ಚಲಿಸುತ್ತಿದೆ ಶಿಖೆ ಅತ್ತಿತ್ತ
ಸರಿದವು ವಾಹನ ದಾರಿಯ ಬಿಟ್ಟು, ಒಳಗಿನ ಜನ ಕೈಮುಗಿಯುತ್ತ
ಕುಣಿದರು ಭಕ್ತರು ಲಜ್ಜೆಯ ತೊರೆದು ಹಾಡಹಗಲು ನಡುಬೀದಿಯಲಿ
ಹಿಂದೆ ಕುಣಿದಂತೆ ಪ್ರಭು ಚೈತನ್ಯರು ದನಿಯನೆತ್ತಿ ಆಕಾಶದಲಿ-
“ರಾಮ ಹರೇ ರಾಮ ಹರೇ, ರಾಮ ರಾಮ ಜಯರಾಮ ಹರೇ
ಕೃಷ್ಣ ಹರೇ ಕೃಷ್ಣ ಹರೇ, ಕೃಷ್ಣ ಕೃಷ್ಣ ಜಯ ಕೃಷ್ಣ ಹರೇ”

ಮಿರುಗುವ ಗೋಪೀಚಂದನ ಹಣೆಯಲಿ, ಕೊರಳಲಿ ತುಳಸೀಮಣಿಮಾಲೆ
ಎದೆಯಲಿ ತೂಗುವ ಸಣ್ಣ ಚೀಲದಲಿ ಶ್ರೀಹರಿ ಸ್ಮರಣೆಗೆ ಜಪಮಾಲೆ
ಭೋಗಕೆ ಬಾಗದ ಬತ್ತಿದ ದೇಹ, ಕಣ್ಣೋ ಹಚ್ಚಿದ ಹಣತೆಗಳು
ದಿನವಿಡಿ ಕೃಷ್ಣನ ನೋಡಿ ನೋಡಿ ಕಪ್ಪೇರಿದ ನೇರಿಳೆ ಹಣ್ಣುಗಳು
ಯಾವ ಕಾಲದಿಂದೆದ್ದು ಬಂದಿತೋ ಭಕ್ತಿರಸದ ಈ ಸುಖಚಿತ್ರ?
ನಿಂತ ನೆಲವ ಬೃಂದಾವನವಾಯಿತು ಕುಣಿಯಲು ಭಕ್ತರು ಹಾಡುತ್ತ-
“”ರಾಮ ಹರೇ ರಾಮ ಹರೇ, ರಾಮ ರಾಮ ಜಯರಾಮ ಹರೇ
ಕೃಷ್ಣ ಹರೇ ಕೃಷ್ಣ ಹರೇ, ಕೃಷ್ಣ ಕೃಷ್ಣ ಜಯ ಕೃಷ್ಣ ಹರೇ”

ತೋಳ ಚಿರತೆಗಳು ಗದ್ದುಗೆ ಹಿಡಿದ ಗೊಂದಲಾಸುರನ ರಾಜ್ಯದಲಿ
ಉರಿವ ಬಾಣಲಿಗೆ ಬಿದ್ದಿದೆ ಬದುಕು ನರಳಿದೆ ನಾಸ್ತಿಕ ವ್ಯಾಜದಲಿ
ಹೇಗೆ ಹುಟ್ಟಿತೀ ಹೊಸ ಹೂವಿನಗಿಡ ಬತ್ತಿ ಹೋದ ಒಣಪಾತಿಯಲಿ?
ಮತ್ತೆ ಬಂದರೋ ಕನಕಪುರಂದರ ಶರೀಫರೆನ್ನುವ ರೀತಿಯಲಿ
ಕುಣಿದರು ಭಕ್ತರು ಅಂತರಂಗವನೆ ಮೃದಂಗಮಾಡಿ ಬಡಿಯುತ್ತ
ನೋಡಿದ ಜನ ರೋಮಾಂಚಿತರಾದರು ತಾವೂ ಕುಣಿದರು ಹಾಡುತ್ತ-
“ರಾಮಹರೇ ರಾಮಹರೇ, ರಾಮ ರಾಮ ಜಯರಾಮ ಹರೇ
ಕೃಷ್ಣ ಹರೇ ಕೃಷ್ಣ ಹರೇ, ಕೃಷ್ಣ ಕೃಷ್ಣ ಜಯ ಕೃಷ್ಣ ಹರೇ”

ದೇಶ ಜಾತಿ ಮತ ಭೇದವಿಲ್ಲದ ಸಕಲೋದ್ಯಾನದ ಪುಷ್ಟಗಳು
ಕಪ್ಪು ಬಿಳುಪುಗಳ ಭೇದವನಳಿಸಿ ಗಂಗೆಯಮುನೆ ಥರ ನೆರೆದವರು
ಇಂದ್ರಿಯದುರಿಗಳ ಹೃಷಿಕೇಶಪದ ಗಂಗೆಯಲ್ಲಿ ಮುಳುಗಿಸಿದವರು
ಕೃಷ್ಣನಾಮ ಸಂಕೀರ್ತನ ಯಜ್ಞಕೆ ಮೈಯೇ ವೇದಿಕೆಯಾದವರು.
ಹಾಡುತ ಕುಣಿಯುತ ನಡೆದರು ಭಕ್ತರು ಸಾಗುವಂತೆ ಶ್ರೀಹರಿಯತ್ತ
ಸುತ್ತ ನಿಂತ ಜನ ಹಾಡಿದರೊಟ್ಟಿಗೆ ನದಿಗಳು ಕಡಲಿಗೆ ಕೂಡುತ್ತ-
“ರಾಮಹರೇ ರಾಮಹರೇ, ರಾಮ ರಾಮ ಜಯರಾಮ ಹರೇ
ಕೃಷ್ಣ ಹರೇ ಕೃಷ್ಣ ಹರೇ, ಕೃಷ್ಣ ಕೃಷ್ಣ ಜಯ ಕೃಷ್ಣ ಹರೇ”

ಕೃಷ್ಣನೆ ಸ್ವಾಮಿ ಕೃಷ್ಣನಮಾಮಿ ಈ ವಿಶ್ವದ ಪ್ರಭು ನೀನೆಂದು
ಕೃಷ್ಣನೆ ಸ್ವಾಮಿ ಕೃಷ್ಣನಮಾಮಿ ನಿನ್ನ ಸೇವಕರು ನಾವೆಂದು
ಭಕ್ತಿಸೇವೆಯಲಿ ಮೈಮರೆಯುವುದೆ ಮುಕ್ತಿಗು ಮೀರಿದ ಗುರಿಯೆಂದು
ಭಾವದ್ಭಾವಕೆ ಮತ್ತೆ ಮರಳುವುದೆ ಭಕ್ತಿಸೇವೆಯ ಗುರಿ ಎಂದು
ಗುರುಪ್ರಭುಪಾದರ ತಾಳದ ದನಿಗೆ ಹಾಡಲು ಭಕ್ತರು ಕುಣಿಯುತ್ತ
ಲೋಕಕೆ ಲೋಕವ ದನಿಗೂಡಿಸಿತು ಕೃಷ್ಣನ ಪಾದಕೆ ಮಣಿಯುತ್ತ-
“ರಾಮಹರೇ ರಾಮಹರೇ, ರಾಮ ರಾಮ ಜಯರಾಮ ಹರೇ
ಕೃಷ್ಣಹರೇ ಕೃಷ್ಣಹರೇ, ಕೃಷ್ಣ ಕೃಷ್ಣ ಜಯಕೃಷ್ಣ ಹರೇ.”
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...