Home / ಕವನ / ಕವಿತೆ / ಕೃಷ್ಣಭಕ್ತರ ಕುಣಿತ

ಕೃಷ್ಣಭಕ್ತರ ಕುಣಿತ

ಯಾವ ಘೋಷ ಇದು ಇದಕ್ಕಿದ್ದಂತೆ ಈ ಕನಕಾಂಬರಿ ಸಂಜೆಯಲಿ ?
ತೇಲಿ ಹಾಯುತಿದೆ ಪರಿಮಳದಂತೆ ತುಂಬಿ ಹರಿವ ಈ ಗಾಳಿಯಲಿ
ತಾಳಮೃದಂಗದ ಬಡಿತ ಹಬ್ಬುತಿದೆ ಹೃದಯಕೆ ಲಗ್ಗೆಯ ಹೂಡುತಿದೆ
ಮೋಹಕ ಗಾನದ ಕಂಠದೇರಿಳಿತ ಜೀವಕೆ ಮರುಳನು ಕವಿಸುತಿದೆ
ಯಾವ ಅಲೌಕಿಕ ಶ್ರುತಿಯಿದು, ಇದಕ್ಕೆ ಲೋಕವ ಹೂಡಿದರೇತಕ್ಕೆ?
ಆರಿಹೋಗುತಿದೆ ಎಲ್ಲ ಧಗೆ ಈ ಪ್ರಾಣವೀಣೆಯ ನುಡಿತಕ್ಕೆ-
“ರಾಮಹರೇ ರಾಮಹರೇ, ರಾಮ ರಾಮ ಜಯರಾಮ ಹರೇ
ಕೃಷ್ಣ ಹರೇ ಕೃಷ್ಣ ಹರೇ, ಕೃಷ್ಣ ಕೃಷ್ಣ ಜಯ ಕೃಷ್ಣ ಹರೇ”

ಕುಣಿಯುತ ಬಂದರು ಕೈಗಳನೆತ್ತಿ ಕೃಷ್ಣ ಭಕ್ತರು ಬೀದಿಯಲಿ
ಆನಂದದ ಉದ್ರೇಕಕೆ ತುಳುಕಿದೆ ಕಂಬನಿಧಾರೆ ಕೆನ್ನೆಯಲಿ
ಹೊಳೆಯುವ ನುಣ್ಣನೆ ತಲೆ, ಹಿಂಬದಿಯಲಿ ಚಲಿಸುತ್ತಿದೆ ಶಿಖೆ ಅತ್ತಿತ್ತ
ಸರಿದವು ವಾಹನ ದಾರಿಯ ಬಿಟ್ಟು, ಒಳಗಿನ ಜನ ಕೈಮುಗಿಯುತ್ತ
ಕುಣಿದರು ಭಕ್ತರು ಲಜ್ಜೆಯ ತೊರೆದು ಹಾಡಹಗಲು ನಡುಬೀದಿಯಲಿ
ಹಿಂದೆ ಕುಣಿದಂತೆ ಪ್ರಭು ಚೈತನ್ಯರು ದನಿಯನೆತ್ತಿ ಆಕಾಶದಲಿ-
“ರಾಮ ಹರೇ ರಾಮ ಹರೇ, ರಾಮ ರಾಮ ಜಯರಾಮ ಹರೇ
ಕೃಷ್ಣ ಹರೇ ಕೃಷ್ಣ ಹರೇ, ಕೃಷ್ಣ ಕೃಷ್ಣ ಜಯ ಕೃಷ್ಣ ಹರೇ”

ಮಿರುಗುವ ಗೋಪೀಚಂದನ ಹಣೆಯಲಿ, ಕೊರಳಲಿ ತುಳಸೀಮಣಿಮಾಲೆ
ಎದೆಯಲಿ ತೂಗುವ ಸಣ್ಣ ಚೀಲದಲಿ ಶ್ರೀಹರಿ ಸ್ಮರಣೆಗೆ ಜಪಮಾಲೆ
ಭೋಗಕೆ ಬಾಗದ ಬತ್ತಿದ ದೇಹ, ಕಣ್ಣೋ ಹಚ್ಚಿದ ಹಣತೆಗಳು
ದಿನವಿಡಿ ಕೃಷ್ಣನ ನೋಡಿ ನೋಡಿ ಕಪ್ಪೇರಿದ ನೇರಿಳೆ ಹಣ್ಣುಗಳು
ಯಾವ ಕಾಲದಿಂದೆದ್ದು ಬಂದಿತೋ ಭಕ್ತಿರಸದ ಈ ಸುಖಚಿತ್ರ?
ನಿಂತ ನೆಲವ ಬೃಂದಾವನವಾಯಿತು ಕುಣಿಯಲು ಭಕ್ತರು ಹಾಡುತ್ತ-
“”ರಾಮ ಹರೇ ರಾಮ ಹರೇ, ರಾಮ ರಾಮ ಜಯರಾಮ ಹರೇ
ಕೃಷ್ಣ ಹರೇ ಕೃಷ್ಣ ಹರೇ, ಕೃಷ್ಣ ಕೃಷ್ಣ ಜಯ ಕೃಷ್ಣ ಹರೇ”

ತೋಳ ಚಿರತೆಗಳು ಗದ್ದುಗೆ ಹಿಡಿದ ಗೊಂದಲಾಸುರನ ರಾಜ್ಯದಲಿ
ಉರಿವ ಬಾಣಲಿಗೆ ಬಿದ್ದಿದೆ ಬದುಕು ನರಳಿದೆ ನಾಸ್ತಿಕ ವ್ಯಾಜದಲಿ
ಹೇಗೆ ಹುಟ್ಟಿತೀ ಹೊಸ ಹೂವಿನಗಿಡ ಬತ್ತಿ ಹೋದ ಒಣಪಾತಿಯಲಿ?
ಮತ್ತೆ ಬಂದರೋ ಕನಕಪುರಂದರ ಶರೀಫರೆನ್ನುವ ರೀತಿಯಲಿ
ಕುಣಿದರು ಭಕ್ತರು ಅಂತರಂಗವನೆ ಮೃದಂಗಮಾಡಿ ಬಡಿಯುತ್ತ
ನೋಡಿದ ಜನ ರೋಮಾಂಚಿತರಾದರು ತಾವೂ ಕುಣಿದರು ಹಾಡುತ್ತ-
“ರಾಮಹರೇ ರಾಮಹರೇ, ರಾಮ ರಾಮ ಜಯರಾಮ ಹರೇ
ಕೃಷ್ಣ ಹರೇ ಕೃಷ್ಣ ಹರೇ, ಕೃಷ್ಣ ಕೃಷ್ಣ ಜಯ ಕೃಷ್ಣ ಹರೇ”

ದೇಶ ಜಾತಿ ಮತ ಭೇದವಿಲ್ಲದ ಸಕಲೋದ್ಯಾನದ ಪುಷ್ಟಗಳು
ಕಪ್ಪು ಬಿಳುಪುಗಳ ಭೇದವನಳಿಸಿ ಗಂಗೆಯಮುನೆ ಥರ ನೆರೆದವರು
ಇಂದ್ರಿಯದುರಿಗಳ ಹೃಷಿಕೇಶಪದ ಗಂಗೆಯಲ್ಲಿ ಮುಳುಗಿಸಿದವರು
ಕೃಷ್ಣನಾಮ ಸಂಕೀರ್ತನ ಯಜ್ಞಕೆ ಮೈಯೇ ವೇದಿಕೆಯಾದವರು.
ಹಾಡುತ ಕುಣಿಯುತ ನಡೆದರು ಭಕ್ತರು ಸಾಗುವಂತೆ ಶ್ರೀಹರಿಯತ್ತ
ಸುತ್ತ ನಿಂತ ಜನ ಹಾಡಿದರೊಟ್ಟಿಗೆ ನದಿಗಳು ಕಡಲಿಗೆ ಕೂಡುತ್ತ-
“ರಾಮಹರೇ ರಾಮಹರೇ, ರಾಮ ರಾಮ ಜಯರಾಮ ಹರೇ
ಕೃಷ್ಣ ಹರೇ ಕೃಷ್ಣ ಹರೇ, ಕೃಷ್ಣ ಕೃಷ್ಣ ಜಯ ಕೃಷ್ಣ ಹರೇ”

ಕೃಷ್ಣನೆ ಸ್ವಾಮಿ ಕೃಷ್ಣನಮಾಮಿ ಈ ವಿಶ್ವದ ಪ್ರಭು ನೀನೆಂದು
ಕೃಷ್ಣನೆ ಸ್ವಾಮಿ ಕೃಷ್ಣನಮಾಮಿ ನಿನ್ನ ಸೇವಕರು ನಾವೆಂದು
ಭಕ್ತಿಸೇವೆಯಲಿ ಮೈಮರೆಯುವುದೆ ಮುಕ್ತಿಗು ಮೀರಿದ ಗುರಿಯೆಂದು
ಭಾವದ್ಭಾವಕೆ ಮತ್ತೆ ಮರಳುವುದೆ ಭಕ್ತಿಸೇವೆಯ ಗುರಿ ಎಂದು
ಗುರುಪ್ರಭುಪಾದರ ತಾಳದ ದನಿಗೆ ಹಾಡಲು ಭಕ್ತರು ಕುಣಿಯುತ್ತ
ಲೋಕಕೆ ಲೋಕವ ದನಿಗೂಡಿಸಿತು ಕೃಷ್ಣನ ಪಾದಕೆ ಮಣಿಯುತ್ತ-
“ರಾಮಹರೇ ರಾಮಹರೇ, ರಾಮ ರಾಮ ಜಯರಾಮ ಹರೇ
ಕೃಷ್ಣಹರೇ ಕೃಷ್ಣಹರೇ, ಕೃಷ್ಣ ಕೃಷ್ಣ ಜಯಕೃಷ್ಣ ಹರೇ.”
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...