Home / ಕವನ / ಕವಿತೆ / ರಾಮನ ವಿರುದ್ಧ ದೆವ್ವದ ತರ್ಕ

ರಾಮನ ವಿರುದ್ಧ ದೆವ್ವದ ತರ್ಕ

ರಾಮಾಯಣ ಪಾರಾಯಣ
ಮಾಡಿ ಮುಗಿಸಿದ್ದೆ,
ರಾಮನವಮಿಯ ರಾತ್ರಿ.
ರಾಮಚಂದ್ರನ ದಿವ್ಯಬದುಕ ಸ್ಮರಿಸುತ್ತ,
ಅಂಥ ಬಾಳಿನ ಕನಸು ಕೂಡ ಕಾಣದ್ದಕ್ಕೆ
ನನ್ನಂಥ ಪಾಪಿಗಳ ಶಪಿಸಿಕೊಳ್ಳುತ್ತ,
ಒಬ್ಬನೇ ಒಳಕೋಣೆಯಲ್ಲಿ ಕೂತಿದ್ದೆ.
ತೆರೆದ ಕಿಟಿಕಿಯ ಹಾದು ಗಾಳಿ ಬಂದಂತೆ
ತೂರಿ ಬಂದಿತು ಏನೋ ;
ಕೊಳೆತ ಇಲಿವಾಸನೆ ಒಳಗೆ ಹಬ್ಬುತ್ತಿತ್ತು.
ನಿಮಿಷಾರ್ಧದಲ್ಲಿ ನನ್ನೆದುರು ಕುರ್ಚಿಯ ಮೇಲೆ
ನಗುತ್ತ ಕೂತಿತ್ತೊಂದು ನೀಳ ಎಲುಬಿನ ದೆವ್ವ!
“ಮತ್ತೆ ಬಂತಲ್ಲಪ್ಪ, ಕರೆಯದೇ ಕೇಳದೇ
ಹಾಳು ಪ್ರಾರಬ್ಧ!
ಆಡುವಂತಿಲ್ಲ ಅನುಭವಿಸುವಂತಿಲ್ಲ;
ಎಲ್ಲ ತಿಳಿಯುತ್ತದೆ ದರಿದ್ರ ಮುಚ್ಚಿಡುವಂತೇ ಇಲ್ಲ.
ಒದ್ದು ಹೊರ ಹಾಕಿದ್ದರೂ,
ಮರ್ಯಾದೆ ಇದ್ದರೆ ತಾನೆ?
ಮತ್ತೆ ಬಂದಿದೆ, ಶುದ್ಧ ತರಲೆ” ಎನ್ನಿಸಿತು.

“ಯಾಕೆ ನಗುತ್ತೀ” ಎಂದೆ,
ನಾನೂ ನಗುಮುಖ ಮಾಡಿ.
“ನಿನ್ನ ಪೆದ್ದುತನಕ್ಕೆ,
ತೆಗಳಬೇಕಾದವನ ಹಾಡಿ, ಹೊಗಳಿ, ಕುಣಿದು
ಪ್ರಸಾದ ನುಂಗಿದ್ದಕ್ಕೆ,
ತರ್ಕದ ತಕ್ಕಡಿ ಒದ್ದು, ಶ್ರದ್ಧೆಗೆ ಟೋಪಿ ಬಿದ್ದು
ತಿಳಿದರೂ ತಿರುತಿರುಗಿ
ಮೋಸ ಹೋಗುವುದಕ್ಕೆ.
ಮನುಷ್ಯ ಮುಟ್ಠಾಳ ನಿಜ,

ನಿಮ್ಮ ಹೆಸರೆತ್ತಿದರೆ ಸಾಕು ದೆವ್ವಗಳೆಲ್ಲ
ಘೊಳ್ಳೆನ್ನುತ್ತವೆ” ಅಂತ ಖೊಕ್ ಎಂದು ನಕ್ಕಿತು.
“ಮುಚ್ಚು ಬಾಯಿ, ಸಾಕು. ಹೇಗೆ? ಬೊಗಳು” ಅಂತ
ಸಿಟ್ಟಾಗಿ ಕೇಳಿದೆ.
ಅಪ್ಪ ಕೊಟ್ಟಿದ್ದ ಒಂದು ತಪ್ಪು ಮಾತನ್ನೇ ಹಿಡಿದು
ರಾಜ್ಯ ನಡೆಸುವ ಹೊಣೆಯ ಬಿಡುವವನು ಗಂಡ?
ಮೆಚ್ಚಿರುವೆ ಮದುವೆಯಾಗೋ ಎಂದ ಹೆಣ್ಣಿನ
ಮೂಗು ಕಿವಿ ಕೊಯಿಸಿದವ ನಿಜವಾಗಿ ಪುಂಡ!
ಅಣ್ಣನ್ನ ಬಿಟ್ಟು ಒಂದ ಸುಳ್ಳು ತಮ್ಮನ್ನ
ತಬ್ಬಿ ಬಾ ಎನ್ನುವವ ಯಾವನಿಗೆ ಅಣ್ಣ?
ಕಿಚ್ಚಲ್ಲಿ ಒಮ್ಮೆ ಬಿದ್ದೆದ್ದರೂ ಶಂಕಿಸಿ
ಕಾಡಿಗಟ್ಟಿದನಲ್ಲ ಬಸಿರಿ ಹೆಣ್ಣನ್ನ ?
ಯಾರ ರಾಜ್ಯದ ಮಾತೊ ಯಾಕಪ್ಪ ಅವನಿಗೆ ?
ಬೆಂಕಿಗೆ ತುಪ್ಪ ಸುರಿವ ದಡ್ಡ ಬೈರಾಗಿಗಳ
ಪರ ಹಿಡಿದು ಯಾರನ್ನೋ ತದುಕುವುದು ಯಾಕೆ ?
ಸೀಕರಣೆ ಪಾನಕ ಸಿದ್ದೋಟಿ ಹೋಳುಗಳ
ಚಪಲ ನಿಮಗೆ.
ತಿನ್ನಬಾರದೆ ಅದನ್ನು ಹಾಗೆಯೇ? ಅಷ್ಟಕ್ಕೆ
ಆ ರಾಮ ಯಾತಕ್ಕೆ ?
ಚಿನ್ನದಂಥ ಮನುಷ್ಯ ರಾವಣ, ಅವನನ್ನ
ತೆಗಳುವುಮ ಬೇಕಿತ್ತೆ ?”

ಎಲಾ ಎನಿಸಿತು. ಪೂರಾ ತಬ್ಬಿಬ್ಬಾಗಿ ಹೋದೆ !
ಏನು ವಾದ! ಅದೆಷ್ಟು ತರ್ಕಶುದ್ಧ, ಪ್ರಬುದ್ಧ
ಎಂಥ ಶೀರ್ಷಾಸನ !
“ಅರೇ, ಆ ರಾವಣ ಯೋಗ್ಯಮನುಷ್ಯ ಹೇಗೆ ?
ಯಾರ ಹೆಣ್ಣನ್ನೊ ಮರೆಯಲಿ ಕದ್ದೊಯ್ದದ್ದು
ಸರಿಯೇನು?” ಎಂದೆ.
“ಮರೆಯಿಂದ ವಾಲಿಯನ್ನು ಬಡಿದದ್ದು ಗೊತ್ತ ?
ದ್ವೇಷವೇ ಇಲ್ಲದೆ ಕೊಲ್ಲಬಹುದೆಂದರೆ
ಆಸೆಯಾದವಳನ್ನು ಕದ್ದರೇನಂತೆ ?
ಒಪ್ಪಿಗೆ ಇರದೆ ಪಾಪ, ಮುಟ್ಟಲಿಲ್ಲ ಕೂಡ !”
ಎಂದದ್ದೆ ಭೂತ ಬೇರೆ ಏನೋ ನೆನಪಿಸಿಕೊಂಡು
ಹಠಾತ್ತನೆ ಎದ್ದಿತು.

“ಕೆಲಸವಿದೆ ನನಗೂ, ರಾವಣನ ಜಯಂತಿ ಇವತ್ತು
ನಿಮಗೆ ಸೀಕರಣೆ ಪಾನಕ; ನಮಗೆ ಹಸಿಹೆಣದ
ರಸಗವಳ; ಕಾಯುತ್ತ ಇರುತ್ತಾರೆ” ಎನ್ನುತ್ತ
ಹಾರಿಹೋಯಿತು ಭೂತ ಕಣ್ಣು ಹೊಡೆದು ನಗುತ್ತ
“ಟಾ ಟಾ” ಎನ್ನುತ್ತ!
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...