Home / ಕವನ / ಕವಿತೆ / ದೆವ್ವದ ಕೋರ್ಟಿನಲ್ಲಿ

ದೆವ್ವದ ಕೋರ್ಟಿನಲ್ಲಿ

ರಾತ್ರಿಯೂಟ ಮುಗಿಸಿ ಎಲೆಯಡಿಕೆ ಮೆಲ್ಲುತ್ತ
ಸುದ್ದಿ ಪತ್ರಿಕೆ ವಿವರ ಓದುತ್ತ ಕೂತಿದ್ದೆ,
ಅರ್ಧ ಮುಗಿಸಿಟ್ಟಿದ್ದ ಖುರಾನು ಮೇಜಿನ ಮೇಲೆ,
ನಾನೊಬ್ಬನೇ ಇಲ್ಲ ರೂಮಲ್ಲಿ ಇನ್ಯಾರೋ
ಇದ್ದಾರೆ ಅನ್ನಿಸಿತು.
ನೆರಳು ನೆರಳಾಗಿ ಎದುರಿದ್ದ ಕುರ್ಚಿಯ ಮೇಲೆ
ಯಾರೋ ಕೂತಂತಿತ್ತು; ದಿಟ್ಟಿಸಿ ನೋಡಿದರೆ
ಮತ್ತೆ ಅದೆ ಹಳೆ ಭೂತ !

“ಭೂತ ಬಂದದ್ದು ಸಹ ಕಾಣುತ್ತಿಲ್ಲ ಅಲ್ಲವಾ ?
ಏನು ಅಂಥಾ ಓದು ?” -ಸಲಿಗೆ ಬೆಳೆಸಿತು ಭೂತ.
“ನಿನ್ನ ವಿಷಯಗಳೇ,
ವರ್ತಮಾನ ಪತ್ರಿಕೆಯ ತುಂಬ ಭೂತದ ಸುದ್ದಿ” ಅಂದೆ
“ಓಹೋ ಅಡಿಗ !
ನಮ್ಮ ಉಚ್ಚಾಟನೆಗೆ ಕರೆಕೊಟ್ಟ ವೈದಿಕ!
ಇರಲಿ ಏನದು ಸುದ್ದಿ” ಎಂದಿತು.

“ಬಾಬರಿ ಮಸೀದಿಯನ್ನು ನೆಲಸಮ ಮಾಡಿದ್ದಾರೆ,
ಗುಡಿ ನಿಲ್ಲಿಸಿದ್ದಾರೆ.
ಎಲ್ಲ ಕಡೆ ಕೊಲೆ ಇರಿತ
ಆಯ್ತು ದೇಶದ ಕಥೆ” ಕಂಠ ಕಟ್ಟಿತು ನನಗೆ.

“ಏನು ಮನುಷ್ಯರಪ್ಪ,
ನಾಯಿ ಬೆಕ್ಕುಗಳಂತೆ ಕಚ್ಚಾಡುತ್ತೀರಿ !
ಜುಟ್ಟು ನಾಮ ವಿಭೂತಿ ಜನಿವಾರ ಶಿವದಾರ
ಎಲ್ಲ ಕಡೆ ಇದರದೇ ಹಾವಳಿಯಾಗಿ ಹೋಯ್ತು.”

“ನೀ ಹೇಳುವುದು ನಿಜವೆ” ನಾನೆಂದೆ ಕುಗ್ಗುತ್ತ.
“ಏನು ಮತಾಂಧತೆ, ಎಂಥ ನಾಚಿಕೆಗೇಡು,
ಭೂತ ಕೂಡ ನಮ್ಮ ಬೈಯುವಂತಾಗಿದೆ.

ಎಲ್ಲ ಧರ್ಮಗಳನ್ನು ಬಾಚಿ ತಬ್ಬಿದ ದೇಶ,
ಇಂಥ ಧರ್ಮದ್ರೋಹ ಹಿಂದುವಿನ ನೆಲದಲ್ಲಿ
ಎಂದೂ ಆದದ್ದಿಲ್ಲ.
ಲೋಕದೆದುರೆ ಘೋರ ಅಪರಾಧಿ ನಾವೀಗ
ಎಷ್ಟು ಹಳೆಯ ಮಸೀದಿ.
ಬಿದ್ದ ಸದ್ದಿಗೆ ಒಳಗೇ ಧಸಕ್ಕೆಂದಿತು ಎದೆ” ಅಂದೆ.

“ಅನ್ನದೆ ಇರುತ್ತದೆಯೆ?
ನನಗೆ ಮಾತ್ರವೆ ಗೊತ್ತು ನಿನ್ನ ಎದೆಯುರಿ ತಾಪ”-
ದನಿಗೂಡಿಸಿತು ಭೂತ.

“ಎರಡು ದಿನ ಕಳೆದರೂ ಏನೋ ಸಂಕಟ ಒಳಗೆ,
ದೇಶವನ್ನೇ ಬಿಟ್ಟು ಓಡಿಹೋಗಲೆ ಎಂಬ
ಕೆಟ್ಟ ಕಸಿವಿಸಿ ಉರಿ,
ಬಾಬರಿ ಮಸೀದಿ ಮತ್ತೆ ಕಟ್ಟುವುದೆ ಆದಲ್ಲಿ
ತಲೆ ಮೇಲೆ ಇಟ್ಟಿಗೆಯ ಹೊತ್ತು ಸಾಗಿಸುತ್ತೇನೆ –
ಸೀದಾ ಅಯೋಧ್ಯೆಗೇ !
ಅಲ್ಲಿಯ ತನಕ ನನಗೆ ಎಲ್ಲಿ ನೆಮ್ಮದಿ?” ಎಂದೆ

“ಮುಚ್ಚೋ ಮಗನೆ ನಿನ್ನ ಕಳ್ಳ ಅಭಿನಯ ಸಾಕು”
ಕೂಗಿ ಗದರಿತು ಭೂತ.
“ನಿನ್ನ ಕರುಳಿನ ತನಕ ಎಲ್ಲ ಕಾಣುತ್ತದೆ.
ನಟಿಸುತ್ತೀಯ ಭಡವ ?
ಒಳಗೆ ಭಜರಂಗದಳ, ಹೊರಗೆ ತಿಳಿನೀರ ಕೊಳ!
ಇಲ್ಲಿಂದಲೇ ಅವತ್ತು ಕಲ್ಲು ಬೀಸಿದ್ದು ನನಗೆ
ಗೊತ್ತಿಲ್ಲ ಅಂತಲಾ ?”

“ನಿಲ್ಲಿಸು ತಲೆ ಹರಟೆ” ಅರಚಿ ತೋಳೇರಿಸಿದೆ.
ನನ್ನ ಮನೆಯಲ್ಲಿ ಕೂತು ನನಗೇ ಅನ್ನುವ ಕೊಬ್ಬ?
ನಾನು ಸೆಕ್ಯುಲರ್ ಗೊತ್ತ ?”

“ಆಹಾ, ಸೆಕ್ಯುಲರ್ ಇವನು !
ಸೂಡೋ ಸೆಕ್ಯುಲರ್, ಧಡ್ಡ!
ನೀನು ನಾಸ್ತಿಕ ತಿಳೀತಾ ?
ಧರ್ಮಿಷ್ಠರಿಗೆ ಮಾತ್ರ ದುಃಖವಾಗುವ ವಿಷಯ
ಮಸೀದಿ ಬಿದ್ದದ್ದು,
ನಿನ್ನಂಥವರಿಗಲ್ಲ,
ಫೋಸು ಹಾಕುತ್ತೀಯಾ ?”

“ನಾನು ನಾಸ್ತಿಕನ ?” ಮುಷ್ಟಿ ಬಿಗಿಯುತ್ತಿತ್ತು
“ಮತ್ತೇನು ? ಹಾಗಲ್ಲದಿದ್ದಲ್ಲಿ ಮನೆಯೊಳಗೆ
ಹೇಗೆ ಬರುತ್ತಿದ್ದೆ ನಾನು ?
ಮಾಸ್ತಿ ಮನೆಯೊಳಗೆ ಕಾಲಿಡಲೂ ಆಗದೆ ಹೋಯ್ತು
ಕಡೆದಿನದ ತನಕ”

“ನಾನು ಸೆಕ್ಯುಲರ್ ಅಲ್ಲ ಅನ್ನುತ್ತೀಯಲ್ಲ,
ನೀನು ಇರಬಹುದೆ ?” – ಚುಚ್ಚಿ ಕೇಳಿದೆ ನಾನು
“ಸಾರಿ ಅಂತನ್ನು, ನಾನು ಬರಿ ಭೂತ ನಿಮ್ಮಂತೆ
ಸೂಡೋ ಸೆಕ್ಯುಲರ್ ಆಲ್ಲ
ಈ ದೇಶದಲ್ಲಿ ಎಲ್ಲಿದ್ದಾನೆ ಸೆಕ್ಯುಲರ್ ?
ಒಳಗೆ ರಾಮನ ಭಜನೆ, ಸೀಕರಣೆ ಪಾನಕ
ಹೊರಗೆ ವೇದಿಕೆ ಮೇಲೆ ಮೊಸಳೆ ಕಣ್ಣೀರು.”

“ಬುದ್ಧಿಜೀವಿಗಳು?” – ಸವಾಲೆಸೆದು ಕೇಳಿದೆ
“ಬುದ್ಧಿ ಜೀವಿಯೆ ನೀನೂ –
ಕಂಡವರ ಬುದ್ಧಿತಿನ್ನುತ್ತಲೇ ಬೆಳೆದವರು
ನಿನ್ನಂತೆ ಉಳಿದವರೂ.
ವರ್ಚಸ್ಸು ಬೆಳೆಸಿಕೊಳ್ಳುವ ಕಳ್ಳ ನಾಟಕ ಇದು.
ಸುಗಮಗೀತೆಯ ರಚನೆ ಇದಕ್ಕಿಂತ ಮೇಲು”-
ತಾನೆ ಮನೆಯಜಮಾನ ಎನ್ನುವಂತೆ ಭೂತ
ಒರಟಾಗಿ ಗದರಿಸಿತು.

“ಮತ್ತೆ ಮಸೀದಿಯನ್ನು ಅಲ್ಲೇ ಕಟ್ಟಲಿ, ಅಂತ
ಪತ್ರಿಕಾ ಹೇಳಿಕೆ ಕೊಡುತ್ತೇನೆ ಗೂತ್ತ?”
ಬೀಗಿ ಹೇಳಿದೆ ನಾನು
“ಎಂಥ ಖದೀಮನೋ ನೀನು
ಕಟ್ಟಿರುವ ಗುಡಿಯನ್ನು ಯಾರು ಒಡೆದಾರು ?
ಎಲ್ಲ ಗೊತ್ತಿದೆ ನಿನಗೆ !
ನಿನ್ನ ಜೊತೆ ಮಾತು ಸಹ ಶುದ್ಧ ಹೇಸಿಗೆ
ಬರುತ್ತೇನೆ ನಾನಿನ್ನು.”

ಫಟ್ಟನೆ ಒಡೆದಂತಾಯ್ತು ಯಾವುದೋ ಬಲೂನು
ಕುರ್ಚಿ ತೂಗುತ್ತಿತ್ತು
ಹಗುರಾಗುತ್ತಿತ್ತು ಎದೆ
ಟೇಬಲ್ಲ ಮೇಲೆ ನಕ್ಕಿತು ಖುರಾನು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...