Home / ಕವನ / ಕವಿತೆ / ಗೆಳೆಯನ ಜೊತೆ ಸಮಾಲೋಚನೆ

ಗೆಳೆಯನ ಜೊತೆ ಸಮಾಲೋಚನೆ

ಈಚೆಗೆ ಯಾಕೋ ತುಂಬ
ಸಣ್ಣಗಾಗಿದ್ದೀರಿ ಅಂತ
ಗೆಳೆಯರು ಪರಿಚಿತರೆಲ್ಲ ಹೇಳಲು ಶುರುಮಾಡಿದರು.
ನನಗೇನಾಗಿದೆ ಧಾಡಿ
ಧಾಂಡಿಗನಂತಿದ್ದೀನಿ –
ಆಂತಾ ದಿನಾ ಹೇಳಿ ಹೇಳಿ
ಬಾಯಿ ಒಣಗಿ ಹೋಯಿತು.
ಮೊನ್ನೆ ಇವಳೂ ಒಮ್ಮೆ
ಮೆಲ್ಲಗೆ ಹತ್ತಿರ ಬಂದು
“ಯಾಕೀಥರ ಇದ್ದೀರಿ ?
ಪೂರಾ ಬಾಡಿದ್ದೀರಿ,
ನನ್ನೆದುರೂ ಗುಟ್ಟೆ” ಅಂತ
ಕಣ್ಣಲ್ಲಿ ನೀರು ತಂದಳು.
ಯಾಕೋ ವಿಪರೀತಕ್ಕೆ ಹೋಗುತ್ತಿದೆ ಎನಿಸಿತು
ನುಂಗಿದ್ದನ್ನು ಕಕ್ಕದೆ ವಿಧಿಯಿಲ್ಲ ಎನಿಸಿತು.

ನಾಡಿಗ ಬಂದರು ಮೊನ್ನೆ
ಮೇಲೆ ಬನ್ನಿ ಅಂದೆ.
ಪಕ್ಕ ಕೂತು ದನಿ ತಗ್ಗಿಸಿ
ಆಪ್ತವಾಗಿ ಹೇಳಿದೆ :
“ಬಲು ರಹಸ್ಯ ವಿಷಯ ನೋಡಿ
ಗೇಟು ದಾಟುವಂಥದಲ್ಲ
ಇವಳಿಗಂತೂ ಅಪ್ಪಿತಪ್ಪಿ ಕೂಡ ತಲುಪುವಂಥದ್ದಲ್ಲ.
ಹೇಗೆ ಹೇಳಲೆನ್ನುವುದೇ ತಿಳಿಯುತ್ತಿಲ್ಲ” ಎಂದೆ.

ಏನು ಹೊಳೆಯಿತೋ ಕವಿಗೆ
ಕಣ್ಣುಹೊಡೆದು ನಕ್ಕರು:
ತಿವಿಯುವಂತೆ ನಕ್ಕು ನೋಡಿ ‘ರಸಿಕರಪ್ಪಾ’ ಎಂದರು
“ಹೇಳಿ ಯಾಕೆ ಸಂಕೋಚ?
ಇಂಥದೆಲ್ಲ ಇದ್ದದ್ದೇ
ಋಷಿಗಳೇನು ನಾವು ನೀವು ?
ಕೆರೆಗೆ ಅವರೂ ಬಿದ್ದದ್ದೇ !
ಉಪ್ಪು ಕಾರ ತಿನ್ನುವಂಥ ದೇಹ ತಾನೆ ನಮ್ಮದೂ ?
ನನಗೂ ಹಿಂದೆ ಬಳ್ಳಿಯೊಂದು ಕಾಲ್ಕಟ್ಟಿದ್ದುಂಟು
ಹೂ ಬಿಡಿಸಲು ಕೆರೆಗಿಳಿದರೆ
ಮಂಡಿತನಕ ಕಾಲು ಹೂತು ಒದ್ದಾಡಿದ್ದುಂಟು!
ಹೇಗೋ ಬಳ್ಳಿ ಕಳಚಿಕೊಂಡೆ
ಕಾಲು ಮೇಲೆ ಎಳೆದುಕೊಂಡೆ
ಮನ್ಮಥನಿಗೆ ಜಯವಾಗಲಿ, ಬದುಕಿಕೊಂಡೆ!” ಎಂದರು

ಕವಿಯ ಮಾತು ಕೇಳಿ ನನಗೆ
ನಗು ಉಕ್ಕಿತು ಒಳಗೆ
“ಅಯ್ಯೋ ಹುಚ್ಚು ಬ್ರಾಹ್ಮಣ !
ನಿಮ್ಮ ಥರದ್ದಲ್ಲ ನಂದು, ಎಂಥದೋ ಪುರಾಣ,
ಬಲು ವಿಚಿತ್ರ ಸಂಗತಿ.
ಕೇಳಿದವರು ನಂಬಲೂ
ಶಂಕೆ ಪಡುವ ಸಂಗತಿ.
ಈಚೆಗೆರಡು ತಿಂಗಳಿಂದ
ಎಂಟು ಹತ್ತು ದಿನಕ್ಕೊಮ್ಮೆ
ಭೂತವೊಂದು ಬರುತ್ತಿದೆ
ಈ ರೂಮಿಗೆ ಗೊತ್ತೆ ?”
ನೋಡಿದೆ ಕವಿಯತ್ತ.

ಗಾಬರಿಯಾದರು ಕವಿ
ದಿಟ್ಟಸಿ ನೋಡಿದರು
“ಏನು ನೀವು ಹೇಳೋದು!
ಇದು ಕವಿತೆಗೆ ಸೇರೋದು
ಏನೋ ನೋಡಿ ಭೂತ ಅಂತ
ಗಾಬರಿಗೊಂಡಿಲ್ಲ ತಾನೆ ?
ಫ್ಯಾಂಟಸಿ ಕಥೆ ಏನನ್ನೋ ಬರೆಯುವ ಪ್ಲಾನಿಲ್ಲ ತಾನೆ ?
ಪಿತ್ಥ ಗಿತ್ಥ ಇದ್ದೀತು
ಜ್ವರದ ಸನ್ನಿ ಇದ್ದೀತು
ಬೇಗ ತಾಪ ಆರೀತು ಹೆದರಬೇಡಿ” ಎಂದರು
ಕೈಯ ಮುಟ್ಟಿ ಹಣೆಯ ಮುಟ್ಟಿ
ಖಾತ್ರಿ ಮಾಡಿಕೊಂಡರು
ಶಂಕೆ, ಆತಂಕ ಅವರ ಕಣ್ಣಿನಲ್ಲಿ ಹೊಳೆಯುತ್ತಿತ್ತು
ಕವಿತೆ ಬರೆದ ಅಭಯಹಸ್ತ
ನನ್ನ ಬೆನ್ನ ಸವರುತ್ತಿತ್ತು.

“ನಿಮ್ಮ ಆಣೆ, ನನ್ನ ಆಣೆ ಕವಿತೆಯಾಣೆ” ಎಂದೆ.
“ಮಕ್ಕೀ ಕಾ ಮಕ್ಕಿ ಘಟನೆ ನುಡಿದೆ ನಿಮ್ಮ ಮುಂದೆ
ನಿಜವಾಗಿಯೂ ಭೂತ ಇದೆ,
ನಾನೇ ಖುದ್ದು ನೋಡಿರುವೆ,
ರೂಬು ರೂಬು ಕೂತು ಎಷ್ಟೋ ಮಾತನ್ನಾಡಿರುವೆ
ಕಾಳರಾತ್ರಿ ಗಾಳಿಯೇರಿ ಭಗ್ಗನೆ ನುಗ್ಗುತ್ತದೆ
ನೀವು ಕೂತ ಕುರ್ಚಿಯಲ್ಲಿ ಧಿಮ್ಮನೆ ಕೂರುತ್ತದೆ
ಭಾಷೆ, ತರ್ಕ, ಮುಂಡೇದಕ್ಕೆ ಕಾವ್ಯ ಕೂಡ ಗೊತ್ತಿದೆ
ಕಂಡ ದಿವಸದಿಂದ ನನ್ನ ನೆಮ್ಮದಿಯೇ ಸತ್ತಿದೆ”

“ಹೇಗಿದೆ ?” ಎಂದರು ಕವಿ.
“ಅದೆ ವಿಚಿತ್ರ ನೋಡಿ
ನನ್ನನೆ ಕಡೆದಿಟ್ಟಂತಿದೆ ಎಲ್ಲ ಅಳತೆ ಮಾಡಿ.
ದೇಹವಷ್ಟೇ ಅಲ್ಲ,
ನಿಲುವು ಮಾತು ಧಾಟಿಯನ್ನೂ ಕದ್ದಂತಿದೆ ಕಳ್ಳ.
ಮನಸಿನಾಳದಲ್ಲಿ ಮಿಂಚಿ ತಳಕಿಳಿದದ್ದನ್ನೂ
ಗಾಳ ಹಾಕಿ ಎತ್ತುತ್ತದೆ
ಉರಿ ಉರಿಯುವ ಕಣ್ಣು!”

ಇರಲಿ ಬಿಡಿ, ಚಿಂತೆ ಬೇಡ
ಸ್ವಲ್ಪ ದಿವಸ ಬಿಡೋಣ,
ಕೆಟ್ಟದ್ದವಂತೂ ಇರಲಾರದು
ಅದರ ಆಟ ನೋಡೋಣ.
ಮೈ ಮುಟ್ಟುವುದಿಲ್ಲವಲ್ಲ ಬೇರೇನೇ ಆದರೂ
ಬರುತ್ತೇನೆ ಮತ್ತೆ ಎಂದು
ನಾಡಿಗ ಮೇಲೆದ್ದರು.
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...