Home / ಕವನ / ಕವಿತೆ / ಗುಣಾಕಾರಿ

ಗುಣಾಕಾರಿ

ಯಾವುದು ಇಲ್ಲವೆಂದು ನಾನು ಕೂಗಿದ್ದು?
ಪಬ್ಲಿಕ್ಕಾಗಿ ಕೂಗಿ, ರಣಾರಣ ರೇಗಿ
ಎಲ್ಲರೆದುರು ಬೀಗಿದ್ದು?
“ನನ್ನ ಬುದ್ಧಿ ನನ್ನ ಉತ್ತರ ಮುಖಿ,
ಅಳೆದ ಸತ್ಯ ದಡ ದೂರದ ಮುಳುಗು ತತ್ವವಾದರೂ ಸರಿ
ಅದರಲ್ಲೇ ಪೂರ್ತಿ ಸುಖಿ,
ನೋವಿಗೊಂದು ರಕ್ಷಯೆಂದು ನಂಬಿ ಬಾಳಲೇ” ಎಂದು
ಯಾಕಾಗಿ ನಂಬುವವರನ್ನು ಗುದ್ದಿ ಬಂದದ್ದು?
ತರ್ಕದಲ್ಲಿ ನೆಲ ಹೊರಳಿಸುತ್ತೇನೆ,
ಹೂವರಳಿಸುತ್ತೇನೆ
ನದಿ ಮರಳಿಸುತ್ತೇನೆ
ಏನು ಅಂಕೆ ತಪ್ಪಿತಾ ಎಲ್ಲ?” –
ಎಂದು ಅಬ್ಬರಿಸಿ ಮಲಗಿದ್ದು?

ನಡುರಾತ್ರಿ ಏನೋ ಮಂಪರ
ದೀಪಕಚ್ಚಿದ ರೂಮಿನಲ್ಲಿ ಕಿರಿಬೆಳಕಿನೆಚ್ಚರ;
ಸುತ್ತ ನೀರು
ನಡುಗಡ್ಡೆ ಮನೆ
ತಳಸೇರಿದ್ದ ದೆವ್ವಭೂತ ಏಣಿಹತ್ತುವ ಶಬ್ದ
ಕಿಲಕಿಲಲಹೋ ಕೇಕೆ
ಮೂಳೆ ಕೈ ಕಾಲುಗಳ ತಾಳಲಯದಲ್ಲಿ ತೂಗಿ
ಸದ್ಯಕ್ಕೇ ಬಂದುವು;
ಎದೆ ಕಲ್ಲುಮಾಡಿ
‘ಗೊತ್ತು ಹೋಗಿ ಪ್ರಾಚೀನಗಳೆ’ ಎಂದು ನಕ್ಕೆ
ಬಂದವರು
‘ಬಂದಿದ್ದೇವೆ ನಾವು
ಪಿತಾಮಹರು’ – ಎಂದರು.

ತಿಥಿ ಮಾಡಿದ್ದೇನೆ
ಜನಿವಾರ ಎಡಕ್ಕೆ ಹಾಕಿ ಸ್ತುತಿಮಾಡಿದ್ದೇನೆ. ಆದರೂ
ಮುಖದಲ್ಲಿ ನೀರೊಡೆಯುವ ದೈನ್ಯ
‘ಇಟ್ಟುಕೋ’ ಎಂದು ಕರುಳಬಳ್ಳಿಯಲ್ಲಿ ಬರೆದರು.
ತರ್ಕಶಾಸ್ತ್ರ ತೋರಿಸಿ
‘ಯಾಕೆ ಕಾಡುತ್ತೀರಿ ಹೀಗೆ? ಎಲ್ಲಿದೆ ಶ್ರದ್ದೆ?
ಗುಣಾಕಾರ ತಿಳಿಯದ? ಮನೆ ಬಿಡಿ’ ಎಂದು
ಅಟ್ಟಿ ಅಗುಳಿ ಹಾಕಿದೆ.
ಅಂತೂ ಸಾಲ ತೀರಿತೋ ಸದ್ಯಕ್ಕೆ?
ಈಗ ನಾನೇ ಪಾಯ
ನಾನೇ ಕಂಬ
ನಾನೇ ಶಿಖರ
ಸಾಗಲಿ ಎಂದೆನೋ-

ದೀಪದ ಕೊಚ್ಚೆಬೆಳಕು ಫಳಾರನೆ ಮಿಂಚಿ
ಎದುರಿನ ಕನ್ನಡಿಯಲ್ಲಿ ಚಿತ್ರ ಉರಿದವು.
ಸೃಷ್ಟಿ-ಪ್ರಳಯ
ಪ್ರಪಂಚದ ಮರಗಳೆಲ್ಲ ಮತ್ತೆ ಮತ್ತೆ ಒಣಗಿ ಚಿಗುರಿದವು
ಪಕ್ಷಿಲೋಕ ಹುಟ್ಟಿ ಸತ್ತು ಹುಟ್ಟಿ ಸತ್ತು ಹುಟ್ಟಿ
ಪ್ರಾಣಿಗಳೆಲ್ಲ ಒಡಲು ಮಗುಚಿದವು
ಎದ್ದು ಅರಚಿದವು.
ನಾಟಿ ಕೊಯಿಲು ಭೇಟಿಯಾಗಿ
ಕೈಕೈ ಹಿಡಿದು
ಕಣ್ಣು ಹೊಡೆದು
ನನ್ನ ಕಡೆ ತಿರುಗಿ ಕೇಳಿದವು
‘ಹೌದಾ, ಎಲ್ಲ ಗುಣಾಕಾರವಾ?’

ಸಮುದ್ರ ತರೆ ತರೆಗೂ ಬಾಯಿ ತೆರೆದು
ಒಡಲೊಳಗಿನ ಅಗಾಧಲೋಕ ಮೈ ಮುರಿದು
ಮಂದರದಂಥ ದನಿ ಮೇಲೆದ್ದು ಅಬ್ಬರಿಸಿತು
‘ಹೌದಾ, ಎಲ್ಲ ಗುಣಾಕಾರವಾ’?

ಗ್ರಹಗಳೆಲ್ಲ ಗತಿಗೆಟ್ಟು ಹಾಯುತ್ತ
ನಕ್ಷತ್ರ ಗಂಗೆಗಳು ಭೀಕರವಾಗಿ ತೂಗುತ್ತ
ಪರ್‍ವತ ಕಕ್ಕಿದ ಉರಿಹೊಳೆ ದಿಕ್ಕು ದಿಕ್ಕಿಂದ ಹರಿದು
ಕಾಲ ಬಳಿಗೆ ಬಂದು ಮೊರೆಯುವ ಮೊದಲೇ
ಚೀರಿ ಎದ್ದು ಓಡಿದೆ,
ಗೂಡೆಲ್ಲ ಕೆದಕಾಡಿ
ಹಾಳು ಸ್ಕೇಲನ್ನು ತಂದು
ನೀರೊಲೆಗೆ ಹಾಕಿದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...