Home / ಕವನ / ಕವಿತೆ / ಗುಣಾಕಾರಿ

ಗುಣಾಕಾರಿ

ಯಾವುದು ಇಲ್ಲವೆಂದು ನಾನು ಕೂಗಿದ್ದು?
ಪಬ್ಲಿಕ್ಕಾಗಿ ಕೂಗಿ, ರಣಾರಣ ರೇಗಿ
ಎಲ್ಲರೆದುರು ಬೀಗಿದ್ದು?
“ನನ್ನ ಬುದ್ಧಿ ನನ್ನ ಉತ್ತರ ಮುಖಿ,
ಅಳೆದ ಸತ್ಯ ದಡ ದೂರದ ಮುಳುಗು ತತ್ವವಾದರೂ ಸರಿ
ಅದರಲ್ಲೇ ಪೂರ್ತಿ ಸುಖಿ,
ನೋವಿಗೊಂದು ರಕ್ಷಯೆಂದು ನಂಬಿ ಬಾಳಲೇ” ಎಂದು
ಯಾಕಾಗಿ ನಂಬುವವರನ್ನು ಗುದ್ದಿ ಬಂದದ್ದು?
ತರ್ಕದಲ್ಲಿ ನೆಲ ಹೊರಳಿಸುತ್ತೇನೆ,
ಹೂವರಳಿಸುತ್ತೇನೆ
ನದಿ ಮರಳಿಸುತ್ತೇನೆ
ಏನು ಅಂಕೆ ತಪ್ಪಿತಾ ಎಲ್ಲ?” –
ಎಂದು ಅಬ್ಬರಿಸಿ ಮಲಗಿದ್ದು?

ನಡುರಾತ್ರಿ ಏನೋ ಮಂಪರ
ದೀಪಕಚ್ಚಿದ ರೂಮಿನಲ್ಲಿ ಕಿರಿಬೆಳಕಿನೆಚ್ಚರ;
ಸುತ್ತ ನೀರು
ನಡುಗಡ್ಡೆ ಮನೆ
ತಳಸೇರಿದ್ದ ದೆವ್ವಭೂತ ಏಣಿಹತ್ತುವ ಶಬ್ದ
ಕಿಲಕಿಲಲಹೋ ಕೇಕೆ
ಮೂಳೆ ಕೈ ಕಾಲುಗಳ ತಾಳಲಯದಲ್ಲಿ ತೂಗಿ
ಸದ್ಯಕ್ಕೇ ಬಂದುವು;
ಎದೆ ಕಲ್ಲುಮಾಡಿ
‘ಗೊತ್ತು ಹೋಗಿ ಪ್ರಾಚೀನಗಳೆ’ ಎಂದು ನಕ್ಕೆ
ಬಂದವರು
‘ಬಂದಿದ್ದೇವೆ ನಾವು
ಪಿತಾಮಹರು’ – ಎಂದರು.

ತಿಥಿ ಮಾಡಿದ್ದೇನೆ
ಜನಿವಾರ ಎಡಕ್ಕೆ ಹಾಕಿ ಸ್ತುತಿಮಾಡಿದ್ದೇನೆ. ಆದರೂ
ಮುಖದಲ್ಲಿ ನೀರೊಡೆಯುವ ದೈನ್ಯ
‘ಇಟ್ಟುಕೋ’ ಎಂದು ಕರುಳಬಳ್ಳಿಯಲ್ಲಿ ಬರೆದರು.
ತರ್ಕಶಾಸ್ತ್ರ ತೋರಿಸಿ
‘ಯಾಕೆ ಕಾಡುತ್ತೀರಿ ಹೀಗೆ? ಎಲ್ಲಿದೆ ಶ್ರದ್ದೆ?
ಗುಣಾಕಾರ ತಿಳಿಯದ? ಮನೆ ಬಿಡಿ’ ಎಂದು
ಅಟ್ಟಿ ಅಗುಳಿ ಹಾಕಿದೆ.
ಅಂತೂ ಸಾಲ ತೀರಿತೋ ಸದ್ಯಕ್ಕೆ?
ಈಗ ನಾನೇ ಪಾಯ
ನಾನೇ ಕಂಬ
ನಾನೇ ಶಿಖರ
ಸಾಗಲಿ ಎಂದೆನೋ-

ದೀಪದ ಕೊಚ್ಚೆಬೆಳಕು ಫಳಾರನೆ ಮಿಂಚಿ
ಎದುರಿನ ಕನ್ನಡಿಯಲ್ಲಿ ಚಿತ್ರ ಉರಿದವು.
ಸೃಷ್ಟಿ-ಪ್ರಳಯ
ಪ್ರಪಂಚದ ಮರಗಳೆಲ್ಲ ಮತ್ತೆ ಮತ್ತೆ ಒಣಗಿ ಚಿಗುರಿದವು
ಪಕ್ಷಿಲೋಕ ಹುಟ್ಟಿ ಸತ್ತು ಹುಟ್ಟಿ ಸತ್ತು ಹುಟ್ಟಿ
ಪ್ರಾಣಿಗಳೆಲ್ಲ ಒಡಲು ಮಗುಚಿದವು
ಎದ್ದು ಅರಚಿದವು.
ನಾಟಿ ಕೊಯಿಲು ಭೇಟಿಯಾಗಿ
ಕೈಕೈ ಹಿಡಿದು
ಕಣ್ಣು ಹೊಡೆದು
ನನ್ನ ಕಡೆ ತಿರುಗಿ ಕೇಳಿದವು
‘ಹೌದಾ, ಎಲ್ಲ ಗುಣಾಕಾರವಾ?’

ಸಮುದ್ರ ತರೆ ತರೆಗೂ ಬಾಯಿ ತೆರೆದು
ಒಡಲೊಳಗಿನ ಅಗಾಧಲೋಕ ಮೈ ಮುರಿದು
ಮಂದರದಂಥ ದನಿ ಮೇಲೆದ್ದು ಅಬ್ಬರಿಸಿತು
‘ಹೌದಾ, ಎಲ್ಲ ಗುಣಾಕಾರವಾ’?

ಗ್ರಹಗಳೆಲ್ಲ ಗತಿಗೆಟ್ಟು ಹಾಯುತ್ತ
ನಕ್ಷತ್ರ ಗಂಗೆಗಳು ಭೀಕರವಾಗಿ ತೂಗುತ್ತ
ಪರ್‍ವತ ಕಕ್ಕಿದ ಉರಿಹೊಳೆ ದಿಕ್ಕು ದಿಕ್ಕಿಂದ ಹರಿದು
ಕಾಲ ಬಳಿಗೆ ಬಂದು ಮೊರೆಯುವ ಮೊದಲೇ
ಚೀರಿ ಎದ್ದು ಓಡಿದೆ,
ಗೂಡೆಲ್ಲ ಕೆದಕಾಡಿ
ಹಾಳು ಸ್ಕೇಲನ್ನು ತಂದು
ನೀರೊಲೆಗೆ ಹಾಕಿದೆ.
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...