Home / ಕವನ / ಕವಿತೆ / ಗುಣಾಕಾರಿ

ಗುಣಾಕಾರಿ

ಯಾವುದು ಇಲ್ಲವೆಂದು ನಾನು ಕೂಗಿದ್ದು?
ಪಬ್ಲಿಕ್ಕಾಗಿ ಕೂಗಿ, ರಣಾರಣ ರೇಗಿ
ಎಲ್ಲರೆದುರು ಬೀಗಿದ್ದು?
“ನನ್ನ ಬುದ್ಧಿ ನನ್ನ ಉತ್ತರ ಮುಖಿ,
ಅಳೆದ ಸತ್ಯ ದಡ ದೂರದ ಮುಳುಗು ತತ್ವವಾದರೂ ಸರಿ
ಅದರಲ್ಲೇ ಪೂರ್ತಿ ಸುಖಿ,
ನೋವಿಗೊಂದು ರಕ್ಷಯೆಂದು ನಂಬಿ ಬಾಳಲೇ” ಎಂದು
ಯಾಕಾಗಿ ನಂಬುವವರನ್ನು ಗುದ್ದಿ ಬಂದದ್ದು?
ತರ್ಕದಲ್ಲಿ ನೆಲ ಹೊರಳಿಸುತ್ತೇನೆ,
ಹೂವರಳಿಸುತ್ತೇನೆ
ನದಿ ಮರಳಿಸುತ್ತೇನೆ
ಏನು ಅಂಕೆ ತಪ್ಪಿತಾ ಎಲ್ಲ?” –
ಎಂದು ಅಬ್ಬರಿಸಿ ಮಲಗಿದ್ದು?

ನಡುರಾತ್ರಿ ಏನೋ ಮಂಪರ
ದೀಪಕಚ್ಚಿದ ರೂಮಿನಲ್ಲಿ ಕಿರಿಬೆಳಕಿನೆಚ್ಚರ;
ಸುತ್ತ ನೀರು
ನಡುಗಡ್ಡೆ ಮನೆ
ತಳಸೇರಿದ್ದ ದೆವ್ವಭೂತ ಏಣಿಹತ್ತುವ ಶಬ್ದ
ಕಿಲಕಿಲಲಹೋ ಕೇಕೆ
ಮೂಳೆ ಕೈ ಕಾಲುಗಳ ತಾಳಲಯದಲ್ಲಿ ತೂಗಿ
ಸದ್ಯಕ್ಕೇ ಬಂದುವು;
ಎದೆ ಕಲ್ಲುಮಾಡಿ
‘ಗೊತ್ತು ಹೋಗಿ ಪ್ರಾಚೀನಗಳೆ’ ಎಂದು ನಕ್ಕೆ
ಬಂದವರು
‘ಬಂದಿದ್ದೇವೆ ನಾವು
ಪಿತಾಮಹರು’ – ಎಂದರು.

ತಿಥಿ ಮಾಡಿದ್ದೇನೆ
ಜನಿವಾರ ಎಡಕ್ಕೆ ಹಾಕಿ ಸ್ತುತಿಮಾಡಿದ್ದೇನೆ. ಆದರೂ
ಮುಖದಲ್ಲಿ ನೀರೊಡೆಯುವ ದೈನ್ಯ
‘ಇಟ್ಟುಕೋ’ ಎಂದು ಕರುಳಬಳ್ಳಿಯಲ್ಲಿ ಬರೆದರು.
ತರ್ಕಶಾಸ್ತ್ರ ತೋರಿಸಿ
‘ಯಾಕೆ ಕಾಡುತ್ತೀರಿ ಹೀಗೆ? ಎಲ್ಲಿದೆ ಶ್ರದ್ದೆ?
ಗುಣಾಕಾರ ತಿಳಿಯದ? ಮನೆ ಬಿಡಿ’ ಎಂದು
ಅಟ್ಟಿ ಅಗುಳಿ ಹಾಕಿದೆ.
ಅಂತೂ ಸಾಲ ತೀರಿತೋ ಸದ್ಯಕ್ಕೆ?
ಈಗ ನಾನೇ ಪಾಯ
ನಾನೇ ಕಂಬ
ನಾನೇ ಶಿಖರ
ಸಾಗಲಿ ಎಂದೆನೋ-

ದೀಪದ ಕೊಚ್ಚೆಬೆಳಕು ಫಳಾರನೆ ಮಿಂಚಿ
ಎದುರಿನ ಕನ್ನಡಿಯಲ್ಲಿ ಚಿತ್ರ ಉರಿದವು.
ಸೃಷ್ಟಿ-ಪ್ರಳಯ
ಪ್ರಪಂಚದ ಮರಗಳೆಲ್ಲ ಮತ್ತೆ ಮತ್ತೆ ಒಣಗಿ ಚಿಗುರಿದವು
ಪಕ್ಷಿಲೋಕ ಹುಟ್ಟಿ ಸತ್ತು ಹುಟ್ಟಿ ಸತ್ತು ಹುಟ್ಟಿ
ಪ್ರಾಣಿಗಳೆಲ್ಲ ಒಡಲು ಮಗುಚಿದವು
ಎದ್ದು ಅರಚಿದವು.
ನಾಟಿ ಕೊಯಿಲು ಭೇಟಿಯಾಗಿ
ಕೈಕೈ ಹಿಡಿದು
ಕಣ್ಣು ಹೊಡೆದು
ನನ್ನ ಕಡೆ ತಿರುಗಿ ಕೇಳಿದವು
‘ಹೌದಾ, ಎಲ್ಲ ಗುಣಾಕಾರವಾ?’

ಸಮುದ್ರ ತರೆ ತರೆಗೂ ಬಾಯಿ ತೆರೆದು
ಒಡಲೊಳಗಿನ ಅಗಾಧಲೋಕ ಮೈ ಮುರಿದು
ಮಂದರದಂಥ ದನಿ ಮೇಲೆದ್ದು ಅಬ್ಬರಿಸಿತು
‘ಹೌದಾ, ಎಲ್ಲ ಗುಣಾಕಾರವಾ’?

ಗ್ರಹಗಳೆಲ್ಲ ಗತಿಗೆಟ್ಟು ಹಾಯುತ್ತ
ನಕ್ಷತ್ರ ಗಂಗೆಗಳು ಭೀಕರವಾಗಿ ತೂಗುತ್ತ
ಪರ್‍ವತ ಕಕ್ಕಿದ ಉರಿಹೊಳೆ ದಿಕ್ಕು ದಿಕ್ಕಿಂದ ಹರಿದು
ಕಾಲ ಬಳಿಗೆ ಬಂದು ಮೊರೆಯುವ ಮೊದಲೇ
ಚೀರಿ ಎದ್ದು ಓಡಿದೆ,
ಗೂಡೆಲ್ಲ ಕೆದಕಾಡಿ
ಹಾಳು ಸ್ಕೇಲನ್ನು ತಂದು
ನೀರೊಲೆಗೆ ಹಾಕಿದೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...