Home / ಕವನ / ಕವಿತೆ / ಜಾತ್ರೆಯಲ್ಲಿ ಶಿವ

ಜಾತ್ರೆಯಲ್ಲಿ ಶಿವ


ಅದೇ ಆ ಶಿವನ ವೇಷಧಾರಿ
ನಾನಿದ್ದ ಬಸ್ಸಿನಲ್ಲಿಯೇ ಇದ್ದ
ನನ್ನೊಂದಿಗೆ ಬಸ್ಸಿನಿಂದಿಳಿದ

ತೇಗದ ಮರದ ಹಾಗೆ
ಉದ್ದಕೆ ಸಪೂರ
ಮೋಡದ ಮೈ ಬಣ್ಣ, ಮಿಂಚಿನ ನಗು
ಮುಡಿಗೆ ತಗಡಿನ ಚಂದ್ರನನು ಮುಡಿದಿದ್ದ
ತೋಳಿಗೆ ಕಣಗಿಲೆಯ ಹೂವು
ಕೊರಳಲ್ಲಿ ಪ್ಲಾಸ್ಟಿಕ್ ಹಾವು
ಹುಲಿ ಚರ್ಮದ ಚಿತ್ರವಿರುವ
ಮಾಸಿದ ಹಳದಿ ಬಣ್ಣದ ಅರ್ಧ ಲುಂಗಿ
ಹವಾಯಿ ಚಪ್ಪಲಿ ಧರಿಸಿದ್ದ…

ನನ್ನ ಬೆರಗಿಗೆ ಉತ್ತರ
ನೀಡುವವನಂತೆ
ಡಮರುಗ ನುಡಿಸಿ
ತ್ರಿಶೂಲ ಆಡಿಸಿ
ಕಾಲ್ಗೆಜ್ಜೆ ಗಲಗಲ ಕುಣಿಸಿ
ನ…ಶಿವ ಎಂದ


ನಾ…ಮುಂದೆ ಅವ…ಹಿಂದೆ
ಜಾತ್ರೆಯ ಕೌಂಟರಿನಲ್ಲಿ
ಟಿಕೀಟು ಕೊಳ್ಳುವಾಗಲೂ
ಬೆನ್ನ ಹಿಂದೆಯೇ ಇದ್ದ
ಗಿಲೀಟು ಒಡವೆಯಂಗಡಿಯಲ್ಲಿ

ಕಣ್ಣ ಮುಂದೆಯೇ ಬಂದ
ಫಳಫಳ ಹೊಳೆಯುವ
ಮೂಗುತಿಯನು ಅಂಗೈಯೊಳಗೆ
ಹೊರಳಾಡಿಸಿ
ಈ ವಜ್ರಕ್ಕೆಷ್ಟಪ್ಪಾ ಬೆಲೆ
ಎಂದು ಅಂಗಡಿಯಾತನ ಛೇಡಿಸಿದ

ಪುಗ್ಗೆಯಂಗಡಿಯಲ್ಲಿ ಒಂದೊಂದೂ
ಪುಗ್ಗೆಯ ಮೇಲೂ ಮೃದುವಾಗಿ ಕೈಯಾಡಿಸಿ
ಪರಪರ ಶಬ್ದಕ್ಕೆ ಕಿವಿಯಾನಿಸಿ
ಬಾಗಿಲು ದಾಟುವುದರೊಳಗೆ
ಠುಸ್ಸೆನ್ನುವುದೀ ಪುಗ್ಗೆ, ಜೊತೆಗೆ
ಹಿಗ್ಗಿನ ಬಗ್ಗೆ ಎಂದು ಅಲ್ಲೇ ಪದ ಕಟ್ಟಿ ಹಾಡಿ
ಒಂದು ಪೀಪಿ, ಒಂದು ವಾಚು ಪುಕ್ಕಟೆ ಪಡೆದ

ಬಣ್ಣ ಬಣ್ಣದ ಪರಕಾರಗಳ ತೆಗೆಸಿ
ಪೂರ ಅಂಗಡಿಯನೆ ಎಳೆದಾಡಿಸಿ
ಚೌಕಾಸಿ ಬೆಲೆಯಲ್ಲೇ
ಒಂದು ಗಜ ರವಿಕೆಯ ಬಟ್ಟೆ ಕೊಂಡ

ಕೆಂಪು ನೀರಿನ ಶರಬತ್ತಿನಂಗಡಿಯಲ್ಲಿ
ಗಿಣಿ ಶಾಸ್ತ್ರದವನೊಡನೆ ಹರಕು
ಛತ್ರಿಯ ಅಡಿಯಲ್ಲಿ…
ಕರಡಿ ಮಜಲು ಕುಣಿತದ
ಕರಡಿಯಾಸದವನೊಡನೆ
ಅಲ್ಲಿ…ಇಲ್ಲಿ…ಇಲ್ಲಿ…ಅಲ್ಲಿ
ಜಾತ್ರೆಯ ಉದ್ದಗಲ ಹಬ್ಬಿ ನಿಂತವನು
ಮೋಟು ಬೀಡಿಯ ಸೇದುತ್ತ
ಕಡಲೆಯ-ಪುರಿಯ
ಗುಡ್ಡವ ದಾಟಿ ಹೋದ


ಹೋದ ಎನ್ನುವಷ್ಟರಲ್ಲಿಯೇ
ಬತ್ತಾಸಿನ ಅಂಗಡಿಯಲ್ಲಿ
ಪರಿಚಿತ ನಗೆಯೊಡನೆ ಪ್ರತ್ಯಕ್ಷ!

ಮೆಲ್ಲನೆ ಬಳಿ ಸರಿ ಗೋಣ ಬಗ್ಗಿಸಿ
ಮಗ ಹಸಿದಿದ್ದಾನೆ-
ಹೆಂಡತಿಗೆ ಕಾಯಿಲೆ ಅಂದ
ಬಾಡಿದ ಮುಖ, ಬಸಿದಿತ್ತು ದುಃಖ

ಗಣಪ ಹಸಿದಿದ್ದಾನೆ
ಗಿರಿಜೆಗೆ ಕಾಯಿಲೆ…
ಹೆಂಡತಿ-ಮಕ್ಕಳಿಗಾಗಿ
ಶಿವನಲ್ಲದೆ ಭವಿ ಅಳುವನೆ?!

ಪುಟ್ಟ ಪರ್ಸಿನ ಮೂಲೆ ಮೂಲೆಯನು ತಡವಿ
ರುದ್ರನೊಡ್ಡಿದ ಬೊಗಸೆಗೆ
ಐದರ ನೋಟಿರಿಸಿ ಇಷ್ಟೇ ಅಂದೆ!

ಮಿಂಚಂತ ಹೊಳೆದು
ತಳಾಂಗು ತದಿಗಿಣ ತೋಂ ಎಂದು
ನಾಟ್ಯದ ಮಟ್ಟಿನಲಿ ಕುಣಿದು
ಅರ್ಧ ನಿಮೀಲಿತ ನೇತ್ರವಾಗಿ
ನಟರಾಜನ ಭಂಗಿಯಲ್ಲಿ ನಿಂತುಬಿಟ್ಟ!

ಬಿಟ್ಟ ಬಾಯಿ ಬಿಟ್ಟಂತೆಯೇ
ನೆಟ್ಟ ಕಣ್ಣು ನೆಟ್ಟಂತೆಯೇ
ಎರಡೂ ಕೈ ಜೋಡಿಸಿ
ಮೈದುಂಬಿ ನುಡಿದು ಬಿಟ್ಟೆ…

ಸಾಕ್ಷಾತ್ ಶಿವ…
ಸಾಕ್ಷಾತ್ ಶಿವ!!
*****

Tagged:

One Comment

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...