Home / ಕವನ / ಕವಿತೆ / ನವೋದಯದ ನಲವು : ಜಿ ಎಸ್ ಎಸ್

ನವೋದಯದ ನಲವು : ಜಿ ಎಸ್ ಎಸ್

ನವಿರಾದ ಭಾವದಲೆಗಳ
ಸೀಳುತ್ತಾ ಮುನ್ನುಗ್ಗುತ್ತಿತ್ತು
ನವ್ಯದ ಹಡಗು

ಆಹಾ! ಏನು ಬಿಂಕ, ಬೆಡಗು, ಬಿನ್ನಾಣ
ಕೋಡುಗಲ್ಲಿನ ಮೇಲೆ
ಕಡಲ ಹಕ್ಕಿಗಳಂತೆ ಕೂತು ನೋಡಿದೆವು.

ಕಾರಿರುಳು-
‘ಕರಿಯ ನಭದ ಕಣ್ಗಳಂತೆ
ಅಭಯದೊಂದು ರೂಹಿನಂತೆ
ತೇಲಿಬಿಟ್ಟ ದೀಪದಂತೆ’
ನೂರು ತಾರೆ ಬೆಳಕ ಬೀರಲು
ಪುಟ್ಟ ದೋಣಿಯಲಿ ಕೂತು
ರಾತ್ರಿ-ಹಗಲು ರಾಕ್ಷಸ ಅಲೆಗಳನ್ನು ತಳ್ಳುತ್ತಾ
ಹರಸಾಹಸದಿಂದ ದಡ ಸೇರಿದೆವು.

ಮುಸ್ಸಂಜೆ-
ಆಗಸದಲ್ಲಿ ಬೆಳ್ಳಕ್ಕಿಗಳ ಸಾಲು
‘ದೇವರ ರುಜು’
ಪರವಶತೆಯಿಂದ ನೋಡಿದೆವು.
ಕಣಿವೆಯ ಮುದುಕ
ಕೈ ಮರವಾದ; ಮುನ್ನಡೆದೆವು.
‘ಮೂಡಲ ಮನೆಯಲ್ಲಿ ಮುತ್ತಿನ ನೀರು
ಗಿಡಗಂಟೆಗಳ ಕೊರಳಲ್ಲಿ ಹಕ್ಕಿಗಳ ಹಾಡು’
ತಲೆದೂಗಿದೆವು.

ಶಾನುಭೋಗರ ಮಗಳು
ಕಾಲಿಗೆ ನೀರಿತ್ತು ಕೈತುತ್ತು ನೀಡಿದಳು;
‘ಎನಿತು ಜನ್ಮದಲಿ ಎನಿತು ಜೀವರಿಗೆ
ಎನಿತು ನಾವು ಋಣಿಯೋ’ ತಲೆಬಾಗಿದೆವು.

ಹಾದಿಯ ತುಂಬಾ
ನಗುತ್ತಿತ್ತು ಏಳುಸುತ್ತಿನ ಮಲ್ಲಿಗೆ
‘ಹಚ್ಚನೆ ಹಸುರ ಗಿಡದಿಂದೆಂತು
ಮೂಡಿತ್ತೋ ಬೆಳ್ಳಗೆ’
-ಅನತಿ ದೂರದಲ್ಲೇ ಕಲ್ಲು ಬಂಡೆಯನ್ನೇರಿ
ಅದಾರೋ… ಯಾರವರು, ಯಾರು?
ಎದೆತುಂಬಿ ಹಾಡುತ್ತಿದ್ದರು.

ಹಮ್ಮು-ಬಿಮ್ಮು ಸೋಕದ ಹಾಡು
ನೊಂದ ಜೀವರಿಗೆ ತಂಪನೀಯುವ ಹಾಡು
ಪ್ರೀತಿ-ಸ್ನೇಹಗಳ ಪಸರಿಸುವ ಹಾಡು
ಎಲ್ಲೋ ಅಳುವ ಮಗುವನೂ ಸಂತೈಸುವ ಹಾಡು
ನವ-ನವೀನ ಭಾವದ ಹಾಡು.

ಹಾಡಿನ ಹಾಡಿಯಲ್ಲಿ ಬೀಡುಬಿಟ್ಟು
ಹಾಡಿಗೆ ನಮ್ಮನ್ನೇ ನಾವು ಕೊಟ್ಟು ಕೊಂಡೆವು
ನೂರು ಭಾವದ ಬಾವಿ ಮೊಗೆ ಮೊಗದು
ಸಿಹಿನೀರ ಕುಡಿದೆವು

ಕಡಲನೀಜುವೆನೆಂಬ ಮರುಳ ಹಡಗು
ತನಗೆ ತಾ ಹೊರೆಯಾಗಿ ತಾನೆ ಮುಳುಗುತ್ತಿತ್ತು…
ಅಲೆಯ ಮೇಲೊಂದು ತಾವರೆಯ ಎಲೆ
ಎಲೆಯ ಮೇಲೊಂದು ಪುಟ್ಟ ಹಣತೆ
ತೇಲುತ್ತಿತ್ತು ತನ್ನ ಪಾಡಿಗೆ ತಾನೇ
ನೀಲ ಮೌನದಲ್ಲಿ…
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...