Home / ಲೇಖನ / ಇತರೆ / ಗೆಳೆತನದ ಅಳತೆ

ಗೆಳೆತನದ ಅಳತೆ

ಅದನ್ನು ಅಳೆಯಬಹುದೇ? ಅದು ಒಂದು ಫೌಂಟನ್ ಪೇನಿಗಿಂತ ಉದ್ದವಿಲ್ಲವೆನ್ನುವವರಿವರು. ರಂಗಪ್ಪನೂ ವಾಸುವೂ ಗೆಳೆಯರು. ಅವರ ಗೆಳೆತನವೆಂದರೆ ಊರಲ್ಲೆಲ್ಲ ಹೆಸರಾದುದು. ಇಬ್ಬರೂ ದಿನದ ಇಪ್ಪತ್ತನಾಲ್ಕು ತಾಸುಗಳಲ್ಲಿಯೂ ಒಟ್ಟಿಗೆ ಇರುವರು. ಒಂದು ದಿನ ವಾಸುವಿಗೆ ರಂಗಪ್ಪನ ಮನೆಯಲ್ಲಿ ಊಟವಾದರೆ, ಮತ್ತೊಂದು ದಿನ ರಂಗಪ್ಪನಿಗೆ ವಾಸುವಿನ ಮನೆಯಲ್ಲಿ. ಇವರ ಸ್ನೇಹವು ಊರಲ್ಲಿ ನಿಜಕ್ಕೂ ಗಾದೆಯ ಮಾತಾಗಿ ಹೋಗಿದೆ.

ಒಂದು ದಿನ ವಾಸುವು ರಂಗಪ್ಪನಿಗೆ ಮೇರಿಪಿಕ್ ಫರ್ಡಳ ಚಿತ್ರವಿರುವ ಒಂದು ಪೋಸ್ಟ್ ಕಾರ್ಡನ್ನು ಪ್ರೇಮದಿಂದ, “ಬೇಡದೆ ಕೊಡಲು”, ರಂಗಪ್ಪನ ಪ್ರೇಮವು ಇಮ್ಮಡಿಯಾಗಿ ಉಕ್ಕಿ, “ವಾಸೂ-ನಮ್ಮ ಸ್ನೇಹವು ಜನ್ಮ ಜನ್ಮಕ್ಕೂ ಕಡಿದುಹೋಗಲಾರದು!” ಎಂದನು.

“ನವು ಮುಂದೆ ಎಲ್ಲಿಯಾದರೂ ಹುಳುಗಳಾಗಿ ಹುಟ್ಟಿದರೂ ಒಟ್ಟಿಗೇ ಹುಟ್ಟಿ-ಗೆಳೆತನದಿಂದಲೇ ಇರಬೇಕು!” ಎಂದನು ವಾಸು.

ಇಬ್ಬರೂ ಹೆಚ್ಚಿಗೇನೂ ಮಾತಾಡಲಾರದಾದರು, ಪ್ರೇಮದಿಂದ ಇಬ್ಬರ ಎದೆಗಳೂ ಉಬ್ಬಿ, ಉಸಿರಿಗೇ ಸ್ಥಳವಿರಲಿಲ್ಲ, ಕಂಠಗಳು ಪೂರ್ಣವಾಗಿದ್ದುವು.

ರಂಗಪ್ಪನ ಮನೆಯ ಆಸ್ತಿಯ ಲೆಕ್ಕಗಳನ್ನಿಡುವ ಕರಣೀಕನು ರಾಜಪ್ಪ. ಅವನಿಗೆ ರಂಗಪ್ಪನ ತಂದೆಯಿಂದ, ರಂಗಪ್ಪನಿಂದ, ರಂಗಪ್ಪನ ಸಂಬಂಧಿಕರಿಂದ, ಅತ್ತ ಇತ್ತ ಹೋಗುವಾಗ ತನ್ನನ್ನು ಪರಿಚಯದ ನಗುವಿನಿಂದ ಸನ್ಮಾನಿಸಿದವರಿಂದ ಸಾಲ ಬೇಡುವ ಅಭ್ಯಾಸ. ಅವನು ರಂಗಪ್ಪನ ತಂದೆಯಿಂದ ಪಡೆದ “ಅಡ್ವಾನ್ಸು”, ಅವನನ್ನು ಇನ್ನು ಮೂರು ವರ್ಷಗಳ ತನಕ ದುಡಿದು ಸಲ್ಲಿಸಬೇಕಾದ ಋಣಕಂಭಕ್ಕೆ ಬಂಧಿಸಿತ್ತು. ಅದರ ಮೇಲೆ ಅವನು ಮಾಡುತಿದ್ದುದೆಲ್ಲ “ಸಾಲ”. ರಂಗಪ್ಪನಿಗೆ ಅವನು ಕೊಡಬೇಕಾಗಿದ್ದುದು ಹನ್ನೆರಡಾಣೆಗಳು!

ರಂಗಪ್ಪನು ಆ ಹನ್ನೆರಡು ಆಣೆಗಳಿಗಾಗಿ ಹನ್ನೆರಡು ಯುಗ (ತಿಂಗಳು; – ತಿಂಗಳನ್ನು ರಂಗಪ್ಪನು, ತನ್ನನ್ನಾರಾದರೂ ದುಃಖಗೊಟ್ಟು ಪೀಡಿಸಿದರೆ ‘ಯುಗ’ವೆಂದು ನಾಮಕರಣ ಮಾಡುವನು.) ಪೇಚಾಡಿದನು. ಕೊನೆಗೆ, ಉಪಾಯಗಾಣದೆ, ರಾಜಪ್ಪನಿಗೆ ಬುದ್ಧಿಗಲಿಸಬೇಕೆಂದು, ಆತನ “ವಾಟರ್
ಮೇನ್” ಪೇನನ್ನು ಮೆಲ್ಲನೆ ಎತ್ತಿಬಿಟ್ಟನು.

“ಭದ್ರವಾಗಿಡು!” ಎನ್ನುತ್ತ ರ೦ಗಪ್ಪನು, ಅದನ್ನು ವಾಸುವಿನ ಕೈಯಲ್ಲಿ ಕೊಟ್ಟನು. ಗೆಳೆತನದ ಪ್ರಕಾಶವೆಲ್ಲವೂ ವಾಸುವಿನ ಮುಖದ ಮೇಲೆ ಮಿನುಗಿತು.

‘ಹಣದ ತಗಾದೆ’ ಎನ್ನುತ್ತಿರಲ್ಲ- ಅದು ಹೇಗೆ ಉಂಟಾಗುತ್ತದೆ ಎಂಬುದನ್ನು ಹೇಳುವುದು ತೀರ ಅನಾವಶ್ಯಕ. ನೀವೆಲ್ಲರೂ ಅದನ್ನು ಚೆನ್ನಾಗಿ ಬಲ್ಲಿರಿ; ಅನುಭವಿಸಿರುವಿರಿ. ಹೋಟೇಲಿನ ರಾಮಣ್ಣನು ವಾಸುವನ್ನು ಒಂದು ದಿನ ಹಣಕ್ಕಾಗಿ ಪೀಡಿಸಲು ವಾಸುವ ದಿಕ್ಕುಗೆಟ್ಟು, ಆ ಫೌಂಟನ್ ಪೇನನ್ನು ರಾಮನಾಯಕನೆಂಬಲ್ಲಿ ಒಂದು ರೂಪಾಯಿಗೆ ಒತ್ತೆ ಇಟ್ಟು, ಸಂಕಷ್ಟದಿಂದ ಪಾರಾದನು. ಅಂದೇ, ರಂಗಪ್ಪನು ಬಂದು, “ವಾಸೂ, ಆ ಫೌಂಟೆನ್‍ಪೇನ್ ಎಲ್ಲಿದೆ?” ಎಂದನು.

ಇಂತಹ ಸ್ಥಿತಿಯಲ್ಲಿ ನೀವೇನು ಮಾಡುವಿರಿ?

“ಮಿತ್ರಾ!”-ವಾಸುವಿನ ಕಂಠವು ಗದ್ಗದಿತವಾಯಿತು, “ಮಿತ್ರಾ! ಹೇಳಿದರೆ ನೀನು ನಂಬುವಿಯೋ ಇಲ್ಲವೋ! ಕೊಡಿ ಯಾಲಬೈಲಿನ ಆ ದೊಡ್ಡ ಹಳ್ಳದ ಮೇಲಿನ ಸಂಕವಿಲ್ಲವೇ? ನಿನ್ನೆ ಅದರ ಮೇಲೆ ನಿಂತು ಬಾಗಿ, ನೀರನ್ನು ನೋಡುತಿದ್ದಾಗ….. ‘ಕ್ಲಿಪ್ಪು’ ಸಿಕ್ಕಿಸಿರಲಿಲ್ಲ ಮಿತ್ರಾ… ಅಯ್ಯೋ ದೇವ… ನೀರಿಗೆ ಬಿದ್ದುದನ್ನು ಒಂದು ತಾಸು ಹುಡುಕಿದರೂ ಸಿಕ್ಕಲಿಲ್ಲ!” ಮಂದಾರ ಪುಷ್ಪವನ್ನು ಕಳಕೊಂಡ ಬಕಾವಲಿಯ ಚರ್ಯೆಗಿಂತಲೂ ಕರುಣಾಜನಕ ವಾದ ಚರ್ಯೆಯು ವಾಸುವಿನದು!

ರಂಗಪ್ಪನು ತನ್ನ ಕಿಸೆಯಿಂದ ಫೌಂಟನ್‌ಪೇನನ್ನು ವಾಸುವಿನ ಮುಂದೆ ಹಿಡಿದು ಸ್ಥಿರದೃಷ್ಟಿಯಿಂದ ಅವನನ್ನು ನೋಡುತ್ತ – “ದೇವರು ದೊಡ್ಡವನು; ಮಹಾ ಜಲಧಿಯಿಂದ ಇದನ್ನುದ್ಧರಿಸಿದನು, ರಾಮನಾಯಕನ ಕೈಯಿಂದ ಇದು ನನಗೆ ಸಿಕ್ಕಿತು. ನನ್ನ ಗೆಳೆತನದ ಬೆಲೆ ತಿಳಿಯಿತೇ?”

ವಾಸುವು ಮೌನ!

“ಒಂದು ರೂಪಾಯಿ!”
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...