Home / ಕವನ / ಕವಿತೆ / ಚಂದನಶಿಲ್ಪ

ಚಂದನಶಿಲ್ಪ

ವಿಂಧ್ಯಗಿರಿ ದೇವರು ಕಂದರ್ಪನ ಅವತಾರ
ಪಾದಕ್ಕೆ ಕಮಲ ನೆತ್ತಿಗೆ ಚಂದ್ರ,
ನಿಂತ ನಿಲುವು ರಾಗವೋ ವಿರಾಗವೋ
ರವಿಯೇ ತಾರ ಬುವಿಯೇ ಮಂದ್ರ,
ಕೆಳೆಗೆ ಬೆಳೆದ ಗಿಡಮರಗಳ ನಡುವೆ
ಊಳುವ ಗಾಳಿಯ ಕರುಣಾಕ್ರಂದ,
ಕೊಂಚ ಗದ್ಯ ಇನ್ನೆಲ್ಲ ಪದ್ಯ
ಮರ ಹಿಡಿದ ಫಲವಲ್ಲ ಅಲ್ಲಲ್ಲೇ ನೈವೇದ್ಯ,
ಹಗಲು ಬಿಸಿಲ ಸ್ನಾನ
ರಾತ್ರಿ ಚಿಕ್ಕೆ ಹೊತ್ತ ಕತ್ತಲ ಛತ್ರಿಯಡಿಗೆ
ತಣ್ಣಗೆ ಕಲ್ಲಿನೆದೆಯೊಳಗೆ
ಕೊತ ಕೊತ ಕುದಿಯುವ
ಪೂರ್ವ ಭವಗಳ ಪಾಪಧ್ಯಾನ,
ದೂರಕ್ಕೆ ದೇವರು ಕಲ್ಲು ಸೆಟೆದಂತೆ ಕಾಣುತ್ತಾರೆ;
ಪರೀಕ್ಷಿಸಿ ನೋಡಿ
ನಡುವೆ ಹಠಾತ್ತನೆ ಬೆಚ್ಚುತ್ತಾರೆ.

ವಿಂಧ್ಯಗಿರಿ ದೇವರಿಗೆ ಬಂಧನವಿಲ್ಲದ ಮನೆ
ಅದರ ಇಲ್ಲದ ಬಾಗಿಲನ್ನು
ಹಗಲು ಬಿಚ್ಚುತ್ತದೆ ರಾತ್ರಿ ಮುಚ್ಚುತ್ತದೆ,
ಬಹಳ ಹಿಂದೆ ಅವರ
ಬೆಲ್ಲದ ಗಲ್ಲವನ್ನ ಬೆಳಕಿನ ಇರುವೆ ಕಚ್ಚಿ
ಸುಖದ ನೋವ ಚುಚ್ಚಿ
ಮಣ್ಣು ನರಳಿತು, ಹಣ್ಣು ಮಾಯಿತು;
ಹೊಕ್ಕಳ ಕೆರಳು ಸತ್ತು ಮುಖದಲ್ಲಿ
ಮಕ್ಕಳ ನಗೆ ಹುಟ್ಟಿತು
ಆಗಿಂದ ಅದು

ಬೆಳೆದೇ ಬೆಳೆದು ಬೆಳೆದೇ ಬೆಳೆದು
ಬಂದವರ ಎದೆಯಲ್ಲಿ ಅಕ್ಕಿ ಚೆಲ್ಲುತ್ತದೆ,
ಸಿಕ್ಕಿ ಬಿದ್ದಿದ್ದರೆ ಅಲ್ಲಿ ತಿನ್ನುವ ಹಕ್ಕಿ
ಫಕ್ಕನೆ ಹಿಡಿದು ಮುಗಿಲಿಗೆ ಹಾರಿಸುತ್ತದೆ.

ವಿಂಧ್ಯಗಿರಿ ದೇವರಿಗೆ ರೆಪ್ಪೆಯಿದೆ ಬಡಿಯುವುದಿಲ್ಲ
ಇರಿಯುವಂತೆ ದಿಟ್ಟಿ,
ಧಗಧಗ ಪ್ರಾಯ, ಸುಡುವುದಿಲ್ಲ;
ಪಂಚಾಗ್ನಿ ಮೆಟ್ಟಿದ ಜಟ್ಟಿ,
ಅವರಿಗೆ
ವಸ್ತ್ರ ಕತ್ತಲೆ ಬೆಳಕು ಬೆತ್ತಲೆ
ಸುಡುವ ಸೂರ್‍ಯ ತಂಪು ಕಿತ್ತಲೆ.
ಅಡ್ಡ ನೋಡಿದರೆ
ಮಲಗಿದ ದೇವರ ಎದೆಯಲ್ಲಿ ಅಲಗು
ಉದ್ದ ನೋಡಿದರೆ
ಸೆಟೆದ ವಿಗ್ರಹದ ಕಣ್ಣಲ್ಲಿ ಮಿನುಗು.

ನಡುರಾತ್ರಿ ಭೂಮಿಗೆ ಮಂಪರು:
ಬಾನು ತುಟಿತೆರೆದು
ದೇವಕನ್ಯೆಯರು ಇಳಿದು
ದೇವರ ಮೈಗೆ ಗಂಧ ತೊಡೆಯುತ್ತಾರೆ;
ಹೊಕ್ಕಳಿಗೆ ಮುತ್ತು ಸುರಿದು;
ತೊಡೆಗೆ ಲಟಿಗೆ ತೆಗೆದು
ಪಾದಕ್ಕೆ ದಿಂಡುರುಳಿ ಮುಳು ಮುಳು ಅಳುತ್ತಾರೆ;
ದೇವರ ಕಣ್ಣಲ್ಲಿ ಥಟ್ಟನೆ ದೀಪ ಹತ್ತಿ
ಅಳುವಂತೆ ಉರಿಯುತ್ತದೆ;
ಹದ್ದೊಳಗಿನ ಪಾಪ ಉದ್ದುದ್ದ ಬೆಳೆದು
ತುಟಿಗಳು ಚಲಿಸುತ್ತವೆ.
ಆದರೆ
ತಾವರೆ ಮೆಟ್ಟಿದವರು
ತಿಂಗಳು ಮುಡಿದವರು
ರಾಗಕ್ಕೆ ಮಂಗಳ ಹಾಡಿದವರು
ದೇವರು.
ಮಾತು ಹೊರಡುವ ಮುಂಚೆ ಅಲ್ಲೆ ಹೂತಂತಾಗಿ
ಮೊಳೆತ ಪ್ರಾಣದ ಆಸೆ ಕಮರುತ್ತದೆ,
ಗಾಳಿ
ಸಟೆದ ಕಲ್ಲಿನ ಸುತ್ತ ಚೀರುತ್ತದೆ.

ವಿಶಾಪದ ನಿರೀಕ್ಷೆಯಲ್ಲಿ ದೇವರು ನಿಂತಿದ್ದಾರೆ.
ಒಂದು ದಿನ
ಅಭಯಹಸ್ತ ಮೂಡುತ್ತದೆ
ನಿಜದ ಕೆಚ್ಚ ನೀಡುತ್ತದೆ
ಬಿಲ್ಲು ಬಾಣ ಕೈಗೆ ಕಲಿಸಿ
ಮೈರುಚಿಯನ್ನೆಲ್ಲ ಉರಿಸಿ
ಭಕ್ತವೃಂದ ಸುತ್ತ ಕೊರೆದ ಲಕ್ಷಣಗೆರೆ ಅಳಿಸುತ್ತದೆ;
ಮಾದ ಹುಣ್ಣು ಮತ್ತೆ ಜ್ವಲಿಸಿ
ಸತ್ತ ಕೆರಳು ತಿರುಗಿ ಜನಿಸಿ
ಶಾಪದ ಕೊನೆ ತರುತ್ತದೆ
ಅಸ್ತಿಕಗಣದ ಚೀತ್ಕಾರದ ನಡುವೆ
ದೇವಕವಚ ಸಿಡಿಯುತ್ತದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...