Home / ಕವನ / ಕವಿತೆ / ಚಂದನಶಿಲ್ಪ

ಚಂದನಶಿಲ್ಪ

ವಿಂಧ್ಯಗಿರಿ ದೇವರು ಕಂದರ್ಪನ ಅವತಾರ
ಪಾದಕ್ಕೆ ಕಮಲ ನೆತ್ತಿಗೆ ಚಂದ್ರ,
ನಿಂತ ನಿಲುವು ರಾಗವೋ ವಿರಾಗವೋ
ರವಿಯೇ ತಾರ ಬುವಿಯೇ ಮಂದ್ರ,
ಕೆಳೆಗೆ ಬೆಳೆದ ಗಿಡಮರಗಳ ನಡುವೆ
ಊಳುವ ಗಾಳಿಯ ಕರುಣಾಕ್ರಂದ,
ಕೊಂಚ ಗದ್ಯ ಇನ್ನೆಲ್ಲ ಪದ್ಯ
ಮರ ಹಿಡಿದ ಫಲವಲ್ಲ ಅಲ್ಲಲ್ಲೇ ನೈವೇದ್ಯ,
ಹಗಲು ಬಿಸಿಲ ಸ್ನಾನ
ರಾತ್ರಿ ಚಿಕ್ಕೆ ಹೊತ್ತ ಕತ್ತಲ ಛತ್ರಿಯಡಿಗೆ
ತಣ್ಣಗೆ ಕಲ್ಲಿನೆದೆಯೊಳಗೆ
ಕೊತ ಕೊತ ಕುದಿಯುವ
ಪೂರ್ವ ಭವಗಳ ಪಾಪಧ್ಯಾನ,
ದೂರಕ್ಕೆ ದೇವರು ಕಲ್ಲು ಸೆಟೆದಂತೆ ಕಾಣುತ್ತಾರೆ;
ಪರೀಕ್ಷಿಸಿ ನೋಡಿ
ನಡುವೆ ಹಠಾತ್ತನೆ ಬೆಚ್ಚುತ್ತಾರೆ.

ವಿಂಧ್ಯಗಿರಿ ದೇವರಿಗೆ ಬಂಧನವಿಲ್ಲದ ಮನೆ
ಅದರ ಇಲ್ಲದ ಬಾಗಿಲನ್ನು
ಹಗಲು ಬಿಚ್ಚುತ್ತದೆ ರಾತ್ರಿ ಮುಚ್ಚುತ್ತದೆ,
ಬಹಳ ಹಿಂದೆ ಅವರ
ಬೆಲ್ಲದ ಗಲ್ಲವನ್ನ ಬೆಳಕಿನ ಇರುವೆ ಕಚ್ಚಿ
ಸುಖದ ನೋವ ಚುಚ್ಚಿ
ಮಣ್ಣು ನರಳಿತು, ಹಣ್ಣು ಮಾಯಿತು;
ಹೊಕ್ಕಳ ಕೆರಳು ಸತ್ತು ಮುಖದಲ್ಲಿ
ಮಕ್ಕಳ ನಗೆ ಹುಟ್ಟಿತು
ಆಗಿಂದ ಅದು

ಬೆಳೆದೇ ಬೆಳೆದು ಬೆಳೆದೇ ಬೆಳೆದು
ಬಂದವರ ಎದೆಯಲ್ಲಿ ಅಕ್ಕಿ ಚೆಲ್ಲುತ್ತದೆ,
ಸಿಕ್ಕಿ ಬಿದ್ದಿದ್ದರೆ ಅಲ್ಲಿ ತಿನ್ನುವ ಹಕ್ಕಿ
ಫಕ್ಕನೆ ಹಿಡಿದು ಮುಗಿಲಿಗೆ ಹಾರಿಸುತ್ತದೆ.

ವಿಂಧ್ಯಗಿರಿ ದೇವರಿಗೆ ರೆಪ್ಪೆಯಿದೆ ಬಡಿಯುವುದಿಲ್ಲ
ಇರಿಯುವಂತೆ ದಿಟ್ಟಿ,
ಧಗಧಗ ಪ್ರಾಯ, ಸುಡುವುದಿಲ್ಲ;
ಪಂಚಾಗ್ನಿ ಮೆಟ್ಟಿದ ಜಟ್ಟಿ,
ಅವರಿಗೆ
ವಸ್ತ್ರ ಕತ್ತಲೆ ಬೆಳಕು ಬೆತ್ತಲೆ
ಸುಡುವ ಸೂರ್‍ಯ ತಂಪು ಕಿತ್ತಲೆ.
ಅಡ್ಡ ನೋಡಿದರೆ
ಮಲಗಿದ ದೇವರ ಎದೆಯಲ್ಲಿ ಅಲಗು
ಉದ್ದ ನೋಡಿದರೆ
ಸೆಟೆದ ವಿಗ್ರಹದ ಕಣ್ಣಲ್ಲಿ ಮಿನುಗು.

ನಡುರಾತ್ರಿ ಭೂಮಿಗೆ ಮಂಪರು:
ಬಾನು ತುಟಿತೆರೆದು
ದೇವಕನ್ಯೆಯರು ಇಳಿದು
ದೇವರ ಮೈಗೆ ಗಂಧ ತೊಡೆಯುತ್ತಾರೆ;
ಹೊಕ್ಕಳಿಗೆ ಮುತ್ತು ಸುರಿದು;
ತೊಡೆಗೆ ಲಟಿಗೆ ತೆಗೆದು
ಪಾದಕ್ಕೆ ದಿಂಡುರುಳಿ ಮುಳು ಮುಳು ಅಳುತ್ತಾರೆ;
ದೇವರ ಕಣ್ಣಲ್ಲಿ ಥಟ್ಟನೆ ದೀಪ ಹತ್ತಿ
ಅಳುವಂತೆ ಉರಿಯುತ್ತದೆ;
ಹದ್ದೊಳಗಿನ ಪಾಪ ಉದ್ದುದ್ದ ಬೆಳೆದು
ತುಟಿಗಳು ಚಲಿಸುತ್ತವೆ.
ಆದರೆ
ತಾವರೆ ಮೆಟ್ಟಿದವರು
ತಿಂಗಳು ಮುಡಿದವರು
ರಾಗಕ್ಕೆ ಮಂಗಳ ಹಾಡಿದವರು
ದೇವರು.
ಮಾತು ಹೊರಡುವ ಮುಂಚೆ ಅಲ್ಲೆ ಹೂತಂತಾಗಿ
ಮೊಳೆತ ಪ್ರಾಣದ ಆಸೆ ಕಮರುತ್ತದೆ,
ಗಾಳಿ
ಸಟೆದ ಕಲ್ಲಿನ ಸುತ್ತ ಚೀರುತ್ತದೆ.

ವಿಶಾಪದ ನಿರೀಕ್ಷೆಯಲ್ಲಿ ದೇವರು ನಿಂತಿದ್ದಾರೆ.
ಒಂದು ದಿನ
ಅಭಯಹಸ್ತ ಮೂಡುತ್ತದೆ
ನಿಜದ ಕೆಚ್ಚ ನೀಡುತ್ತದೆ
ಬಿಲ್ಲು ಬಾಣ ಕೈಗೆ ಕಲಿಸಿ
ಮೈರುಚಿಯನ್ನೆಲ್ಲ ಉರಿಸಿ
ಭಕ್ತವೃಂದ ಸುತ್ತ ಕೊರೆದ ಲಕ್ಷಣಗೆರೆ ಅಳಿಸುತ್ತದೆ;
ಮಾದ ಹುಣ್ಣು ಮತ್ತೆ ಜ್ವಲಿಸಿ
ಸತ್ತ ಕೆರಳು ತಿರುಗಿ ಜನಿಸಿ
ಶಾಪದ ಕೊನೆ ತರುತ್ತದೆ
ಅಸ್ತಿಕಗಣದ ಚೀತ್ಕಾರದ ನಡುವೆ
ದೇವಕವಚ ಸಿಡಿಯುತ್ತದೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...