Home / ಕವನ / ಕವಿತೆ / ದನಿಗಳು

ದನಿಗಳು

ನಡುರಾತ್ರಿಯ ನಾಭಿಯಲ್ಲಿ
ನೆಲ ಜಲ ಮಾತಾಡಿತ ?
ಹಗಲಿನ ಹದ್ದುಗಳು ಹಾರಿ
ಹಮ್ಮಿಗೆ ಗದ್ಗದ ಮೂಡಿ
ತರ್ಕ ಚಿತೆಗೆ ಬಿದ್ದಿತ ?
ತಳದ ಹುತ್ತ ಬಾಯಿ ತೆರೆದು
ನಿದ್ದೆಯಿದ್ದ ನಾಗರಾಗ
ಮೂಕಸನ್ನೆ ತಾಕಲಾಡಿ ಎಚ್ಚರಕ್ಕೆ ಚೆಲ್ಲಿತ ?
ಬಾನಿನ ಮಹೇಂದ್ರಕಾಯ
ಅಸಂಖ್ಯ ನೇತ್ರವ ಬಿಚ್ಚಿ
ಉಳುಕಿದ ಮಣ್ಣೆದೆಯನ್ನು ಚಂದ್ರಹಸ್ತ ಸವರಿತ ?

ಬಂದಿರೇ, ಆಹ!
ಬನ್ನಿರೇ
ಏಕಾಂತಕ್ಕೆಳೆವ ಒಗಟುಗಳೇ
ಬಗೆಹರಿಯದ ಜಿಗಟುಗಳೇ
ಯಾಕೆ ಹೀಗೆ ಕಾಡುತ್ತೀರಿ ?
ಮೋಡದಲ್ಲಿ ನಿಧಾನ ಮೂಡುವ ಅರ್ಥಾತೀತ ಗೂಢಗಳೆ
ಹೊಳೆ ಬೆಟ್ಟ ಬಿಕ್ಕಿದ ಅನುಕ್ತ ಗಾಢಗಳೆ
ನೇಗಿಲು ಹೂಡುತ್ತೀರಿ ಯಾಕೆ ಎದೆಗೆ ನಿಷ್ಕರುಣಿಗಳೆ?
ನಿದ್ದೆ ಹಬ್ಬದ ನೋವ ಬೆಳೆಯುತ್ತೀರಿ ಯಾಕೆ ?
ತಬ್ಬಿದ ಮಣ್ಣಿನ ಸುಖಕ್ಕೆ ಮುಳಿಯುತ್ತೀರಿ ಯಾಕೆ ?
ನಿಂತ ಮುಖ ನಿಂತಂತೆ ಚಲಿಸುವ ನೀವು
ದಯಾಕ್ಷಿ ಭಯಗಳೆ
ರಾಕ್ಷಸ ನಯಗಳೆ
ಲಕ್ಷಣಗೆರೆ ದಾಟಿಸಬರುವಿರೆ ?
ವ್ಯವಹಾರ ಕೊಯಿಲಾಗುವ ಮುನ್ನ
ಮಳೆ ನಷ್ಟದಲ್ಲಿ ಹುಟ್ಟುವ
ಹೆಸರಿಲ್ಲದ ಇಷ್ಟಗಳೆ
ಯಾಕೆ ಕಾಡುತ್ತೀರಿ ಹೀಗೆ ?
ಕಾಡಿ, ಮುಖ ದೀನಮಾಡಿ
ಬೇಡುವ ಧಾಟಿಯಲ್ಲಿ ನೀಡಿಬಿಡುತ್ತೀರಿ ಹೇಗೆ ?

ಉರಿವ ಹಗಲ ಆರಿಸಿದ
ಇರುಳ ಪನ್ನೀರೇ ಘನಿಸಿತೆ ?
ಕಿರುತಿಂಗಳ ಕೊರಗುಬೆಳಕಲ್ಲಿ ಮುಗಿಲು
ಮುಡಿಗಡ್ಡದ ಮುನಿಗಳ ರೂಪಿಸಿತೆ ?
ಮುನಿಗಳೆ!
ಪಾತಾಳ ಜಯಿಸಿದ ದನಿಗಳೆ
ನಿಮ್ಮ ಕೈಕಾಲಿಗೆ ನೀರೆರೆಯಲಿ ಹೇಗೆ
ಕಲಿತ ವೇದಾಂತವೆಲ್ಲ ಬಚ್ಚಲ ಕೊಚ್ಚೆ;
ನಿಮಗೆ ಏನ ತೊಡಿಸಲಿ ಹೇಗೆ
ನಕ್ಷತ್ರಗಂಗೆ ಉದ್ದಸಾಲದ ಕಚ್ಚೆ;
ಕ್ಷಣಸತ್ಯದ ಹೆಣ ಮೆಟ್ಟಿ ಬರುವ
ಅಮೂರ್ತ ಗುರಿಗಳೆ
ಕಡಲೊಡಲಿಗೆ ತಣ್ಣಗೆ ಹರಿದು
ಗಿರಿನೆತ್ತಿ ಕಾರುವ ವಿರೋಧದುರಿಗಳೆ
ಕೋಟ್ಯಂತರ ಇಳೆಕಣಗಳ ಗುಡಿಸುವ ಬರಲುಗಳೆ
ಮಣ್ಣನಾಲಿಗೆಯಿಂದ ಹಿಡಿಯಲಿ ಹೇಗೆ ?
ನಿಮ್ಮನ್ನು ಹಿಡಿಯದ ನುಡಿ
ಬರಿ ನಾದದ ಬೇಗೆ.

ಗೋಳದ ಗುರುತ್ವದಾಚೆಗೆ
ಗಿರಿತೂಕವೆ ಜಳ್ಳು,
ಬೆಳಕಿನ ವೇಗಕ್ಕೆಳೆದರೆ
ಕಾಯದ ರೂಪವೆ ಸುಳ್ಳು,
ಬಣ್ಣಗಳೋ ಕಣ್ಣ ಭ್ರಮೆ
ಕಣ್ಣೋ ಅದಕ್ಕೆ ನಲಿಯುವ ಬೆಳ್ಳು,
ಇಲ್ಲಿಯ ಹಗಲು ಎಲ್ಲಿಗೊ
ಇರುಳೂ ಅಲ್ಲವಾಗಿ
ಈವರೆಗೆ ಕಂಡದ್ದೆಲ್ಲ
ಕಾಣದ್ದರ ನೆರಳು.

ಎಂಬ ಬಗೆ ಕವಿಸುವ
ಕವಿಸಿ ಕುದಿಸುವ
ಕುದಿಸಿ ಉದಿಸುವ ಧಗ ಧಗ ಚಂದ್ರರೆ
ಸತ್ಯದ ಮೈಯಲ್ಲಿ ಸುಳಿಯುವ
ಸುಳ್ಳಿನ ಚಹರೆ ನೀಡಿ ಯಾಕೆ
ಶಂಕೆಯಲ್ಲಿ ಅದ್ದುತ್ತೀರಿ ?
ಬೆಳಕು ಹರಿಯಲು ಕರಗುವ
ಅಸ್ಪಷ್ಟ ಚೀರುಗಳೆ
ಅಯ್ಯೋ!
ಯಾಕೆ ಹಾಗೆ ತೀರುತ್ತೀರಿ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...