Home / ಕವನ / ಕವಿತೆ / ದನಿಗಳು

ದನಿಗಳು

ನಡುರಾತ್ರಿಯ ನಾಭಿಯಲ್ಲಿ
ನೆಲ ಜಲ ಮಾತಾಡಿತ ?
ಹಗಲಿನ ಹದ್ದುಗಳು ಹಾರಿ
ಹಮ್ಮಿಗೆ ಗದ್ಗದ ಮೂಡಿ
ತರ್ಕ ಚಿತೆಗೆ ಬಿದ್ದಿತ ?
ತಳದ ಹುತ್ತ ಬಾಯಿ ತೆರೆದು
ನಿದ್ದೆಯಿದ್ದ ನಾಗರಾಗ
ಮೂಕಸನ್ನೆ ತಾಕಲಾಡಿ ಎಚ್ಚರಕ್ಕೆ ಚೆಲ್ಲಿತ ?
ಬಾನಿನ ಮಹೇಂದ್ರಕಾಯ
ಅಸಂಖ್ಯ ನೇತ್ರವ ಬಿಚ್ಚಿ
ಉಳುಕಿದ ಮಣ್ಣೆದೆಯನ್ನು ಚಂದ್ರಹಸ್ತ ಸವರಿತ ?

ಬಂದಿರೇ, ಆಹ!
ಬನ್ನಿರೇ
ಏಕಾಂತಕ್ಕೆಳೆವ ಒಗಟುಗಳೇ
ಬಗೆಹರಿಯದ ಜಿಗಟುಗಳೇ
ಯಾಕೆ ಹೀಗೆ ಕಾಡುತ್ತೀರಿ ?
ಮೋಡದಲ್ಲಿ ನಿಧಾನ ಮೂಡುವ ಅರ್ಥಾತೀತ ಗೂಢಗಳೆ
ಹೊಳೆ ಬೆಟ್ಟ ಬಿಕ್ಕಿದ ಅನುಕ್ತ ಗಾಢಗಳೆ
ನೇಗಿಲು ಹೂಡುತ್ತೀರಿ ಯಾಕೆ ಎದೆಗೆ ನಿಷ್ಕರುಣಿಗಳೆ?
ನಿದ್ದೆ ಹಬ್ಬದ ನೋವ ಬೆಳೆಯುತ್ತೀರಿ ಯಾಕೆ ?
ತಬ್ಬಿದ ಮಣ್ಣಿನ ಸುಖಕ್ಕೆ ಮುಳಿಯುತ್ತೀರಿ ಯಾಕೆ ?
ನಿಂತ ಮುಖ ನಿಂತಂತೆ ಚಲಿಸುವ ನೀವು
ದಯಾಕ್ಷಿ ಭಯಗಳೆ
ರಾಕ್ಷಸ ನಯಗಳೆ
ಲಕ್ಷಣಗೆರೆ ದಾಟಿಸಬರುವಿರೆ ?
ವ್ಯವಹಾರ ಕೊಯಿಲಾಗುವ ಮುನ್ನ
ಮಳೆ ನಷ್ಟದಲ್ಲಿ ಹುಟ್ಟುವ
ಹೆಸರಿಲ್ಲದ ಇಷ್ಟಗಳೆ
ಯಾಕೆ ಕಾಡುತ್ತೀರಿ ಹೀಗೆ ?
ಕಾಡಿ, ಮುಖ ದೀನಮಾಡಿ
ಬೇಡುವ ಧಾಟಿಯಲ್ಲಿ ನೀಡಿಬಿಡುತ್ತೀರಿ ಹೇಗೆ ?

ಉರಿವ ಹಗಲ ಆರಿಸಿದ
ಇರುಳ ಪನ್ನೀರೇ ಘನಿಸಿತೆ ?
ಕಿರುತಿಂಗಳ ಕೊರಗುಬೆಳಕಲ್ಲಿ ಮುಗಿಲು
ಮುಡಿಗಡ್ಡದ ಮುನಿಗಳ ರೂಪಿಸಿತೆ ?
ಮುನಿಗಳೆ!
ಪಾತಾಳ ಜಯಿಸಿದ ದನಿಗಳೆ
ನಿಮ್ಮ ಕೈಕಾಲಿಗೆ ನೀರೆರೆಯಲಿ ಹೇಗೆ
ಕಲಿತ ವೇದಾಂತವೆಲ್ಲ ಬಚ್ಚಲ ಕೊಚ್ಚೆ;
ನಿಮಗೆ ಏನ ತೊಡಿಸಲಿ ಹೇಗೆ
ನಕ್ಷತ್ರಗಂಗೆ ಉದ್ದಸಾಲದ ಕಚ್ಚೆ;
ಕ್ಷಣಸತ್ಯದ ಹೆಣ ಮೆಟ್ಟಿ ಬರುವ
ಅಮೂರ್ತ ಗುರಿಗಳೆ
ಕಡಲೊಡಲಿಗೆ ತಣ್ಣಗೆ ಹರಿದು
ಗಿರಿನೆತ್ತಿ ಕಾರುವ ವಿರೋಧದುರಿಗಳೆ
ಕೋಟ್ಯಂತರ ಇಳೆಕಣಗಳ ಗುಡಿಸುವ ಬರಲುಗಳೆ
ಮಣ್ಣನಾಲಿಗೆಯಿಂದ ಹಿಡಿಯಲಿ ಹೇಗೆ ?
ನಿಮ್ಮನ್ನು ಹಿಡಿಯದ ನುಡಿ
ಬರಿ ನಾದದ ಬೇಗೆ.

ಗೋಳದ ಗುರುತ್ವದಾಚೆಗೆ
ಗಿರಿತೂಕವೆ ಜಳ್ಳು,
ಬೆಳಕಿನ ವೇಗಕ್ಕೆಳೆದರೆ
ಕಾಯದ ರೂಪವೆ ಸುಳ್ಳು,
ಬಣ್ಣಗಳೋ ಕಣ್ಣ ಭ್ರಮೆ
ಕಣ್ಣೋ ಅದಕ್ಕೆ ನಲಿಯುವ ಬೆಳ್ಳು,
ಇಲ್ಲಿಯ ಹಗಲು ಎಲ್ಲಿಗೊ
ಇರುಳೂ ಅಲ್ಲವಾಗಿ
ಈವರೆಗೆ ಕಂಡದ್ದೆಲ್ಲ
ಕಾಣದ್ದರ ನೆರಳು.

ಎಂಬ ಬಗೆ ಕವಿಸುವ
ಕವಿಸಿ ಕುದಿಸುವ
ಕುದಿಸಿ ಉದಿಸುವ ಧಗ ಧಗ ಚಂದ್ರರೆ
ಸತ್ಯದ ಮೈಯಲ್ಲಿ ಸುಳಿಯುವ
ಸುಳ್ಳಿನ ಚಹರೆ ನೀಡಿ ಯಾಕೆ
ಶಂಕೆಯಲ್ಲಿ ಅದ್ದುತ್ತೀರಿ ?
ಬೆಳಕು ಹರಿಯಲು ಕರಗುವ
ಅಸ್ಪಷ್ಟ ಚೀರುಗಳೆ
ಅಯ್ಯೋ!
ಯಾಕೆ ಹಾಗೆ ತೀರುತ್ತೀರಿ!
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...