Home / ಕವನ / ಕವಿತೆ / ಅಣ್ಣ ಬಾರೊ

ಅಣ್ಣ ಬಾರೊ

ಅಣ್ಣ ಬಾರೊ ಬಸವಣ್ಣ ಬಾರೊ
ಈ ಜನರ ಕಣ್ಣ ತೆರೆಯೋ
ಬಣ್ಣ ಬಾಳು ಬರಿ ಹಾಳು ಹಾಳು
ಈ ಕಣ್ಣ ಪೊರೆಯ ಹರಿಯೋ || ೧ ||

ಕೊಳೆತು ನಿಂತು ನೀರಾದ ಭೇದ
ನೂರಾರು ತಳೆದ ಜನರ
ಕೆರಳಿ ಗದ್ದರಿಸಿ ತಿಳಿಸಿ ಉದ್ಧರಿಸಿ
ಕಾಯ್ದೆ ಅಂದು ಅವರ || ೨ ||

ಬ್ರಾಹ್ಮಣಾಗಿ ನೀ ಹುಟ್ಟಿ ಬಂದರೂ
ಕುಲದ ಜಡತೆ ನೋಡಿ
ಬ್ರಹ್ಮವನ್ನೆ ಮರೆತಂಥ ಬ್ರಾಹ್ಮಣರ
ಬಣ್ಣ ಬಯಲು ಮಾಡಿ || ೩ ||

ಕಟ್ಟು ಕಥೆಯ ಹೆಣೆಹೆಣೆದು ಸುಳ್ಳೆ
ತಾವ್ ಹೂಟ್ಟೆ ಹೊರೆಯುವವರ
ತಟ್ಟಿ ಬೈದು ಈ ರಟ್ಟೆ ಮುರಿದು
ದುಡಿಯೆಂದು ಪೇಳ್ದ ಧೀರ || ೪ ||

ಸಂಗಮೇಶ್ವರನ ಸಂಗದಲ್ಲಿ
ಲಿಂಗಾಂಗ ಪರಿಯನರಿತು
ಲಿಂಗಧರಿಸಿ ನಿಸ್ಸಂಗಿಯಾದೆ ನೀ
ಭಂಗ ಭವವ ಮರೆತು || ೫ ||

ಮನುಜರೆಲ್ಲ ಒಂದೆಂದು ಸಾರಿ
ಮನುಕುಲವ ಬೆಳಗ ಬಂದೆ
ಹೊಲಸುಗೈವ ಹೊಲೆಯರನು ಹಳಿದೆ
ಕುಲ ಜನಿಸಿದ್ದಲ್ಲವೆಂದೆ || ೬ ||

ಹುಲ್ಲು ದೇವರು ಕಲ್ಲು ದೇವರೆಂದೆಂದು
ಬೇಧವಿರಲು
ಎಲ ದೇವರೂ ಒಂದೆ ತಾನೆ
ಈಶ್ವರನು ಒಡೆಯನಿರಲು ||೭||

ಅಲ್ಲಿ ಇಹನು ಇಲ್ಲಿಹನು ದೇವ
ವಿಶ್ವವನು ತುಂಬಿದವನು
ಇಲ್ಲಿ ಮನದಿ ಇಹನೆಂದು ತನುವಿನಲಿ
ಲಿಂಗ ಮೆರೆಸಿದವನು (ಮಹಲಿಂಗ ಮೆರೆಸಿದವನು) || ೮ ||

ಕಾಮ ಸುಟ್ಟು ಬೂದಿಯನೆ ಧರಿಸಿ
ಕಾಮಾರಿಯಾದ ಶಿವನ
ನೇಮ ನಡೆಸಲ್ಕೆ ಬೂದಿ ತಳೆದೆ
ವಿಭೂತಿ ಎಂದೆ ಅದನ || ೯ ||

ಇಬ್ಬರ್‌ಹೆಂಡಿರೂ ಎರಡು ಕಣ್ಣಿನೊಲು
ಇರಲು ಗಂಗ ನೀಲಾ
ಬಳಸಿ ಬ್ರಹ್ಮಚಾರ್ಯದೆ ಉಂಡು
ಉಪವಾಸಿ ಬಹ್ಮಶೀಲಾ || ೧೦ ||

ಮುಳ್ಳ ಮಕುಟವದು ಮಂತ್ರಿಪದವಿ
ಬಿಜ್ಜಳನ ನೆರಳಿನಲ್ಲಿ
ಹೂವಿನಂತೆ ಕೈಗೊಂಡೆ ಕಂಡೆ
ಪರತತ್ವ ಇಹದಲಿಲ್ಲಿ || ೧೧ ||

ಹಣದ ಕಣಜವೇ ನಿನ್ನದಾಗಿರಲು
ಜನರ ಸೇವೆಗಾಯ್ತು
ಹಣದ ಭಂಡಾರ ಭಕುತಿ ಭಂಡಾರ
ನಿನ್ನ ಕೈಯಲಾಯ್ತು || ೧೨ ||

ಶಿವನ ದೂತನೇ ಬಂದು ಭುವಿಯ
ಕೈಲಾಸವಾಗಿ ಮಾಡೆ
ಶರಣ ಸಂಕುಳಿಯು ಮೂಲೆ
ಮೂಲೆಯಿಂದಿಲ್ಲಿ ಬಂದು ಕೂಡೆ || ೧೩ ||

ಕರ್ಮ ಮಾಡುವುದೇ ಧರ್ಮವೆಂದೆ
ಕಾಯಕವೆ ಶಿವನ ಕಾರ್ಯ
ತಿಳಿದು ಏಳೆ ಜನ ಮೊಳಗೆ ಎಲ್ಲಿಡೆಗೆ
ಮಹಾಮನೆಯ ತೂರ್ಯ || ೧೪ ||

ತಿಳಿವು ಲಿಂಗ ಮನ ಒಳವು ಲಿಂಗ
ತನು ಮಾಳ್ಪ ಕೆಲಸ ಲಿಂಗ
ಶಾಂತಿ ಶಿವನು ಸಮಬುದ್ಧಿ ಶಿವನು
ಸಹಬಾಳ್ವೆ ಶಿವನ ಸಂಗ || ೧೫ ||

ಜನಮನವು ತೊಳೆದು ತಿಳಿಯಾಯ್ತು ತನುವು
ಕೃತಿಯಲ್ಲಿ ಒಂದೆ ಆಯ್ತು
ಮಾಡಿದ್ದ ಮಡಿಯು ಆಡಿದ್ದ ವಚನ
ಮಹಪೂರ ರಚನೆಗಾಯ್ತು || ೧೬ ||

ಎಲ್ಲ ಜಾತಿಗಳ ಕೂಡಿಸಿಟ್ಟು
ಆದರ್ಶ ಕುಲವ ಮಾಡಿ
ಅನುಭವದ ಕಡೆತ ಅನುಭಾವವಾಗಿ
ಕಲ್ಯಾಣ ನಗರ ನೋಡಿ || ೧೭ ||

ಅಕ್ಕ ಬರಲು ಕಕ್ಕಯ್ಯ ಬಂದ
ಅಲ್ಲಮನು ಒಲಿದು ಬಂದ
ಮಾಚಿದೇವ ಬೌಡಯ್ಯ ಮತ್ತೆ
ಹರಳಯ್ಯರೆಲ್ಲರಿಂದ || ೧೮ ||

ಬೊಮ್ಮಿದೇವನಾ ಚಿಕ್ಕ ದೇವ
ಮಧುವರಸ ಕಿನ್ನರಯ್ಯ
ಮಾರಿದೇವ ಮುಂತಾದ ಮಹಿಮರು
ಎಲ್ಲ ನೆರೆದರಯ್ಯ || ೧೯ ||

ವಚನ ಹಾಡಿದರು ಮಥನ ಮಾಡಿದರು
ಮನದಿ ಶಿವನ ಕಂಡು
ಹೆಣ್ಣು ಮಕ್ಕಳೂ ಸಭೆಯ ಬೆಳಗಿದರು
ಅತ್ಮ ಸಿರಿಯನುಂಡು || ೨೦ ||

ಬೆಳಕು ಹಬ್ಬಿಸಲು ಹೆಣಗುವಂಥ
ದೀಪಕ್ಕೆ ಕಪ್ಪು ಮುಚ್ಚಿ
ಕತ್ತಲಾಯ್ತು ಸಿರಿ ಎತ್ತ ಹೋಯ್ತು
ಬರಿ ಬಯಲ ಭಾವನೆಚ್ಚಿ || ೨೧ ||

ಕಲ್ಯಾಣ ಉರಿದು ಇಲ್ಲಾಣವಾಯ್ತು
ಮತ ಬೇಧ ತೀವ್ರವಾಗಿ
ಕೂಡಲದಿ ನೀನು ಕೂಡಿದೆಯೊ ಶಿವನ
ಹಣ್ಣಾಗಿ ಕೊನೆಗೆ ಮಾಗಿ || ೨೨ ||

ಎಂಟು ನೂರು ವರ್ಷಗಳು ಕಳೆದರು
ಗಂಟಾಗಲಿಲ್ಲ ಬಾಳು
ನಿನ್ನ ಬೋಧ ಬರಿ ಬೂದಿಯಾಗಿ
ಮೈ ಬಳಿಯಲಾಯ್ತು ಧೂಳು || ೨೩ ||

ಮೇಲ್ಮೆ ಸಾಧಿಸುತ ಬಂದ ಪುರೋಹಿತ
ವರ್ಗಗಳ ಒಡೆವ ನೀತಿ
ಹೊಡೆದಾಟಕೊಂದು ನೆಪವಾಗಿ ಲಿಂಗ
ಜನಿವಾರ ಭೇದ ರೀತಿ || ೨೪ ||

ನಿನ್ನ ತತ್ವ ಕೃತಿಗಳನೆ ಮರೆತ
ಬರಿ ಬಾಯಿ ಮಾತಿನಲ್ಲಿ
ಬಣ್ಣಗೆಟ್ಟ ಈ ಜನರನೆತ್ತು ಬಾ
ಜನ್ಮವೆತ್ತಿ ಇಲ್ಲಿ (ನರ ಜನ್ಮವೆತ್ತಿ ಇಲ್ಲಿ) || ೨೫ ||
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...