Home / ಕವನ / ಕವಿತೆ / ಬಸವನೆಂದರೆ ಒಂದು ವ್ಯಕ್ತಿಯಲ್ಲ

ಬಸವನೆಂದರೆ ಒಂದು ವ್ಯಕ್ತಿಯಲ್ಲ

ಬಸವನೆಂದರೆ ಒಂದು ವ್ಯಕ್ತಿಯಲ್ಲ
ಯಾವುದಕು ಹೋಲಿಸಲು ಸಾಟಿಯಲ್ಲ || ಪ ||

ಯುಗಯುಗದ ತಪವೆಲ್ಲ ಸಿದ್ದಿಯಾಕೃತಿಯಾಗಿ
ಬಸವಣ್ಣನೆಂಬ ರೂಪವ ತಳೆಯಿತು
ಯುಗಯುಗಗಳನು ಮೀರಿ ನಿಂತಿರುವ ದರ್ಶನಕೆ
ಬಸವ ನಿನ್ನಯ ದ್ವನಿಯು ತಾ ಮೊಳಗಿತು ||ಅ.ಪ.||

ಬಸವನೆಂದರೆ ಬೆಳಕು ಬರಿಯ ಮಿಣುಬೆಳಕಲ್ಲ
ಕಣ್ಣು ಕೋರೈಸುವ ಮಿಂಚು ವಿದ್ಯುತ್ತು
ಹಿಂದೆ ಶತಮಾನಗಳ ಕತ್ತಲೆಯು ಕಳೆದಿತ್ತು
ಮುಂದೆ ಶತಮಾನಗಳ ತೊಳಗಿ ಬೆಳಗಿತ್ತು || ೧ ||

ಆ ಬೆಳಕಿನಲ್ಲಿ ಹೊಸ ಧರ್ಮವೆ ಉದಿಸಿತ್ತು
ಕಿರಿಯ ಮತ ಧರ್ಮಗಳು ಮರೆಯಾದವು
ಆ ಬೆಳಕಿನಲ್ಲಿಯೇ ಕವಿಯಾಗಿ ಶರಣ ಗಣ
ಹೊಸದು ಮನ್ವಂತರದ ಸಿರಿಯಾದವು || ೨ ||

ಬಸವನೆಂದರೆ ಬಳ್ಳಿ ಹಬ್ಬಿತ್ತು ನಾಡೆಲ್ಲ
ಕರುನಾಡ ತೋಟದಲಿ ತಾನೆ ತಾನು
ಕಳೆ ಕಸುವು ನಶಿಸಿದವು ಹೊಸ ಹೂವು ಅರಳಿದವು
ಸಿರಿಕಂಪು ಮಾಧುರ್ಯ ಎಂಥ ಜೇನು || ೩ ||

ಜಾನಪದ ಸೋಗಡನ್ನು ಮಣ್ಣಿನೊಳ ಕಸುವನ್ನು
ಹೀರಿ ಜನಮನವನದಿ ವ್ಯಾಪಿಸಿತ್ತು
ನಡೆನುಡಿಯ ಬಳಸಿತ್ತು ತಿದ್ದಿತ್ತು ಬೆಳೆಸಿತ್ತು
ತನಿಹಣ್ಣು ರಸವಾಗಿ ರೂಪಿಸಿತ್ತು || ೪ ||

ಬಸವನೆಂದರೆ ಹೊಳೆಯು ಬರಿಯ ಕಿರು ಹೊಳೆಯಲ್ಲ
ಭೋರ್ಗರೆವ ಮಹಾಲಿಂಗ ಭಾವಧಾರೆ
ಕೂಡಿದ್ದ ಗತಕಾಲ ಕಶ್ಮಲವ ಕೊಚ್ಚುತ್ತ
ತಿಳಿವು ತಿಳಿ ಹೊನಲಾಗಿ ಜೀವಧಾರೆ || ೫ ||

ಬರಡಾದ ಮಾನವತೆ ತಂಪು ಜಲವನು ಹೀರಿ
ಚಿಗುರೊಡೆದು ಆನಂದ ಪಲ್ಲವಿಸಿತು
ತಿಳಿಜಲದಿ ಮಿಂದು ಪರಿಶುದ್ಧ ಜೀವದ ರಾಶಿ
ಹಾಡು ಎದೆಯೊಳಗಿಂದ ಹೊಮ್ಮಿಸಿತು || ೬ ||

ಬಸವನೆಂದರೆ ಬೆಂಕಿ ಪಾಪಗಳನುರಿಸಿತ್ತು
ಜಾತಿ ಮತ ಭೇದಗಳ ಸುಟ್ಟು ಹಾಕಿ
ಮೌಢ್ಯ ಹುಸಿಗಳು ಬೂದಿ ಅಜ್ಞಾನ ನಶಿಸಿತ್ತು
ದುಷ್ಟ ದೌರ್ಜನ್ಯಗಳ ಮಟ್ಟ ಹಾಕಿ || ೭ ||

ವಿಷಮತೆಯ ಅವಲೋಹ ಸುಟ್ಟುರಿದು ಕರಕಾಗಿ
ಚೊಕ್ಕ ಚಿನ್ನದ ಸಮತೆ ನೆಲೆಗೊಂಡಿತು
ದೌರ್ಬಲ್ಯ ಹೇಡಿತನ ಆಲಸ್ಯ ಸಣ್ಣತನ
ಕೆಟ್ಟ ಹುಳುಗಳ ಬಳಗ ಕೆಟ್ಟೋಡಿತು || ೮ ||

ಬಸವನೆಂದರೆ ಬಯಲು ಕೊನೆಯಿಲ್ಲದಾಕಾಶ
ಮಾನವನ ಉತ್ತುಂಗ ಸಿದ್ದಿ ಕಳಶ |
ಭುವಿ ಬಾನುಗಳನೊಂದು ಮಾಡುತ್ತ ನಿಂತಂಥ
ಪಾರಮಾರ್ಥದ ಗುರಿಯು ತುರೀಯಾಶ || ೯ ||

ಕಾಯಕ್ಕೆ ಮಿತಿಯುಂಟು ಜೀವಕ್ಕೆ ಗತಿಯುಂಟು
ವಿಶ್ವವ್ಯಾಪೀ ಭಾವ ಬಯಲ ಬೆರಗು
ತಿಳಿದಂತೆ ಹೊಳೆ ಹೊಳೆದು ಅರಿವನ್ನು ಬೆಳೆಸುವುದು
ತಿಳಿಯುವುದು ಇನ್ನು ಇನ್ನೂ ಉಳಿವ ಕೊರಗು || ೧೦ ||

ಬಸವನೆಂದರೆ ಕಡಲು ಕರುಣೆ ಶಾಂತಿಯ ಒಡಲು
ಶರಣಗಣ ನದಿಗಳಿಗೆ ಗಮ್ಯ ತಾಣ
ಅಸಹಾಯ ನಿರ್ಗತಿಕ ನೊಂದ ಜೀವರಿಗೆಲ್ಲ
ಸಾಂತ್ವನದ ಅಭಿಮಾನ ಸೆಲೆ ಪೂರಣ || ೧೧ ||

ಬಸವನೆಂದರೆ ಪ್ರೀತಿ ಜಗದಗಲ ತಟ್ಟುವುದು
ಲೇಸು ದಾರಿಯು ಮಾತ್ರ ಅಚ್ಚುಮೆಚ್ಚು
ಬಸವನೆಂದರೆ ಕತ್ತಿ ಕೆಟ್ಟುದನು ಕೊಚ್ಚುವುದು
ವಜ್ರದಂತೆಯ ಕಠಿಣ ಅದರ ಕೆಚ್ಚು || ೧೨ ||

ಬಸವನೆಂದರೆ ಬೆಳಗು ಅರುಣೋದಯದ ಕಾಂತಿ
ನವ ಸಮಾಜವು ಕಣ್ಣು ತೆರೆಯಲಿಕ್ಕೆ
ಗಾಢ ನಿದ್ದಯನೊದ್ದು ಜನಮನವು ತಿಳಿದೇಳೆ
ಅಜ್ಞಾದಂಧತಮ ಹರಿಯಲಿಕ್ಕೆ || ೧೩ ||

ಬಸವನೆಂದರೆ ಚಂಡಮಾರುತವು ಕಸರಜಕೆ
ಜೊಳ್ಳನೆಲ್ಲವ ತೂರಿ ಶುಚಿ ಮಾಡಲು
ಬಸವನೆಂದರೆ ಮಂದ ಮಾರುತವು ದಣಿದವಗೆ
ನೊಂದ ಬೆಂದವರನ್ನು ಸಂತವಿಡಲು || ೧೪ ||

ಬಸವನೆಂದರೆ ಮಂತ್ರ ದಂಡವದು ಸಾಧನೆಗೆ
ಕಲ್ಪತರು ಅರ್ಥಿಯಿಂ ಬೇಡುವರಿಗೆ
ಬಸವ ನಂದಾದೀಪ ಎಂಥ ಬಿರುಗಾಳಿಯಲು
ನಸುನಗೆಯ ಹೊಂಬೆಳಕ ಕಾಂಬವರಿಗೆ || ೧೫ ||
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...