Home / ಕವನ / ಕವಿತೆ / ಬಸವನೆಂದರೆ ಒಂದು ವ್ಯಕ್ತಿಯಲ್ಲ

ಬಸವನೆಂದರೆ ಒಂದು ವ್ಯಕ್ತಿಯಲ್ಲ

ಬಸವನೆಂದರೆ ಒಂದು ವ್ಯಕ್ತಿಯಲ್ಲ
ಯಾವುದಕು ಹೋಲಿಸಲು ಸಾಟಿಯಲ್ಲ || ಪ ||

ಯುಗಯುಗದ ತಪವೆಲ್ಲ ಸಿದ್ದಿಯಾಕೃತಿಯಾಗಿ
ಬಸವಣ್ಣನೆಂಬ ರೂಪವ ತಳೆಯಿತು
ಯುಗಯುಗಗಳನು ಮೀರಿ ನಿಂತಿರುವ ದರ್ಶನಕೆ
ಬಸವ ನಿನ್ನಯ ದ್ವನಿಯು ತಾ ಮೊಳಗಿತು ||ಅ.ಪ.||

ಬಸವನೆಂದರೆ ಬೆಳಕು ಬರಿಯ ಮಿಣುಬೆಳಕಲ್ಲ
ಕಣ್ಣು ಕೋರೈಸುವ ಮಿಂಚು ವಿದ್ಯುತ್ತು
ಹಿಂದೆ ಶತಮಾನಗಳ ಕತ್ತಲೆಯು ಕಳೆದಿತ್ತು
ಮುಂದೆ ಶತಮಾನಗಳ ತೊಳಗಿ ಬೆಳಗಿತ್ತು || ೧ ||

ಆ ಬೆಳಕಿನಲ್ಲಿ ಹೊಸ ಧರ್ಮವೆ ಉದಿಸಿತ್ತು
ಕಿರಿಯ ಮತ ಧರ್ಮಗಳು ಮರೆಯಾದವು
ಆ ಬೆಳಕಿನಲ್ಲಿಯೇ ಕವಿಯಾಗಿ ಶರಣ ಗಣ
ಹೊಸದು ಮನ್ವಂತರದ ಸಿರಿಯಾದವು || ೨ ||

ಬಸವನೆಂದರೆ ಬಳ್ಳಿ ಹಬ್ಬಿತ್ತು ನಾಡೆಲ್ಲ
ಕರುನಾಡ ತೋಟದಲಿ ತಾನೆ ತಾನು
ಕಳೆ ಕಸುವು ನಶಿಸಿದವು ಹೊಸ ಹೂವು ಅರಳಿದವು
ಸಿರಿಕಂಪು ಮಾಧುರ್ಯ ಎಂಥ ಜೇನು || ೩ ||

ಜಾನಪದ ಸೋಗಡನ್ನು ಮಣ್ಣಿನೊಳ ಕಸುವನ್ನು
ಹೀರಿ ಜನಮನವನದಿ ವ್ಯಾಪಿಸಿತ್ತು
ನಡೆನುಡಿಯ ಬಳಸಿತ್ತು ತಿದ್ದಿತ್ತು ಬೆಳೆಸಿತ್ತು
ತನಿಹಣ್ಣು ರಸವಾಗಿ ರೂಪಿಸಿತ್ತು || ೪ ||

ಬಸವನೆಂದರೆ ಹೊಳೆಯು ಬರಿಯ ಕಿರು ಹೊಳೆಯಲ್ಲ
ಭೋರ್ಗರೆವ ಮಹಾಲಿಂಗ ಭಾವಧಾರೆ
ಕೂಡಿದ್ದ ಗತಕಾಲ ಕಶ್ಮಲವ ಕೊಚ್ಚುತ್ತ
ತಿಳಿವು ತಿಳಿ ಹೊನಲಾಗಿ ಜೀವಧಾರೆ || ೫ ||

ಬರಡಾದ ಮಾನವತೆ ತಂಪು ಜಲವನು ಹೀರಿ
ಚಿಗುರೊಡೆದು ಆನಂದ ಪಲ್ಲವಿಸಿತು
ತಿಳಿಜಲದಿ ಮಿಂದು ಪರಿಶುದ್ಧ ಜೀವದ ರಾಶಿ
ಹಾಡು ಎದೆಯೊಳಗಿಂದ ಹೊಮ್ಮಿಸಿತು || ೬ ||

ಬಸವನೆಂದರೆ ಬೆಂಕಿ ಪಾಪಗಳನುರಿಸಿತ್ತು
ಜಾತಿ ಮತ ಭೇದಗಳ ಸುಟ್ಟು ಹಾಕಿ
ಮೌಢ್ಯ ಹುಸಿಗಳು ಬೂದಿ ಅಜ್ಞಾನ ನಶಿಸಿತ್ತು
ದುಷ್ಟ ದೌರ್ಜನ್ಯಗಳ ಮಟ್ಟ ಹಾಕಿ || ೭ ||

ವಿಷಮತೆಯ ಅವಲೋಹ ಸುಟ್ಟುರಿದು ಕರಕಾಗಿ
ಚೊಕ್ಕ ಚಿನ್ನದ ಸಮತೆ ನೆಲೆಗೊಂಡಿತು
ದೌರ್ಬಲ್ಯ ಹೇಡಿತನ ಆಲಸ್ಯ ಸಣ್ಣತನ
ಕೆಟ್ಟ ಹುಳುಗಳ ಬಳಗ ಕೆಟ್ಟೋಡಿತು || ೮ ||

ಬಸವನೆಂದರೆ ಬಯಲು ಕೊನೆಯಿಲ್ಲದಾಕಾಶ
ಮಾನವನ ಉತ್ತುಂಗ ಸಿದ್ದಿ ಕಳಶ |
ಭುವಿ ಬಾನುಗಳನೊಂದು ಮಾಡುತ್ತ ನಿಂತಂಥ
ಪಾರಮಾರ್ಥದ ಗುರಿಯು ತುರೀಯಾಶ || ೯ ||

ಕಾಯಕ್ಕೆ ಮಿತಿಯುಂಟು ಜೀವಕ್ಕೆ ಗತಿಯುಂಟು
ವಿಶ್ವವ್ಯಾಪೀ ಭಾವ ಬಯಲ ಬೆರಗು
ತಿಳಿದಂತೆ ಹೊಳೆ ಹೊಳೆದು ಅರಿವನ್ನು ಬೆಳೆಸುವುದು
ತಿಳಿಯುವುದು ಇನ್ನು ಇನ್ನೂ ಉಳಿವ ಕೊರಗು || ೧೦ ||

ಬಸವನೆಂದರೆ ಕಡಲು ಕರುಣೆ ಶಾಂತಿಯ ಒಡಲು
ಶರಣಗಣ ನದಿಗಳಿಗೆ ಗಮ್ಯ ತಾಣ
ಅಸಹಾಯ ನಿರ್ಗತಿಕ ನೊಂದ ಜೀವರಿಗೆಲ್ಲ
ಸಾಂತ್ವನದ ಅಭಿಮಾನ ಸೆಲೆ ಪೂರಣ || ೧೧ ||

ಬಸವನೆಂದರೆ ಪ್ರೀತಿ ಜಗದಗಲ ತಟ್ಟುವುದು
ಲೇಸು ದಾರಿಯು ಮಾತ್ರ ಅಚ್ಚುಮೆಚ್ಚು
ಬಸವನೆಂದರೆ ಕತ್ತಿ ಕೆಟ್ಟುದನು ಕೊಚ್ಚುವುದು
ವಜ್ರದಂತೆಯ ಕಠಿಣ ಅದರ ಕೆಚ್ಚು || ೧೨ ||

ಬಸವನೆಂದರೆ ಬೆಳಗು ಅರುಣೋದಯದ ಕಾಂತಿ
ನವ ಸಮಾಜವು ಕಣ್ಣು ತೆರೆಯಲಿಕ್ಕೆ
ಗಾಢ ನಿದ್ದಯನೊದ್ದು ಜನಮನವು ತಿಳಿದೇಳೆ
ಅಜ್ಞಾದಂಧತಮ ಹರಿಯಲಿಕ್ಕೆ || ೧೩ ||

ಬಸವನೆಂದರೆ ಚಂಡಮಾರುತವು ಕಸರಜಕೆ
ಜೊಳ್ಳನೆಲ್ಲವ ತೂರಿ ಶುಚಿ ಮಾಡಲು
ಬಸವನೆಂದರೆ ಮಂದ ಮಾರುತವು ದಣಿದವಗೆ
ನೊಂದ ಬೆಂದವರನ್ನು ಸಂತವಿಡಲು || ೧೪ ||

ಬಸವನೆಂದರೆ ಮಂತ್ರ ದಂಡವದು ಸಾಧನೆಗೆ
ಕಲ್ಪತರು ಅರ್ಥಿಯಿಂ ಬೇಡುವರಿಗೆ
ಬಸವ ನಂದಾದೀಪ ಎಂಥ ಬಿರುಗಾಳಿಯಲು
ನಸುನಗೆಯ ಹೊಂಬೆಳಕ ಕಾಂಬವರಿಗೆ || ೧೫ ||
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...