Home / ಕವನ / ಕವಿತೆ / ನೀ ಕರುಣಿಸಿದ ಬೆಳಕು

ನೀ ಕರುಣಿಸಿದ ಬೆಳಕು

ಹುಲ್ಲುಗಾವಲ ಹುಡುಕಿ ಹೊರಟ ಪಶುಗಳ ಹಿಂಡು
ಮುಂದೆ ಮುಂದೆ
ಕಾಯುತ್ತ ಹೊರಟಿರುವ ಗಂಡು ಹೆಣ್ಣಿನ ದಂಡು
ಅದರ ಹಿಂದೆ
ಪಶುಗು ಪಶುಪತಿಗು ಇರುವೆಲ್ಲ ಅಂತರ ಪಾದಸಂಖ್ಯೆಯೊಂದೆ.
ಕಾಲೆರಡು ಕೈಯಾಗಿ
ಬಾಲ ಕ್ಷೀಣಿಸಿ ಅಡಗಿ
ತಲೆ ಬದಲು ಬುದ್ಧಿಗೇ ಕೊಂಬು ಮೂಡಿ
ಬೆಳೆದ ಹಮ್ಮಿಗೆ ಈ ದ್ವಿಪಾದಿ ತಂದೆ.
ಅಪ್ಪನೋ ಅಣ್ಣನೋ ಅತ್ತಿಗೆಯೊ ಸೊಸೆಯೊ
(ಭಾಷೆ ಯಾರಿಗೆ ಗೊತ್ತು?)
ಗಂಡು ಬಿತ್ತ
ತಿಳಿದ ಸಂಬಂಧ ಒಂದೇ
ಹೆಣ್ಣು ಕ್ಷೇತ್ರ.
ಎಲೆ ಚರ್‍ಮ ಬಟ್ಟೆ ಬರೆ
ಬೆದೆ ಕುದಿಯೆ ಗುಹೆಯೆ ಮರೆ,
ತಿಂದು ಮಲಗಿದ್ದೊಂದೆ, ಕೆರಳಿ ಹೊರಳಿದ್ದೊಂದೆ
ಪಶುವ ಬಳಸಿದ್ದೊಂದೆ ತಿಳಿದ ಸೂತ್ರ
ಕೊಳದಲ್ಲಿ ಕಂಡ ಮುಖ
ತಲೆಯ ಕಾಡಿರಲಿಲ್ಲ
ಒಳಗೆ ಮೂಡಿರಲಿಲ್ಲ ಸ್ವಗತ ಚಿತ್ರ
* * *

ಹಿಮದ ಕಣಿವೆಗಳಲ್ಲಿ ಹೊಕ್ಕು ತೂರಿ
ತಮದ ಸಾವಿರಭವದ ಎದೆಯ ಸೀಳಿ
ನೊಂದು ಕಡೆಗೂ ಬಂದ
ಅಲ್ಲಿಂದ ಇಲ್ಲಿಗೆ
ವೋಲ್ಗಾದಿಂದ ದಿಲ್ಲಿಗೆ,
ಕದಡು ನಿಜಗಳ ಕೊಳದ ತಟ್ಟತಳಕ್ಕೆ ತಳ್ಳಿ
ತಿನಿಂತ ಕಲಿಕೆಗೆ,
ಭಯದಿಂದ ಉಳಿಕೆಗೆ
ಸ್ವಂತ ವೃತ್ತದ ಆಚೆ ಮುಗಿಲ ಡಮರುಗ ಕೇಳಿ
ನವಿಲಿಡುವ ಕೇಕೆಗೆ.
ಬಂದ ರಭಸಕೆ ದಣಿದು
ಹುಟ್ಟು ಪಯಣವ ತಡೆದು
ಹಾಯೆನಿಸಿ ಉರುಳಿದ
ಹೊರಳಿದ ಅರಳಿದ
ಗಂಗೆ ಯಮುನೆಯರ ಸಿರಿದಡಗಳಲ್ಲಿ,
ಗ್ರಹ ತಾರೆಗಳು ಹೊಳೆವ, ನಭಕ್ಕೆ ಮುಗಿಲನು ಬೆಳೆವ
ಜೀವನದಿಗಳು ಕೊಟ್ಟ ಕನಸಿನಲ್ಲಿ
* * *

ಎದ್ದಾಗ ಕಣ್ಣಲ್ಲಿ ನಕ್ಷತ್ರಗಳ ಬೆಳಕು
ದನಿ ಹೊರಳಿ ನಡುನಡುವೆ ಸಣ್ಣ ಗುಡುಗು.
ಒದೆಯಲೆತ್ತಿದ ಕಾಲು ಗುರಿ ಮರೆತು ತೂಗಿ
ಹೊಡೆಯಲೆತ್ತಿದ ತೋಳು ಬಿನ್ನಾಣ ಬೀಗಿ
ಪ್ರಥಮ ಶ್ರೀನೃತ್ಯದ ಅಪೂರ್ವ ಭಂಗಿ;
ತರೆದೆದೆಯ ಮೇಲೆ ಏನೇನೊ ಬಣ್ಣದ ಗುರುತು
ಬರಿಯ ಸೊಂಟವ ಮರೆಸಿ ನೂಲು ಲುಂಗಿ.
ಎರಡೆರಡು ಏಳಾಗಿ ಗಣಿತವೇ ಆಳಾಗಿ
ಲೋಕ ವ್ಯವಹಾರಕ್ಕೆ ರೂಪಾಂತರ,
ಗಿರಿ ಕಾಡು ಕಡಲು ತುಂಬಿರುವ ಉಪಗ್ರಹ ಕೂಡ
ತಾಯಾಗಿ ಉಟ್ಟಿತ್ತು ಪೀತಾಂಬರ.

ಈಗ ಸಿಡಿಲಿನ ಮೊಳಗು ಇಂದ್ರರಥ ಚೀತ್ಕಾರ,
ಕರಿಮುಗಿಲಿನೋಳಿ ರಾಕ್ಷಸರ ದಾಳಿ,
ಸುರಿವ ಮಳೆ ಅರ್ಘ್ಯ ಹೋಮಕ್ಕೆ ಕರುಣಿಸಿ ಬಾನು
ಕಾಲಕಾಲಕ್ಕೆ ಸುರಿವ ಜಲದ ಪಾಳಿ;
ಕಾಡ ಬಿದಿರಿನ ಮೊಳೆಯ ಹಾದು ಊಳಿದ ಗಾಳಿ
ತೂರಿ ಕೊಳಲಿನಲಿ ಬಗೆ ಬಗೆಯ ರಾಗ
ಬರಲಿರುವ ಭಾರಿ ನೆರೆಯರಿವು ಯಾರಿಗೆ ಆಗ?
ಪುಂಗಿನಾದಕೆ ಹೆಡೆಯ ಆಡಿಸಲು ತೊಡಗಿತ್ತು ಕಾಳನಾಗ.
* * *

ಏನು ಗೊತ್ತಿತ್ತು
ಗುರುತು ಎಲ್ಲಿತ್ತು
ನವನವೋನ್ಮೇಷೆ ನೀನೊಲಿದು ಬಂದಾಗ?
ಹಕ್ಕಿಹೂವುಗಳೆಲ್ಲ ಮಾತಾಡಿಕೊಂಡರೂ,
ದಿಕ್ಕುಗಳ ಹಣೆಯಲ್ಲಿ ಚುಕ್ಕಿಗಳು ಹೂಳದರೂ,
ಸಂಜೆಹಣ್ಣಿನ ಸುತ್ತ ಚಲಿಸಿ ನೀರದಪತ್ರ
ಕನಕಾಂಬರಗಳಾಗಿ ಉರಿ ಮಿಂಚಿ ಹನಿದರೂ,
ಹರಿವ ತೊರೆಗಳ ತಳದ ಗುರುಜುಗಲ್ಲಿನ ದನಿಯ
ಶ್ರುತಿಮಾಡಿ ತನ್ನದನಿ ಅದರೊಡನೆ ಕುಣಿದರೂ
ತನ್ನನ್ನೆ ಬಳಸಿ
ನೀ ಬಂದೆ ಎಂದು
ಹೊಡೆದ ವ್ಯಾಧನು ಕೂಡ ಅರಿಯಲಿಲ್ಲ.
ಸೂರ್ಯಚಂದ್ರರ ಬಿಂಬ ನೆಲದಲ್ಲಿ ನೆಡಲು
ಮರ್‍ತ್ಯಚಿತ್ತದ ಹೊಲಕೆ ನಿನ್ನಿಳಿಸಿ ತರಲು
ತಲೆಗೊಟ್ಟು ನಿಂತಂಥ ತಾಪಸಿ ಜಟಾಧರಗೂ
ಶಾಪ ವರವಾದದ್ದು ತಿಳಿಯಲಿಲ್ಲ.
ಬದುಕನ್ನು ಬಳಸಿ ಮಲಗಿದ್ದ ಸಾವಿನ ಸರ್ಪ
ಹರಿದುಹೋದುದನವರು ಕಾಣಲಿಲ್ಲ.
* * *

ಮುತ್ತಜ್ಜ ಮುನಿಯ ಮನಕಿಳಿದ ಭಾಗೀರಥಿಯು
ಹರಿದು ಬಂದಿದ್ದಾಳೆ ಇಲ್ಲಿ ತನಕ,
ಮುಟ್ಟಿದ್ದೆ ತಡ ಮೃಗದ ಶಾಪವೂ ವರವಾಗಿ
ಕಳಚಿ ನೋಡಿದೆ ಕಣ್ಣು ತನ್ನ ಸ್ವಾರ್ಥ.
ಕೆಡೆದ ತರಗಲೆ ಎದ್ದು ಪರ್ಣಶಾಲೆ,
ಬಿದ್ದ ನೆಲವೇ ಎದ್ದು ಸೌಧಮಾಲೆ,
ಹೊದ್ದು ಹೊರಗಾದ ಅನುಭವ ನಿತ್ಯರತಿಯಾಗಿ
ಮೃಗವು ಮರೆಯಾಗುವುದು ಅನಂಗಲೀಲೆ.
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...