Home / ಕವನ / ಕವಿತೆ / ನೀ ಕರುಣಿಸಿದ ಬೆಳಕು

ನೀ ಕರುಣಿಸಿದ ಬೆಳಕು

ಹುಲ್ಲುಗಾವಲ ಹುಡುಕಿ ಹೊರಟ ಪಶುಗಳ ಹಿಂಡು
ಮುಂದೆ ಮುಂದೆ
ಕಾಯುತ್ತ ಹೊರಟಿರುವ ಗಂಡು ಹೆಣ್ಣಿನ ದಂಡು
ಅದರ ಹಿಂದೆ
ಪಶುಗು ಪಶುಪತಿಗು ಇರುವೆಲ್ಲ ಅಂತರ ಪಾದಸಂಖ್ಯೆಯೊಂದೆ.
ಕಾಲೆರಡು ಕೈಯಾಗಿ
ಬಾಲ ಕ್ಷೀಣಿಸಿ ಅಡಗಿ
ತಲೆ ಬದಲು ಬುದ್ಧಿಗೇ ಕೊಂಬು ಮೂಡಿ
ಬೆಳೆದ ಹಮ್ಮಿಗೆ ಈ ದ್ವಿಪಾದಿ ತಂದೆ.
ಅಪ್ಪನೋ ಅಣ್ಣನೋ ಅತ್ತಿಗೆಯೊ ಸೊಸೆಯೊ
(ಭಾಷೆ ಯಾರಿಗೆ ಗೊತ್ತು?)
ಗಂಡು ಬಿತ್ತ
ತಿಳಿದ ಸಂಬಂಧ ಒಂದೇ
ಹೆಣ್ಣು ಕ್ಷೇತ್ರ.
ಎಲೆ ಚರ್‍ಮ ಬಟ್ಟೆ ಬರೆ
ಬೆದೆ ಕುದಿಯೆ ಗುಹೆಯೆ ಮರೆ,
ತಿಂದು ಮಲಗಿದ್ದೊಂದೆ, ಕೆರಳಿ ಹೊರಳಿದ್ದೊಂದೆ
ಪಶುವ ಬಳಸಿದ್ದೊಂದೆ ತಿಳಿದ ಸೂತ್ರ
ಕೊಳದಲ್ಲಿ ಕಂಡ ಮುಖ
ತಲೆಯ ಕಾಡಿರಲಿಲ್ಲ
ಒಳಗೆ ಮೂಡಿರಲಿಲ್ಲ ಸ್ವಗತ ಚಿತ್ರ
* * *

ಹಿಮದ ಕಣಿವೆಗಳಲ್ಲಿ ಹೊಕ್ಕು ತೂರಿ
ತಮದ ಸಾವಿರಭವದ ಎದೆಯ ಸೀಳಿ
ನೊಂದು ಕಡೆಗೂ ಬಂದ
ಅಲ್ಲಿಂದ ಇಲ್ಲಿಗೆ
ವೋಲ್ಗಾದಿಂದ ದಿಲ್ಲಿಗೆ,
ಕದಡು ನಿಜಗಳ ಕೊಳದ ತಟ್ಟತಳಕ್ಕೆ ತಳ್ಳಿ
ತಿನಿಂತ ಕಲಿಕೆಗೆ,
ಭಯದಿಂದ ಉಳಿಕೆಗೆ
ಸ್ವಂತ ವೃತ್ತದ ಆಚೆ ಮುಗಿಲ ಡಮರುಗ ಕೇಳಿ
ನವಿಲಿಡುವ ಕೇಕೆಗೆ.
ಬಂದ ರಭಸಕೆ ದಣಿದು
ಹುಟ್ಟು ಪಯಣವ ತಡೆದು
ಹಾಯೆನಿಸಿ ಉರುಳಿದ
ಹೊರಳಿದ ಅರಳಿದ
ಗಂಗೆ ಯಮುನೆಯರ ಸಿರಿದಡಗಳಲ್ಲಿ,
ಗ್ರಹ ತಾರೆಗಳು ಹೊಳೆವ, ನಭಕ್ಕೆ ಮುಗಿಲನು ಬೆಳೆವ
ಜೀವನದಿಗಳು ಕೊಟ್ಟ ಕನಸಿನಲ್ಲಿ
* * *

ಎದ್ದಾಗ ಕಣ್ಣಲ್ಲಿ ನಕ್ಷತ್ರಗಳ ಬೆಳಕು
ದನಿ ಹೊರಳಿ ನಡುನಡುವೆ ಸಣ್ಣ ಗುಡುಗು.
ಒದೆಯಲೆತ್ತಿದ ಕಾಲು ಗುರಿ ಮರೆತು ತೂಗಿ
ಹೊಡೆಯಲೆತ್ತಿದ ತೋಳು ಬಿನ್ನಾಣ ಬೀಗಿ
ಪ್ರಥಮ ಶ್ರೀನೃತ್ಯದ ಅಪೂರ್ವ ಭಂಗಿ;
ತರೆದೆದೆಯ ಮೇಲೆ ಏನೇನೊ ಬಣ್ಣದ ಗುರುತು
ಬರಿಯ ಸೊಂಟವ ಮರೆಸಿ ನೂಲು ಲುಂಗಿ.
ಎರಡೆರಡು ಏಳಾಗಿ ಗಣಿತವೇ ಆಳಾಗಿ
ಲೋಕ ವ್ಯವಹಾರಕ್ಕೆ ರೂಪಾಂತರ,
ಗಿರಿ ಕಾಡು ಕಡಲು ತುಂಬಿರುವ ಉಪಗ್ರಹ ಕೂಡ
ತಾಯಾಗಿ ಉಟ್ಟಿತ್ತು ಪೀತಾಂಬರ.

ಈಗ ಸಿಡಿಲಿನ ಮೊಳಗು ಇಂದ್ರರಥ ಚೀತ್ಕಾರ,
ಕರಿಮುಗಿಲಿನೋಳಿ ರಾಕ್ಷಸರ ದಾಳಿ,
ಸುರಿವ ಮಳೆ ಅರ್ಘ್ಯ ಹೋಮಕ್ಕೆ ಕರುಣಿಸಿ ಬಾನು
ಕಾಲಕಾಲಕ್ಕೆ ಸುರಿವ ಜಲದ ಪಾಳಿ;
ಕಾಡ ಬಿದಿರಿನ ಮೊಳೆಯ ಹಾದು ಊಳಿದ ಗಾಳಿ
ತೂರಿ ಕೊಳಲಿನಲಿ ಬಗೆ ಬಗೆಯ ರಾಗ
ಬರಲಿರುವ ಭಾರಿ ನೆರೆಯರಿವು ಯಾರಿಗೆ ಆಗ?
ಪುಂಗಿನಾದಕೆ ಹೆಡೆಯ ಆಡಿಸಲು ತೊಡಗಿತ್ತು ಕಾಳನಾಗ.
* * *

ಏನು ಗೊತ್ತಿತ್ತು
ಗುರುತು ಎಲ್ಲಿತ್ತು
ನವನವೋನ್ಮೇಷೆ ನೀನೊಲಿದು ಬಂದಾಗ?
ಹಕ್ಕಿಹೂವುಗಳೆಲ್ಲ ಮಾತಾಡಿಕೊಂಡರೂ,
ದಿಕ್ಕುಗಳ ಹಣೆಯಲ್ಲಿ ಚುಕ್ಕಿಗಳು ಹೂಳದರೂ,
ಸಂಜೆಹಣ್ಣಿನ ಸುತ್ತ ಚಲಿಸಿ ನೀರದಪತ್ರ
ಕನಕಾಂಬರಗಳಾಗಿ ಉರಿ ಮಿಂಚಿ ಹನಿದರೂ,
ಹರಿವ ತೊರೆಗಳ ತಳದ ಗುರುಜುಗಲ್ಲಿನ ದನಿಯ
ಶ್ರುತಿಮಾಡಿ ತನ್ನದನಿ ಅದರೊಡನೆ ಕುಣಿದರೂ
ತನ್ನನ್ನೆ ಬಳಸಿ
ನೀ ಬಂದೆ ಎಂದು
ಹೊಡೆದ ವ್ಯಾಧನು ಕೂಡ ಅರಿಯಲಿಲ್ಲ.
ಸೂರ್ಯಚಂದ್ರರ ಬಿಂಬ ನೆಲದಲ್ಲಿ ನೆಡಲು
ಮರ್‍ತ್ಯಚಿತ್ತದ ಹೊಲಕೆ ನಿನ್ನಿಳಿಸಿ ತರಲು
ತಲೆಗೊಟ್ಟು ನಿಂತಂಥ ತಾಪಸಿ ಜಟಾಧರಗೂ
ಶಾಪ ವರವಾದದ್ದು ತಿಳಿಯಲಿಲ್ಲ.
ಬದುಕನ್ನು ಬಳಸಿ ಮಲಗಿದ್ದ ಸಾವಿನ ಸರ್ಪ
ಹರಿದುಹೋದುದನವರು ಕಾಣಲಿಲ್ಲ.
* * *

ಮುತ್ತಜ್ಜ ಮುನಿಯ ಮನಕಿಳಿದ ಭಾಗೀರಥಿಯು
ಹರಿದು ಬಂದಿದ್ದಾಳೆ ಇಲ್ಲಿ ತನಕ,
ಮುಟ್ಟಿದ್ದೆ ತಡ ಮೃಗದ ಶಾಪವೂ ವರವಾಗಿ
ಕಳಚಿ ನೋಡಿದೆ ಕಣ್ಣು ತನ್ನ ಸ್ವಾರ್ಥ.
ಕೆಡೆದ ತರಗಲೆ ಎದ್ದು ಪರ್ಣಶಾಲೆ,
ಬಿದ್ದ ನೆಲವೇ ಎದ್ದು ಸೌಧಮಾಲೆ,
ಹೊದ್ದು ಹೊರಗಾದ ಅನುಭವ ನಿತ್ಯರತಿಯಾಗಿ
ಮೃಗವು ಮರೆಯಾಗುವುದು ಅನಂಗಲೀಲೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...