Home / ಕವನ / ಕವಿತೆ / ಅಂತರ

ಅಂತರ

ಹುಡುಗನಾಗಿದ್ದ ದಿನಗಳ ನೆನಪು : ಆಗ
ನಮ್ಮೂರ ಹೊಳೆ ತುಂಗೆ ಶಾಂತನಿರ್ಮಲ ಅಂತರಂಗೆ;
ಹೊರಗಿನ ಬಿಸಿಲು
ಒಳಗೆ ಬಿಂಬಿಸಿ ತಳದ ತನಕ ನದಿಯ ಮನಸ್ಸು
ಸ್ವಚ್ಛ ಪ್ರತ್ಯಕ್ಷ ಸಂಪದ್ಯುಕ್ತ
ಜಲದ ರೇಸಿಮೆಹಾಳೆ ಸೀಳಿ ಹಾಯುವ, ಹಾಗೆ
ಹೀಗೆ ಹೇಗೋ ಹೊರಳಿ ಉರಿಯ ಚಿಮ್ಮುವ ಮೀನು,
ಕೆಳಗೆ ಥಳ ಥಳ ಮರಳು
ಬಾದಾಮಿ ದ್ರಾಕ್ಷಿ ಗೋಡಂಬಿ ಬಿಕ್ಕಿದ ಹಾಗೆ
ಹೊಳೆಯ ಮೂಕ ಸುಖಕ್ಕೆ ಮಾತು ದಕ್ಕಿದ ಹಾಗೆ
ಥರಾಥರಾವರಿ ಹರಳು.

ಇದೆಲ್ಲ ತಡಿಯಲ್ಲಿ.
ಆರಂಭದಿಂದ ಹತ್ತಾರು ಅಡಿಯಲ್ಲಿ
ಯಾರಿಗು ನಿರಾಳ, ಹೊಳೆ ಇಳಿದು ಹೋದಂತೆಲ್ಲ
ಒಳ‌ಒಳಗೆ ಕೆಳಕೆಳಗೆ
ಈಜುಗಲಿ ಸೀನ ಆಚಾರಿ ದತ್ತಣ್ಣನಿಗು
ತಳಸಿಗದ ಕಾಳಹಸುರಿನ ಆಳ ಆಭೀಳ,
ಯಾವ ಕಾಲದ್ದೊ
ಯಾರ್‍ಯಾರೆಲ್ಲ ಎಸೆದದ್ದೊ
ಗಂಗೆಯ ಹೆಸರು ಹೇಳಿ ಯಾರೆಲ್ಲ ಮುಡಿಸಿದ್ದೊ
ನೆರೆಮೊರೆದು ಕರೆಯೊಡೆದು ಜಾರಿ ಒಳಸೇರಿದ್ದೊ
‘ಮುಳುಗಿ ತರಬಲ್ಲೆಯೋ ಎಲ್ಲಿ ತಾ?’ ಎನ್ನುವ
ಸವಾಲಿನಲ್ಲಿ ಎಸೆದದ್ದೊ
ಆಣೆ ಪಾವಾಣೆ ರೂಪಾಯಿ ಚಿಲ್ಲರೆಯಿರಲಿ
ಪಾತ್ರೆ ಪಡಿ ಬೆಳ್ಳಿ ಬಂಗಾರ ನಡುಸಿಂಗಾರ ಕೂಡ ಇರುವ ವದಂತಿ
ಅರೆಕಂತಿ ನದಿ ನಡುವೆ ಕರೆಯುತ್ತ ನಿಂತಿರುವ
ಆನೆ ಬಂಡೆಯ ಬದಿಗೆ
* * *

ಕಲಿಯುಕ್ಕಿ ಆನೆಬಂಡೆಯ ಕಡೆಗೆ ಈಜಿರುವ
ಪಡ್ಡೆಹುಡುಗರ ದಂಡು.
ಹತ್ತಿ, ಬಂಡೆಯ ನೆತ್ತಿ ಕೂಗಿ ಹಾರುವ ದಿಟ್ಟ ಕಿಟ್ಟಡಿಗ.
ಹುಚ್ಚುಕೆಚ್ಚಿಗೆ ಕಟ್ಟುಬೆರಗಾಗಿ ನಿಂತ ಕಟ್ಟಾಳುಗಳ ಎದುರಲ್ಲಿ
ಹೊಸ ಹೊಸಾ ಕಸರತ್ತು.
ಐದಾರು ಆಳು ಆಳದ ಮರಳ ಮೈತಬ್ಬಿ ಬರುವ
ಬಿಟ್ಟಿ ಷರತ್ತು,
ಮುಳುಗಿದನೊ, ಉಸಿರು ಬಿಗಿಹಿಡಿದು, ದಿಟ್ಟಿಯ ನೆಟ್ಟು
ರಕ್ಷೆಕಾಯುವ ಗುಂಪು.
ಬರಲಿಲ್ಲ ಒಂದು ಕ್ಷಣ
ಎಲ್ಲ ಕಣ್ಣುಗಳಲ್ಲಿ ತವಕ ಅಶಂಕೆ ಕಳವಳ ಏನೊ ತಳಮಳ.
ಮರುಚಣ
ಬಂದ ಹೋ ಹೋ ಬಂದ ಎಂಬ ಕೇಕೆಯ ನಡುವೆ
ಛಂಗನೇ ಮೇಲೆದ್ದು ಮರಳ ಸಾಕ್ಷಿಯ ತೂರಿ
ಈಜಿ ಸಾಗುವ ಛಂದ,
ಈ ಸಾಹಸಕ್ಕೆಲ್ಲ ಬೆಲೆಯಿತ್ತು, ಮೆಚ್ಚಿಗೆ ಇತ್ತು, ಮೇಲು ನೆಲೆಯಿತ್ತು.
ಮೇಲಾಟ ಹೂಡಿ ಸೆಣಸುವ ಸರಿಸವಾಲುಗಳ
ರಣಧೀರ ಪಡೆಯಿತ್ತು.
* * *

ಈಗ
ನದಿಯಲ್ಲಿ ನೀರಿಲ್ಲ,
ಏಕೊ ಕಾಲನೆ ಬಲ್ಲ,
ಕಾಸಿ ಬರೆ ಎಳೆದಂತೆ ತಳದ ಮೈಯಲ್ಲೆಲ್ಲ
ಕಪ್ಪು ಹಸಿರಿನ ನೀಳ ಪಟ್ಟೆ
ಕೊಳೆಯುವ ಬಟ್ಟೆ :
ನಡುನಡುವೆ ನಡೆಗೊಂದು ನಾಯಿಕೊಡೆ ಪಾಚಿತೊಡೆ,
ಹೆಸರಿರದ ದೆಸೆಯಿರದ ಸಸ್ಯ
ಕುರುಚಲು ಜೊಂಡು;
ರಕ್ತಮಾಂಸವೆ ಇರದ ಅಸ್ಥಿಪಂಜರ ತೆರೆದ
ಒಡಲ ಭೀತಿ
ನದಿಯ ರೀತಿ.
ಹರಿಗೋಲು ದೋಣಿ ತಪ್ಪೋತ್ಸವಗಳಿರಲಿ
ಹೆಜ್ಜೆ ಮುಳುಗದ ಲಜ್ಜೆನಡಿಗೆ ನದಿಗೆ.
ಬಣ್ಣ ಬಾವುಟವಿರದ
ಬಿದಿರ ಗುಮ್ಮಟ ಮುರಿದ
ಪಾಳುಗುಡಿ ತೇರಿನ ಬೋಳುಮಂಡೆ
ಅಸಿಧಾರೆ ಬಿಸಿಲಲ್ಲಿ ಆನೆಬಂಡೆ.
ಬಟ್ಟೆ ಒಗೆಯುವ ಕಲ್ಲು
ಊರೊಳಗೆ ಬಂದು
ಮನೆ ಮೆಟ್ಟಿಲು,
ಲಾರಿಗಟ್ಟಲೆ ಮರಳು ತೋಡಿ ಮಾಡಿದ ಹೊಂಡ
ವಟರುಗಪ್ಪೆ ಕುಲಕ್ಕೆ
ತೊಟ್ಟಿಲು.
* * *

ಬೆತ್ತಲಾಗಸದಲ್ಲಿ ಮುಂದೆಂದೊ ಮತ್ತೆ
ಕರಿಮುಗಿಲ ಜಹಜುಗಳ ಸಾಲು;
ಸಾಗಿ ಬರಲಿವೆ ದಿಕ್ಕುದಿಕ್ಕಿಂದ, ಸುಳಿವಂತೆ
ಭಾಗೀರಥಿಯ ಹೆಜ್ಜೆಗಾಲು.
ಪುಟ್ಟ ಮಸಿಗುಡ್ಡೆಗಳು ಮೈಗೆ ಮೈ ತಾಗಿ
ಬೆಳೆದೀತು ಕಾರ್ಮುಗಿಲ ಬೆಟ್ಟ;
ಇಷ್ಟು ದಿನಗಳ ಹೊಟ್ಟೆಯುರಿಯೆ ನಡಿಗೆಗೆ ನುಗ್ಗಿ
ನಡುಗದೇ ಕುಣಿತಕ್ಕೆ ಅಟ್ಟ?
ಬತ್ತಿ ಕೊಳೆಯುವ ಹೊಳೆಯ ಬಸಿರಿಗನಸು
ಕೆತ್ತಿರುವ ನೆಲದೆದೆಗೆ ಹಸಿರಿನುಣಿಸು
ಸಂದಾಯವಾದೀತು ಎಂದಾದರೊಂದು ದಿನ
ಸಪ್ಪೆ ಬಾಳಿಗೆ ಉಪ್ಪು ನಿಂಬೆ ಮೆಣಸು.
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...