Home / ಕವನ / ಕವಿತೆ / ಅಂತರ

ಅಂತರ

ಹುಡುಗನಾಗಿದ್ದ ದಿನಗಳ ನೆನಪು : ಆಗ
ನಮ್ಮೂರ ಹೊಳೆ ತುಂಗೆ ಶಾಂತನಿರ್ಮಲ ಅಂತರಂಗೆ;
ಹೊರಗಿನ ಬಿಸಿಲು
ಒಳಗೆ ಬಿಂಬಿಸಿ ತಳದ ತನಕ ನದಿಯ ಮನಸ್ಸು
ಸ್ವಚ್ಛ ಪ್ರತ್ಯಕ್ಷ ಸಂಪದ್ಯುಕ್ತ
ಜಲದ ರೇಸಿಮೆಹಾಳೆ ಸೀಳಿ ಹಾಯುವ, ಹಾಗೆ
ಹೀಗೆ ಹೇಗೋ ಹೊರಳಿ ಉರಿಯ ಚಿಮ್ಮುವ ಮೀನು,
ಕೆಳಗೆ ಥಳ ಥಳ ಮರಳು
ಬಾದಾಮಿ ದ್ರಾಕ್ಷಿ ಗೋಡಂಬಿ ಬಿಕ್ಕಿದ ಹಾಗೆ
ಹೊಳೆಯ ಮೂಕ ಸುಖಕ್ಕೆ ಮಾತು ದಕ್ಕಿದ ಹಾಗೆ
ಥರಾಥರಾವರಿ ಹರಳು.

ಇದೆಲ್ಲ ತಡಿಯಲ್ಲಿ.
ಆರಂಭದಿಂದ ಹತ್ತಾರು ಅಡಿಯಲ್ಲಿ
ಯಾರಿಗು ನಿರಾಳ, ಹೊಳೆ ಇಳಿದು ಹೋದಂತೆಲ್ಲ
ಒಳ‌ಒಳಗೆ ಕೆಳಕೆಳಗೆ
ಈಜುಗಲಿ ಸೀನ ಆಚಾರಿ ದತ್ತಣ್ಣನಿಗು
ತಳಸಿಗದ ಕಾಳಹಸುರಿನ ಆಳ ಆಭೀಳ,
ಯಾವ ಕಾಲದ್ದೊ
ಯಾರ್‍ಯಾರೆಲ್ಲ ಎಸೆದದ್ದೊ
ಗಂಗೆಯ ಹೆಸರು ಹೇಳಿ ಯಾರೆಲ್ಲ ಮುಡಿಸಿದ್ದೊ
ನೆರೆಮೊರೆದು ಕರೆಯೊಡೆದು ಜಾರಿ ಒಳಸೇರಿದ್ದೊ
‘ಮುಳುಗಿ ತರಬಲ್ಲೆಯೋ ಎಲ್ಲಿ ತಾ?’ ಎನ್ನುವ
ಸವಾಲಿನಲ್ಲಿ ಎಸೆದದ್ದೊ
ಆಣೆ ಪಾವಾಣೆ ರೂಪಾಯಿ ಚಿಲ್ಲರೆಯಿರಲಿ
ಪಾತ್ರೆ ಪಡಿ ಬೆಳ್ಳಿ ಬಂಗಾರ ನಡುಸಿಂಗಾರ ಕೂಡ ಇರುವ ವದಂತಿ
ಅರೆಕಂತಿ ನದಿ ನಡುವೆ ಕರೆಯುತ್ತ ನಿಂತಿರುವ
ಆನೆ ಬಂಡೆಯ ಬದಿಗೆ
* * *

ಕಲಿಯುಕ್ಕಿ ಆನೆಬಂಡೆಯ ಕಡೆಗೆ ಈಜಿರುವ
ಪಡ್ಡೆಹುಡುಗರ ದಂಡು.
ಹತ್ತಿ, ಬಂಡೆಯ ನೆತ್ತಿ ಕೂಗಿ ಹಾರುವ ದಿಟ್ಟ ಕಿಟ್ಟಡಿಗ.
ಹುಚ್ಚುಕೆಚ್ಚಿಗೆ ಕಟ್ಟುಬೆರಗಾಗಿ ನಿಂತ ಕಟ್ಟಾಳುಗಳ ಎದುರಲ್ಲಿ
ಹೊಸ ಹೊಸಾ ಕಸರತ್ತು.
ಐದಾರು ಆಳು ಆಳದ ಮರಳ ಮೈತಬ್ಬಿ ಬರುವ
ಬಿಟ್ಟಿ ಷರತ್ತು,
ಮುಳುಗಿದನೊ, ಉಸಿರು ಬಿಗಿಹಿಡಿದು, ದಿಟ್ಟಿಯ ನೆಟ್ಟು
ರಕ್ಷೆಕಾಯುವ ಗುಂಪು.
ಬರಲಿಲ್ಲ ಒಂದು ಕ್ಷಣ
ಎಲ್ಲ ಕಣ್ಣುಗಳಲ್ಲಿ ತವಕ ಅಶಂಕೆ ಕಳವಳ ಏನೊ ತಳಮಳ.
ಮರುಚಣ
ಬಂದ ಹೋ ಹೋ ಬಂದ ಎಂಬ ಕೇಕೆಯ ನಡುವೆ
ಛಂಗನೇ ಮೇಲೆದ್ದು ಮರಳ ಸಾಕ್ಷಿಯ ತೂರಿ
ಈಜಿ ಸಾಗುವ ಛಂದ,
ಈ ಸಾಹಸಕ್ಕೆಲ್ಲ ಬೆಲೆಯಿತ್ತು, ಮೆಚ್ಚಿಗೆ ಇತ್ತು, ಮೇಲು ನೆಲೆಯಿತ್ತು.
ಮೇಲಾಟ ಹೂಡಿ ಸೆಣಸುವ ಸರಿಸವಾಲುಗಳ
ರಣಧೀರ ಪಡೆಯಿತ್ತು.
* * *

ಈಗ
ನದಿಯಲ್ಲಿ ನೀರಿಲ್ಲ,
ಏಕೊ ಕಾಲನೆ ಬಲ್ಲ,
ಕಾಸಿ ಬರೆ ಎಳೆದಂತೆ ತಳದ ಮೈಯಲ್ಲೆಲ್ಲ
ಕಪ್ಪು ಹಸಿರಿನ ನೀಳ ಪಟ್ಟೆ
ಕೊಳೆಯುವ ಬಟ್ಟೆ :
ನಡುನಡುವೆ ನಡೆಗೊಂದು ನಾಯಿಕೊಡೆ ಪಾಚಿತೊಡೆ,
ಹೆಸರಿರದ ದೆಸೆಯಿರದ ಸಸ್ಯ
ಕುರುಚಲು ಜೊಂಡು;
ರಕ್ತಮಾಂಸವೆ ಇರದ ಅಸ್ಥಿಪಂಜರ ತೆರೆದ
ಒಡಲ ಭೀತಿ
ನದಿಯ ರೀತಿ.
ಹರಿಗೋಲು ದೋಣಿ ತಪ್ಪೋತ್ಸವಗಳಿರಲಿ
ಹೆಜ್ಜೆ ಮುಳುಗದ ಲಜ್ಜೆನಡಿಗೆ ನದಿಗೆ.
ಬಣ್ಣ ಬಾವುಟವಿರದ
ಬಿದಿರ ಗುಮ್ಮಟ ಮುರಿದ
ಪಾಳುಗುಡಿ ತೇರಿನ ಬೋಳುಮಂಡೆ
ಅಸಿಧಾರೆ ಬಿಸಿಲಲ್ಲಿ ಆನೆಬಂಡೆ.
ಬಟ್ಟೆ ಒಗೆಯುವ ಕಲ್ಲು
ಊರೊಳಗೆ ಬಂದು
ಮನೆ ಮೆಟ್ಟಿಲು,
ಲಾರಿಗಟ್ಟಲೆ ಮರಳು ತೋಡಿ ಮಾಡಿದ ಹೊಂಡ
ವಟರುಗಪ್ಪೆ ಕುಲಕ್ಕೆ
ತೊಟ್ಟಿಲು.
* * *

ಬೆತ್ತಲಾಗಸದಲ್ಲಿ ಮುಂದೆಂದೊ ಮತ್ತೆ
ಕರಿಮುಗಿಲ ಜಹಜುಗಳ ಸಾಲು;
ಸಾಗಿ ಬರಲಿವೆ ದಿಕ್ಕುದಿಕ್ಕಿಂದ, ಸುಳಿವಂತೆ
ಭಾಗೀರಥಿಯ ಹೆಜ್ಜೆಗಾಲು.
ಪುಟ್ಟ ಮಸಿಗುಡ್ಡೆಗಳು ಮೈಗೆ ಮೈ ತಾಗಿ
ಬೆಳೆದೀತು ಕಾರ್ಮುಗಿಲ ಬೆಟ್ಟ;
ಇಷ್ಟು ದಿನಗಳ ಹೊಟ್ಟೆಯುರಿಯೆ ನಡಿಗೆಗೆ ನುಗ್ಗಿ
ನಡುಗದೇ ಕುಣಿತಕ್ಕೆ ಅಟ್ಟ?
ಬತ್ತಿ ಕೊಳೆಯುವ ಹೊಳೆಯ ಬಸಿರಿಗನಸು
ಕೆತ್ತಿರುವ ನೆಲದೆದೆಗೆ ಹಸಿರಿನುಣಿಸು
ಸಂದಾಯವಾದೀತು ಎಂದಾದರೊಂದು ದಿನ
ಸಪ್ಪೆ ಬಾಳಿಗೆ ಉಪ್ಪು ನಿಂಬೆ ಮೆಣಸು.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...