Home / ಲೇಖನ / ಇತರೆ / ‘ಬೇಕು’ ರಾಕ್ಷಸ

‘ಬೇಕು’ ರಾಕ್ಷಸ

ಪ್ರಿಯ ಸಖಿ,

ಆಸೆಯೇ ದುಃಖಕ್ಕೆ ಮೂಲ ಎಂದ ಗೌತಮ ಬುದ್ಧ. ಹಾಗೆಂದು ಆಸೆಗಳೇ ಇಲ್ಲದ ಸ್ಥಿತಿಗೆ ತಲುಪಿದರೆ ಅದು ಮನುಜಕುಲದ ಅವಸಾನವೇ ಸರಿ. ಮನುಜನ ಉಳಿವಿಗೆ ಆಸೆಯೆಂಬುದು ಇರಲೇಬೇಕು. ಎಲ್ಲವೂ ಬೇಕು ಎನ್ನುವ ಅತಿ ಆಸೆ ಹಾಗೇ ಏನೂ ಬೇಡ ಎಂಬ ನಿರಾಕರಣೆಯ ಮಧ್ಯೆ ಒಂದು ಗೆರೆ ಎಳೆದು ಬದುಕನ್ನು ಸಹ್ಯವಾಗಿಸಿಕೊಂಡಾಗ ಮಾತ್ರ ಮನುಷ್ಯ ಸಂತತಿ ಈ ಭೂಮಿಯಲ್ಲಿ ಕೆಲಕಾಲವಾದರೂ ನೆಮ್ಮದಿಯಿಂದ ಬದುಕುಳಿದೀತು.

ವಿಜ್ಞಾನ-ತಂತ್ರಜ್ಞಾನದ ಹೆಸರಿನಲ್ಲಿ ಮಾನವ ಅನೇಕ ಪ್ರಗತಿಯನ್ನು ಸಾದಿಸಿದ್ದಾನೆ. ಎಲ್ಲವೂ ಬೇಕುಗಳ ಪೂರೈಕೆಗೆ! ತನ್ನ ಪ್ರಚಂಡ ಬುದ್ಧಿ ಶಕ್ತಿ ಯಿಂದ ವಿನಾಶಕಾರಿ ಅಣ್ವಸ್ತ್ರಗಳನ್ನೂ, ರಾಕೆಟ್ಗಳನ್ನೂ ಸಬ್‍ಮೆರಿನ್‍ಗಳು, ರೋಬಾಟ್, ಕಂಪ್ಯೂಟರ್ ಏನೆಲ್ಲಾ ಸೌಲಭ್ಯಗಳನ್ನು ಕಂಡು ಹಿಡಿದಿದ್ದಾನೆ. ನೆಲವನ್ನು ಬಗೆದು ಬೇಕಾದ ಬೇಡದ ಏನೆಲ್ಲ ಖನಿಜ ತನ್ನದಾಗಿಸಿಕೊಂಡಿದ್ದಾನೆ. ರಸಗೊಬ್ಬರ, ಕೀಟನಾಶಕ ಬಳಸಿ ಅಪಾರ ಕೃಷಿ ಉತ್ಪನ್ನಗಳನ್ನು ಬೆಳೆಯುವ ಭರದಲ್ಲಿ ಭೂಮಿ ಬರಡಾಗಿಸುತ್ತಿದ್ದಾನೆ. ತನ್ನ ಸುಖಕ್ಕಾಗಿ ಬೃಹದಾಕಾರದ ಕಟ್ಟಡಗಳು, ಜಲಾಶಯಗಳು ನಿರ್ಮಾಣವಾಗುತ್ತಿದೆ. ಬೆಟ್ಟ, ಗುಡ್ಡ, ಪರ್ವತ, ಕಾಡುಗಳನ್ನು ತುಂಡು ಮಾಡಿ ನಗರಗಳು ಬೆಳೆಯುತ್ತಿವೆ. ಪ್ರಾಕೃತಿಕ ಸಂಪತ್ತೆಲ್ಲಾ ಎಡಬಿಡದೇ ಲೂಟಿಗೊಳ್ಳುತ್ತಿದೆ. ತನ್ನ ಐಷಾರಾಮಿ ಬದುಕಿನ ಕನಸಿನಲ್ಲಿ ಎಲ್ಲವನ್ನೂ ಪಣಕ್ಕಿಟ್ಟು ತನ್ನ ಬೇಕುಗಳನ್ನು ಪೂರೈಸಲು ಹವಣಿಸುತ್ತಿದ್ದಾನೆ. ಈ ದುರಾಸೆಯಲ್ಲಿ ಮುಂದಿನ ಜನಾಂಗಕ್ಕೆ ಬದುಕಲು ಪ್ರಾಕೃತಿಕ ಸೌಲಭ್ಯಗಳನ್ನು ಉಳಿಸಿಡಬೇಕೆಂಬ ವಿವೇಚನೆಯನ್ನೇ ಮಾನವ ಕಳೆದುಕೊಂಡಿದ್ದಾನೆ.

ಪರಿಸರದ ನಿರಂತರ ಶೋಷಣೆಯಿಂದಾಗಿ, ಪ್ರಕೃತಿಯ ಸಮತೋಲನ ತಪ್ಪಿ ಅನೇಕ ವಿಕೋಪಗಳು ಎಚ್ಚರಿಕೆಯ ಗಂಟೆಯಾಗಿ ಬಡಿಯುತ್ತಲೇ ಇವೆ.

ಬೇಕು ರಾಕ್ಷಸನ ದಾಳಿಗೆ ಸಿಕ್ಕು ಹೊರಗಿನ ಪರಿಸರ ನಾಶವಾಗುತ್ತಿದೆ. ಮಾನವನ ಒಳಗೂ ಸ್ವಾರ್ಥ, ಸ್ವಹಿತ, ಅತಿ ಆಸೆ, ದ್ವೇಷ, ಅಸೂಯೆ, ಪೈಪೋಟಿಗಳಿಂದ ತುಂಬಿಕೊಂಡು ನೈತಿಕವಾಗಿ ಕುಸಿಯುತ್ತಿದೆ. ಇಂದು ಮಾನವ ಆಂತರಿಕ ಶ್ರೀಮಂತಿಕೆಗಿಂತ ಬಾಹ್ಯ ಶ್ರೀಮಂತಿಕೆಗೆ ಹೆಚ್ಚು ಪ್ರಾಶಸ್ತ್ಯ ನೀಡುತ್ತಿದ್ದಾನೆ. ಹಣವಂತನೇ ಪ್ರತಿಷ್ಠಿತ ಎಂಬ ಕಲ್ಪನೆ ಸಮಾಜದಲ್ಲಿ ಬೇರೂರಿದೆ. ಆ ಹಣವನ್ನು ಯಾವುದೇ ನೀಚ ದಂಧೆಯಿಂದ ಗಳಿಸಿದ್ದರೂ ಅದು ನಗಣ್ಯ. ಅದಕ್ಕೆಂದೇ ಇಂದು ಮಾನವ ಕಷ್ಟಪಡದೇ ಬೆವರು ಹರಿಸದೇ ದಿಢೀರ್ ಶ್ರೀಮಂತನಾಗಬೇಕೆಂದು ಬಯಸುತ್ತಾನೆ. ಕೊಳ್ಳುಬಾಕ ಸಂಸ್ಕೃತಿ ನಿಧಾನಕ್ಕೆ ತನ್ನ ಕಬಂಧ ಬಾಹುಗಳನ್ನು ಚಾಚಿ ನಮ್ಮನ್ನು ನುಂಗುತ್ತಿದೆ.

ಮಾನವನ ದುರಾಸೆ ಹೀಗೇ ಮುಂದುವರಿದರೆ ಭೂಮಿ ಮೇಲೆ ಇಡೀ ಜೀವಿ ಸಂಕುಲವೇ ನಾಶವಾಗುವ ದಿನ ದೂರವಿಲ್ಲ. ಹಾಗಾದರೆ ಈ ಬೇಕು ರಾಕ್ಷಸನ ಹಸಿವನ್ನು ಹಿಂಗಿಸಲು ಸಾಧ್ಯವೇ ಇಲ್ಲವೇ ? ಅವನು ನಮ್ಮನ್ನು ಸರ್ವನಾಶ ಮಾಡುವುದನ್ನು ನೋಡುತ್ತಾ ಕೈ ಕಟ್ಟಿ ಕುಳಿತು ಬಿಡಬೇಕೆ? ಅವನ ಹಸಿವಿನ ಕೊನೆಯ ಗುರಿ, ಕೊನೆಯ ಬಲಿ ನಾವೇ ಆಗಬೇಕೆ? ನಮ್ಮಿಂದ ನಮ್ಮೊಳಗೇ ಹುಟ್ಟಿ ಬೆಳೆದ ಈ ಬೇಕು ರಾಕ್ಷಸನನ್ನು ಹದ್ದುಬಸ್ತಿನಲ್ಲಿಡಲು ನಮ್ಮಿಂದಲೇ ಸಾಧ್ಯವಿಲ್ಲವೇ? ಸರಳ ಜೀವನ ಉನ್ನತ ಚಿಂತನ ಎಂಬ ಆದರ್ಶಕ್ಕೆ ಈ ಬೇಕು ಪ್ರಪಂಚದಲ್ಲಿ ಬೆಲೆಯೇ ಇಲ್ಲವೇ?

ಸಖಿ, ಈ ಕುರಿತು ಪೂರ್ತಿ ಕಾಲಮೀರಿ ಹೋಗುವ ಮೊದಲು ಈಗಲಾದರೂ ಯೋಚಿಸಬೇಕಲ್ಲವೇ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...