Home / ಕವನ / ಕವಿತೆ / ಮರಕುಟಿಗ

ಮರಕುಟಿಗ

ಕತ್ತಲಿಗೆ ಕತ್ತರಿ ಬಿದ್ದು ಇಷ್ಟಿಷ್ಟೇ ಹರಿದು
ಚಿಗುರೊಡೆದ ಮರದಲ್ಲಿ ಚಿಲಿಪಿಲಿ; ಒಂದಕ್ಕೊಂದು ಸೇರಿ
ಅಸ್ಪಷ್ಟ ಗದ್ದಲ: ಕಣ್ಣ ತೆರೆಯುವ ತುರಿಕೆ;
ಮನೆಯ ಒಳಹೊರಗೆಲ್ಲ ಬಳೆ ಸದ್ದು ಪೊರಕೆ.
ಮನದ ಮೂಲದಲ್ಲಿ ಬೇರಿಳಿದ ಮರ
ಗೀರಿದರೆ ಚಿಲ್ಲೆನ್ನುವ ರಸ; ಬೆಳವ ರಭಸ.
ಬೆಚ್ಚನೆಯ ಬಿಸಿಲಿಗೆ ಮಡುಗಟ್ಟಿದ್ದ ಮಂಜು
ಹತ್ತು ಕಡೆ ಹರಿಯುವುತ್ಸಾಹ.
ಗಿಡಗೆಂಟೆ ಮುಳ್ಳುಪೊದೆ ಉಬ್ಬುತಗ್ಗುಗಳ
ಸಮತಟ್ಟುಗೊಳಿಸಬೇಕೆಂಬ ಬುಲ್ಡೋಜರ್ ಬುದ್ದಿ.
ಹೀಗೆ ಬೆಳೆಯುತ್ತ ಬಂದದ್ದೇ ಒಂದು ಸುದ್ದಿ-
ಯಾಗಿ ಮರದ ಮೇಲೆಲ್ಲ ಟಕಟಕ ಸದ್ದು
ನೀಲಿ ಹಾಳೆಯ ಮೇಲೆ ಅಚ್ಚೊತ್ತಿದ ಹದ್ದು
ಮರಕುಟಿಗಗಳ ಸದ್ದು ನಿಲ್ಲಲಿಲ್ಲ;
ಚುಚ್ಚುವೆಚ್ಚರ ಹಕ್ಕಿ ಹಾರಲಿಲ್ಲ.

ಮೈನೆರೆದ ಮರದಲ್ಲಿ ಮೋಹಕುಟಿಗ
ಕಿತ್ತು ತಿನ್ನುವ ಕತ್ತುಬಳಸುವ ಹತ್ತಾರು ಸಲಗ
ಹಂಟರನು ಹಿಡಿದಾಗ ಹಲಗೆ ಬಡಿತ
ಕಾಲಕುಣಿಸುವ ಕುದುರೆ ಕೆನೆತ
ಹಂಟರಿನ ಮೈಯಲ್ಲಿ ಸಂಗೀತ ಸ್ವಿಚ್ಚೊತ್ತಿ
ಮೆಲ್ಲಗೆ ಮತ್ತೇರಿದ ಹೆಡೆಯ ನಾಗ.
ಅಚ್ಚೊತ್ತಿದ್ದ ಹದ್ದು ಎಚ್ಚೆತ್ತು ಬಡಿದಾಗ
ಸುತ್ತಮುತ್ತಲ ಮೋಡ ಕಿರುಚಿ ಕಣ್ಣೀರು.
ಅತ್ತಲಿಂದಿತ್ತ ಇತ್ತಲಿಂದಿತ್ತ ರಪರಪನೆ ಬಡಿವ
ಪುಕ್ಕಗಳಿಗೆ ಸಿಕ್ಕಿ ಮರದ ಮೈಯಲ್ಲಿ ದಿಗಿಲು!
ಹದ್ದಿನಾರ್ಭಟದಲ್ಲಿ ಅತ್ತು ಕರೆಯುವ ಮಹಲು
ಬೇರಿಗೆ ಭೈರಿಗೆ ಹಿಡಿವ ಭೋರ್ಗರೆವ ಹೊನಲು.
ದಿಕ್ಕು ಕಾಣದ ಹಕ್ಕಿಗಳು ಮರದಲ್ಲೆ ಮುಲುಗುಟ್ಟಿ
ಮತ್ತದೇ ಕೆಲಸ ಟಕ ಟಕ ಸದ್ದು
ಮೋಹದಲ್ಲೆ ಮೈದಳೆದ ಎಚ್ಚರದ ಗುದ್ದು.
ಮಣ್ಣ ಮೈಥುನದಲ್ಲಿ ಫಲ ಕಾಣುವ ಛಲ ಮರಕ್ಕೆ
ತಲೆಯಲ್ಲಿ ಒಂದೇ ಸಮ ಕುಕ್ಕುವ ಬಯಕೆ.
ಹಾಳು ಬಾವಿಯ ಹೂಣು ಆಳುದ್ದ ತುಂಬಿ
ಸಲಿಕೆ ಗುದ್ದಲಿಗೆ ಎಡೆಬಿಡದ ಕೆಲಸ
ಹೊಸ ಮಂಕರಿಗಳಲ್ಲಿ ಮಣ್ಣು ತುಂಬುವ ರಭಸ.
ಬೆವರು ಬಸಿದು ಹೊಸ ವರಸೆಯಲ್ಲಿ ಹತ್ತುವಾಗ
ದಡದಲ್ಲಿ ಬಾವಿಯೊಡೆಯರ ಪಹರೆ; ಕತ್ತಿಝಳಪು.
ನೆಚ್ಚಿ ನಡೆದವನು ಬೆಚ್ಚಿ ತಲೆತುಂಬ ಕುಟಿಗ-
ಎಚ್ಚರದ ಸಲಗ; ದಾರಿ ಹೊಳಪು.
ಜಗ್ಗದೆ ಕುಗ್ಗದೆ ನುಗ್ಗುತ್ತ ನಡೆದಾಗ
ಬಾವಿಯೊಡಯರಲೆಷ್ಟೋ ಬಂಧು ಬಳಗ!
ನಿಂತು ನೋಡನೋಡುತ್ತ ಸಾವರಿಸಿಕೊಂಡು
ಧ್ಯೇಯ ಧುಮ್ಮಿಕ್ಕಿ ಕರೆಂಟು ದೃಷ್ಟಿ
ಕತ್ತಿಗಳಿಗೆ ಕತ್ತು ಕೊಡದ ಮಲೆತ ಮುಷ್ಟಿ
ಮರದಲ್ಲಿ ಚೈತನ್ಯ ಸೂರ್‍ಯ ಚುರುಕು-
ಹಕ್ಕಿಯಚ್ಚರ ಚಬುಕು.

ಅದುರಿದೊಡೆಯರಿಂದ ದಡಕಡಿವ ಕಾರ್ಯ
ಮೇಲೆ ಮುಸುಕು ಮುಚ್ಚಿದ ಸೂರ್ಯ
ಬಿದ್ದರೂ ಬಿಡದೆ ಬೆನ್ನು ತಿರುಗಿಸದೆ ದಡದೆಡೆಗೆ ಬಂದಾಗ ಬೆದರುಗೊಂಬೆಗಳಿಗೆಲ್ಲ ಬೆರಗು.

ಹಾಳುಬಾವಿಯ ಆಳ ನೋಡಿ ನಕ್ಕಾಗ
ನಾಚಿಕೆಯೆ ನೀರಾಗಿ ತಳ ತೋಯುತಿತ್ತು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...