Home / ಕವನ / ಕವಿತೆ / ಹಳ್ಳಿ

ಹಳ್ಳಿ

ಬೆಂಗಳೂರಿನಲ್ಲಿ ಬುದ್ಧಿಯ ಬಿಸಿಬೇಳೆ
ಬಾತು ತಿನ್ನುತ್ತ ಸಂಕೀರ್ಣ ಅಸಂಗತ ಹಾಳುಮೂಳು
ಹೂತು ತಲೆತಪ್ಪಲೆಗೆ ಸಟ್ಟುಗ ತಿರುವುತ್ತ
ಹೊಟ್ಟೆಯಲ್ಲಿ ಹೂವರಳಿಸ ಹೊರಟವನು
ಹಳ್ಳಿಗೆ ಹೋದಾಗ ಭ್ರಮೆ ಬಿಳುಚಿಕೊಂಡಿತು.

ಚೌಕಟ್ಟಿಲ್ಲದ ಊರಬಾಗಿಲು ನೆಲಮುಗಿಲು
ಪ್ರೈಮರಿ ಶಾಲೆಯಲ್ಲಿ ಶಾರದೆಗೆ ಸೀರೆ ಉಡಿಸುವ ಸಡಗರ
ಗೋಡೆಗಳ ಕಟ್ಟು ಕಳಚಿ ಗಾಳಿ ಬೆಳಕು ಅಗಾಧ
ಮೇಲು ಕೀಳು ತಲೆಕೆಳಗು ಮಾಡಿದ ಏಕೈಕ ವೇದಿಕೆ ಎಲ್ಲ ತರ-
ಗತಿಗಲ್ಲೆ ಸ್ಥಾನಮಾನ.
ಒಂದೊಂದ್ಲ ಒಂದು ವಂದಾಕೆ ಸಾ, ಬಸವ ಕಮಲ ಜಿಗುಟ್ದಾ ಸಾ
ಇತ್ಯಾದಿ ಹ್ರಸ್ವ ದೀರ್ಘ ವೈವಿಧ್ಯ ಸ್ವರಮೇಳ
ಸರಸ್ವತಿ ಸೌಧಕ್ಕೆ ಗುದ್ದಲಿಪೂಜೆಯ ಗದ್ದಲ.

ಊರ ಹೊಕ್ಕರೆ ಸಂದಿಗೊಂದಿಗಳಲ್ಲಿ ನೆಲಕ್ಕೆ ಕಾಲರ
ಕಕ್ಕಿತ್ತು; ಗಾರೆನೆಲ ಉಪ್ಪು ಉಕ್ಕಿತ್ತು
ಬೀದಿಯಲ್ಲೆಲ್ಲ ಭಾರತ ದರ್ಶನ;
ಹಿಟ್ಟಿನ ಸೀಕು ತಿನ್ನುತ್ತ ನಿಂತ ಸಿಂಬಳಬುರುಕ ತಲೆಕೆರುಕ
ಮೂಳೆಚಕ್ಕಳ ತಂಡತಂಡದ ಭವಿಷ್ಯ ಇಕ್ಕಳದಲ್ಲಿ ಬತ್ತಲೆ ಗ್ರಾಮಗಿರಣಿಯಲ್ಲಿ ಮೈತಳೆದ ಬೆರಣಿ
ಬಾಳು ಬಿಡಿಸುತ್ತ ಬಂದ ಸೊನ್ನೆ ಸರಣಿ
ನೊಗ ಹೊತ್ತು ಹೊರಟ ಬಡ ಎತ್ತಿನ ಕತ್ತು ಹುಣ್ಣು
ಗೋಣಿತಾಟಿನಲ್ಲಿ ಗೋವಿನ ಮೈ ನೀಟು ಮಾಡುವ ಹೆಣ್ಣು
ಇಲ್ಲದ ಹಾಲಿಗೆ ಕೆಚ್ಚಲು ಕಚ್ಚಿ ಚಪ್ಪರಿಸುವ ಕರು-
ವಿನ ಹಿಂದೆ ನಿಂತು ಮೂಸಿ ನೋಡುವ ನಾಯಿ
ಕಂಡು ಕಲ್ಲು ಎಸೆಯಲೆ ಎಂದುಕೊಂಡಾಗ
ಹಳ್ಳಿಗೇ ಹೆರಿಗೆ ಮಾಡಿಸಲು ಪ್ರಮಾಣವಚನ ಸ್ವೀಕರಿಸಿದ
ಪುಢಾರಿ ಹಲ್ಲು ಕಿಸಿದ

ಮೈ ತುಂಬ ಯೋಜನೆಯ ಮ್ಯಾಪು ಮುದ್ರಿಸಿಕೊಂಡು
ಮಾರುದ್ದ ಮಾತು ಹೊಸೆದ
ಬಚ್ಚಲಿನ ನೀರು ನಿಂತ ಕೊಚ್ಚೆ ಕಾಲುವೆಗೆ ಯಾರೋ ಒಬ್ಬ
ಸತ್ತ ಇಲಿ ಹೆಗ್ಗಣ ಎಸೆದ.

ಚಾವಡಿಯ ಚಂದ್ರಯಾನದ ಚರ್ಚೆಯಲ್ಲಿ
ಪೂಜಾರಿ ಪಾತ್ರ ಎಷ್ಟು ಗಾತ್ರ!
ಬೀಡಿಯ ಒಂದೊಂದು ದಮ್ಮಿಗೂ ತರಾವರಿ ಶೈಲಿ ಚಿಮ್ಮಿ
ಚಂದ್ರಯಾನ ಸುಳ್ಳು ಚಿಲ್ಲರೆ- ಎಂದು ಸಾರಿದ
ತನ್ನ ಮಂತ್ರಯಂತ್ರ ಎಷ್ಟು ಘನ ಬಲ್ಲಿರೆ- ಎಂದು ಭುಜ ಕುಣಿಸಿದ.
ಎಲ್ಲಿ ಸಲ್ಲದಿದ್ದರೂ ನನ್ನಲ್ಲಿ ಸಲ್ಲಿರೆ- ಎಂದು ಕರೆ ನೀಡಿದ
ಮಾತಿನಿಂದ ಮಾತಿಗೆ ಸರ್ಕಸ್ಸು ನೆಗೆತ ಮಗ್ನ ಮಹಾಜನರ
ಅನುಭವ ಮಂಟಪದಲ್ಲಿ ಗಾಂಧಿ ಇಂದಿರಾಗಾಂಧಿ ಸೇಂದಿ
ಎಲ್ಲ ಹುಟ್ಟಿಸತ್ತು ಸತ್ತುಹುಟ್ಟಿ ಪಾಪ!
ಸಂಸ್ಕಾರ ಮಾಡದೆ ಬರಿ ಸಂತಾಪ!

ತೆನೆ ತೆಕ್ಕೆಗೆ ತುಡಿಯುತ್ತ ಆಸ್ತಮ ಹತ್ತಿದ ಫಸಲು ಪಡೆದ ಬೆವರು
ಬರೆದ ಕತೆ ಲೆಕ್ಕಕ್ಕೆ ಸಿಕ್ಕದಷ್ಟು ಪುನರ್‌ಮುದ್ರಣವಾಗುತ್ತಿದೆ
ಅಷ್ಟು ಇಷ್ಟು ಬಂದರೆ ಪ್ರಕಾಶಕನ ಪಾಲಾಗುತ್ತಿದೆ.
ದಡ್ಡ ದೊಡ್ಡ ಕುರುಡು ಹುರುಡು ಬುದ್ಧಿಲದ್ದಿ
ಎಲ್ಲ ತರದ ತವರಾದ ಹಳ್ಳಿ
ಬಳ್ಳಿ ಹಬ್ಬಿದ ಸಾವುಚಪ್ಪರದಲ್ಲಿ ಮಣ್ಣ ಮದುವೆಯಾಗುತ್ತಿದೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...