Home / ಕವನ / ಕವಿತೆ / ರಸದ ಬೀಡು!

ರಸದ ಬೀಡು!

ಏನಿದು ಭಗ್ಗೆಂದು ಕೇಕೆ?
ಬೆಚ್ಚಿ ನೋಡಿದರೆ ಇಲ್ಲಿ ಕೈಕೈ ಹಿಡಿದು ಕುಣಿಯುವ
ಕತ್ತಲಕುಲ ವೃತ್ತ!
ನಡುವೆ ನಾಚನಿಂತ ಬಡ ಒಡಲ ನಗ್ನಮೊತ್ತ.

ನಡುಗಿಸುತ್ತದೆ ಮೈ; ಕಂಪಿಸುತ್ತದೆ ಕೈ
ಚಿತ್ತದಲ್ಲಿ ಕೆತ್ತಿದ ಪ್ರಶ್ನೆ ಕೆಣಕುತ್ತದೆ:
ಕಟ್ಟಿದೆವೆ ನಾವು ಹೊಸ ನಾಡೊಂದನು ರಸದ ಬೀಡೊಂದನು?

ಬುದ್ಧ ಗಾಂಧಿ ಬಂದರು
ಉತ್ತಿ ಬಿತ್ತಿ ಬೆಳೆತಂದು ಬಾಗಿಲು ಬಡಿದರು
ಮಿಲಿಟರಿ ಮಾದರಿಯಲ್ಲಿ ನಿಂತು
ಪಾದ ತೊಳೆದವರೆ ಎಲ್ಲರು!
-ಒಂದು ಕ್ಷಣ ಮೈಪುಳಕ ನೆನಪು
ಸುರುಳಿ ಬಿಚ್ಚುವ ಸಂತೋಷ ಸೆಲೆ.

ಈ ರಸದ ಬೀಡಿನಲ್ಲಿ ಹಿಂಡಿ ಹೀರಿ ಕಡೆಗೆ ಬಿಡದೆ
ಬೀಜ ಕಿತ್ತು ಬೀದಿಗೆ ಬಿಟ್ಟ ಮಾವಿನ ಓಟೆ ಸಮೃದ್ಧ ಸ್ವಾಮಿ
ಇಲ್ಲಿಗೆ ಬಂದು ನೀರು ಕೇಳಿಬಿಟ್ಟಿರಿ! ಸಿಕ್ಕುವುದಿಲ್ಲ.
ಫುಟ್‌ಪಾತಿನಲ್ಲಿ ಪ್ರಾಣಬಿಡುವ ಸತ್ಪ್ರಜೆಗೆ ಇಗೋ ತೆಗೆದುಕೊಳ್ಳಿ ತರ್ಪಣ;
ಹಂಡೆ ಹೆಂಡವುಂಟು; ವಿಸ್ಕಿ ಬ್ರಾಂದಿಯುಂಟು.

ನಮ್ಮದು ಹರೆಯದ ಹೊಚ್ಚ ಹೊಸನಾಡು
ಮಸ್ತಕಪುಸ್ತಕದಲ್ಲಿ ಮಿಂಚಿದ್ದರೆ ದಫ್ತರಿನಲ್ಲಿ ಬಚ್ಚಿಟ್ಟುಕೊ
ಜೋಪಾನ! ತೆರೆದಪುಸ್ತಕಗಳಿಗಿಲ್ಲಿ ಬೆಂಕಿಕಡ್ಡಿ; ಬೂದಿಗುಡ್ಡೆ.
ಕುಪ್ಪುಗತ್ತಿಗೆ ಒಂದೊಂದೇ ಬೀಳುತ್ತೆ ಧುತ್ತೆಂದು ಬೊಡ್ಡೆ.
ಕಡೆಗೆ ಕಾಣಿಸುವುದು ಮುಂಡೆಯಾದ ಮೂಗಿಮರ.

ಹಾಗಾದರೆ ಈ ನಾಡು ಬಂಜೆ?
ಈ ನೆಲದ ಜಲದಲ್ಲಿ ಇರುವುದೆಲ್ಲ ನಂಜೆ?
ಬಂದರಲ್ಲ ಸಿದ್ಧರು ಗೆದ್ದರಲ್ಲ ಬದ್ಧರು?
ಪಾರಿವಾಳಗಳ ಸಂತತಿಯೇ ಇಲ್ಲಿ ಸಂದಿತ್ತಲ್ಲ?
ಕೋಗಿಲೆಯಿಂಚರದಲ್ಲಿ ನವಿಲು ನಲಿದಿತ್ತಲ್ಲ?
ಸಿಂಹ ಸೊಂಡಿಲ ಹಿಡಿದು ಆಟ ಆಡಿತ್ತಲ್ಲ?

ಕಾವಿಬಟ್ಟೆಯಲ್ಲಿ ಕಾವಿಗೆ ಕೂತ ಕೋಳಿ
ಮಾಡಿದ ಮರಿಗಳದೆಷ್ಟು ಗದ್ದಲ ಗೊಂದಲ!
‘ಹೊಟ್ಟೆಗಿಲ್ಲವೆ? ಯಾಕೆ ಯೋಚನೆ? ಗಂಟುಮೂಟೆಕಟ್ಟು
ನಾವಿಲ್ಲವೆ ಜಟ್ಟಿಗಳು? ಮುಗಿಲಿಗೆ ಮಣ್ಣುಹೊರುವ ತಟ್ಟಿಗಳು?’
ಪಾಪ! ಗದಗುಡುವಾಗಸಕ್ಕೆ ಗರಗಸ ಹಿಡಿವ ಕೆಲಸ
ಬಾನ ಕೊಯ್ಯದಿದ್ದರೂ ಬಾಳು ಕೊಯ್ಯುತ್ತದೆ
ಸುಯ್ಯುತ್ತದೆ; ತೊಟ್ಟಿಕ್ಕುವ ಬೆವರು ತೋರಿಸಿ
‘ಆಹಾ! ಮಳೆ ಬಂತು ಮಳೆ ನಮ್ಮ ಮಹಿಮೆಯ ಬೆಳೆ’
-ಹುಯ್ಯಲಿಡುತ್ತದೆ ನಿತ್ಯನಿರಂತರ ನಿರಾಕಾರ ಕಾವಿಕುಲ

ಕೇರಿಕೇರಿಯಲ್ಲಿ ಹರಿದು ಘನೀಭವಿಸಿದ ಗೊಡ್ಡು ಬೆಟ್ಟಗಳು
ಪುರ್ರನೆ ಹಾರುತ್ತವೆ; ಪಟ ಪಟ ಪುಕ್ಕ ಬಡಿದು
ರೊಪ್ಪದಲ್ಲಿ ಕುಪ್ಪೆ ಹಾಕುತ್ತವೆ; ಕುಪ್ಪಳಿಸುತ್ತವೆ.
ಪಟ್ಟದ ಮೇಲೆ ಹುಬ್ಬು ಹಾರಿಸಿ, ಮೀಸೆ ತಿರುವುತ್ತವೆ.

ಧರ್ಮದೊಡ್ಡಿಯಲ್ಲಿ ದೊಗಲೆ ಬಟ್ಟೆ ಜೇಬು ತುಂಬ
ವಿಶ್ವಕಲ್ಯಾಣ ಸರಕು, ಚುರುಕು ಮತಾಪು
ವಜ್ರಾಯುಧ ಯೋಧ ಊದುವ ಕಹಳೆಗೆ ಮೂಲ-
ಭೂತ ಹಕ್ಕು ಚ್ಯುತಿಯಾರೋಪ ರೋಪು.

ಗೂರಲು ಹತ್ತಿ ಬೋರಲು ಬಿದ್ದ ಬಾಳಿಗೆ ಬಿರಟೆ
ತೊಗಟೆ ಸುಲಿದ ಮರ ಅಜರಾಮರ
ಚಿಂದಿಬಟ್ಟೆ ಹಸಿದ ಹೊಟ್ಟೆ ಮೂಳೆಕೈಕಾಲುಗಳಿಗೆ
ವೈಶಂಪಾಯನ ಸರೋವರ.

ಚಿತ್ತ ಬುತ್ತಿ ಕಟ್ಟಿ ಅಲೆಯೊಳಗೆ ಆಸೆಹಚ್ಚಿ
ಹೊಯ್ಯುವ ಜನಗಣಕ್ಕೆ ಬಲರಾಮಾಗಮನ ಚಿಂತೆ.
ಹಾಳು ಸುರಿಯುವ ಮನೆ ಮಸಣದಲ್ಲಿ
ಇರಿಯುತ್ತಿದ್ದಾರೆ ಉರಿಸುತ್ತಿದ್ದಾರೆ ತೊಲೆ ಜಂತೆ.

ಉರಿನಾಲಗೆಯಲ್ಲಿ ಚಿಮ್ಮ ಬಾರದೆ ನವಸೃಷ್ಟಿ?
ನಮ್ಮ ಮಣ್ಣು ಅರಳಿಸಿದ ಪುಷ್ಪವೃಷ್ಟಿ?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...