Home / ಕವನ / ನೀಳ್ಗವಿತೆ / ವರುಣನ ಕೇಳು

ವರುಣನ ಕೇಳು

ವರುಣನ ಮಗ ಭೃಗು ತಿಳಿದಿದ್ದ
ಎಲ್ಲರಿಗಿಂತಲು ತಾನೇ ಬುದ್ಧ
ಒದ್ದನು ವರುಣನು ಆತನ ಪೃಷ್ಠಕೆ
ಭೃಗು ಮುಗ್ಗರಿಸಿದನಾಚೆಯ ಲೋಕಕೆ

ಭೃಗು ನೋಡಿದ-
ಅಲ್ಲೊಬ್ಬಾತ
ಇನ್ನೊಬ್ಬಾತನ ಬಿಚ್ಚುತಲಿದ್ದ
ವೃಕ್ಷದ ತೊಗಟೆಯ ಬಿಡಿಸುವ ಹಾಗೆ
ಒಂದೊಂದೇ ಪೊರೆ
ಬೀಳಲು ಕೆಳಗೆ

ಒಳಗೇನುಳಿವುದು ?
ಕೊನೆಗೇನುಳಿವುದು ?
ಇಂಥಾ ಕೆಲಸವು ಎಂದಿಗೆ ಮುಗಿವುದು ?
ಎನ್ನಲು ಭ್ರೃಗುವು ಆತನು ಹೇಳಿದ-
ಹೋಗೆಲೊ ಹೈದ !
ವರುಣನ ಕೇಳು !

ಬಿಚ್ಚುವ ವ್ಯಕ್ತಿಯೆ ಬಿಚ್ಚುವುದಿಲ್ಲ
ಬಿಚ್ಚಿದುದೆಲ್ಲಾ ಮುಗಿಯುವುದಿಲ್ಲ
ಪೊರೆಯೊಳಗಿದ್ದರೆ ಪೊರಯೇನಂತೆ
ಅಷ್ಟಕೆ ಯಾತಕೆ ಯಾರಿಗೆ ಚಿಂತೆ ?
-ಎಂದನು ವರುಣ :
ನೀನಿನ್ನೂ ಹೈದ !
ಎನ್ನಲು ಭೃಗು ಮುಗ್ಗರಿಸಿದ್ದ

ಭೃಗು ನೋಡಿದ-
ಒಬ್ಬಾನೊಬ್ಬ
ಬಾಯಿಯ ತೆರೆದು ಕೂಗುತಲಿರುವ
ಆದರು ಹೊರಡದು ಒಂದೂ ಶಬ್ದ
ಇದ ನೋಡಿದ ಭ್ರಗು-
ವಾದನು ಸ್ತಬ್ದ

ಕೂಗಿದರೇತಕೆ
ಧ್ವನಿಯೇ ಇಲ್ಲ ?
ಇದಕುತ್ತರವ ಯಾವನು ಬಲ್ಲ ?
ಎನ್ನಲು ಭೃಗು ಆತನು ಹೇಳಿದ-
ಹೊಗೆಲೊ ಹೈದ !
ವರುಣನ ಕೇಳು !

ಕಿವಿಗಳಿಗೆಲ್ಲವು ಕೇಳಲೆಬೇಕೆ ?
ಕೇಳದ ಸ್ವರವೂ ಇರದೇ ಏಕೆ?
ಕೇಳುವ ಸಮಯ ಸರಿಯಾಗಿ ಕೇಳು
ಕೇಳದ ಸಮಯ ಕಿವಿಮುಚ್ಚಿಕೊಳ್ಳು
-ಎಂದನು ವರುಣ :
ನೀನಿನ್ನೂ ಹೈದ !
ಎನ್ನಲು ಭೃಗು ಮುಗ್ಗರಿಸಿದ್ದ

ಭೃಗು ನೋಡಿದ-
ಒಬ್ಬ ವಿದೂಷಕ
ಸಿಂಹಾಸನವ ಏರಿದ ಕೌತುಕ
ನಕ್ಕವರೆಲ್ಲರ ಅಳಿಸುತಲಿದ್ದ
ಅತ್ತವರನ್ನೂ ನಗಿಸುತಲಿದ್ದ

ಅತ್ತವರಾರು ?
ನಕ್ಕವರಾರು ?
ಇಂಥ ರಾಜ್ಯದಿ ಉಳಿದವರಾರು ?
ಎನ್ನಲು ಭೃಗು ಆತನು ಹೇಳಿದ-
ಹೋಗೆಲೊ ಹೈದ !
ವರುಣನ ಕೇಳು !

ಸಿಂಹಗಳಿಲ್ಲದ ಸಿಂಹಾಸನದಿ
ಕೂರದೆ ಏನು ಯಾರೂ ಸುಖದಿ ?
ನಕ್ಕರೆ ಬಾಯಿ ಅತ್ತರೆ ಕಣ್ಣು
ಹಾಲು ಕಡೆದೇ ಸಿಗುವುದು ಗಿಣ್ಣು
-ಎಂದನು ವರುಣ :
ನೀನಿನ್ನೂ ಹೈದ !
ಎನ್ನಲು ಭೃಗು ಮುಗ್ಗರಿಸಿದ್ದ.

ಭೃಗು ನೋಡಿದ-
ಕಾರ್ಗತ್ತಲೆ
ಮೈಬಣ್ಣದ ತೀರಾ ಬೆತ್ತಲೆ
ವೃಕ್ತಿಯು ಭಾರೀ ಗದೆಯನು ಹಿಡಿದು
ನದಿಯೆರಡನ್ನೂ
ಕಾಯುತ್ತಿರುವುದು

ಒಂದರ ತುಂಬಾ
ಹರಿಯುವ ನೆತ್ತರು
ಇನ್ನೊಂದರಲಿ ಯಾವುದೊ ಅತ್ತರು
ಎರಡೂ ನದಿಗಳು ಹೋಗುವುದೊಂದೇ
ಬಯಲಲಿ ತುಸು
ಹಿಂದೇ ಮುಂದೇ

ಯಾತಕೆ ಗದೆ
ಯಾತಕೆ ಬೆತ್ತಲೆ
ಯಾತಕೆ ಎರಡೂ ನದಿಗಳು ಇತ್ತಲೆ ?
ಎನ್ನಲು ಭೃಗು ಆತನು ಹೇಳಿದ-
ಹೋಗೆಲೊ ಹೈದ !
ವರುಣನ ಕೇಳು !

ಹಲವರು ಸತ್ತರು ಕೆಲವರು ಅತ್ತರು
ಕಾವಲುಗಾರನ ಬಟ್ಟೆಯ ಕಿತ್ತರು
ನೀರಿನ ಗುಣ ಕೆಳಗೇ ಹರಿವುದು
ಆವಿ ಮಾತ್ರವೆ ಮೇಲೇರುವುದು
-ಎಂದನು ವರುಣ :
ನೀನಿನ್ನೂ ಹೈದ !
ಎನ್ನಲು ಭೃಗು ಮುಗ್ಗರಿಸಿದ್ದ

ಭ್ಸಗು ನೋಡಿದ-
ಮೈಕೈ ಅಸ್ಥಿ
ಆದಂಥವನೂಬ್ಬನೆ ಕುಸ್ತಿ
ಮಾಡುತ್ತಿರುವ ನೋಡುತ್ತಿರುವ
ಗಾಳಿಯ ಜತೆ
ಹೋರುತ್ತಿರುವ

ಹಲ್ಲನು ಕಡಿದು
ತಲೆಯನು ಬಾಗಿ
ತಾನೂ ಹೊಡೆತವ ಕೊಂಡವನಾಗಿ
ಯಾರೋ ದೊಪ್ಪನೆ ಕೆಡವಿಸಿ ಒಮ್ಮೆಲೆ
ಕುಳಿತಿರಬಹುದೆ
ಅವನೆದೆ ಮೇಲೆ ?

ಯಾತಕೆ ಈ ಸ್ಥಿತಿ
ಯಾತಕೆ ಅಸ್ಥಿ
ಯಾರೊಂದಿಗೆ ಈ ನಡೆಸಿದ ಕುಸ್ತಿ?
ಎನ್ನಲು ಭೃಗು ಅತನು ಹೇಳಿದ-
ಹೋಗೆಲೊ ಹೈದ !
ವರುಣನ ಕೇಳು !

ಕಾಣುವುದೂಂದೇ ವಾಸ್ತವವಲ್ಲ
ಕಾಣದೆ ಇರುವುದು ಸುಳ್ಳೇನಲ್ಲ
ಆಡುವ ವ್ಯಕ್ತಿಗೆ ಆಟವೆ ಮುಖ್ಯ
ಗೆಲುವಿನಂತೆಯೆ ಸೋಲೂ ಶಕ್ಯ
-ಎಂದನು ವರುಣ :
ನೀನಿನ್ನೂ ಹೈದ !
ಎನ್ನಲು ಭೃಗು ಮುಗ್ಗರಿಸಿದ್ದ

ಭೃಗು ನೋಡಿದ-
ಇಬ್ಬರು ಸ್ತ್ರೀಯರು
ತೊಡೆ ತೆರೆದಿದ್ದರು ಅರೆತೆರೆದಿದ್ದರು
ಲೋಕದ ಸಕಲೈಶ್ವರ್ಯವು ಅಲ್ಲಿ
ಹುದುಗಿಟ್ಟಂತೆ
ಹೊರಗೂ ಚೆಲ್ಲಿ

ಕತ್ತಲು ಬೆಳಕು
ನೆರಳಿನ ಸರ್ಪ
ಯಾರಿಗು ತಲೆ ಬಾಗದ ದರ್ಪ
ಭೃಗು ದಂಗಾದ ಎಷ್ಟೋ ಕಾದ
ಅಳುಕುತ ಅವರ
ಬಳಿಗೂ ಹೋದ

ಕತ್ತಲು ಬೆಳಕು
ಒಂದೇ ಕಡೆಯೆ !
ಸಕಲೈಶ್ಚರ್ಯಕು ಇಂಥಾ ಎಡೆಯೆ ?
ಎನ್ನಲು ಭೃಗು ಹೇಳಿದರವರು-
ನೀನಿನ್ನೂ ಕರು !
ವರುಣನ ಕೇಳು !

ಹೋಗುವ ದಾರಿಯೆ ಬರಲೂ ಬೇಕು
ಅದಕೇ ಕತ್ತಲು ಅದಕೇ ಬೆಳಕು
ಸೃಷ್ಟಿಮೂಲದ ಇಂಥ ರಹಸ್ಯ
ಯಾರಲು ಕೇಳದೆ ತಿಳಿವುದವಶ್ಯ !
-ಎಂದನು ವರುಣ :
ನೀನಿನ್ನೂ ಹೈದ !
ಎನ್ನಲು ಭೃಗು ಆಚೆಗೆ ಬಿದ್ದ-
ಎಷ್ಟೋ ಯುಗ
ಹಾಗೆಯೆ ಇದ್ದ !
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...