Home / ಕವನ / ನೀಳ್ಗವಿತೆ / ವರುಣನ ಕೇಳು

ವರುಣನ ಕೇಳು

ವರುಣನ ಮಗ ಭೃಗು ತಿಳಿದಿದ್ದ
ಎಲ್ಲರಿಗಿಂತಲು ತಾನೇ ಬುದ್ಧ
ಒದ್ದನು ವರುಣನು ಆತನ ಪೃಷ್ಠಕೆ
ಭೃಗು ಮುಗ್ಗರಿಸಿದನಾಚೆಯ ಲೋಕಕೆ

ಭೃಗು ನೋಡಿದ-
ಅಲ್ಲೊಬ್ಬಾತ
ಇನ್ನೊಬ್ಬಾತನ ಬಿಚ್ಚುತಲಿದ್ದ
ವೃಕ್ಷದ ತೊಗಟೆಯ ಬಿಡಿಸುವ ಹಾಗೆ
ಒಂದೊಂದೇ ಪೊರೆ
ಬೀಳಲು ಕೆಳಗೆ

ಒಳಗೇನುಳಿವುದು ?
ಕೊನೆಗೇನುಳಿವುದು ?
ಇಂಥಾ ಕೆಲಸವು ಎಂದಿಗೆ ಮುಗಿವುದು ?
ಎನ್ನಲು ಭ್ರೃಗುವು ಆತನು ಹೇಳಿದ-
ಹೋಗೆಲೊ ಹೈದ !
ವರುಣನ ಕೇಳು !

ಬಿಚ್ಚುವ ವ್ಯಕ್ತಿಯೆ ಬಿಚ್ಚುವುದಿಲ್ಲ
ಬಿಚ್ಚಿದುದೆಲ್ಲಾ ಮುಗಿಯುವುದಿಲ್ಲ
ಪೊರೆಯೊಳಗಿದ್ದರೆ ಪೊರಯೇನಂತೆ
ಅಷ್ಟಕೆ ಯಾತಕೆ ಯಾರಿಗೆ ಚಿಂತೆ ?
-ಎಂದನು ವರುಣ :
ನೀನಿನ್ನೂ ಹೈದ !
ಎನ್ನಲು ಭೃಗು ಮುಗ್ಗರಿಸಿದ್ದ

ಭೃಗು ನೋಡಿದ-
ಒಬ್ಬಾನೊಬ್ಬ
ಬಾಯಿಯ ತೆರೆದು ಕೂಗುತಲಿರುವ
ಆದರು ಹೊರಡದು ಒಂದೂ ಶಬ್ದ
ಇದ ನೋಡಿದ ಭ್ರಗು-
ವಾದನು ಸ್ತಬ್ದ

ಕೂಗಿದರೇತಕೆ
ಧ್ವನಿಯೇ ಇಲ್ಲ ?
ಇದಕುತ್ತರವ ಯಾವನು ಬಲ್ಲ ?
ಎನ್ನಲು ಭೃಗು ಆತನು ಹೇಳಿದ-
ಹೊಗೆಲೊ ಹೈದ !
ವರುಣನ ಕೇಳು !

ಕಿವಿಗಳಿಗೆಲ್ಲವು ಕೇಳಲೆಬೇಕೆ ?
ಕೇಳದ ಸ್ವರವೂ ಇರದೇ ಏಕೆ?
ಕೇಳುವ ಸಮಯ ಸರಿಯಾಗಿ ಕೇಳು
ಕೇಳದ ಸಮಯ ಕಿವಿಮುಚ್ಚಿಕೊಳ್ಳು
-ಎಂದನು ವರುಣ :
ನೀನಿನ್ನೂ ಹೈದ !
ಎನ್ನಲು ಭೃಗು ಮುಗ್ಗರಿಸಿದ್ದ

ಭೃಗು ನೋಡಿದ-
ಒಬ್ಬ ವಿದೂಷಕ
ಸಿಂಹಾಸನವ ಏರಿದ ಕೌತುಕ
ನಕ್ಕವರೆಲ್ಲರ ಅಳಿಸುತಲಿದ್ದ
ಅತ್ತವರನ್ನೂ ನಗಿಸುತಲಿದ್ದ

ಅತ್ತವರಾರು ?
ನಕ್ಕವರಾರು ?
ಇಂಥ ರಾಜ್ಯದಿ ಉಳಿದವರಾರು ?
ಎನ್ನಲು ಭೃಗು ಆತನು ಹೇಳಿದ-
ಹೋಗೆಲೊ ಹೈದ !
ವರುಣನ ಕೇಳು !

ಸಿಂಹಗಳಿಲ್ಲದ ಸಿಂಹಾಸನದಿ
ಕೂರದೆ ಏನು ಯಾರೂ ಸುಖದಿ ?
ನಕ್ಕರೆ ಬಾಯಿ ಅತ್ತರೆ ಕಣ್ಣು
ಹಾಲು ಕಡೆದೇ ಸಿಗುವುದು ಗಿಣ್ಣು
-ಎಂದನು ವರುಣ :
ನೀನಿನ್ನೂ ಹೈದ !
ಎನ್ನಲು ಭೃಗು ಮುಗ್ಗರಿಸಿದ್ದ.

ಭೃಗು ನೋಡಿದ-
ಕಾರ್ಗತ್ತಲೆ
ಮೈಬಣ್ಣದ ತೀರಾ ಬೆತ್ತಲೆ
ವೃಕ್ತಿಯು ಭಾರೀ ಗದೆಯನು ಹಿಡಿದು
ನದಿಯೆರಡನ್ನೂ
ಕಾಯುತ್ತಿರುವುದು

ಒಂದರ ತುಂಬಾ
ಹರಿಯುವ ನೆತ್ತರು
ಇನ್ನೊಂದರಲಿ ಯಾವುದೊ ಅತ್ತರು
ಎರಡೂ ನದಿಗಳು ಹೋಗುವುದೊಂದೇ
ಬಯಲಲಿ ತುಸು
ಹಿಂದೇ ಮುಂದೇ

ಯಾತಕೆ ಗದೆ
ಯಾತಕೆ ಬೆತ್ತಲೆ
ಯಾತಕೆ ಎರಡೂ ನದಿಗಳು ಇತ್ತಲೆ ?
ಎನ್ನಲು ಭೃಗು ಆತನು ಹೇಳಿದ-
ಹೋಗೆಲೊ ಹೈದ !
ವರುಣನ ಕೇಳು !

ಹಲವರು ಸತ್ತರು ಕೆಲವರು ಅತ್ತರು
ಕಾವಲುಗಾರನ ಬಟ್ಟೆಯ ಕಿತ್ತರು
ನೀರಿನ ಗುಣ ಕೆಳಗೇ ಹರಿವುದು
ಆವಿ ಮಾತ್ರವೆ ಮೇಲೇರುವುದು
-ಎಂದನು ವರುಣ :
ನೀನಿನ್ನೂ ಹೈದ !
ಎನ್ನಲು ಭೃಗು ಮುಗ್ಗರಿಸಿದ್ದ

ಭ್ಸಗು ನೋಡಿದ-
ಮೈಕೈ ಅಸ್ಥಿ
ಆದಂಥವನೂಬ್ಬನೆ ಕುಸ್ತಿ
ಮಾಡುತ್ತಿರುವ ನೋಡುತ್ತಿರುವ
ಗಾಳಿಯ ಜತೆ
ಹೋರುತ್ತಿರುವ

ಹಲ್ಲನು ಕಡಿದು
ತಲೆಯನು ಬಾಗಿ
ತಾನೂ ಹೊಡೆತವ ಕೊಂಡವನಾಗಿ
ಯಾರೋ ದೊಪ್ಪನೆ ಕೆಡವಿಸಿ ಒಮ್ಮೆಲೆ
ಕುಳಿತಿರಬಹುದೆ
ಅವನೆದೆ ಮೇಲೆ ?

ಯಾತಕೆ ಈ ಸ್ಥಿತಿ
ಯಾತಕೆ ಅಸ್ಥಿ
ಯಾರೊಂದಿಗೆ ಈ ನಡೆಸಿದ ಕುಸ್ತಿ?
ಎನ್ನಲು ಭೃಗು ಅತನು ಹೇಳಿದ-
ಹೋಗೆಲೊ ಹೈದ !
ವರುಣನ ಕೇಳು !

ಕಾಣುವುದೂಂದೇ ವಾಸ್ತವವಲ್ಲ
ಕಾಣದೆ ಇರುವುದು ಸುಳ್ಳೇನಲ್ಲ
ಆಡುವ ವ್ಯಕ್ತಿಗೆ ಆಟವೆ ಮುಖ್ಯ
ಗೆಲುವಿನಂತೆಯೆ ಸೋಲೂ ಶಕ್ಯ
-ಎಂದನು ವರುಣ :
ನೀನಿನ್ನೂ ಹೈದ !
ಎನ್ನಲು ಭೃಗು ಮುಗ್ಗರಿಸಿದ್ದ

ಭೃಗು ನೋಡಿದ-
ಇಬ್ಬರು ಸ್ತ್ರೀಯರು
ತೊಡೆ ತೆರೆದಿದ್ದರು ಅರೆತೆರೆದಿದ್ದರು
ಲೋಕದ ಸಕಲೈಶ್ವರ್ಯವು ಅಲ್ಲಿ
ಹುದುಗಿಟ್ಟಂತೆ
ಹೊರಗೂ ಚೆಲ್ಲಿ

ಕತ್ತಲು ಬೆಳಕು
ನೆರಳಿನ ಸರ್ಪ
ಯಾರಿಗು ತಲೆ ಬಾಗದ ದರ್ಪ
ಭೃಗು ದಂಗಾದ ಎಷ್ಟೋ ಕಾದ
ಅಳುಕುತ ಅವರ
ಬಳಿಗೂ ಹೋದ

ಕತ್ತಲು ಬೆಳಕು
ಒಂದೇ ಕಡೆಯೆ !
ಸಕಲೈಶ್ಚರ್ಯಕು ಇಂಥಾ ಎಡೆಯೆ ?
ಎನ್ನಲು ಭೃಗು ಹೇಳಿದರವರು-
ನೀನಿನ್ನೂ ಕರು !
ವರುಣನ ಕೇಳು !

ಹೋಗುವ ದಾರಿಯೆ ಬರಲೂ ಬೇಕು
ಅದಕೇ ಕತ್ತಲು ಅದಕೇ ಬೆಳಕು
ಸೃಷ್ಟಿಮೂಲದ ಇಂಥ ರಹಸ್ಯ
ಯಾರಲು ಕೇಳದೆ ತಿಳಿವುದವಶ್ಯ !
-ಎಂದನು ವರುಣ :
ನೀನಿನ್ನೂ ಹೈದ !
ಎನ್ನಲು ಭೃಗು ಆಚೆಗೆ ಬಿದ್ದ-
ಎಷ್ಟೋ ಯುಗ
ಹಾಗೆಯೆ ಇದ್ದ !
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...