Home / ಕವನ / ಕವಿತೆ / ಖೂನಿ

ಖೂನಿ

ಸುಲಭ ಅಥವಾ ಕಷ್ಟದ
ಮಾತಲ್ಲ-
ಅವ ಸುಮ್ಮನೇ ಕೂತಿದ್ದ
ಸಂಜೆಯೂ ಆಗುತ್ತ ಇತ್ತು
ಆಗಲೇ ಗಡಿಯಾರ
ಆರರ ಹತ್ತಿರ ಬಂದಿತ್ತು
ಎದ್ದು
ಕಿಟಕಿಯ ತೆರೆದು ಬಂದ
ಇದ್ದ
ಬೆಳಕೂ ಒಳ ಬಂತು
ಅದು
ನದೀ ಮೇಲಿಂದ ಬಂತು
* * *

ಅವ ಆರಾಮ ಕುರ್ಚಿಯಲಿ
ಇದ್ದಾನೆ
ಅವ ಈಗಲೇ
ಬರಲಿದ್ದಾನೆ
ನೆರೆಮನೆ ಪಾತ್ರೆಯ
ಸದ್ದು ? ಅಥವ
ಗೋಡೆಯ ಮೇಲಿಂದ ಬೆಕ್ಕು
ಕೆಳ ಹಾರಿದ್ದು ?
ಅಥವ ಯಾರೋ
ನೀರಿಗೆ ಬಿದ್ದು…
ಅವಸರವೇನು
ನಿಧಾನ
* * *

ಬಹುದಿನಗಳಿಂದಲೂ
ಒಬ್ಬ ಸಿಗರೇಟು ತೆಗೆದರೆ
ಇನ್ನೊಬ್ಬ ಕಡ್ಡಿಗೀರುವನು
ಹಾಗಿತ್ತು

ತುಸು ಸಂಗೀತವೂ ಇತ್ತು
ಅದು ಆಗೀಗ
ನೀರ ಝುರಿಯಂತೆ
ಹರಿದು ಬರುತಿತ್ತು
ಮುಂದೆ ಹೋದಂತೆ
ಹಿಂದೆಯೂ ಬರುತಿತ್ತು
ನದಿ ದಾಟಿದವರಿಗೆ
ಇದು ಗೊತ್ತು
ನದೀ ಮಧ್ಯದಲೇ
ತಲೆ ಸುತ್ತು
ಆಗ
* * *

ಆಗಲೇ ಆರು ಹೊಡೆಯಿತು
ಕೊನೇ ಉಗಿಬಂಡಿಯೂ
ವರ್ಧಿಸಿತು ವೇಗ
ಆಗಲೇ
ಅಸ್ಪಷ್ಟ ಬೆಳಕಿನಲಿ
ನೀ ಎದ್ದು ನಿಂತಿ
ಎರಡೂ ಕೈಯಲಿ ಕಲ್ಲ
ಎತ್ತಿ ಹೊಡೆದಿ
ಆಮೇಲೆ ಕಿಟಕಿಯ
ಹೊರಕ್ಕೆ ದೂಡಿದಿ
ಧಡ್ಡೆಂದು ಸದ್ದು
ಒಮ್ಮೆ ಕೇಳಿಸಿತು
ಉಗಿ ಬಂಡಿಯ ಸದ್ದು
ಅದನ್ನು ಅಳಿಸಿತ್ತು
* * *

ಅವ ಬಾಗಿಲ ಬಳಿ
ಹೋಗುವನು
ಒಂದು ಕ್ಷಣ ಏನೋ
ಯೋಚಿಸಿ ನಿಲ್ಲುವನು
ಆಮೇಲೆ ಬಾಗಿಲ
ತೆರೆಯುವನು

ಅವನೇ ! ಅವ
ಒಂದು ಕ್ಷಣ ಏನೋ
ಯೋಚಿಸಿ ನಿಲ್ಲುವನು
ಆಮೇಲೆ ಕಾಲ
ಮನೆಯೊಳಗೆ ಇರಿಸುವನು
* * *

“ಸಂಜೆಯ ಕಿಟಕಿ ?”
“ಹೌದು”
“ಸರಿಯಾದ ಕಡೆಗೆ”
“ನನ್ನದೆ ಯೋಚನೆ”
“ಆ ಕಲ್ಲು ?”
“ಅದೂ ನನ್ನದೆ”
“ಚೆನ್ನಾಗಿದೆ. ಕಬ್ಬಿಣ ಅಥವ…”
“ಯುರೇನಿಯದಂತೆ ?”
“ಬಹಳ ಭಾರವಿರಬೇಕು”
“ಇದೆ”
* * *

ಅವಸರದ ಮಾತಲ್ಲ
ಅದರ ಅಗತ್ಯವೂ ಇಲ್ಲ
ಒಂದೆರಡು ದಿನಗಳೆ ?
ಆರಾಮ ಕುರ್ಚಿಯಲಿ
ನೀನು ಕುಳಿತಿರುವಿ
ಬಾಗಿಲಿನ ಬಡಿತಕ್ಕೆ
ಎದ್ದು ಬರುವಿ
ಒಂದು ಕ್ಷಣ ಯೋಚನೆಗೆ
ಸಿಕ್ಕಿದಂತಿರುವಿ
ಆಮೇಲೆ ನಿಧಾನ
ತೆರೆದೇ ತೆರೆಯುವಿ
ಒದ್ದೆಯಾಗಿಲ್ಲ ಮೈ
ಒದ್ದೆಯಾಗಿಲ್ಲ ಕೂದಲೂ
ಆದರೂ
ಹಳೇ ಹಾವಸೆಯ ವಾಸನೆ
ಮತ್ತೊಮ್ಮೆ ನಾನು
ಒಳಕ್ಕೆ ಕಾಲಿಡುವೆ
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...