Home / ಲೇಖನ / ಇತರೆ / ಗೋಂದನ ಬಾಳೆಗೊನೆ

ಗೋಂದನ ಬಾಳೆಗೊನೆ

ಪ್ರಥಮ ಪ್ರಣಯದ ಸುಖಾಗಮನದಿಂದ ಆನಂದಪರವಶವಾಗುವಂತೆ, ನಮ್ಮೂರಿಗೆ ವಿದ್ಯುದ್ದೀಪಗಳು ಬರುವುವೆಂಬುದನ್ನು ಕೇಳಿದ ಕೂಡಲೇ ಊರಿಗೆ ಊರೇ ಒಂದು ವಿಧದ ಸಂತೋಷಾತಿರೇಕದಿಂಷ ಕುಣಿದಾಡಿತು, ಆ ಉನ್ಮಾದದ ಕುಣಿದಾಟದಲ್ಲಿ ಎಲ್ಲೆಲ್ಲಿ ಏನೇನು ಜಾರಿಹೋಗಿ ಯಾರಿಗೆ ಎಂತಹ ನಷ್ಟವಾಯಿತೋ ಅದನ್ನು ಎಣಿಕೆಮಾಡಿದವರಾರೂ ಇಲ್ಲ. ಆದರೆ, ಗೋಂದನ ಮನೆಯ ಬಾಳೆಗೊನೆ ಯೊಂದು ಖಂಡಿತವಾಗಿ ಹೋಯಿತು. ಆ ಘಟನೆಯನ್ನು ಗೋಂದನು ಇನ್ನೂ ಮರೆತಿಲ್ಲ.

ಕೆಲಸಗಾರರು ಗೋಂದನ ಮನೆಮುಂದೆ ರಸ್ತೆಯಲ್ಲಿ ವಿದ್ಯುತ್ ಕಂಭವನ್ನು ಇಟ್ಟು, ತಂತಿಹಾಕುತಿದ್ದರು. ಗೋಂದನು ಹರ್ಷಚಿತ್ತನಾಗಿ ನೋಡುತಿದ್ದನು.

ಒಬ್ಬ ಕೆಲಸಗಾರನು ಗೋಂದನ ಬಳಿಗೆ ಬಂದು, “ಸ್ವಾಮಿ, ರಸ್ತೆಯಲ್ಲಿ ಹೆಚ್ಚು ಸ್ಥಳವಿಲ್ಲ. ಆ ಕಂಭದ ಮೇಲಿಂದ ತಂತಿಯನ್ನು ಎಳೆದು ಕಟ್ಟುವಾಗ ಕಂಭವು ಅತ್ತಿತ್ತ ಮಾಲದಂತೆ ಅದಕ್ಕೆ ಹಗ್ಗವನ್ನು ಬಿಗಿದು, ದೂರದಿಂದ ಇಬ್ಬರು ಎಳೆದು ಹಿಡಿಯಬೇಕಾಗಿದೆ. ನಿಮ್ಮ ಹಿತ್ತಲಿಗೆ ಬರಬಹುದಷ್ಟೆ?” ಎಂದನು.

ವೆಚ್ಚವಿಲ್ಲದ ಪರೋಪಕಾರ! ‘ಆಗಲಿ’ ಎಂದನು ಗೋಂದ.

ಆಯಿತು!

“ಏನಾಯಿತು?” ಎಂದು ನೀವು ಕೇಳಬಹುದು.

ಆದುದಿಷ್ಟೆ, -ಮರುದಿನ ಗೋಂದನು ಬೆಳಗ್ಗೆ ಎದ್ದು ಹಿತ್ತಲಿಗೆ ಹೋಗಿ ನೋಡಿದಾಗ, ಪೂರ್ಣವಾಗಿ ಬೆಳೆದಿದ್ದ ಒಂದು ರಸಬಾಳೆಹಣ್ಣಿನ ದೊಡ್ಡ ಗೊನೆಯು ಕಾಣೆಯಾಗಿದೆ!

“ಈ ತಂತೀಮಕ್ಕಳೇ ಕದ್ದೊಯ್ದರು!” ಎಂದನು ಗೋಂದ.

“ಛೀ- ಏನುಮಾತು! ಅವರ ಮುಖವನ್ನು ನಾನು ನೋಡಿದ್ದೇನೆ, ಪ್ರಾಮಾಣಿಕರು!” ಎಂದಳು ಆತನ ಅಜ್ಜಿ.

“ಆದರೆ, ಅವರು ಮುಖದಿಂದ ಅದನ್ನೊಯ್ಯಲಿಲ್ಲ!” ಎಂದನು ಗೋಂದ.

“ಅವರ ಮೇಲೇಕೆ ಅಪವಾದ? ರಾತ್ರೆಕಾಲದಲ್ಲಿ ಯಾರಾದರೂ ಕಳ್ಳರು ಬಂದು ಕೊಂಡೊಯ್ದರೋ ಏನೋ!” ಎಂದು ಅಜ್ಜಿಯ ವಾದ.

ನಿಜ!

“ಗೊನೆ-ಗೊನೆ-ಗೊನೆ-ಗೊನೆ” ಎಂದೇ ತಲೆಯಲ್ಲಿ ಕಟ ಕಟ ಹೊಡೆದಂತಾಗಿತ್ತು. ಅಷ್ಟು ದೊಡ್ಡ ಗೊನೆ ಗೋಂದನ ಹಿತ್ತಲಲ್ಲಿ ಹಿಂದೆಂದೂ ಬೆಳೆದುದನ್ನು ಆತನು ನೋಡಿರಲಿಲ್ಲ.
ಗೋಂದನ ಅಜ್ಜಿಯು ಅದನ್ನು ಕಡಿಯಬೇಕೆಂದರೂ ಕೇಳದೆ, “ಇನ್ನೆರಡು ದಿನ ಬಾಳೆಯಲ್ಲೇ ಇರಲಿ” ಎಂದಿದ್ದನು. ಈಗ ಗೊನೆ ಗೊನೆ ಎಂದು ಮರಮರ ಮರುಗಿದನು: ಆದರೆ, ಗೊನೆ ಗೊನೆ ಎಂದು ಕೆಲಸ ಬಾಯಲ್ಲಿ ಉಚ್ಚರಿಸಿದ ಕೂಡಲೇ ಗೊನೆ ಹುಟ್ಟಿ ನಮ್ಮ ಮುಂದೆ ಬಂದು ನಿಲ್ಲದೆಂಬುದು ಗೊನೆಯನ್ನು ಹಿಂದೆ ಎಂದಾದರೂ ಕಳಕೊಂಡಿರಬಹುದಾದವರ ಅನುಭವ.

ಅಪರಾಹ್ನ ಎರಡು ಗಂಟೆಯ ಬಿಸಿಲನ್ನು ಲಕ್ಷಿಸದೆ ನಮ್ಮೂರ ಸಂತೆಯನ್ನು ಪ್ರವೇಶಿಸಿ, ಬದನೆಯನ್ನು ಹಿಡ ಕೊಂಡು ಕುಳತಿದ್ದಾಕೆಯೊಬ್ಬಳ ಮುಂದೆ ನಿಂತು, “ಗೊನೆ!” ಎಂದನು ಗೋಂದ.

ಆಕೆ ಆಶ್ಚರ್ಯದಿಂದ “ಯಾವ ಗೊನೆ?” ಎಂದಳು

ತಬ್ಬಿಬ್ಬಾಗಿ “ಅಲ್ಲ- ಬದನೆ; ಏನು ಕ್ರಯ?” ಎಂದು ತಿದ್ದಿ ನುಡಿದನು ಗೋಂದ.

“ಐದಕ್ಕೆ ಮೂರಾಣೆ!” ಎಂದಳು.

“ನನ್ನ ಗೊನೆಗೆ ಒಂದೂವರೆ ರೂಪಾಯಿ ಬರುತ್ತಿಲ್ಲ!” ಎಂದುಕೊಳ್ಳುತ್ತ, ಹುಚ್ಚನಂತೆ ಅಲೆದಾಡಿ ಗೋಂದನು ಮುಂದರಿದು, ಸಂತೆಯಲ್ಲಾರಾದರೂ ಆ ಗೊನೆಯನ್ನು ಮಾರಾಟಕ್ಕೆ ತಂದಿರುವರೋ ಎಂದು ನೋಡಿದನು. ಇಲ್ಲ; ದೊರೆಯಲಿಲ್ಲ.

ಗೋಂದನು ಮನೆಗೆ ಮರಳಿದನು.

ಮನೆಗೆ ಬಂದು ತನ್ನ ಅಂಗಿಯನ್ನು ತೆಗೆದಿಟ್ಟು, ಹೊರ ಜಗಲಿಗೆ ಬಂದು ಕುಳಿತು, “ಗೊನೆ ಗೊನೆ ಗೊನೆ!” ಎನ್ನುತಿರಲು, –

“ಗೊನೆ”ಎಂದೊಂದು ಕೂಗು ಕೇಳಿಸಿತು.

ವಿದ್ಯುತವಾಹದ ಸಂಚಾರವಾದಂತೆ ಗೋಂದನು ಜಗ್ಗನೆ ಎದ್ದು ಕುಳಿತನು. ಒಂದು ಗೊನೆಯನ್ನು ಹಿಡಿದು ಕೊಂಡು, ೧೪ ವರ್ಷದ ಬಾಲಕನೊಬ್ಬನು ನಿಂತಿರುವನು!

“ರಸಬಾಳೆ ಗೊನೆ ಬೇಕೇ ಸ್ವಾಮೀ?” ಎಂದನು ಬಾಲಕ.

ಗೋಂದನು ನೋಡಿದನು, ಕೊನೆಯ ಎರಡುಕಾಯಿಗಳು, ಒಂದು ದಿನ, ಗೋಂದನು ಕೈಯ್ಯಲ್ಲಿ ಕತ್ತಿಹಿಡಿದು ಅಲಕ್ಷದಿಂದ ಬೀಸಿದಾಗ ಅರ್ಧದಷ್ಟು ಕಡಿದುಹೊಗಿದ್ದುವು.

ಈ ಗೊನೆ?-ಗೋಂದನ ಹಿತ್ತಲಿನಿಂದ ಕಳುವಾದ ಗೊನೆ!

“ಇದನ್ನು ನಿನ್ನೊಡನೆ ಯಾರು ವಿಕ್ರಯಿಸೆಂದು ಕಳುಹಿದರು?” ಎಂದು ಕೇಳಿದನು ಗೋಂದ.

“ಸಂಕಣ್ಣ; ಇಲೆಕ್ಟ್ರಿಕ್ ಕೆಲಸಮಾಡುತ್ತಾರಲ್ಲ ಅವರು?”

“ಹುಂ!” – ಎನ್ನುತ್ತ ಗೋಂದನು, – “ಇತ್ತ ಕೊಡು- ಗೊನೆಯನ್ನು; ಇಲ್ಲಿಟ್ಟು ಹೋಗು, ಮತ್ತು ಆ ಸಂಕಣ್ಣನನ್ನು “ನಿನ್ನೆ ನೀನು ಗೊನೆ ಕದ್ದೊಯ್ದ ಮನೆಯ ಗೋಂದನು” ಕರೆ ದಿರುವನೆಂದು ಹೇಳು. ಅವನು ಬಂದ ಕೂಡಲೇ ಹಣಕೊಡುತ್ತೇನೆ!” ಎಂದು ಬಾಲಕನನ್ನು ಗದರಿಸಿ, ಗೊನೆಯನ್ನು ತೆಗೆದುಕೊಂಡು ಮನೆಯೊಳಗೆ ಹೋಗಿ, ಅಜ್ಜಿಯ ಮುಂದಿಟ್ಟು ನಲಿದಾಡಿದನು.

ಗೊನೆ ತಂದ ಬಾಲಕನಾಗಲೀ, ಅದನ್ನು ಮಾರಾಟಕ್ಕೆ ಕಳುಹಿದ ಸಂಕಣ್ಣನಾಗಲಿ ಇನ್ನೂ ತಮ್ಮ ಹೆಣ ಕೇಳಲು ಬಂದಿಲ್ಲ.

“ಇದು ಯಾವ ಊರಿನ ಸುದ್ದಿ?” ಎಂದು ಯಾರಾದರೂ ಕೇಳಿದರೆ,- “ಗೋಂದನಿಗೆ ಗೊನೆ ಸಿಕ್ಕಿದ ಮೇಲೆ ಲೋಕಕ್ಕೆ ಊರಿನ ಹೆಸರೇಕೆ?” ಎಂದೇ ಉತ್ತರ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...