Home / ಕವನ / ಕವಿತೆ / ಕನ್ನಡದ ಬಾವುಟ

ಕನ್ನಡದ ಬಾವುಟ

ಏರಿಸಿ, ಹಾರಿಸಿ, ಕನ್ನಡದ ಬಾವುಟ!
ಓಹೊ ಕನ್ನಡನಾಡು, ಆಹ್ ಕನ್ನಡನುಡಿ!
ಹಾರಿಸಿ, ತೋರಿಸಿ, ಕೆಚ್ಚೆದೆಯ ಬಾವುಟ!
ಗಾಳಿಯಲಿ ಫಟಪಟ, ದಾಳಿಯಲಿ ಚಟಚಟ,
ಉರಿಯಿತೋ ಉರಿಯಿತು ಹಗೆಯ ಹಟ ಮನೆ ಮಟ,
ಹಾಳ್ ಹಾಳ್ ಸುರಿಯಿತು ಹಗೆಯ ಬೀಡಕ್ಕಟ!
ಬಾಳ್ ಕನ್ನಡ ತಾಯ್!
ಏಳ್ ಕನ್ನಡ ತಾಯ್!
ಆಳ್ ಕನ್ನಡ ತಾಯ್!
ಕನ್ನಡಿಗರೊಡತಿ ಓ ರಾಜೇಶ್ವರೀ!
ರಾಜೇಶ್ವರೀಽ!

ಮೌರ್‍ಯ ಕಳಚೂರ್‍ಯರು, ಗಂಗರು, ಕದಂಬರು,
ರಟ್ಟರು, ಚಳುಕ್ಯರು ಹೊಯ್ಸಳರು, ಯಾದವರು,
ಇಳೆಗೆ ಮೇಲಾದವರು, ಬಾಣರು, ಜೀಣರು,
ಕೊಲೆಯ ಕೇಳ್‌ಕಿಚ್ಚಿಂಗೆ ತಂಪುಮಳೆ ತಳಿದು,
ಚೆಲುವು ನೆಲ ಸಾಲುತ್ತು, ಕಲೆಯ ಹೊಂಬೆಳೆಯಿಟ್ಟು,
ನಗಿಸಿದರು ನಾಡನು, ಕಡಿದು ಕಗ್ಗಾಡನು:
ಮಾನವನ ದೇವತೆಗೆ ತಂದ ಜಿನಭಕ್ತರು,
ಹಂಪೆಯ ವಿರುಪಾಕ್ಷ ಪುತ್ರರು, ವಿರಕ್ತರು,
ವೀರನಾರಾಯಣನ ಕೃಪೆಯೊಳಾಸಕ್ತರು,
ಶ್ರೀ ಗೌರಿ ಕಾವಲಿಹ ರಾಯರನುರಕ್ತರು,
ನಮ್ಮ ತಾಯ ಮಕ್ಕಳು-
ಬಾಳ ಬೆಳ್‌ದಿಂಗಳಲಿ ಒಲಿದು ನಲಿದವರು-
ಬೇವೊ ಬೆಲ್ಲವೊ ಬರಲಿ, ಮಲ್ಲಿಗೆಯೊ ಮುಳ್ಳೋ,
ಬಾನ ಬೆಳಕಿನಲಿ, ಮೇನದಳುಕಿನಲಿ,
ಚೆನ್ನು ಬದುಕನು ಕುಣಿಸಿ ಒಲಿದು ನಲಿದವರು-

ನಮ್ಮ ತಾಯಣುಗರು,
ಪಂಪನೋ, ರನ್ನನೋ, ಬಸವನೋ, ಮಾಧವನೊ,
ಆ ಅಕ್ಕಮಹದೇವಿ, ನಾರಣಪ, ಚಿಕದೇವ,
ಜಕ್ಕಣ, ಹೊನ್ನಮ್ಮ, ನಮ್ಮಮ್ಮನೆಳೆಯರು,
ಚೆಲುವ ಚೆಲುವೆಯರು-ಚಿನ್ನದ ಚಿಣ್ಣರು,
ಕಲಿಗಳು, ಕಿಡಿಗಳು, ಗಂಡರು, ಮೊಂಡರು,
ನಲಿದೊಲಿದು ಬೆಚ್ಚೊಂದು ನೆಚ್ಚಿಂಗೆ ಮೆಚ್ಚಿಂಗೆ
ಕಿಚ್ಚಿನಲಿ ಹಾಯ್ದು ನಲ್ಲನ ಹಿಡಿದ ಹೆಂಡಿರು,
ಸತಿಗಳು, ಯತಿಗಳು, ವ್ರತಿಗಳು, ಕೃತಿಗಳು-

ಕನ್ನಡದ ಬಾವುಟವ ಹಿಡಿಯದವರಾರು?
ಕನ್ನಡದ ಬಾವುಟಕೆ ಮಡಿಯದವರಾರು?
ನಮ್ಮ ಈ ಬಾವುಟಕೆ ಮಿಡಿಯದವರಾರು?
ಹೇಳಿರೋ ಹೆಸರೊಂದು ನೆನಹಿನಲಿ ಸುಳಿದರೆ!
ಹುಡಿಕಿರೋ ಹೇಡಿ ತಾನೊಬ್ಬ ಮನೆಗುಳಿದರೆ!

ಕನ್ನಡದ ನಾಡಲಾ,
ಕನ್ನಡದ ನುಡಿಯಲಾ,
ಕನ್ನಡಿಗನೆದೆ ಕಡೆದ ತೆನೆಯಲಾ ಕೆನೆಯಲಾ!
ಬೆಳಕು ಹರಿಯಿತು ಏಳಿ,
ಇರುಳೂ ಸವೆಯಿತು ಏಳಿ,
ತಾಯ ಕರೆ ಕೇಳಿ,
ಏಳಿರೋ, ಏಳಿರೋ, ಬಾಳ ಬಲಿ ಬೇಳಿರೋ
ಎಲ್ಲೊಲುಮೆಯೂ ಕೂಡಿದೊಂದೊಲುಮೆ ತಾಳಿರೋ,
“ತಾಯುಳಿಯೆ ನಾನುಳಿದೆ,
ತಾಯಳಿಯೆ ನಾನಳಿದೆ.
ಮನೆ ಕಾಯಿ, ತುರು ಕಾಯಿ, ನಾಡ ಗಡಿ ಗುಡಿ ಕಾಯಿ,
ಕಾಯಲಾರೆಯ, ಸಾಯಿ,”
ಎಂದೆಲ್ಲ ಏಳಿರೋ-
ಆಹ ಕನ್ನಡನುಡಿ, ಆಹ ಕನ್ನಡನಾಡು,
ಹಿರಿಯ ಕನ್ನಡ ಪಡೆ, ಮರಿಯ ಕನ್ನಡ ಪಡೆ,
ಏಳಿರೋ, ಬಾಳಿರೋ,
ಕನ್ನಡದ ಬಾವುಟವ ಹಿಡಿಯಿರೋ, ನಡೆಯಿರೋ!

ಏಳ್ ಕನ್ನಡ ತಾಯ್,
ಬಾಳ್ ಕನ್ನಡ ತಾಯ್,
ಆಳ್ ಕನ್ನಡ ತಾಯ್,
ಕನ್ನಡಿಗರೊಡತಿ ಓ ರಾಜೇಶ್ವರೀ!

ಇಂದಿನದೆ ಹೇಳಿರೋ ಈ ನಮ್ಮ ಬಾವುಟ!
ಕುಂದಿಹುದೆ ನೋಡಿರೋ ಈ ನಮ್ಮ ಬಾವುಟ!
ಕಂದದಿದೆ ಇಂದಿಗೂ ಕನ್ನಡದ ಬಾವುಟ!
ಏನೇನ ಕಂಡುದೋ ಬಾನಾಡಿ ಬಾವುಟ!
ಆವುದನು ಕಾಣದೋ ಜೀವಕಳೆ ಬಾವುಟ!
ಕನ್ನಡದ ಬಾವುಟಗಳೊಂದಾದ ಬಾವುಟ!
ಏರಿಸಿ, ಹಾರಿಸಿ, ತೋರಿಸಿ ಬಾವುಟ!
ತೇಲಾಡು, ಮೇಲಾಡು ಓಲಾಡು ಬಾವುಟ!
ಚೆಲುವಾಗು, ಗೆಲುವಾಗು, ಬಲವಾಗು, ಬಾವುಟ!
ಹೊನ್ನಾಗಿ, ಹೆಣ್ಣಾಗಿ, ಹಸನಾದ ಮಣ್ಣಾಗಿ,
ಹೊಸಹೊಸತು ಕಣ್ಣಾಗಿ, ಬೆಳಕಾಗಿ, ಬೆಳೆಯಾಗಿ,
ಕೂಡುತಿಹ ಕನ್ನಡದ ಹೊಮ್ಮುಗೆಯ ಕಾವಾಗಿ,
ಪರಿಪರಿಯ ಹೊಂಬಗೆಯ ಹೆರಿಗೆಯಾ ನೋವಾಗಿ,
ಸಿರಿಯ ಜಯಚಾಮನೆ* ಹಿರಿಯೊಲುಮೆ ಹೂವಾಗಿ,
ಬಾಳು ಎಲೆ ಬಾವುಟ!
ಬಾಳ್ ಕನ್ನಡ ತಾಯ್,
ಏಳ್ ಕನ್ನಡ ತಾಯ್,
ಆಳ್ ಕನ್ನಡ ತಾಯ್,
ಕನ್ನಡಿಗರೊಡತಿ ಓ ರಾಜೇಶ್ವರೀ!
* ಮೊದಲು – ನಾಲುಮಡಿ ಕೃಷ್ಣನೇ
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...