Home / ಕವನ / ಕವಿತೆ / ಶ್ರೀ ಜಯನ ಬೆಳಕು

ಶ್ರೀ ಜಯನ ಬೆಳಕು

ಕನ್ನಡದ ಬಾನಿನಲಿ ಮೂಡಿತದೊ ಬೆಳಕು,
ಪುಣ್ಯ ಕಣ್ದೆರೆದಂತೆ ಬೆಳಕು!
ಕನ್ನಡಿಗರೊಲುಮೆ ತೆರೆಹೊಮ್ಮಿಸುವ ಬೆಳಕು,
ಹೊನ್ನ ಕನಸನು ತರುವ ಹೊಸ ಕಳೆಯ ಬೆಳಕು,
ಮುನ್ನರಿಯದಚ್ಚರಿಯ ಮೆಚ್ಚು ಬೆಳಕು.
ಬೆಳ್ಳಿ ಬೆಳಗುವ ಬಾನ ಬೆಳ್ಳನೆಯ ಬೆಳಕು,
ಒಳ್ಳಿತೊಸರುವ ಹೆಸರ ದೊಡ್ಡ ಬೆಳಕು.
ಸೂರ್‍ಯ ಚಂದ್ರರು ಮುಳುಗಿ, ಸುತ್ತೆತ ಕಗ್ಗತ್ತಲೆಯ ಮೋಡ ಹೇರಿ.
ತೆರೆ ನರಳ್ವ ನಡುಗಡಲ ಹಡಗಿನೆಡೆ, ಮೂಡಗೆಂಪೇರಿ,
ಮತ್ತೊಮ್ಮೆ ಮೇಲ್ ನೆಗೆವ ದೇವರುರಿಗಣ್ಣಂತೆ ತೋರಿ,
ನೆಗೆಯುತ್ತಿದೆ ಮತ್ತೊಮ್ಮೆ ನಮಗದೋ ತುಂಬು ಬಾಳ್ ಬೀರಿ
ಹಿರಿಯ ಬೆಳಕೊಂದು ಸಿರಿ ಸಾರಿ.

ಆಡಿ, ಕುಣಿದಾಡಿ, ಜಲವೆಲ್ಲಾ!
ಪಾಡಿ, ಓ ಪಾಡಿ, ನೆಲವೆಲ್ಲಾ!
ಕೂಗಿ, ನಾಡೆಲ್ಲಾ, ಬೀಗಿ, ಬೀಡೆಲ್ಲಾ,
ಓಲಾಡಿ, ಊರೆಲ್ಲ, ಮೇಲಾಡಿ ಹಳ್ಳಿಗಾಡೆಲ್ಲಾ,
ಸೋಲು ನಮಗಿನ್ನಿಲ್ಲ, ಗೆಲವೆ ಇನ್ನೆಲ್ಲಾ!
ಭಯ ಚೆದರೆ, ಚಿಮ್ಮುತಿದೆ ಕಳಕಳಿಯ ಬೆಳಕು,
ದಯದ ತಣ್ಬೆಳಕು,
ಜಯದ ಕಣ್ಬೆಳಕು,
ನಯದ ನುಣ್ಬೆಳಕು!
ಬೆರಗೆನಿಸಿ, ಮುದ್ದೆನಿಸಿ, ಗೆಲುವೆನಿಸಿ, ಚೆಲುವೆನಿಸಿ,
ಅರಿವಾಗಿ, ಅರುಳಾಗಿ, ಅರಸಿಯ ತಿರುಳಾಗಿ,
ಬೆಳ್ಗೊಡೆಯ ನೆರಳಾಗಿ, ಭಕ್ತಿಯರಳಾಗಿ,
ತಂದೆ ತಾಯ್ಗೆಂದಿಲ್ಲದೊಲವ ಮಣಿಸಿ,
ಹಿರಿತಂದೆಗರಸಾಳ್ಕೆ ನೆಚ್ಚ ತಣಿಸಿ,
ತಂಗಿಯರ ಮೆರಸಿ ಕುಣಿಸಿ,
ಯದುಕುಲದ ಕಲ್ಪವೃಕ್ಷದ ಫಲದ ಸೊದೆಯೆನಿಸಿ ಮನೆಮನೆಯನುಣಿಸಿ,
ತುಂಬುತಿದೆ, ನೆರೆಯುತಿದೆ, ನೋಡಿ, ಆ ಬೆಳಕು !
ಆಳ ಬಾಳಲ್ಲಾ?
ನೋವು ನಲಿವಲ್ಲಾ ?
ಪಾವು ಚಂದ್ರಂಗಿಲ್ಲ ? ಕೋಳು ಸೂರ್‍ಯಂಗಿಲ್ಲ ?
ದೇವರ್ಗಮೆಡರುತೊಡರಿಲ್ಲಾ ?
ತಂದೆಯಿರ್‍ವರ ಸೆಳೆದು ತಂದನೇ ಅಳಲ ವಿಧಿ !
ನೊಂದನೇ ನಮ್ಮ ನಿಧಿ !
ನೊಂದು, ನೋವನು ನುಂಗಿ, ಮುಂಬರಿಯುತಿದೆ, ಅಚ್ಚ ಬೆಳಕು!
ಕೆಚ್ಚೆದೆಯ ಬೆಳಕು!
ಕಣ್ಣೀರ ತೊಡೆದು, ಮಿಡಿದು,
ತಣ್ಣನೆಯ ಹರಕೆಗಳ ಹೊನ್ನ ಮುಡಿ ಮುಡಿದು,
ತನ್ನ ಹೊಣೆಗಳ ಹೊರೆಗೆ ನಾಡವರ ನೆರವ ಕುರಿತಾಳ್ವ ನುಡಿ ನುಡಿದು,
ನಾಡವರ ಬಾಳಾದ ಬಾಳ ಬೆಳಕು,
ನರಸಿಂಹ ಕೃಷ್ಣರಿರ್‍ವರು ಕೂಡಿ ನೆರೆದರೆನೆ ತೇಜಸ್ವಿಯಾಗಿ,
ಎಳೆಯ ಹೆರೆಯೊಳೆ ತೊಳಗಿ ತುಂಬು ಹೆರೆಯಾಗಿ,
ಸಿರಿಯೊಡೆಯ ಜಯಚಾಮರಾಜೇಂದ್ರನೆಂಬೊಂದು ದಿವ್ಯಮಣಿ ಬೆಳಕು,
ಮೂಡಿ, ಕಳೆಗೂಡಿ,
ಕನ್ನಡದ ಚೆಲುವಿಗದೊ ಬೆಳಗುತಿದೆ, ನೋಡಿ,
ದೈವ ಕೃಪೆ ಕೂಡಿ,
ಬೆಳಗುತಿದೆ ನಮಗಾಗಿ ಆ ದೊಡ್ಡ ಬೆಳಕು,
ಶ್ರೀ ಜಯನ ಬೆಳಕು.
*****
೧೯೪೦

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...