Home / ಕವನ / ಕವಿತೆ / ಶುಕ್ರಗೀತೆ

ಶುಕ್ರಗೀತೆ

[ಮೈಸೂರು ವಿಶ್ವವಿದ್ಯಾನಿಲಯದ ಬೆಳ್ಳಿಯ ಹಬ್ಬದ ಕವಿಸಮ್ಮೇಳನದಲ್ಲಿ ಓದಿದ್ದು]

ಓಂ, ಸಹ ನಾವವತು ; ಸಹ ನೌ ಭುನಕ್ತು;
ಸಹ ವೀರ್‍ಯಂ ಕರವಾವಹೈ ;
ತೇಜಸ್ವಿನಾವಧೀತಮಸ್ತು ;
ಮಾ ವಿದ್ವಿಷಾವಹೈ.
ಓಂ ಶಾಂತಿಃ ಶಾಂತಿಃ ಶಾಂತಿಃ

ಮೊತ್ತಮೊದಲೇ, ಬೆಳಕಾಗಲೆಂದಾಗ, ಬೆಳಕಾಯ್ತು ; ಬೆಳಕು ಚೆಲುವಾಯ್ತು;
ಕಿಡಿ ಸಿಡಿದು ಮಿನುಗಿದುವು ಜ್ಯೋತಿಗಳ್‌ ; ಮೂಡಿದರು ಸೂರ್ಯ ಚಂದಿರರು
ಲೋಕಚಕ್ಷುಗಳೆನಿಸಿ, ಸತ್ಯ ಧರ್ಮಗಳಂತೆ, ಕ್ಷಮೆ ದಯೆಗಳಂತೆ.
ಹಸುರ ಸೊಬಗಂ ತೊಟ್ಟು, ಹಾಡುತ್ತ, ಬಾನ್‌ಬಯಲೊಳಾಟವಾಡುತ್ತ,
ಸೌಂದರ್‍ಯದಿಂ ತೀವಿ, ಭೂದೇವಿ ಬೆಳಗಿದಳು, ಜೀವ ಪರಮಾತ್ಮರಿಂ ತೊಳಗಿ.

ಆ ದಿವ್ಯ ದರ್ಶನಂ ಕಣ್ಮುಂದೆ ನೋಡಿದರ್
ದಿವಿಜರುಂ, ಋಷಿಗಳುಂ ; ನಲಿದು ಕುಣಿದಾಡಿದ‌ರ್‌ ;
ಪಾಟಮಂ ಪಾಡಿದರ್-
ಓಂ, ತತ್ಸವಿತುರ್ ವರೇಣಿಯಂ
ಭರ್ಗೋ ದೇವಸ್ಯ ಧೀಮಹಿ,
ಧಿಯೋ ಯೋ ನಃ ಪ್ರಚೋದಯಾತ್.
ಮತ್ತಮವರಿಂತೆಂದು ಬೇಡಿದರ್‌-
ಹಿರಣ್ಮಯೇನ ಪಾತ್ರೇಣ
ಸತ್ಯಸ್ಯಾಪಿಹಿತಂ ಮುಖಂ ;
ತತ್ ತ್ವಂ ಪೂಷನ್ ಅಪಾವೃಣು
ಸತ್ಯಧರ್ಮಾಯ ದೃಷ್ಟಯೇ.

ಇನ್ನು ಮೊಂದಂ ಬಯಸಿ ಪೂಟಮಂ ಪೂಡಿದರ್-
ಅಸತೋ ಮಾ ಸದ್ಗಮಯ,
ತಮಸೋ ಮಾ ಜ್ಯೋತಿರ್‌ಗಮಯ,
ಮೃತ್ಯೋರ್ ಮಾ ಅಮೃತಂ ಗಮಯ,

ಇಂದಿಂಗಮೆಮಗದುವೆ ದರ್ಶನಂ, ಬಯಸಿದುದೆ ಆ ಅಮೃತಪುತ್ರರ್.
ಬ್ರಹ್ಮ ಮೀ ವಿಶ್ವಂ ; ಬ್ರಹ್ಮಮುಂ ಪೂರ್‍ಣಮೆನೆ ಏನ್ ಚೆಲುವೊ ನಮ್ಮ ಬಾಳ್ ಚೆಲುವು,
ಏನ್ ನಲಿವೊ ನಮ್ಮ ನಲಿವಾತ್ಮನಾನಂದಂ!

ಆನಂದನರಿಯದರ್‌,
ಆತ್ಮವನೆ ಒಲ್ಲದರ್,
ಬಾನ ಗಡಿಯಲಿ ಗಿಡಿದ ಕತ್ತಲೆಯ ಗುಹೆಯೊಳಡಗಿರ್‍ದರಾ ಅಸುರರ್
ಕೇಳ್ದರಾ ಪಾಟಮಂ ಪಲ್ಮೊರೆದು, ಕಣ್ಣಿರಿಯೆ ಕಂಡರಾ ಬಿಡುಗಣ್ಣ ಬೆಳಕನ್,
ಪೊಳೆದು ಪೊಳೆಯಿಸುತಿರ್ಪ ಬಿಳಿಯ ಬಾನ್‌ಬೆಳಕನ್.
ಮೆಲ್ಲಮೆಲ್ಲನೆ ನುಸುಳಿ ದೇವರಾವರಣದಲಿ, ಆಳ ತೋಟದಲಿ,
ತೆಕ್ಕೆ ತೆಕ್ಕೆಯೊಳೆದ್ದು ಹೊರಬಿದ್ದು, ಕಾರಿರುಳ ಮೊತ್ತಂಗಳಾಗಿ,
ಪೊಗೆಯಾಗಿ, ನೊಣೆವ ಪಡಿನೆಳಲಾಗಿ, ನಂಜಾಗಿ, ಕಣ್ಣ ಮಂಜಾಗಿ,
ಮುತ್ತಿ ಮರುಳ್ಗೊಳಿಸಿದ‌ರ್‌ ಸಂಶಯಂಗಳನೊತ್ತಿ, ಪಾಪಮಂ ಬಿತ್ತಿ,
ಅಲ್ಲದುದನಹುದೆಂದು, ಅಹುದನಲ್ಲೆಂದು,
ಇಲ್ಲದುದನಿಹುದೆಂದು, ಇಹುದನಿಲ್ಲೆಂದು,
ನಲ್ಲದಂ ಪೊಲೆಯೆಂದು, ಪೊಲೆ ನಲ್ಲದೆಂದು,
ತಿರಿಸಿದರ್ ಮಾಯಾವಿಗಳ್ ಬಾಳ್ವ ಮಕ್ಕಳಂ ಸಾವ ಸಂಸಾರ ಸುತ್ತಿ.
ಪಲ ಪೆಸರ್, ಪುರುಳೊಂದು,
ಪಲ ತೆರನ್, ನೆರೆನೊಂದು-
ಅಹಿ, ವೃತ್ರ, ಮಾರ, ಕಲಿ, ಅಹ್ರಿಮನ್, ಸೈತಾನ್!

ಅಂದು ಮೊದಲಾದುದೇ ದೇವಾಸುರಂ!
ಎಂದು ಕೊನೆಗಾಣ್ಬುದೋ ದೇವಾಸುರಂ!
ಪಸುಳೆವೋಲ್ ನಿಲ್ವಾಳ ನಿಲವು!
ಏನ್ ಚೆಲ್ಲು ಚೆಲ್ವು!

ಓ ಪಂಪ, ನೀನ್ ತುಂಬಿ ತೊರೆದೊಱತೆ ಪರಿವುದಿನ್ನುಂ.
ಸಾವಿರಂ ಸಂದುವುದು ಪರಿವುದಿನ್ನುಂ.
ಅದನೆ ಬಸವಣ್ಣನ್,
ಅದನೆ ಕುವರವ್ಯಾಸನ್
ಇನ್ನೊಮ್ಮೆ ಸಾರಿದರ್ ತಮ್ಮ ಕಣ್ಣಿನ್ ಕಂಡು
ಪೊಸಪೊಸತು ಪರಿಯಿನ್,
ಆಳ ಬಾಳನ್ ಕಡೆವ ಶಿವಕಲೆಯ ಕೃಪೆಯಿನ್ :
ಅದು ಶಿವಂ, ಸತ್ಯಮದು, ಸುಂದರಂ.
ಗುರು ಪಂಪ, ಓ ತಂದೆ ಪಂಪಾ,
ತೆಂಕನಾಡನ್ ಮರೆಯಲಾರದೆಲೆ ಜೀವಾ,
ಮರೆಯದಿರು, ಪರಸು, ಪರಸೆಮ್ಮನ್.
ಪಳೆಯ ಕರ್ನಾಟಕಂ ಮತ್ತೊರ್‍ಮೆ ಕಟ್ಟುಗೆ!
ಎಳೆಯ ಕರ್ನಾಟಕಂ ಪೊಸಪುಟ್ಟು ಪುಟ್ಟುಗೆ!
ಪಿರಿಯತನಮನ್ ಮರೆತ ಕಿರುಮಕ್ಕಳನ್ ಪರಸು,
ಪರಸು ನೀನೆಮ್ಮನ್.
*****
೧೯೪೧

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...