Home / ಕವನ / ಕವಿತೆ / ಧರ್ಮಯುದ್ದ

ಧರ್ಮಯುದ್ದ

(ಮಯಿ ಸಂನ್ಯಸ್ಯ ಯುದ್ಧ್ಯಸ್ವ)

ಮಂಗಳಂಗಳನಿಳೆಯ ಸರ್‍ವ ಜ
ನಂಗಳಿಗೆ ನಲಿದೀವ ನಿತ್ಯನೆ,
ಮಂಗಳಾತ್ಮನೆ, ಕೃಪೆಯ, ಮುಕ್ತರ ಬೀಡೆ, ಕಾಪಾಡು.
ಕಂಗೆಡುವ ಮದದುಬ್ಬಿನಲಿ ರಣ
ದಂಗಣದ ಕಾಳ್ಗಿಚ್ಚನೆಬ್ಬಿಸಿ
ಭಂಗಪಡುವ ದುರಾಸೆಯಡಗಿಸಿ ನಡಸು ಮಕ್ಕಳನು.

ಹಿಂದೆ ಅಸುರರು ಕೊಬ್ಬಿ, ಸುರನರ
ರಂದಬಾಳನು ಮೆಟ್ಟಿ, ಹಿಂಸಾ
ನಂದ ಯೋಗಿಗಳಾಗಿ ಭೂಮಿಗೆ ಭಾರವೆನಿಸಿರಲು,
ತಂದೆ, ನೀ ಮಾಧವನುಮಾಧವ
ನೆಂದು ಪರಿಪರಿ ಪೊಗಳೆ, ಕರಗಿದೆ,
ನೊಂದೆ, ಬಿಡಿಸಿದೆ ಲೋಕಕಂಟಕರಿಂದ ಭಕ್ತರನು.

ಯುದ್ಧವೆಂಬ ಪಿಶಾಚ ಯಜ್ಞಕೆ
ಬದ್ಧರಹ ರಾಕ್ಷಸರ ಸಾಹಸ
ಬುದ್ದಿ ಕೌಶಲವೇಕೆ? ಐಸಿರಿಯೇಕೆ? ಬಿಸುಡು, ಸುಡು!
ಯುದ್ಧವೇ ತಂದೊಡ್ಡೆ, ಯುದ್ಧವ
ಯುದ್ಧದಿಂದಲೆ ಯಜ್ಞಮಾಡುವ
ಸಿದ್ದಿಯನು ನೀ, ದೇವ, ಬೆಸಸಿದೆ ಜಗವನುದ್ಧರಿಸೆ.

ಬೇಡುವೆವು, ಬಾ, ಸುಜನಪಾಲಕ.
ಹೂಡು ಧರ್‍ಮವ, ಧರ್‍ಮರಕ್ಷಕ,
ನಾಡ ಕಾವಲ ದಳಕೆ ಕೂಡಲಿ ನಾಡ ಬಲವೆಲ್ಲಾ.
ಓಡಿಹೋಗಲಿ ಭಯದ ನುಡಿಗಳು,
ಮೂಡಿ ತೂಗಲಿ ನಗುತ ಬೆಳೆಗಳು,
ನೀಡು ದಯವನು ದಣಿಗೆ, ನೆಮ್ಮದಿ ಬದುಕ ಬಡವನಿಗೆ.

ಕೆಣಕಿದರೆ ಬಿಡದೆತ್ತಿಕೊಂಡೆವು-
ಮಣಿವೆವೇ ನಾವಿನ್ನು ? ಕಾಳಗ
ದಣಿಗೆ ಮುಡಿಪಾಗಿಟ್ಟು ತನುಮನಧನವ ತೇಯುವೆವು!
ಋಣವಿದಲ್ಲವೆ ಭರತಮಾತೆಯ?
ಋಣವಿದಲ್ಲವೆ ದೇವಪಿತೃ‌ಋಷಿ
ಗಣದ ? ಮಡಿದಾ ಸತ್ಯಧರ್ಮ ಸ್ವತಂತ್ರ ಸಾಧಕರ ?

ಗೆದ್ದು ಬಿಟ್ಟೆವು! ಹುಬ್ಬ ಹಾರಿಸಿ-
ಮದ್ದು ಗುಂಡನು ಸುರಿಸಿ, ಹೊಸ ಹುಸಿ
ಸುದ್ದಿಗಳ ತೂರಾಡಿ, ನಂಬಿಸಿ, ಕೆಂಡಮಳೆಗರೆದು,
ಬಿದ್ದು ಹೆಣ್ಗಳ ಮೇಲೆ, ಹಸುಳೆಯ
ಗುದ್ದಿ, ದಾಸ್ಯವ ಹೊರಿಸಿ-ನಲಿವಿರ
ಗೆದ್ದು ಬಿಟ್ಟೆವು! ಎನುತ?-ಗೆಲುವಿರ ನೀವು ದೇವರನು!

ಗೆಲವು ನಮ್ಮದು, ಮಾಯಕಾರರೆ!
ಗೆಲವು ನಮ್ಮದು, ದ್ರೋಹಿಗಳೆ! ಕಡೆ
ಗೆಲವು ನಮ್ಮದು, ನಮ್ಮ ದಿವ್ಯ ಜ್ಯೋತಿ ನಮಗಿಹನು;
ಗೆಲವು ಶ್ರೀ ಜಯಚಾಮರಾಜಗೆ!
ಗೆಲವು ಬಿಡುತೆಗೆ, ಸಾಧು ಜನತೆಗೆ,
ಗೆಲವು ಶಾಂತಿಯ ಸರ್ವಸಮತೆಯ ಸುಖದ ಜೀವನಕೆ!

ಮಂಗಳಂಗಳನಿಳೆಯ ಸರ್‍ವ ಜ
ನಂಗಳಿಗೆ ನಲಿದೀವ ನಿತ್ಯನೆ,
ಮಂಗಳಾತ್ಮನೆ, ಒಲವೆ, ಮುಕ್ತರ ನಲಿವೆ, ಕಾಪಾಡು.
ಕಂಗೆಡುವ ಮದದುಬ್ಬಿನಲಿ ರಣ
ದಂಗಣದ ಕಾಳ್ಕಿಚ್ಚನೆಬ್ಬಿಸಿ
ಭಂಗಪಡುವ ದುರಾಸೆಯನ್ನು ಮುರಿ, ಗೆಲಿಸು ಶಾಂತಿಯನು.

ಓಂ ಶಾಂತಿಶ್ಶಾಂತಿ ಶಾಂತಿಃ
*****
೧೯೪೩

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...