Home / ಬಾಲ ಚಿಲುಮೆ / ಕವಿತೆ / `ನಾನು’ ಹೋದರೆ…

`ನಾನು’ ಹೋದರೆ…

ವ್ಯಾಸಮಠದ ಶ್ರೀವ್ಯಾಸರಾಯರು
ಹಲವು ಶಿಷ್ಯರನು ಹೊಂದಿದ್ದವರು
ದಾಸಕೂಟದ ಕನಕ ಪುರಂದರ
ದಾಸರ ಹೆಚ್ಚಿಗೆ ಮೆಚ್ಚಿದ್ದವರು
ಶಿಷ್ಯ ಸಮೂಹದ ಗೊಷ್ಠಿಯಲೊಮ್ಮೆ
ಪ್ರಶ್ನೆ ಕೇಳಿದರು ನಗೆ ಚೆಲ್ಲಿ-
’ಮೋಕ್ಷ ಹೊಂದಿ ವೈಕುಂಠಕೆ ಹೋಗುವ
ವ್ಯಕ್ತಿ ಯಾರಿಹರು ನಮ್ಮಲ್ಲಿ?’

ಸಭೆಯಲಿ ಹೆಚ್ಚಿನ ಬ್ರಾಹ್ಮಣರಿದ್ದರು
ಬೆರಳೆಣಿಕೆಯ ಜನ ಶೂದ್ರರಿದ್ದರು
ಪಂಡಿತರಿದ್ದರು ಪಾಮರರಿದ್ದರು
ಯಾರೂ ಉತ್ತರ ಕೊಡಲಿಲ್ಲ
ಗುರುಗಳ ಎದುರಲಿ
ನುಡಿಯುವ ಧೈರ್ಯವು
ತುಂಬಿದ ಸಭೆಯಲಿ ನಿಲ್ಲುವ ಸ್ಥೈರ್ಯವು
ಯಾರಿಗೂ ಇಲ್ಲದೆ ಕುಳಿತಿರೆ ಸುಮ್ಮನೆ
ವ್ಯಾಸರಾಯರೂ ಬಿಡಲಿಲ್ಲ!

ವ್ಯಾಸರು ಎಲ್ಲೆಡೆ ತಿರುಗಿ ನೋಡಿದರು
ಕನಕದಾಸನನು ಕರೆದು ಕೇಳಿದರು-
’ಕನಕನೆ ಉತ್ತರ ಕೊಡು ನೀನು’
ಕನಕನು ಎಲ್ಲರ ಒಮ್ಮೆ ನೋಡಿರಲು
ಪಂಡಿತರೆಲ್ಲರೂ ಕೊಂಕು ಬೀರಿರಲು
ಉತ್ತರ ಕೊಡುವುದು ಹಿತವೇನು?

ಬ್ರಾಹ್ಮಣ ಪಂಡಿತರೆಲ್ಲರು ಕೂಡಿ
ಒಬ್ಬರ ಮುಖವನ್ನೊಬ್ಬರು ನೋಡಿ
ಶೂದ್ರನಾದವನು ಮೋಕ್ಷದ ಬಗ್ಗೆ
ಉತ್ತರ ಕೊಡುವುದು ಸಾಧ್ಯವೆ? ಹೇಗೆ?
ಕನಕದಾಸರೆಡೆ ನಕ್ಕು ನೋಡಿದರು
’ಹೇಳಬಾರದೆ?’ ಕುಹಕವಾಡಿದರು
ಮುಸಿಮುಸಿ ನಗುತ್ತ ಮನದಲ್ಲಿ
ನುಡಿಯಲಾಗದೆ ಎದುರಲ್ಲಿ!

ಕನಕದಾಸರು ನಮಿಸಿ ವ್ಯಾಸರಿಗೆ
ನಗುತ ಹೇಳಿದರು ಅವರಿಗೆ ಹೀಗೆ-
’ಗುರುಗಳೆ, ಬಲ್ಲವರೆಲ್ಲರು ಇರುವರು
ಆದರೆ ಇವರಲಿ ಯಾರೂ ಹೋಗರು
ನಾನು ಹೋದರೆ ಹೋಗಲುಬಹುದು
ವೈಕುಂಠವನು ಸೇರಲುಬಹುದು
ತಮ್ಮ ಅನುಗ್ರಹವೆನಗಿರಲಿ
ತಪ್ಪಾಗಿದ್ದರೆ ಕ್ಷಮೆ ಇರಲಿ’

ಪಂಡಿತರೆಲ್ಲರು ಉರಿದು ಬಿದ್ದರು
ಕನಕನ ಮಾತನು ಖಂಡಿಸಿ ನುಡಿದರು
ದುರಹಂಕಾರದ ಮಾತಿದು ಎಂದರು
ಶೂದ್ರನ ಬುದ್ಧಿಯು ಲದ್ದಿಯು ಅಂದರು
ಎದ್ದು ನಿಂತು ತೋಳ್ತಟ್ಟಿದರು
ಕೋಪದಿಂದ ಬುಸುಗುಟ್ಟಿದರು

ಗುರುಗಳು ಎಲ್ಲರ ಕೂರಲು ಹೇಳಿ
ನುಡಿದರು- ’ಕೇಳಿರಿ ಸಂಯಮ ತಾಳಿ
ಕನಕನು ಹೇಳುವ ಮಾತನು ಕೇಳಿ’
ಪಂಡಿತರಿಗೆ ತಿಳಿಹೇಳಿದರು
ನಂತರ ಕನಕನ ಹತ್ತಿರ ಬಂದು
ಕೇಳಿದರವನನು- ’ಹೇಗಿದು?’ ಎಂದು
ವಿವರಿಸಿ ಹೇಳಲು ಕೇಳಿದರು!

ಗುರುಗಳೆ, ’ನಾನು’ ನನ್ನದು ಎನ್ನುವ
ಅಹಂಕಾರದಲಿ ಮುಳುಗಿದ ಮಾನವ
ಇರುವನು ಮೋಕ್ಷಕೆ ಬಲು ದೂರ
ಈ ಮಮಕಾರವ ಜಯಿಸಿದ ಒಡನೆ
ಮೋಕ್ಷವು ದೊರೆವುದು ತಂತಾನೆ
ಎಂಬುದೆನ್ನ ಮಾತಿನ ಸಾರ

ಗುರುಗಳು ಶಿಷ್ಯನ ಮಾತನು ಕೇಳಿ
ತುಂಬಿದ ಮನದಲಿ ಸಂತಸ ತಾಳಿ
ಪಂಡಿತರೆಡೆಗೆ ನೋಡಿದರು
ಪಂಡಿತರೆಲ್ಲ ಅಹಮ್ಮಿನ ನುಡಿಗೆ
ಮಾತಿನ ಮರ್ಮವ ಅರಿಯದ ಪರಿಗೆ
ನಾಚುತ ತಲೆಯನು ಬಾಗಿದರು!
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...