Home / ಬಾಲ ಚಿಲುಮೆ / ಕವಿತೆ / `ನಾನು’ ಹೋದರೆ…

`ನಾನು’ ಹೋದರೆ…

ವ್ಯಾಸಮಠದ ಶ್ರೀವ್ಯಾಸರಾಯರು
ಹಲವು ಶಿಷ್ಯರನು ಹೊಂದಿದ್ದವರು
ದಾಸಕೂಟದ ಕನಕ ಪುರಂದರ
ದಾಸರ ಹೆಚ್ಚಿಗೆ ಮೆಚ್ಚಿದ್ದವರು
ಶಿಷ್ಯ ಸಮೂಹದ ಗೊಷ್ಠಿಯಲೊಮ್ಮೆ
ಪ್ರಶ್ನೆ ಕೇಳಿದರು ನಗೆ ಚೆಲ್ಲಿ-
’ಮೋಕ್ಷ ಹೊಂದಿ ವೈಕುಂಠಕೆ ಹೋಗುವ
ವ್ಯಕ್ತಿ ಯಾರಿಹರು ನಮ್ಮಲ್ಲಿ?’

ಸಭೆಯಲಿ ಹೆಚ್ಚಿನ ಬ್ರಾಹ್ಮಣರಿದ್ದರು
ಬೆರಳೆಣಿಕೆಯ ಜನ ಶೂದ್ರರಿದ್ದರು
ಪಂಡಿತರಿದ್ದರು ಪಾಮರರಿದ್ದರು
ಯಾರೂ ಉತ್ತರ ಕೊಡಲಿಲ್ಲ
ಗುರುಗಳ ಎದುರಲಿ
ನುಡಿಯುವ ಧೈರ್ಯವು
ತುಂಬಿದ ಸಭೆಯಲಿ ನಿಲ್ಲುವ ಸ್ಥೈರ್ಯವು
ಯಾರಿಗೂ ಇಲ್ಲದೆ ಕುಳಿತಿರೆ ಸುಮ್ಮನೆ
ವ್ಯಾಸರಾಯರೂ ಬಿಡಲಿಲ್ಲ!

ವ್ಯಾಸರು ಎಲ್ಲೆಡೆ ತಿರುಗಿ ನೋಡಿದರು
ಕನಕದಾಸನನು ಕರೆದು ಕೇಳಿದರು-
’ಕನಕನೆ ಉತ್ತರ ಕೊಡು ನೀನು’
ಕನಕನು ಎಲ್ಲರ ಒಮ್ಮೆ ನೋಡಿರಲು
ಪಂಡಿತರೆಲ್ಲರೂ ಕೊಂಕು ಬೀರಿರಲು
ಉತ್ತರ ಕೊಡುವುದು ಹಿತವೇನು?

ಬ್ರಾಹ್ಮಣ ಪಂಡಿತರೆಲ್ಲರು ಕೂಡಿ
ಒಬ್ಬರ ಮುಖವನ್ನೊಬ್ಬರು ನೋಡಿ
ಶೂದ್ರನಾದವನು ಮೋಕ್ಷದ ಬಗ್ಗೆ
ಉತ್ತರ ಕೊಡುವುದು ಸಾಧ್ಯವೆ? ಹೇಗೆ?
ಕನಕದಾಸರೆಡೆ ನಕ್ಕು ನೋಡಿದರು
’ಹೇಳಬಾರದೆ?’ ಕುಹಕವಾಡಿದರು
ಮುಸಿಮುಸಿ ನಗುತ್ತ ಮನದಲ್ಲಿ
ನುಡಿಯಲಾಗದೆ ಎದುರಲ್ಲಿ!

ಕನಕದಾಸರು ನಮಿಸಿ ವ್ಯಾಸರಿಗೆ
ನಗುತ ಹೇಳಿದರು ಅವರಿಗೆ ಹೀಗೆ-
’ಗುರುಗಳೆ, ಬಲ್ಲವರೆಲ್ಲರು ಇರುವರು
ಆದರೆ ಇವರಲಿ ಯಾರೂ ಹೋಗರು
ನಾನು ಹೋದರೆ ಹೋಗಲುಬಹುದು
ವೈಕುಂಠವನು ಸೇರಲುಬಹುದು
ತಮ್ಮ ಅನುಗ್ರಹವೆನಗಿರಲಿ
ತಪ್ಪಾಗಿದ್ದರೆ ಕ್ಷಮೆ ಇರಲಿ’

ಪಂಡಿತರೆಲ್ಲರು ಉರಿದು ಬಿದ್ದರು
ಕನಕನ ಮಾತನು ಖಂಡಿಸಿ ನುಡಿದರು
ದುರಹಂಕಾರದ ಮಾತಿದು ಎಂದರು
ಶೂದ್ರನ ಬುದ್ಧಿಯು ಲದ್ದಿಯು ಅಂದರು
ಎದ್ದು ನಿಂತು ತೋಳ್ತಟ್ಟಿದರು
ಕೋಪದಿಂದ ಬುಸುಗುಟ್ಟಿದರು

ಗುರುಗಳು ಎಲ್ಲರ ಕೂರಲು ಹೇಳಿ
ನುಡಿದರು- ’ಕೇಳಿರಿ ಸಂಯಮ ತಾಳಿ
ಕನಕನು ಹೇಳುವ ಮಾತನು ಕೇಳಿ’
ಪಂಡಿತರಿಗೆ ತಿಳಿಹೇಳಿದರು
ನಂತರ ಕನಕನ ಹತ್ತಿರ ಬಂದು
ಕೇಳಿದರವನನು- ’ಹೇಗಿದು?’ ಎಂದು
ವಿವರಿಸಿ ಹೇಳಲು ಕೇಳಿದರು!

ಗುರುಗಳೆ, ’ನಾನು’ ನನ್ನದು ಎನ್ನುವ
ಅಹಂಕಾರದಲಿ ಮುಳುಗಿದ ಮಾನವ
ಇರುವನು ಮೋಕ್ಷಕೆ ಬಲು ದೂರ
ಈ ಮಮಕಾರವ ಜಯಿಸಿದ ಒಡನೆ
ಮೋಕ್ಷವು ದೊರೆವುದು ತಂತಾನೆ
ಎಂಬುದೆನ್ನ ಮಾತಿನ ಸಾರ

ಗುರುಗಳು ಶಿಷ್ಯನ ಮಾತನು ಕೇಳಿ
ತುಂಬಿದ ಮನದಲಿ ಸಂತಸ ತಾಳಿ
ಪಂಡಿತರೆಡೆಗೆ ನೋಡಿದರು
ಪಂಡಿತರೆಲ್ಲ ಅಹಮ್ಮಿನ ನುಡಿಗೆ
ಮಾತಿನ ಮರ್ಮವ ಅರಿಯದ ಪರಿಗೆ
ನಾಚುತ ತಲೆಯನು ಬಾಗಿದರು!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...