Home / ಲೇಖನ / ಹಾಸ್ಯ / ಕಲಿಯುಗಾ ಬಂತು

ಕಲಿಯುಗಾ ಬಂತು

(ಪೇನಶನ್‌ ಪಡೆದ ಮಾಮುಲೇದಾರ ಕಚೇರಿಯ – ಕಾರಕೂನರು) ರಾಯರ ಕೂಡ ಮಾತನಾಡುತ್ತ ಮನೆಯಲ್ಲಿ ಕುಳಿತಿದ್ದಾರೆ. ಕಾರಕೂನ ರಾಯರಿಗೆ ತಿರಸ್ಕಾರ ಕ್ರೋಧ ಹೆಮ್ಮೆಗಳ ಮೂಲಕ ಆವೇಶ ತುಂಬಿದಂತಾಗಿದೆ. ಹಾವ ಭಾವದೊಂದಿಗೆ ಜೊತೆಯಲ್ಲಿ ಕುಳಿತಿದ್ದ ರಾಯರಿಗೆ ಕೂಗಿ ಕೂಗಿ ಹೇಳುತ್ತಲಿದ್ದಾರೆ.)

ನಾ ಏನ್ ಹೇಳಿದೆ ನಿಮಗ..! ಈ ಲಂಡ… ಮಕ್ಕಳಿಗೆ ಮಡೀ ಇಲ್ಲಾ… ಮೈಲಿಗಿ ಇಲ್ಲಾ! ದಶಮೀ ಕಟಿಗೊಂಡು ಫಿರತೀಮ್ಯಾಲೆ ಹೋಗೂ ಮಾಮಲೇದಾರನ್ನ ಎಂದಽರೇ ನೋಡಿದ್ದೀರಾ? ಏನ್‌ ಹೇಳ್ಳಿ…!

ಈಗಿನ್ನೂ ಎಲ್ಲಾ ದಶಮಿ ಕಟಿಗೊಂಡು ಹೋಗುತಾವಂತ….; ದುಡ್ಡಿನ ಹಾಲು ದುಡ್ಡಿನ ಮಸರು ತರಿಸಿ ಚ್ಯಾವಡಿ ಕಟ್ಟೇಮ್ಯಾಲೆ ದಶಮೀ ಗಂಟು ಬಿಚ್ಚಿ, ತಿಂದು ಬರತಾವಂತ…. ವಾಲೀಕಾರರ ಹಾಂಗ! ಇವರು ಮಾಮಲೇದಾರರಽ ಇವರು..!

“ಹೋಗಬೇಕು ಹೋದರ ಫಿರತೀಮ್ಯಾಲೆ…. ನಮ್ಮ ಗೋವಿಂದ ರಾಯರಗೂಡಾ! ಅವರ ಮಡೀ ಏನೂ, ಮೈಲಿಗಿ ಏನೂ, ಎಲ್ಲಾ-ವಿಲಕ್ಷಣ ನೋಡ್ರಿ! ನರಸಿಂಹ ಸಾಲಿಗ್ರಾಮ ಇರತಿತ್ತು…. ಅವರ ಪೆಟ್ಟಿಗ್ಯಾಗ; ನಿತ್ಯ ಅದರ ಅಭಿಷೇಕ ಆಗದ ಹೊರತು ಊಟಾನೆ ಇಲ್ಲಾ! ನಾಕು ಸೇರು ಹಾಲು ಬೇಕಾಗತಿದ್ದೂ ಅಭಿಷೇಕಕ್ಕ! ಇಷ್ಟ ಹಾಲು ಹ್ಯಾಂಗ ಸಿಗತದ್ದೂವಽ….? ಹಳ್ಳಿ ಗೌಡ ಕುಲಕರ್ಣ್ಯಾರ ತಾಯಿ ಏನ ಹಡೆದ್ದು ಹಾಲು ಇಲ್ಲಾಽಂತ ಹೇಳಲಿಕ್ಕೆ!”

“ನಿಮಗೊಂದು ಮೋಜು ಹೇಳತೀನಿ ರಾಯರಽ! ಒಮ್ಮೆ ಚೈತ್ರ ಮಾಸ, ತಿಮ್ಮಾಪೂರದಾಗ ಮುಕ್ಕಾಂ ಇತ್ತು! ರಣಾ ರಣಾ ಬ್ಯಾಸಗಿ; ಬಿಸಲಾಗ ತಿರಿಗಿ ತಿರಿಗಿ ಬ್ಯಾಸತ್ತು ಹೋಗಿತ್ತು ಕಚೇರಿ….! ಒಂದು ದಿನಾ ಶ್ರೀಖಂಡ ಅರೇ ತಿಂದರ ಥಣ್ಣಗಽ ಅನಿಸೀತೂ ಅಂತಾ ವಿಚಾರ ಬಂತು. ನಸೀಕಲೇ ಎದ್ದವರೇ ಮಸರಗಡಗೀ ತರಿಸಲಿಕ್ಕೆ ಹೇಳಿದಿವಿ ಗ್ರಾಮಸ್ತರಿಗೆ! ಐದಾರು ಮಸರಗಡಗೀ ತಂದರು…! ನೋಡತೀವಽ ಮಸರಿನಮ್ಯಾಲ ಕೆನೀನೇ ಇಲ್ಲಾ! ಇಂಥಾ ಲುಚ್ಚಾ ಆಗೇದ ಜನಾ! ಒಂದರ ಬೆನ್ನ ಹಿಂದ ಒಂದರಂತೇ ಯಾವ ಗಡಗೀ ನೋಡಿದರೂ ಅದೇ ಹಣೇಬಾರ! ನಮ್ಮ ಸಿರಸ್ತಾರರ ಸಿಟ್‌ ಏನ್‌ ಕೇಳತೀರಿ… ಗಡಗೀ ತೊಗೊಂಡು ಬಿಸಾಟೆ ಬಿಟ್ಟರ, ಕುದರೀ ಕಾಲಾಗ ಹೋಗಿ ಬಿತ್ತು ಗಡಗಿ! ಧರ್ಮಸಾಲಿ ಮುಂದೆಲ್ಲ ಗೋಪಾಳ ಕಾವಲಿ ಅದ್ಹಾಂಗ ಆಯ್ತು! ಮತ್ತೇನದ…! ಗೌಡಾ ಕುಲಕರ್ಣಿ ಬಂದರು….; ನಮೋ ನಮೋ ಅನಿಸಿ ಬಿಟ್ಟೆ ಅವರ ಕಡಿಂದ! ಮುಂದೇನ್ ಕೇಳತೀರಿ, ಆ ಮುಕ್ಕಾಮಿನೊಳಗ ಇರೂ ತನಕ ಒಂದು ದಿನಾ ಶ್ರೀಖಂಡ… ಒಂದು ದಿನಾ ಬಾಸುಂದೀ….! ಅಮಲಂದರ ಹೀಂಗ ಕೂಡಿಸಬೇಕಾಗತದಽ ರಾಯರಽ! ಇಂಥಾ ಕೆಲಸ ದುಡ್ಡಿನ ಹಾಲು ಮಸರು ತೊಗೊಳ್ಳುವರ ಕಡಿಽಂದ ಆಗತದಽ ಎಲ್ಯಾರೆ?

“ಅಲ್ರಿ… ಇವರ ನಸೀಬಕ್ಕ ಅಡಗೀಯವರು ಸಿಗಬಾರದಽ? ತಾಲೂಕಿಗೆ ದೀಡನೂರ ಹಳ್ಳಿ; ಒಬ್ಬಿಲ್ಲಾ ಒಬ್ಬ ಕುಲಕರ್ಣೇರು ನೇಮಣೂಕಿ ಕೆಲಸ ಇದ್ದೇ ಇರತದ! ಊರಿದ್ದಲ್ಲೆ ಹೊಲಗೇರಿ ಅಂತ, ಎಲ್ಲಾಕಡೆ ಅದಾವ-ತೀನೂ ಇದ್ದೇ ಇರತಾವ! ಯಾರದಾದರೂ ಒಂದು ಅರ್ಜಿ ತಗೊಂಡು ಚೌಕಶೀಗೆ ಹಾಕ್ಕೋಽತ, ನಡದರಾತ್ರೆಪಾ….? ಕುಲಕರ್ಣಿ ಕ್ಯಾಂಪಿನ ಬೆನ್ನು ಹತ್ತೆ ಹತ್ತತಾನ…! ಅಲ್ಲಿಂದೇನು ಅಡಗೀ ಆಗತಽದ – ನೀರು ಆಗತಽದ- ಎಲ್ಲಾ ಆಗತಽದ! ನಮ್ಮ ರಾವಸಾಹೇಬರ ಕಡೆ ಇದ್ದನಲ್ಲಾ ನಾರಾಯಣಪ್ಪ! ಅವನದೊಂದು ಮೋಜಿನ ಕತೀನ. ಆತ; ಬಾಯೀಯವರ ಕೈತೆಳಗಿದ್ದು ಅಡಗೀ ಕಲಿತ ನಾರಾಯಣಪ್ಪ ‘ಇನ್ನೇನು ಕುಲಕರ್ಣಕಿ ಬ್ಯಾಡ, ಅಡಗೀನಽ ಮಾಡಿಕೊಂಡಿರೂದು ನೆಟ್ಟಿಗ! ಅಂದ. ಈಗ ನೋಡ್ರಿ ನಾನೂರು-ಐನೂರು ಜನರ ಪ್ರಸ್ತದ ಅಡಿಗಿ ಅಂದರೂನೂ ಹೊಡದು ಚೆಲ್ಲತಾನ ನಾನಾಯಣಪ್ಪ!

“ಇದೆಲ್ಲಾ ಅಮಲ್ದಾರರ ಕರ್ತಬ ಗಾರೀ ಮಾತು ಅದ ಏನ್ರೆವಾ! ಇವೇನ್ರಿ ಗಳಗಳಾ ಗಳಗಳಾ ಅಳತಾವ! ಸ್ನಾನ ಇಲ್ಲದಽನ, ಮೂರು ಮೂರು ದಿವಸ ತಂಗಳ ದಶೀಮೀ ತಿಂತಾವ! ಅದಕಽ ಕಲಿಯುಗಾ ಬಂತೂ ಅಂದೆ! ಏನು ಮಾಡೂದದಽ! ಆ ಕಾಲ ಹೋತು ಆ ಮಾತು ಹೋತು! ನಡೀರಿ ಪುರಾಣದ ಹೊತ್ತಾತು…. ಆಚಾರ್ರು ಬಂದಿದ್ದಾರು!”

(ಕಾರಕೂನರ ಮಾತನ್ನ ಕೇಳಿದ ರಾಯರ ‘ಈ ಕಲಿಯುಗದಲ್ಲಿ ಜೀವಿಸಿರುವದೇ ಬೇಡ!’ ಎಂದು ಪ್ರತಿಜ್ಞೆ ಮಾಡುತ್ತಲೇ ಪುರಾಣಕ್ಕೆ ಹೊರಟರು.)
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...