Home / ಕವನ / ಕವಿತೆ / ಬಸವಿ ಮಗಳು

ಬಸವಿ ಮಗಳು

ನಾಲ್ಕು ಜನರಿರುವ ಜಾಗವನ್ನು ದಾಟಿ ಹೋಗ ಬೇಕೆಂದರೆ
ಕುತ್ತಿಗೆಗೆ ಬರುವುದು
ಜನರ ನೋಟ ಹೊಟ್ಟೆಯೊಳಗೆ ಕಟ್ಟು ಚೂರಿಯನ್ನಾಡಿಸಿದಂತಾಗುವುದು
ಮಾತುಗಳು ನಗಾರಿಯ ಭೇರಿಯಂತೆ ತಮಟೆ ಹರಿಯುವವು
ತಲೆ, ತಂತಾನೆ ಮಣ ಭಾರ ವಾಗುವುದು; ಮೇಲೆತ್ತದಂತಾಗುವುದು
ನಿತ್ರಾಣವಾಗಿ ಕಾಲುಗಳು ಕಿತ್ತಿಡಲಾಗದಷ್ಟು ಭಾರವಾಗುವವು
ಜೀವ ಮುದ್ದೆ, ಮುದ್ದೆಯಾಗುವುದು.
ಬಸವಿಯ ಮಗಳಾದ ಪಾಪಕ್ಕಾಗಿ ಎಲ್ಲಾ ಸಹಿಸ ಬೇಕಾಗುವುದು

ಹೊರಗೆ ಈ ವಾಡು
ಒಳಗೆ, ಕೇಳೋದೆ ಬೇಡ!

ನಮ್ಮನ್ನು ಸಾಕಿದ ದೊಡ್ಡಮ್ಮನ ಮಗನೂ
ಮಾತಿಗೆ ಬಂದರೆ ಏನೇನೂ ಉಳಿಸನು, ಜನ್ಮ ಜಾಲಾಡಿ ಬಿಡುವನು-
“ನಿಮಗೆ ಯಾರಿದ್ದರು?
ನಾನೊಬ್ಬ ಕೈ ಹಿಡಿಯದಿದ್ದರೆ
ಎಂದೋ ತುರುಕರು, ತುಂಡರ ಪಾಲಾಗಿ ಹೋಗಿ ಬಿಡುತ್ತಿದ್ದಿರಿ,
ನಿಮ್ಮಮ್ಮ, ಬೀದಿ ನಾಯಿಯಂತೆ
ಸಿಕ್ಕಿದವರಿಗೆ ಬಸುರಾಗಿ, ಸಿಕ್ಕಲ್ಲಿ ಈದುಕೊಂಡು, ಹಾಗೇನೆ,
ಮೂರು ಹೆಣ್ಣು ಬೋಕಿಗಳನ್ನು ಕಟ್ಟಿ ಕೊಂಡು
ಹೊಸ್ತಿಲಿಂದ ಹೊಸ್ತಿಲಿಗೆ ತಳ, ಕೂಳಿಗಾಗಿ ಅಲೆಯುತ್ತಿದ್ದಾಗ
ಪಾಪ! ಅಂದ ನಾನು ಕರಕೊಂಡು ಬಂದು
ಒಳಗಿಟ್ಟು ಕೊಂಡೆ;
ಒಂದು ಗೌರವ, ಬಾಳು ಕೊಟ್ಟೆ ಕಣಿರೆ” ಎನ್ನುವನು

ಮಾಡಿದ್ದ ಆಡಿದರೆ ಏನು ಬಂತು? ಹೇಳಿ

ಕಟ್ಟಿ ಕೊಂಡವನೋ…
ದೇವರಿಗೆ ಪ್ರೀತಿಯಾಗ ಬೇಕು!-
ಅಂಬದ ಮಾತಿಲ್ಲ
ಕೊಡದ ಚಿತ್ರ ಹಿಂಸೆಯಿಲ್ಲ
ಅವನಿಗೆ ನಾನೊಬ್ಬಳು ಮನುಷ್ಯಳೆಂಬುದೇ ಗೊತ್ತಿಲ್ಲ
ನನಗೆ ಅನುಭವಿಸದೆ ವಿಧಿಯಿಲ್ಲ

ಬಿಟ್ಟನೆಂದರೆ ಬರಮಾಡಿಕೊಳ್ಳುವರಾರು!
ಹೊರಟೆನೆಂದರೆ ಹೋಗುವುದೆಲ್ಲಿಗೆ?
ನನಗೆ, ನನ್ನವರೆ, ತನ್ನವರೆ, ಮನೆಯೆ, ಮಠವೆ?
ಯಾರಿದ್ದಾರೆ? ಏನಿದೆ?
ಇದ್ದರೂ ಇಲ್ಲೆ ಬಿದ್ದರೂ ಇಲ್ಲೆ! ನನಗಿರುವುದು ಇದೊಂದೆ!
ಇದ್ದೊಬ್ಬ ತಾಯಿಯೂ ಹೆಣವಾಗಿ ಇಲ್ಲೆ ಬಿದ್ದಿಹಳು

ಎಲ್ಲೆಲ್ಲೋ ಬಿದ್ದೆದ್ದು ಬರುವನು
ತಿಂದು, ಕುಡಿದು ಮಜಾ ಮಾಡಿ ಲಾಕ್ ಲೇಕ್ ಮಾಡುವನು
ಯಾರು ಯಾರನ್ನೋ ಕಟ್ಟಿ ಕೊಂಡು ಬರುವನು
ಹೊತ್ತು ಗೊತ್ತೆಂಬುದೇ ಇಲ್ಲ
ಬಂದಾಗ ಬಾಗಿಲು ತೆರೆಯಬೇಕು
ಈಗ ಆಗ ಬೇಕೆಂದರೆ ಆಗ ಆಗಬೇಕು
ಒಳಗೆ ಐತ್ತೆ ಇಲ್ಲ ಅನ್ನೋದು ನೋಡಲ್ಲ
ತನಗೆ ಹೇಗೊ ತನ್ನ ಹಿಂದೆ ಬಂದಿರುವವರಿಗೂ ಹಾಗೇ
ಏನೂ ಕಡಿಮೆಯಾಗಬಾರದು
ಹಾಗೇನಾದರೂ ಆಯಿತೋ ಕೆಂಡ, ಕೆಂಡವನ್ನೇ ಕಾರುವನು
ಮಹಾರಾಯ! ತಾನು ಸಾಕಿರುವ ನಾಯಿಗೆ ತೋರಿಸುವಷ್ಟು ಪ್ರೀತಿ
ತೋರಿಸಿದ್ದರೂ ಎಷ್ಟೋ ಆಗುತ್ತಿತ್ತು

ಏನಾದರೂ ಮಾಡಲಿ ಬಿಡಲಿ
ಇರುಳು ಹಗಲು ಮಲಗಿ ಕೊಂಡಿರಲಿ ಕೇಳುವ ಹಾಗಿಲ್ಲ
ಬಾಯಿತಪ್ಪಿ ಅಂದರೂ
ಆಂ! ಊಂ… ಊ….!
ಉಸಿರು ಬಿಟ್ಟರೆ ನೋಡು
ತಲೆ ಹೊಯ್ದ ಎಲೆ ಮುಚ್ಚಿ ಬರುವೆ ಹುಷಾರ್!
ಎಚ್ಚರಿಕೆಯಲ್ಲಿರು ಎನ್ನುವನು

ಅದು ಹೋಗಲಿ ಬಿಡಿ!
ಇವುಗಳ ತಲೆ ಬಿದ್ದೋಗ
ಹೊಟ್ಟೆಯಲ್ಲಿ ಹುಟ್ಟಿದ ಮಕ್ಕಳಾದರೂ ಕೂಡ
ನೋಡಿ, ಮಾಡಿ ಮಾತಾಡುವುದಿದೆಯೆ?
“ಲೇ! ಅಪ್ಪನ ಗುರುತು ಅರಿಯದವಳೆ! ಹಾರಾಡ ಬೇಡ”
ವೆನ್ನುವವು

ಥೂ! ಇಂತಾ ಜನ್ಮಬೇಕಿತ್ತಾ?
ಯಾವ ತಾಯಿಗ್ಗಂಡ ಮಾಡಿದನೋ ಈ ಬಸವಿ ಬಿಡೋದಾ!
ಇವನ ವಂಶ ನಿರ್ವಂಶವಾಗಿ ಹೋಗಾ!
ಅವನನ್ನು ಮೆಟ್ಟು ಬೀಳುವಾಗ ಮೆಟ್ಟು ತಗೊಂಡು ಹೊಡಿಬೇಕು
*****

Tagged:

Leave a Reply

Your email address will not be published. Required fields are marked *

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...