Home / ಕವನ / ಕವಿತೆ / ಮನೆವಾಳ್ತನ

ಮನೆವಾಳ್ತನ

ಅಬ್ಬೆಪಾರಿಗಳು ಮನೆವಾಳ್ತನಕಿರಬಾರದು
ಕೈ ಹಿಡಿದವಳು ಸೇರಿದಂತೆ ಎಲ್ಲರಿಗೂ ಸದರ

ಮನೆ ಅಳಿಯ
ಅತ್ತ ಮಗನೂ ಅಲ್ಲದ ಇತ್ತ ನೆಂಟನೂ ಅಲ್ಲದ
ಆಟಕ್ಕುಂಟು ಲೆಕ್ಕಕ್ಕಿಲ್ಲದ
ಮುಲಾಜು ಬದುಕಿನ ವ್ಯಕ್ತಿ

ಸರಿಕಂಡದ್ದ ಮಾಡುವ ಹಾಗಿರಲ್ಲ
ಸ್ವತಂತ್ರವಾಗಿ ನಡೆಯೋ ಹಾಗಿರಲ್ಲ
ವ್ಯಕ್ತಿ ಗೌರವ ಕೇಳೋ ಹಾಗಿರಲ್ಲ
ಸ್ವಲ್ಪ ಹಾಗೆ ಹೀಗೆ ಮಾಡಿದೆಯೋ
“ಊಂ! ನಿನ್ನನ್ನ ನಾವೇನೋ ಅಂದು ಕೊಂಡಿದ್ದೆವೆಲ್ಲಪ್ಪೋ…!
ಅದೆಲ್ಲಾ ಬಿಟ್ಟು ಬಿಡಪ್ಪ
ಕಲಿತಿದ್ದೆಲ್ಲಾ ಖರ್ಚು ಮಾಡಬೇಡ” ವೆಂದು ಗದರಿಸಿ, ಮೂದಲಿಸಿ
ಎಚ್ಚರಿಸುವರು.

ನಾದಾರಾಗಿರುವಾಗ,
ಸಕಲಿಷ್ಟು ನೀನೆ, ನಿನ್ನದೆ ಅಂದವರು
ಸ್ವಲ್ಪ ಗಂಟಾಗಿ,
ಮಕ್ಕಳು ಮರಿ ಕೈಗೆ ಬಂದ ಮೇಲೆ
ಈಯಪ್ಪ ನೊಬ್ಬನನ್ನು ತಂದು ಮೂಲ ಮಾಡಿಕೊಂಡೆವೆಂದು
ನೇರವಾಗಿ ಅನ್ನುವರು

ಥತ್ ಇವನ! ಎಂದು
ಅಪ್ಪನ ಮನೆಗೆ ಹೋದರೆ
ಇದ್ದ ಬದ್ದವರೆಲ್ಲಾ
ಇಷ್ಟು ದಿನ ವೆಲ್ಲಿದ್ದೆ?
ದುಡಿಮೆಯೇನು ಮಾಡಿದೆ?
ನಾಟಕವಾಡ ಬೇಡ
ನಿನ್ನದೇನಿದ್ದರೂ ಅಲ್ಲೆ!
ನೀನೆ ಯೋಚನೆ ಮಾಡು
ನಿನ್ನ ಹಾಗೇ ನಾವೂ ಹೋಗಿದ್ದು
ಈಗ ನೀನು ಬಂದ ಹಾಗೆಯೇ ನಾವು ಇಂದು ಬಂದಿದ್ದರೆ
ಇಲ್ಲಿ ಏನಾದರೂ ಉಳಿದಿರುತ್ತಿತ್ತಾ?
ತ್ಯಾರಕಾರ ನಂಗೆ ಬಂದು ಬಿಟ್ಟ!
ಎಲ್ಲಿಂದ ಬರುತ್ತೆ?
ದುಡಿಲಿಲ್ಲ; ದುಃಖ ಪಡಲಿಲ್ಲ
ನಡಿ, ನಡಿಯಣ್ಣ! ವೆನ್ನುವರು

ಜನ ನಂಬುವ ಹಾಗಿಲ್ಲ;
ಅತ್ತಲೂ ಇರುವರು ಇತ್ತಲೂ ಇರುವರು
ಅವರಿಗೂ ಹೇಳುವರು ನಮಗೂ ಹೇಳುವರು
ಕೆಟ್ಟರೆ ನೋಡೆವಲ್ಲಾ ಎನ್ನುವರು

ಸಾವರಿಸಿ, ಸಾವರಿಸಿ ಸೋತು
ಇನ್ನು ಆಗುವುದಿಲ್ಲ ವೆಂದಾಗ
ಅವರಿವರ ಕೈ ಕಾಲು ಕಟ್ಟಿ ಪಂಚಾಯತಿ ಕಲೆಸಿದೆವೆಂದರೆ-
“ಯಾರೂ ಅನ್ಯಾಯಕ್ಕೆ ಹೋಗ ಬಾರದು
ಆವತ್ತಿಗೂ ಇವತ್ತಿಗೂ ಮಾತು ಒಂದೇ ಆಗಿರಬೇಕು
ನಿಜ! ನಿನ್ನನ್ನು ನಾವು ಮಗನನ್ನಾಗಿ ಮಾಡಿಕೊಂಡು ಬಂದೆವು
ನೀನೂ ಅಂಗೆ ನಡಕೊಂಡೆ
ಇವತ್ತು ಕಂಡವರ ಮಕ್ಕಳು ಅಂತ ಇಲ್ಲದ್ದ ನುಡಿಬಾರದು
ನಿನ್ನ ಅಂಗೆ ಇಂಗೆ ಅಂದರೆ ನಮ್ಮ ನಾಲಿಗೆಗೆ ಉಳಬಿದ್ದಾವು!
ನಾವಿಲ್ಲಿ ಉಗಿತಿದ್ದೀವಪ್ಪಾ ಅಂದರೆ ನೀನು ದಾಟಿ ನಡೆದಿಲ್ಲ
ನಾವು ಕೂಡ ತಪ್ಪಿ ಏನೂ ನಡೆದಿಲ್ಲ
ಕೊಟ್ಟು, ಲಕ್ಷಣವಾಗಿ ಮದುವೆ ಮಾಡಿಹೆವು
ಅಳಿಯ ಮಗಳ ವೈಭವ ನೋಡಿ ಕಣ್ಣು ಪಾಪ ಕಳಕೊಂಡಿಹೆವು
ನಿನ್ನ, ನಿನ್ನ ಸಂಸಾರವನ್ನ, ಮಕ್ಕಳು ಮರಿಯನ್ನ ಸುಖವಾಗಿ
ನೋಡಿಕೊಂಡು ಬಂದಿಹೆವು

ಹಾಗಂತ, ಇವತ್ತು ನೀವು ಅಂಗೆ ಹೋಗಿರಪ್ಪ ಎಂದರೆ
ಅದೇವರು ಮೆಚ್ಚೇನಾ, ಮೆಚ್ಚಾನಾ !?
ನಿನಗೆ ಗೊತ್ತಿದೆ
ಏನೆದೆ ಏನಿಲ್ಲ ಅಂತ
ಈ ಮನೆ ಆವತ್ತು ನಿನ್ನದೆ ಈವತ್ತೂ ನಿನ್ನದೆ
ಬೆಳೆಯೋ ನಿನ್ನ ಅಳಿಯರಿಗೇನು ಕೊಡುತ್ತೀಯೋ
ನಿನ್ನ ಸೊಸೆಯರನ್ನ ಏನು ಮಾಡುತೀಯೋ
ಅವರನ್ನು ಹೇಗೆ ರತಿ ರಂಗೋಲಿ ಹತ್ತಿಸಬೇಕೋ
ಏನಪ್ಪಾ! ಇದನೆಲ್ಲಾ ನೀನು ನಿಧಾನವಾಗಿ ಯೋಚನೆ ಮಾಡಿ
ತೂಗಿ, ತೂಕ ಮಾಡಿ ಹಂಚಿಕೊಟ್ಟು ಹೋಗು
ಸರಿಯೇನ್ರಪ್ಪಾ!
ಇಲ್ಲಿ ಯಾರು ಧರ್ಮ, ಕರ್ಮ, ತಿಳಿಯದವರೇನಿಲ್ಲ
ನೀವೂ ಸ್ವಲ್ಪ ಆಲೋಚನೆ ಮಾಡಿ
ಹೀಗೀಗೆ ಹೋಗಿರಪ್ಪವೆಂದರೆ
ನಾವು ಹತ್ತು ಜನದ ಮಾತ ತೆಗೆದು ಹಾಕೋಕೆ ಬರುತ್ತಾ!?
ಇವತ್ತು ಅಳಿಯ ಮಗಳು ಸ್ವಲ್ಪವಾದರೂ ಪ್ರಪಂಚ ತಿಳಿದವರು
ಪ್ರಾಯದ ಮಕ್ಕಳು,
ಎಲ್ಲಿಯಾದರೂ, ಏನಾದರೂ ಮಾಡಿಕೊಂಡು ಬದುಕಬಲ್ಲರು
ನಮ್ಮದಿನ್ನೇನು ಉಳಿದಿದೆ?
ಊರು ಹೋಗೆನ್ನುವುದು ಕಾಡು ಬಾ ಎನ್ನುವುದು
ನಮ್ಮ ಮಕ್ಕಳು ಯಾವ ದಿನ ಮಾನದವರು
ಬದುಕು, ಬಾಳು ಗೊತ್ತಿಲ್ಲದವರು
ಇವರು ಊರಲ್ಲಿ ಬೂದಿ ಬಿಸಾಕಿ ಕೊಂಡಿರಬೇಕು
ನಮ್ಮ ಮನೆಯ ದೀಪವೂ ಉರಿಬೇಕು
ಇದರಲ್ಲಿ ಯಾರಿಗೂ ತಿಳಿಯದೆ ಇರುವುದು ಏನೂ ಇಲ್ಲ
ನೋಡ್ರಪ ಇರೋದಿದು!
ದೈವದವರು ನೀವು ಹೇಗೆ ಅಂದರೆ ಹಾಗೆನ್ನುವವರು ನಾವು,
ಎನ್ನುವರು
ಮಾತಿನ ಮೋಡಿಯಲ್ಲಿ ಮುಚ್ಚಿ ಹಾಕುವರು; ನಡಿ ಎನ್ನುವರು

ಅಲ್ಲಿಂದ ಇಲ್ಲೀವರೆಗೆ ಆಸೆಯಿಟ್ಟುಕೊಂಡು
ಎದೆ ಮುರುಕೊಂಡವನು
ಕೊಟ್ಟಿದ್ದ ಇಸುಕೊಂಡು
ಅಪ್ಪುಗೈ ಇಟ್ಟು ಕೊಂಡು ಹೊರಬರಬೇಕು
ಎಲಾ ಹೊಸದಾಗಿ ಶುರು ಮಾಡಬೇಕು
ತಪ್ಪಿ ಬಾಯಿ ಮಾಡಿದೆಯೋ
ಸಣ್ಣವರಿಂದ ಹಿಡಿದು ದೊಡ್ಡವರವರೆಗೆ
“ಏನಾದರೂ ಇವನು ಕ್ರಿಯ ಹಿಡಿಯಲಿಲ್ಲ ಕಣಯ್ಯ” ವೆಂಬ
ಆರೋಪ ಹೊರಿಸುವರು
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...