Home / ಕವನ / ಕವಿತೆ / ಬಜಾರಿನಲ್ಲಿ ಬುದ್ಧ….

ಬಜಾರಿನಲ್ಲಿ ಬುದ್ಧ….

ಬಜಾರಿನಲ್ಲಿ ಇದ್ದ ಬುದ್ಧ
ರಾಮ, ಕೃಷ್ಣ, ಶಿವ, ಗಾಂಧಿ
ಅಂಬೇಡ್ಕರ್ ಅವರ ಜೊತೆಗೆ ಕುಳಿತಿದ್ದ.

ಮೊಂಡು ಕೈ, ಹರಿದ ಅಂಗವಸ್ತ್ರ….
ಬುದ್ಧ ಹೌದೋ ಅಲ್ಲವೋ ಎಂದು
ಅನುಮಾನಿಸುವಷ್ಟು ಚಿಂದಿಯಾಗಿದ್ದ.

ಆದರವೇ ಜಾಜ್ವಲ್ಯಮಾನ ಕಣ್ಣುಗಳು
ಸೆಳೆದವು, ಹೊಳೆದವು ಫಳ ಫಳ
ಪುಳಕಿತಳಾಗಿ ಮನೆಗೆ ಕರೆದೆ, ಬಂದ.

ಒಣಗಿದ ಹೂವು, ಆರಿದ ದೀಪ, ಪಿನ್ನು,
ಪುಸ್ತಕ, ಎಂಜಲು ತಟ್ಟೆ, ಒಣಗಿದ ಬಟ್ಟೆ,
ಹಣ್ಣು-ತರಕಾರಿಯ ಒತ್ತರಿಸಿ, ಅಂಗೈಯಲ್ಲಿ
ಗುಡಿಸಿ, ಸಾರಿಸಿ ಜಾಗ ಮಾಡಿಕೊಟ್ಟೆ-
ಮೇಜಿನ ಮೂಲೆಯಲಿ ಕೂತ.

ಅವನು ಬುದ್ಧ
ಮೈತ್ರಿ-ಕರುಣೆಯ ಸಾಕಾರ
ಅವನದೇ ಮಾತು: ಸಂಸಾರ ದುಃಖಸಾಗರ
ಆಶೆಯೇ ದುಃಖಕ್ಕೆ ಮೂಲ, ಜೀವನವು ನಶ್ವರ.

ಮಾರನಿಗೊಲಿದಿದ್ದ ನಾವು ಅವನ ಮುಂದೆಯೆ
ಶುರು ಹಚ್ಚಿಕೊಂಡೆವು ವ್ಯವಹಾರ
ಮನೆ ಮಂದಿಯ ಮೋಹ, ಮದ, ಮತ್ಸರ
ಆತಂಕ, ಆವೇಶ, ದುಃಖ, ಕೋಪ
ಎಲ್ಲವೂ ಈಗವನ ಸಮ್ಮುಖ!

ದೂಷಣೆ, ಶೋಷಣೆ, ಘೋಷಣೆ
ಯುದ್ಧ-ಕದನ ವಿರಾಮಗಳಿಗೆ-
ಅವನೇ ಸಾಕ್ಷಿ, ಅವನದೇ ರಾಯಭಾರ.
ರೋಗ ರುಜಿನ, ಮರಣ ಎಲ್ಲವುಗಳಿಗೆ
ಅವನೇ ಕಾರಣ, ಅವನಿಂದಲೇ ಶಮನ!

ಅಷ್ಟಾಂಗ ಮಾರ್ಗಗಳಿಗೆ ನಮಿಸಿದೆವು ನಿಜ,
ಆಚರಿಸಿದೆವೋ ಅನುಮಾನ!
ಏರಿದ ಎತ್ತರ, ಇಳಿದ ಪ್ರಪಾತ,
ಕವಿದ ಕಾರ್ಮೋಡ, ಕರಗಿದ ಕಾವಳ-
ಇಲ್ಲದೆಯೂ ಇದ್ದಂತೆ, ಜೊತೆಗಿದ್ದ….

ಇಪ್ಪತ್ತು ವರುಷವಾಯಿತು ಬುದ್ಧ
ನಮ್ಮಲ್ಲಿಗೆ ಬಂದು-
ನಮ್ಮೊಂದಿಗೇ ನಿಂದು, ನೊಂದು, ಬೆಂದು;
ಈಗವನು ನಮ್ಮವನು, ನಮ್ಮಲ್ಲೇ ಒಂದು.

ಇನಿತೂ ಬದಲಾಗಿಲ್ಲ….ಅದೇ
ಗುಂಡು ಮುಖ, ತುಂಡು ಬಾಯಿ
ಮೊಂಡು ಕೈ, ಹರಿದ ಅಂಗವಸ್ತ್ರ,
ಅದೇ ಮೌನ, ಸಮಾಧಾನ

ನಾವೂ ಅಷ್ಟೆ, ಇನಿತೂ ಬದಲಾಗಿಲ್ಲ!
ಅದೇ ವೇಗ, ಅದೇ ಭೋಗ,
ಅದೇ ತನ್ಹಾ….ಅದೇ ತಲ್ಲಣ!!
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...