Home / ಕವನ / ಕವಿತೆ / ಅರಿವು

ಅರಿವು

ಬೆದೆ ಹತ್ತಿದ ಎದೆ ಹಾಡಿದಾಗ
ಸದೆ ಬಡಿಯುವ ಸಿಂಹಾಸನವೇ
ಸಾವ ಸಂಭ್ರಮದಲ್ಲಿ ನೋವು
ನಿವಾರಿಸುವ ಜೋಳವಾಳಿಯೇ.

ಕಾಲ ಚಕ್ರ ಉರುಳುತ್ತಲೇ ಅರಿವು ಅರಳುತ್ತ
ನಾಲಗೆ ನಿಧಾನವಾಗಿ ಮಿಸುಕಾಡುತ್ತಿದೆ
ಬಾಯೊಳಗೆ ಬ್ರಹ್ಮಾಂಡ, ಶತಶತಮಾನದ ವಿರಾಟ್
ದರ್‍ಶನ ವಿರಾಟಪರ್‍ವದ ಅಜ್ಞಾತ ಅಳಿಯುತ್ತಿದೆ.

ನಂಬಿಕೆ ನಿಷ್ಠೆಯ ಜಡಕಾಡು
ಋಣದ ಒಣಹವೆಯಲ್ಲಿ ಹದ್ದು-
ಬಸ್ತಾಗಿ ಹಸ್ತಿನಾವತಿಯ ಹರಕೆ ಹೊತ್ತು
ಅಲೆಮಾರಿಯಾದದ್ದು ಹನ್ನೆರಡಕ್ಕೇ ಸಾಕು;
ಅಜ್ಞಾತವಾಸದ ಹುತ್ತ ವಾಲ್ಮೀಕಿಯಾಗಬೇಕು.
ಮತ್ತದೇ ರಾಮಾಯಣ!
ಅಲೆಮಾರಿ ಅರಿವಿಗೆ ಹದಿನಾಲ್ಕರ ಹರೆಯ!

ಹೆಪ್ಪುಗಟ್ಟುತ್ತ ಬಂದ ಗಡಿಯಾರ
ಹನ್ನೆರಡು ಹೊಡೆದಾಗ ಕಾಲ ಕಡೆದ ಮೊಸರಲ್ಲಿ
ಹೊರಬಂದ ಬಸವಾದಿ ಅಸಂಖ್ಯಾತ ಅರಿವು-
ಅಸ್ಪೃಶ್ಯರ ಹಟ್ಟಿಯಿಂದ
ಮಹಿಳೆಯ ಮುಟ್ಟಿನಿಂದ
ದೋಣಿಯ ಹುಟ್ಟಿನಿಂದ
ಕಟ್ಟೊಡೆದು ಬಂದ ನಿಟ್ಟುಸಿರು
ನಲಿವಾಯಿತು ಅದು ನಿಲುವಾಯಿತು.

ಹನ್ನೆರಡಕ್ಕೆ ಎರಡು ಸೇರಿ ಹದಿನಾಲ್ಕು ತುಂಬಿದಾಗ
ಆಸ್ಥಾನ ದೂರ ಅಲೆಮಾರಿ ಅರಿವು
ಹರಿದಾಸ ತೇರಾಯಿತು ಊರೆಲ್ಲ ಹರಿದಾಡಿತು.

ಮಹಾಭಾರತದ ಹನ್ನೆರಡಾಗಲಿ
ರಾಮಾಯಣದ ಹದಿನಾಲ್ಕಾಗಲಿ
ಅಲೆಮಾರಿ ಅನುಭವಕ್ಕೆ ಅರಮನೆಯಿಲ್ಲ
ಅರಿವಿಗೆ ಆಸ್ಥಾನವಿಲ್ಲ.

ಪುರಾಣದ ಸ್ಥಿತಿಯಾಗಿ ಇತಿಹಾಸದ ಗತಿಯಾಗಿ
ಗತಿ ಸ್ಥಿತಿಯ ಸ್ಥಿತ್ಯಂತರದಲ್ಲೇ
ಮುಷ್ಟಿಗೆ ಸಿಕ್ಕದ ಸೃಷ್ಟಿಯಾಗಿ
ವಚನವಾಗಿ ದಾಸರ ಪದವಾಗಿ
ಗುಡಿಸಲ ಗೋಳಾಗಿ ನೇಗಿಲ ನೋವಾಗಿ
ಪದವಿಟ್ಟಳುಪದೊಂದಗ್ಗಳಿಕೆಯಾಗ ಹೊರಟರೂ
ಮಸಿ ಅಳಿಸುವ ರಬ್ಬರು ಉತ್ಪಾದನೆಯಾಗುತ್ತದೆ
ಮತ್ತೆ ಮತ್ತೆ ಅಕ್ಷರ ಆಕಾರ ತಳೆಯುತ್ತದೆ.

ಇದು ಇಂದು ನೆನ್ನೆಯದಲ್ಲ
ಕಾಲ ಸಾಯುವುದಿಲ್ಲ
ಹದಿನಾಲ್ಕಕ್ಕೆ ಹಿಂದೆ ಹನ್ನೆರಡು
ಹನ್ನೆರಡಕ್ಕೆ ಹಿಂದೆ ಹತ್ತು ಇರುತ್ತದೆ
ಚರಿತ್ರೆಯ ಸರಪಳಿ ಬೆಳೆಯುತ್ತದೆ.

ಹತ್ತರ ಪಂಪ ಪೊರೆ ಬಿಡುತ್ತ ಬಂದದ್ದು
ಒತ್ತೆಯಿಟ್ಟ ಉಸಿರು ಉತ್ತರ ಹುಡುಕ ತೊಡಗಿದ್ದು
ಸುಳಿವು ಸಿಕ್ಕಿದ ಸಿಂಹಾಸನ ಗಡಗಡ ನಡುಗಿದ್ದು
ಪಂಡಿತರಿಗೆ ಪಡಿತರ ಹಂಚಿ ಪಟ್ಟಾಗಿ ಕೂತದ್ದು
ಪಟ್ಟದ ಕೆಳಗೆ ಚಟ್ಟದ ಚರಿತ್ರೆ
ನಿಲ್ಲದೆ ನಿರ್‍ಮಾಣವಾಗುತ್ತ ಬಂದದ್ದು-

ಎಲ್ಲಾ ಗೊತ್ತಾಗುತ್ತಿದೆ ಸಿಂಹಾಸನವೇ
ನಿನಗೆ ಹೊತ್ತಾಗುತ್ತಿದೆ ಜೋಳವಾಳಿಯೇ

ಈಗ-
ನನ್ನ ಕಿವಿ ನನ್ನದು
ನನ್ನ ನುಡಿ ನನ್ನದು
ನನ್ನ ಚರ್‍ಮ ನನ್ನದು
ನನ್ನ ಮೂಗು ನನ್ನದು
ನನ್ನ ಕಣ್ಣು ನನ್ನದು
ಕಡೆಗೆ-
ಈ ಮಣ್ಣು ನನ್ನದು.

ಯಾಕೆಂದರೆ-
ನೋಟ ನುಡಿಗಳ ಮೇಲೆ
ಸ್ಪರ್‍ಶ ಸಂವೇದನೆಯ ಮೇಲೆ
ಶಬ್ದ ಸ್ಪಂದನದ ಮೇಲೆ
ವಾಸನೆ ವಿವೇಚನೆಯ ಮೇಲೆ

ಗುಲಾಮ ಗೀರುಗಳು ಈಗ ಮಾಯುತ್ತಿವೆ
ವರ್‍ತಮಾನದ ಅರ್‍ಥ ಹುಡುಕುತ್ತಿವೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...