Home / ಕವನ / ಕವಿತೆ / ನನಗೋ ಇಂಥ ಹೆಳವು…

ನನಗೋ ಇಂಥ ಹೆಳವು…

ಅಯ್ಯೋ…ನೋಡಲ್ಲಿ ಕಂದನನ್ನು
ಅದೇನು ಹೀಗೆ ಏರುತ್ತಿದೆ ಮೆಟ್ಟಿಲಿನಂತೆ?
ಮರಕ್ಕಾತು ಜಡವಾಗಿ ಕೂತಿದ್ದಕ್ಕೇ
ಅವನನ್ನೇನು ಕೊರಡೆಂದುಕೊಂಡಿದೆಯೋ?

ಕಾಲುಚಕ್ರ ಸೋತ ಹೊತ್ತಲ್ಲಿ
ಮರಕ್ಕೊರಗುತ್ತಾನೆ ಕುಸಿದು
ಅವನೊಂದಿಗೇ ಮರಕ್ಕೂ
ಅದರ ಮೇಲಿನ
ಸಕಲೆಂಟು ಜೀವಜಂತುಗಳಿಗೂ
ಗಾಢ ಮೈಮರೆವಿನ ವಿಸ್ಮೃತಿ.

ಕಂದನಿಗೇನು ಗೊತ್ತು ಪಾಪ?
ಅವನೋ ಎದ್ದರೆ
ತಿರುಗಾಲ ತಿಪ್ಪನಂತಾ ಅಲೆಮಾರಿ
ಕೂತರೆ ಹೆಬ್ಬಂಡೆಯಂತಾ ಸೋಮಾರಿ

ಇದಕ್ಕದೆಂಥಾ ಹುಚ್ಚು ಉಮೇದೋ?
ಮರವೋ
ಗಾಢ ನಿದ್ದೆ ಹೋದ ಅವನೋ
ಮೂಲೆ ಹಿಡಿದ
ಮುರುಕು ಕುರ್ಚಿಯೋ
ಯಾವುದಾದರೂ ಸರಿ
ಅದರ ಮೈಮೇಲೆ ಏರಿ
ಹಿಪ್ ಹಿಪ್ ಹುರ್ರೇ ಸಡಗರ.

ನೀನಾದರೂ ಹೇಳಬಾರದೇ
ಅದವನ ದೇಹವೆಂದು?
ಅದನ್ನೇ ಮೆಟ್ಟಿಲಾಗಿಸಿ
ಪುಟ್ಟ ಪುಟಾಣಿ
ಅಂಬೆಗಾಲಿಕ್ಕುತ್ತಾ
ಮೆಲ್ಲಗೆ ತೊಡೆಯೇರಿ ಕುಳಿತು
ಅದೋ ನೋಡು
ನಗು ಮುಕ್ಕಳಿಸುತಿದೆ ಮೊಗ,
ಥೇಟ್ ಪೀಠಾಧಿಪತಿಯ ಠೀವಿ!

ಮತ್ತೆ ನೋಡಿಗ
ಹುಮ್ಮಸ್ಸಿನಲಿ ಮೇಲೇರಿ
ಪಕ್ಕೆಲುಬಿನ ಮೆಟ್ಟಿಲಿಗೆ
ಗುಲಾಬಿ ಕಾಲಿನ ಪಾದವೂರಿದೆ
ಅವನಿಗೋ ಕಚಗುಳಿಯಾದರೂ ಆಗಬಾರದೇ?
ಮಿಸುಕಿದರೆ ಕೇಳು!

ಅಲೆಲೆ…ನೋಡು
ಹೊಟ್ಟೆಯುಬ್ಬಿಗೆ
ಇನ್ನೊಂದು ಪಾದ!
ಬಿಗಿ ಹಿಡಿತಕ್ಕೆ ಅವನದೇ ಜುಟ್ಟು!
ಹುರುಪಿನ ಏರು
ದಿಗ್ವಿಜಯದ ನಗೆ
ಅವಿರತ ಚಾರಣ
ಆಯಾಸವೇ ಆಗದಲ್ಲಾ ಕಂದನಿಗೆ?
ಅವನಿಗೋ ಎಚ್ಚರವಿಲ್ಲಾ
ಇದಕ್ಕೋ ಸುಸ್ತೆಂಬುದೇ ಇಲ್ಲಾ!

ಈಗವನ ಎದೆಯೂ
ಕಂದನಿನ್ನೊಂದು
ಪಾದಕ್ಕೆ ಸೋಪಾನವಾಯ್ತೇ?
ನೇರ ಮೂಗಿನುಬ್ಬಿಗೆ ಬಾಯಿ!
ನೆಕ್ಕಿ ಚೀಪಿ ರುಚಿ ನೋಡಿ….
ಮುಂದುವರೆದಿದೆ ದಿಗ್ವಿಜಯ ಯಾತ್ರೆ!

ಈಗ ನೋಡು,
ಏರುತ್ತಾ ಏರುತ್ತಾ
ಅವನ ಕತ್ತಿನ ಬಲಕ್ಕೊಂದು ಪಾದ
ಎಡಕ್ಕೊಂದು ಪಾದ
ಕುತ್ತಿಗೆಯ ಕುಳಿಯೇ
ಮತ್ತೊಂದು ಮಜಲು.

ಅವನ ಜುಟ್ಟು ಹಿಡಿದೇ
ಹಿಂದೆ ಮುಂದಾಗುವ ಸರ್ಕಸ್ಸು
ಅಯ್ಯೋ ಕಂದ ಬಿದ್ದಾತು ಎಚ್ಚರ…
ನೋಡವನ ತಲೆಯ ಮೇಲೆಯೇ ಕೂತು
ಮರಕ್ಕೊರಗಿದ ಭಂಗಿ!
ಥೇಟ್ ಕಳಸವಿಟ್ಟಂತೆ ತಲೆ ಮೇಲೆ…
ಪುಟಾಣಿ ಪುಟ್ಟ ಕೈ ಬಡಿಯುತ್ತಾ
ಕೇಕೆ… ಚಪ್ಪಾಳೇ…
ವಿಜಯೋತ್ಸವ…

ಕಂಡೋರ ದಿಟ್ಟಿ ತಾಕೀತು ಕಂದಮ್ಮಗೆ
ಮೂಲೆ ಕಸಬರಿಕೆ
ನಾಲ್ಕು ಕಡ್ಡಿಯ ಸುಟ್ಟು
ನೀವಳಿಸಿ ಒಗೆಯಬಾರದೇ ಆಚೆಗೆ?

ಇಷ್ಟೆಲ್ಲವಾದರೂ
ಅವನಿಗೋ ಮೈಮೇಲೆ ಖಬರಿಲ್ಲ.
ಕುಂಭಕರ್ಣನ ನಿದ್ದೆ
ಈ ಕಂದಮ್ಮನಿಗೋ
ಎಲ್ಲವೂ ಆಡಿದ್ದೇ ಆಟ.

ಅವನು ದಯಾಳು
ತಲೆಯೇರಿದ ಕಂದನನು
ಖಂಡಿತಾ ಬೇಕೆಂದೇ
ಕೊಡವಿ ಕೆಡವಲಾರ….

ಆದರವನಿಗೆ ಪಾಪ…
ಮೈಮೇಲಿನೆಚ್ಚರವೇ ಇಲ್ಲದೇ
ಧಡಕ್ಕನೆದ್ದು ಮೈ ಕೊಡವಿದರೆ….

ಕೊಡವಿದರೆ….
ಗತಿಯೇನು ಕಂದನದು?

ನನಗೋ ಇಂಥ ಹೆಳವು…
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...