Home / ಕವನ / ಕವಿತೆ / ಉಸಾಬರಿ

ಉಸಾಬರಿ

ಬರೆಯಬೇಕು ನಾ ಏನನ್ನಾದರೂ
ವರ್ಷಗಳಿಂದಲೂ ಮನ ತುಡಿಯುತ್ತಿದ್ದರೂ
ಬರೆಯಬಲ್ಲೆನಾದರೂ ನಾನು
ಉಳಿದಿರುವುದಾದರೂ ಏನು?
ಶತಶತಮಾನಗಳಿಂದ ಬರೆದು ಬರೆದು
ನವರಸಗಳೆಲ್ಲವ ಅರೆದು ಕುಡಿದು
ಮಾಡಿ ಸರಸತಿಯ ಭಂಡಾರ ಲೂಟಿ
ನನಗೇನು ಸಿಕ್ಕದು ಬರೀ ಪಾಟಿ.
ಪಂಪ ರನ್ನ ಪೊನ್ನ ಜನ್ನರ ಕಾವ್ಯದ ಗಂಟು
ನನಗಂತೂ ಅರ್‍ಥೈಸಿಕೊಳ್ಳಲಾಗದ ಕಗ್ಗಂಟು
ಕನ್ನಡದ ಕಂಪರಿಯದ ಮೂಗಿಗೆ
ದೇವಭಾಷೆಯ ಗಂಧ ಪಸರಿಸುವುದೇ
“ನೀರಿಳಿಯದ ಗಂಟಲಲಿ ಕಡುಬು”
ಮುದ್ದಣ್ಣನ ಉಕ್ತಿ
ನನ್ನ ಪಾಲಿಗಲ್ಲ ಅತಿಶಯೋಕ್ತಿ.
ಕುವೆಂಪು, ಬೇಂದ್ರೆ ಪುತಿನಾರ ಗತ್ತು
ಬ್ರಹ್ಮ ನೀಡಲಿಲ್ಲ ಬುದ್ಧಿಗೆ ಕಸರತ್ತು
ಇನ್ನು ಕಥೆ ಬರೆಯೋಣವೆನಿಸಿತು
ನನ್ನದೇ ಆಸ್ತಿ ಎಂದರು ಮಾಸ್ತಿ
ಕವನ ಗೀಚಿದರೆ ಬಲು ಸುಲಭವೆಂದುಕೊಂಡೆ
ಒಬ್ಬೊಬ್ಬ ಕವಿಗಳು ಎದುರು ಬಂದು
ನನ್ನದೇ ಪದ, ನನ್ನದೇ ಶೈಲಿ
ಅರಚಾಡಿದರು ಕಿವಿ ಮುಚ್ಚಿಕೊಂಡೆ.
ನಾಟಕವಾದರೆ ಹೇಗೆ? ಕಾಳಿದಾಸನ ಹಾಗೆ
ಈ ನಾಟಕ ಪಾಠಕ ಎಲ್ಲಾ ತಲೆಬಿಸಿ
ಹರಿಹರನ ರಗಳೆಯೇ ವಾಸಿ.
ಕಾದಂಬರಿಯೇ ಸರಿ, ಎಲ್ಲರಿಗೂ ಮೋಡಿ
ಆದರೆ ಬರೆಯುವ ಮೂಡಿಲ್ಲ ಬಿಡಿ
ಕುಣಿಯಲಾರದವಳಂದಳಂತೆ ನೆಲಡೊಂಕು
ಇಲ್ಲ ನನ್ನ ಲೇಖನಿಯ ತುದಿಯೇ ಕೊಂಕು.
ನವ್ಯಕಾವ್ಯ ಬರೆದರಾಯ್ತು ಅರ್ಥವಾಗದ ಪರಿ
ಬಲವಾಗಿ ನಿರ್ಧರಿಸಿದೆ ಮನೆಯೇ ಸರಿ
ಹೋದರಾಯ್ತು ಸಂಸಾರದಲ್ಲಿ ತರಾ ‘ವರಿ’
ದುರಾದೃಷ್ಟಕ್ಕೆ ಅಂದೇ ಮುಗಿಯಬೇಕೆ ತರಕಾರಿ
ಪಲ್ಯ ಮಾಡಲಿಲ್ಲವೆಂದು ಗಂಡನ ಮಾರ ಮಾರಿ
‘ಚೂಡಿ’ ತರಲಿಲ್ಲವೆಂದು ಮಗಳ ಕಿರಿಕಿರಿ
ಆಯಿತಲ್ಲ ಬರೆವುದಕ್ಕೆ ಕತ್ತರಿ
ಬರೆಯುವವರು ಬರೆಯಲಿ ಬಿಡಿ
ನನಗೇಕೆ ಈ ಉಸಾಬರಿ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...