Home / ಕವನ / ಕವಿತೆ / ಸೃಷ್ಟಿಕರ್‍ತ

ಸೃಷ್ಟಿಕರ್‍ತ

ಸದಾ ಉತ್ಸವ ಜಗದೊಳಗೆ-
ಉಳುವ, ಬಿತ್ತುವ, ಟಿಸಿಲೊಡೆಯುವ
ಕಾಯಿಯಾಗುವ, ಮಾಗುವ ಸಂಭ್ರಮ ಪ್ರಕೃತಿಗೆ!
ಹಸಿರು ತೋರಣ, ಋತುಗಳ ಮೆರವಣಿಗೆ,
ಬಣ್ಣಗಳ ಚೆಲ್ಲಾಟ, ಹಕ್ಕಿಗಳ ಕಲರವ, ಗಾಳಿಯ ನಿನಾದ,
ಸೂರ್‍ಯನ ಬಿಸಿ, ಚಂದಿರನ ತಂಪು
ಹೇಗೆ ಸೃಷ್ಟಿಸಿದೆ ಇದನ್ನೆಲ್ಲ?

ಭಾವಗಳ ರಂಗು ಹೃದಯದ ಒಸರಲ್ಲಿ
ಹೊಂಬಣ್ಣದ ತೆನೆ ಹಸಿರಿನ ಬಸಿರಲ್ಲಿ
ಬಣ್ಣಗಳ ಮೇಳ ಧರಣಿಯ ಉಸಿರಲ್ಲಿ
ಧರಿತ್ರಿಗೆ ಕಿರೀಟಗಳು ಹಿಮಚ್ಛಾದಿತ ಪರ್ವತಶ್ರೇಣಿಗಳು
ಏರದೆಗೆ ಪೀಠಗಳು ಗುಡ್ಡ ಬೆಟ್ಟಗಳು
ಜೀವಚರಗಳಿಗೆ ಜೀವಸೆಲೆ ಜಲಪಾತ, ಝರಿಗಳು.
ಜೀವಜಲಕೆ ಒಸರು ನದಿ, ಕೆರೆ, ಸರೋವರಗಳು!
ಹೇಗೆ ಸೃಷ್ಟಿಸಿದೆ ಇದನ್ನೆಲ್ಲ?

ಪ್ರಥ್ವಿಯ ಜತೆಗೆ ಸಾಗರವನ್ನಿಟ್ಟೆ
ಕಂಬಗಳಿಲ್ಲದೆ ಬಾನಿನ ಚಪ್ಪರ ಹಾಕಿಯೇ ಬಿಟ್ಟೆ
ಭೂಮಿಯ ಮೇಲೆ ಪಶುಪಕ್ಷಿ ಪ್ರಾಣಿಗಳ ಓಡಾಡಬಿಟ್ಟೆ,
ಮನುಷ್ಯರ ಸೃಷ್ಟಿಸಿ ಭಾವಗಳ ರಂಗನು ತುಂಬಿ ಆಳಲು ಬಿಟ್ಟೆ
ಸಾಗರದೊಳಗೆ ಬಣ್ಣ ಬಣ್ಣದ ಜಲಚರಗಳ ತೇಲಿಸಿಬಿಟ್ಟೆ
ಪುಟ್ಟ, ಚಿಟ್ಟೆಗಳ ಬಣ್ಣದಲ್ಲದ್ದಿ ಮೆರೆಯಲು ಬಿಟ್ಟೆ.
ಎಲ್ಲವೂ ನಿನ್ನಯ ಸೃಷ್ಟಿ. ಆದರೂ ಬೇರೆ ಬೇರೆ.
ಒಂದರ ಹಾಗೆ ಇನ್ನೊಂದಿಲ್ಲ.
ಒಂದರ ಬಣ್ಣ ಇನ್ನೊಂದಕ್ಕಿಲ್ಲ.
ಎಲ್ಲಿಂದ ತಂದೆ ಇಷ್ಟೊಂದು ವೈವಿಧ್ಯತೆ?

ಹೆಣ್ಣಿನ ಜತೆಗೆ ಗಂಡನ್ನಿಟ್ಟೆ
ಭಾವಗಳ ಓಟಕೆ ರಂಗನು ಎರೆದೆ.
ಕಾಮದ ಬೆಂಕಿಯ ಉರಿಸಿ ಹೊಸಹುಟ್ಟಿಗೆ ಇಂಬನ್ನಿತ್ತೆ.
ಪ್ರೀತಿ ಪಾಠದ ಅಕ್ಕರಿಗ ನೀನು
ಪ್ರೀತಿಯೇ ಜಗದ ಉಸಿರೆಂದೆ.
ಆದರೂ ಪ್ರೀತಿಯ ಜತೆಗೆ ದ್ವೇಷವನ್ನಿಟ್ಟೆ
ಸುಖದ ಜತೆಗೆ ದುಃಖವನ್ನಿಟ್ಟೆ
ಯಾಕೆ ಹೀಗೆ ಮಾಡಿದೆ?

ಹಗಲಿನಾಗಸದಲಿ ನೇಸರ ಹೊಂಬಿಸಲು
ಇರುಳಿನಾಕಾಶದಲಿ ಶಶಿಯ ತಂಬೆಳಕು;
ಅಂಬರದಂಗಳದಲಿ ನಕ್ಷತ್ರಗಳ ಹೊಳಪು;
ಮರಗಳ ತುಂಬ ಮಿಂಚುಳ್ಳಿ ಮಿಣುಕು,
ಮೋಡಗಳ ನಡುವೆ ಮಿಂಚಿನ ಝಳಪು;
ಬೆಳಕಿಗೆಂದೂ ಬರವಿಲ್ಲ.
ಆದರೆ ಮನಮನದೊಳಗೊಂದೊಂದು
ನಕ್ಷತ್ರವನ್ನಿಡಲು ಏಕೆ ಮರೆತೆ?

ಭೂಮಿಯ ಸಹನೆ, ಅಲೆಗಳ ಚಂಚಲತೆ
ಗಾಳಿಯ ಚೈತನ್ಯ, ಆಗಸದ ಐಕ್ಯತೆ
ಎಲ್ಲವೂ ಕಲಿಕೆಯ ಆಗರ. ಎಲ್ಲಕ್ಕೂ ನೀನೇ ಗುರು
ಎಲ್ಲರೂ ನಿನ್ನ ಕೈಯಲ್ಲಿ ಅಕ್ಷ,
ನೀ ಹೇಳಿದಂತೆ ಇಡೀ ಜಗ.
ಆದರೂ ಮುತ್ತಿದೆ ದ್ವೇಷದ ಹಗೆ; ನೋವಿನ ಧಗೆ
ಶಾಂತಿಯ ಏಕೆ ತುಟ್ಟಿಯಾಗಿಸಿದೆ?

ನಿನ್ನಯ ಬಣ್ಣದ ಬಾಂಡಲಿ ಅಕ್ಷಯ!
ರಂಗಿಗೆ ಬರವಿಲ್ಲ. ರಾಗಕೆ ಮೌನವಿಲ್ಲ
ನೀ ಬರೆವ ಚಿತ್ರಗಳಿಗೆ ಕೊನೆಯಿಲ್ಲ
ಇಡೀ ಬಹ್ಮಾಂಡವೇ ನಿನ್ನ ಕ್ಯಾನ್‌ವಾಸ್
ಎಲ್ಲವೂ ಅಗಾಧ, ಅಕಲಂಕ, ಅಕೃತಿಮ.
ಕಣ್ಣಿಗೆ ಕಾಣದ ಚಿತ್ರಿಕ ನೀನು;
ನಿನ್ನೊಲವು ಅಕ್ಷೀಣ. ನಿನ್ನ ಅಣತಿಗೆ ನಮ್ಮ ಸವಾಲಿಲ್ಲ.
ಎಲ್ಲವ ಹೊತ್ತ ಅಗಧರ ನೀನು. ನಿನಗೆ ನೀನೇ ಸವಾಲು.
ಎಲ್ಲಿರುವ ನೀನು? ಹೇಗಿರುವೆ?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...