Home / ಕವನ / ಕವಿತೆ / ಅಗಲಿಕೆ

ಅಗಲಿಕೆ

ಸಾರಂಗ

ಅಗಲಿಕೆಯೆ, ನಿನ್ನಗಲನಳೆಯುವವರಾರು ?
ಬಗೆಯೊಲವೆ ನಿನ್ನ ನೆಲೆ ತಿಳಿಯುವವರಾರು ?

ಹಿಂದೆ ಗೋವಳತಿಯರು ನಂದಕಂದನನಗಲಿ
ದಂದುಗದಿ ಮೈಮನದ ಹೊಂದಿಕೆಯ ಮರೆಯುತಲಿ
ನೊಂದು ನಿಡುಸರದಿ ಮನಬಂದಂತೆ ಕೂಗುತಲಿ
ಬೆಂದು ಬಾಯ್‌ಬಿಡುತ ಅಲೆದಾಡಿದರು ಅಡವಿಯಲಿ
“ಹುಲ್ಲೆಯೇ ನಲ್ಲನೆಲ್ಲಿರುವ ನೀನರುಹು !
“ಕೋಗಿಲೆಯೆ ಕೂಗಿ ನುಡಿ ಅವನಿರುವ ಕುರುಹು !
“ಗಿಳಿಹಿಂಡೆ ಕಂಡಿಹೆಯ ಗೆಳೆಯನನು ? ಹೇಳು !
“ಅಳಿಕುಳವೆ ಅಡಗಿರುವನೆಲ್ಲಿ ನಮ್ಮಾಳು ?

“ಅಣ್ಣ ! ಗರಿಗಣ್ಣ ! ಮನದನ್ನನಿರುಹನು ತಿಳುಹು !
“ಹೆಣ್ಣುಗಳ ಹೋಗಲಿಹ ಹರಣಗಳ ನೀನುಳುಹು !
“ಹಕ್ಕಿಗಳೆ, ನುಡಿಹೇಳಿ ಚಿಕ್ಕ ಚೆನ್ನಿಗನೆಲ್ಲಿ?
“ದಿಕ್ಕ ತೋರಿರಿ, ಸಾಕು, ಹೊಕ್ಕು ಹುಡುಕುವೆವಲ್ಲಿ!
“ಜಂಗುಳಿಯ ಹಸುಗಳೇ ರಂಗನೆಲ್ಲಿಹನು?
“ಕಂಗಳಿಗೆ ಕಾಣದೊಲು ಮೈಯ ಮರೆಸಿಹನು;
“ಮಂಗಣ್ಣಗಳಿರ, ಮಿತ್ರನ ಮರೆಯ ಹೇಳಿ!
“ಹೆಂಗಳೀ ಹರಕೆಯನು ಹೊಂದಿ ಸೊಗಬಾಳಿ!

“ಮರಬಳ್ಳಿಗಳೆ ಅರುಹಿ ಹರಿಯಿರುವ ತಾಣವನು !
“ಕೆರೆತೊರೆಗಳೇ ತೋರಿ ಅರಸನಿಹ ಗುರುತನ್ನು !
“ಹೊಳೆಯಮ್ಮ, ತಿಳುಹಿಸೌ ಕೊಳಲಿಗನ ನೆಲೆಯನ್ನು !
“ಬೆಟ್ಟದೊರೆ, ಮೂಗುತನ ಬಿಟ್ಟು ತೋರಾತನನು !
“ಮುಗಿಲೆ, ನಿನ್ನಂತಿರುವ ಸೊಗಸೊಡಲನೆಲ್ಲಿ ?
“ಹಗಲೊಡೆಯ, ನಮ್ಮ ಬಗೆಗಳ್ಳನಿಹನೆಲ್ಲಿ ?
“ಸುಳಿವೆಲರೆ, ನಮ್ಮೊಲವ ಸುಲಿದಾತನೆಲ್ಲಿ?
“ಬನಸಿರಿಯೆ, ನಮ್ಮ ಮನ ತಣಿಸುವವನೆಲ್ಲಿ?”

ಇಂತು ಹೆಣ್ಣುಗಳು ಕಣ್ಣಿಗೆ ಕಂಡುದೆಲ್ಲವನು-
ನಸುವು ತಿಳಿವಿರದಿರುವ ಹಸು ಹಕ್ಕಿ ಮಿಗಗಳನು-
ಉಸಿರಿಲ್ಲದಿಹ ಬಳ್ಳಿ-ಹಸಿರು-ಗಿಡ-ಮರಗಳನು-
ನುಡಿಸುತಳುತಲೆದ ಕತೆಯನ್ನ೦ದು ಕೇಳಿದೆನು.
‘ಹುಚ್ಚು ಹೆಣ್ಣುಗಳವರು !’ ಎಂದು ಬಗೆದಂದೆ
‘ಹೆಚ್ಚು ಇದು ! ಎಲ್ಲ ಕವಿಕಲ್ಪನೆಯು !’ ಎಂದೆ;
‘ಕೆಲಸವಿಲ್ಲದ ಕವಿಗೆ ಹುಸಿಯ ಹೆಣೆಯುವುದೇ
‘ಬಲು ಕೆಲಸ!’ ಎಂದು ಬೀಳ್‌ಗಳೆದು ನಾ ನುಡಿದೆ.

ಅಂದೆನಗೆ ತಿಳಿಯದೆಯೆ ಬಾಯ್ಗೆ ಬಂದುದನೊರೆದೆ;
ಇಂದು ಆ ಕತೆಯೆಲ್ಲ ಸರಿಯೆಂದು ತೋರುತಿದೆ.
ಸಟಿಯಲ್ಲ ಕವಿಯುಸಿರು, ಹುಚ್ಚಲ್ಲ ಹುಡುಗಿಯರು,
ದಿಟವನನುಭವಿಸದೆಯೆ ಅರಿತವರದಾರಿಹರು ?
‘ಮುಳುಗದೆಯೆ ನೀರ ನೆಲೆಯೊಳಗನರಿಯಲಿಕೆ-
‘ಬೆಳಕಳಿದ ಕಣ್ಗೆ ತಿಂಗಳನು ತಿಳಿಯಲಿಕೆ-
‘ಎಂತಾಗುವುದು?’ ಎಂಬ ಕಂಡುಂಡ ಮಾತು
ಇಂತೆನಗೆ ತಿಳಿದು ಮನದಾ ಮುಸುಕು ಹೋಯ್ತು.

ದೂರವಿಹ ನನ್ನಿನಿಯನೂರ ದಿಕ್ಕಿನ ಮುಗಿಲು
ಏರಿ ನನ್ನಯ ಬಳಿಯ ಸಾರಿ ಬರೆ ಬಾನಿನೊಳು,
ನನ್ನವುಗಳೆಂದು ನೇಹದ ನೆಟ್ಟ ನೋಟದಲಿ
ಮುಗಿಲ ನೋಡುತ ನಿಲುವೆ ಹಲವು ಹಾರಯಿಸುತಲಿ;
ದೊರೆಯಿರುವ ದೆಸೆಯಿಂದ ಹಕ್ಕಿಗಳು ಹಾರಿ
ಬರುತಿರಲು, ಹರುಷದೊಳು ನವಿರುಗಳು ನಿಮಿರಿ
ನನ್ನ ನಂಟುಗಳೆಂದು ನೆನೆವೆನವುಗಳನು,
ನನ್ನಾತನೊಸಗೆಯನು ಕೇಳಲೆಳಸುವೆನು.

ಮೆಲುಗಾಳಿಯೆ ಇರಲಿ, ಬಲುಗಾಳಿಯೇ ಇರಲಿ,
ಗೆಳೆಯನಿಹ ಕಡೆಯಿಂದ ಸುಳಿದು ಒರೆ-ಮೋಹದಲಿ
ತಿಳಿಯುವೆನು ನಾ ತೀರ ಬಳಿಯಾಪ್ತನೆಂದದನು-
ತಿಳುಹಿಸಲು ನನ್ನೆದೆಯ ಒಳಮಾತನೆಲ್ಲವನು
ನಾಲಗೆಯು ನಲಿಯುವುದು, ಮನವು ಕುಣಿಯುವುದು
ಕೇಳಲಾತನ ಕತೆಯ ಕಿವಿಯು ಕೋರುವುದು,
ಹೀಗೆನ್ನ ನಾಡಿಸುವುದಾವುದದು ಹುಚ್ಚೋ..?
ಆಗದಿರಲಿನಿಯನಲ್ಲಿರುವೆದೆಯ ನಚ್ಚೋ…?

ಇನಿಯನನು ನೋಡಿ ನುಡಿಸಿದ ಮಂದಿಯೆಲ್ಲರನು
ಮನೆಯವರೆ ಎಂದು ನಾ ಮನ್ನಿಸುವೆನವರನ್ನು
ಮನದನ್ನನಾ ರೂಪುಗುಣದ ಬಣ್ಣನೆಯನ್ನು
ನನಗೊರೆಯೆ ನನ್ನ ನಾನೇ ಮರೆತು ಕೇಳುವೆನು.
ಎನಿತೊ ಜನರಿಲ್ಲವೇ ಮತ್ತೆ ನೆರೆಗಳೊಳು ?
ಎನಿಸುವರು ನನಗವರು ಬರಡುಬೊಂಬೆಯೊಲು;
ಮಾತಿಲ್ಲದುವನೆಲ್ಲ ಮಾತನಾಡಿಸುವೆ,
ಮಾತನಾಡುವರಲ್ಲಿ ಮಗುವಡೆದಿರುವೆ.

ಜಡವಸ್ತುಗಳನ್ನು ಜೀವಿಗಳಂತೆ ಕಾಣಿಸುವ
ನಡೆನುಡಿವ ಜೀವಿಗಳ ಜಡಗಳಂತಾಗಿಸುವ
ಅಗಲಿಕೆಯೆ, ನಿನ್ನ ಗಲಗಳೆಯುವವರಾರಿಹರು?
ಬಗೆಯೊಲವೆ ನಿನ್ನ ನೆಲೆ ತಿಳಿದವರದಾರು ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...