Home / ಲೇಖನ / ಇತರೆ / ವಚನ ವಿಚಾರ – ನೀನು ನಾನು

ವಚನ ವಿಚಾರ – ನೀನು ನಾನು

ಅಯ್ಯಾ
ನಿನ್ನ ಮುಟ್ಟಿ ಮುಟ್ಟದೆನ್ನ ಮನ
ನೋಡಾ
ಬಿಚ್ಚಿ ಬೀಸರವಾಯಿತ್ತೆನ್ನ ಮನ
ಹೊಳಲ ಸುಂಗಿಕಗನಂತೆ ಹೊದಕುಳಿಗೊಂಡಿತ್ತೆನ್ನ ಮನ
ಎರಡೆಂಬುದ ಮರೆದು ಬರಡಾಗದೆನ್ನ ಮನ
ನೀನು ಆನಪ್ಪ ಪರಿಯೆಂತು ಹೇಳಾ ಚೆನ್ನಮಲ್ಲಿಕಾರ್ಜುನಾ

[ಬೀಸರ-ವ್ಯರ್ಥ, ಹೊಳಲ ಸುಂಕಿಗ-ನಗರದಲ್ಲಿರುವ ಸುಂಕ ಕೊಡುವಾತ, ಹೊದಕುಳಿಗೊಂಡಿತ್ತು-ಸಂಕಟಪಟ್ಟಿತ್ತು, ಆನಪ್ಪ-ನಾನಾಗುವ]

ಅಕ್ಕಮಹಾದೇವಿಯ ವಚನ.

ನಾನು-ನೀನುಗಳ ವ್ಯತ್ಯಾಸವನ್ನು ಕುರಿತ ವಚನ ಇದು. ನಾವು ಸಾಮಾನ್ಯವಾಗಿ ಬಳಸುವ ಮಾತಿನ ಕ್ರಮವನ್ನು, ಆದ್ದರಿಂದಲೇ ಗ್ರಹಿಕೆಯ ಕ್ರಮವನ್ನೂ ಅಕ್ಕ ಇಲ್ಲಿ ತಲೆಕೆಳಗುಮಾಡಿದ್ದಾಳೆ.

ನೋಡು, ನನ್ನ ಮನಸ್ಸು ನಿನ್ನನ್ನು ಮುಟ್ಟುತ್ತಿದೆ, ಆದರೆ ಮುಟ್ಟುತ್ತಿಲ್ಲ! ನಿನ್ನನ್ನು ತಲುಪಿದೆ. ಆದರೆ ‘ಮುಟ್ಟಿಲ್ಲ’. ಮನಸ್ಸು ಬಿಚ್ಚಿಕೊಂಡು, ಕಳಚಿಕೊಂಡು ದಂಡವಾಗಿಬಿಟ್ಟಿದೆ (ಬೀಸರ).

ಮುಟ್ಟು ಅನ್ನುವ ಮಾತಿಗೆ ತಲುಪು ಮತ್ತು ಸ್ಪರ್ಶಿಸು ಅನ್ನುವ ಅರ್ಥ ಇರುವ ಹಾಗೆಯೇ ಬಿಚ್ಚಿಕೊಂಡು ಅಂದರೆ ತೆರೆದುಕೊಂಡು, ಕಳಚಿಕೊಂಡು ಅನ್ನುವ ಎರಡೂ ಅರ್ಥಗಳು ಹೊಳೆಯುತ್ತವೆ.

ಸುಂಕ ತೆರಬೇಕಾದ ನಗರದ ಮನುಷ್ಯನ ಹಾಗೆ ನನ್ನ ಮನಸ್ಸು ಸಂಕಟಪಡುತ್ತಿದೆ. ಕೊಡಬೇಕಾದ್ದನ್ನು ಕೊಡಲೊಲ್ಲದೆ, ನನಗೇ ಬೇಕು ಎಂದು ಹಂಬಲಿಸಿ ಚಡಪಡಿಸುತ್ತಾನಲ್ಲ ತೆರಿಗೆದಾರ ಹಾಗೆ.

ಕೊಡಬೇಕಾದದ್ದು, ಉಳಿಸಿಕೊಳ್ಳಬೇಕಾದದ್ದು-ನನ್ನ ಮನಸ್ಸು ದ್ವಂದ್ವವನ್ನು ಮರೆತಿಲ್ಲ, ಆದ್ದರಿಂದ ಮನಸ್ಸು ಬರಡಾಗುವುದಿಲ್ಲ. ಒಂದೇ ಆಗಲು ಸಾಧ್ಯವೇ ಇಲ್ಲವಾಗಿದೆ. ನೀನು ನಾನಾಗುವ ರೀತಿ ಹೇಗೆ ಹೇಳು?

ಮನಸ್ಸು ಬರಡಾದರೆ, ಇತರ ಕಲ್ಪನೆ, ಭ್ರಮೆಗಳನ್ನು ಹೆರದೆ ಬಂಜೆಯಾದರೆ ಮಾತ್ರವೇ ಅಲ್ಲಿ ಚೆನ್ನಮಲ್ಲಿಕಾರ್ಜುನನಿಗೆ ಜಾಗ. ಆದರೆ ಮನಸ್ಸೇ ದಂಡವಾಗಿ ಹೋಗುತ್ತಿದೆ. ಮನಸ್ಸು ಸುಂಕದವನ ಹಾಗೆ, ಅತ್ತ ರಾಜನ ಕಡೆಯವನು ಇತ್ತ ಜನರ ದುಃಖ ಅರಿತರೂ ಏನೂ ಮಾಡಲಾಗದವನು, ಇಡೀ ನಾನುತನವೇ ಚನ್ನಮಲ್ಲಿಕಾರ್ಜುನನಿಗೆ ಕೊಡಬೇಕಾದ ಸುಂಕ, ಅದನ್ನು ಕೊಡಲೊಲ್ಲದೆ ಸಂಕಟಪಡುತ್ತಿರುವ ಮನಸ್ಸು ಬಂಜೆಯಾಗದು. ಲೋಕದ ವ್ಯವಹಾರವಾದ ಸುಂಕದ ಸುಖ ದುಃಖಗಳಲ್ಲಿ ಮನಸ್ಸು ಸಿಲುಕಿದೆ ಅನ್ನುತ್ತಿದ್ದಾಳೋ ಅಕ್ಕ?

ನಾನು ನಿನ್ನಂತೆ ಆಗಬೇಕು ಅನ್ನುವುದಿಲ್ಲ ಅಕ್ಕ. ಅದಕ್ಕೆ ಬದಲಾಗಿ ನೀನು ನನ್ನಂತೆ ಆಗುವುದು ಸಾಧ್ಯವೇ ಎನ್ನುತ್ತಿದ್ದಾಳೆ. ಒಡಲಿಲ್ಲದ, ಸುಖ ದುಃಖವಿಲ್ಲದ, ಮನಸ್ಸಿನಲ್ಲಿ ಸೀಳು ಬಿರುಕುಗಳಿಲ್ಲದ, (ಕ್ಷಣಕ್ಕೊಂದು ಬಗೆಯಾಗುವ) ಮನಸ್ಸೇ ಇಲ್ಲದ ಚೆನ್ನಮಲ್ಲಿಕಾರ್ಜುನ ನನ್ನಂತೆ ದೇಹ, ಮನಸ್ಸು ಇರುವವನಾಗುವುದು ಅಸಾಧ್ಯ, ಅದು ಅಸಾಧ್ಯವಾದ್ದರಿಂದಲೆ ಅವನು ತನಗೆ ದಕ್ಕಲಾರ. ಅವನು ನನ್ನಂತೆ ಆಗಬೇಕು. ಅಥವಾ ನನ್ನ ಮನಸಿನ ಸುಂಕ ತೆತ್ತರೆ ಸಾಧ್ಯ.

ತನಗೂ ತನ್ನ ಪ್ರಿಯಕರ ದೈವಕ್ಕೂ ಇರುವ ವ್ಯತ್ಯಾಸವೇ ಅಕ್ಕನ ಅಳಲಿಗೆ ಕಾರಣವೇನೋ. ಪ್ರಿಯದೈವವನ್ನೂ ತನ್ನಂತೆ ಆಗು ಎಂದು ಎಸೆಯುವ ಸವಾಲೋ ಇದು? ಅಥವಾ ಸಂಬಂಧ ಸಾಧ್ಯವಾಗಬೇಕಾದರೆ ಇಬ್ಬರಿಗೂ ಇರುವ ಜವಾಬ್ದಾರಿಯನ್ನು ನೆನಪಿಸುವ ಮಾತೋ? ಯೋಚಿಸಿದಷ್ಟೂ ಮನಸ್ಸನ್ನು ಕದಲಿಸಿ ಅರ್ಥದ ಅಲೆಗಳನ್ನು ಎಬ್ಬಿಸುವ ವಚನ ಇದು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...