Home / ಕವನ / ಕವಿತೆ / ದರ್‍ಶನ

ದರ್‍ಶನ

ಶ್ರೀರಾಮ ಪಟ್ಟಾಭಿಷೇಕದಲಿ ಒಲಿಯುತ್ತ
ಜಾನಕಿಯು ರಘುವರನ ಸಂಜ್ಞೆಯರಿತು.
ಹನುಮಂತನಿಂದಾಯ್ತು ರಾಮದರ್ಶನಮೆಂದು
ನವರತ್ನಹಾರಮಂ ಕೊರಳಿಗಿತ್ತು
ಸಿಂಗರಿಸೆ ಹೊಳೆ ಹೊಳೆದ ದೇದೀಪ್ಯಮಾನದಲಿ
ರಾಮರತ್ನವ ಧರಿಸಿ ನುಡಿಯ ಮರೆತು.
ಒಂದೊಂದೆ ರತ್ನಮಂ ಪರಿಕಿಸುತ ಕಡಿಯುತ್ತ
ಪುಡಿಗೈಯುತುಗುಳಿದಂ ರುಚಿಯನರಿತು.
ಆ ಸರದ ರತ್ನಗಳ ಹಾಳುಮಾಡಿ
ಶ್ರೀರಾಮರಡಿಗಳಲಿ ಹಾಕಿ ಹಾಡಿ
ತಾಯಿಯಾ ಕೂಪಮಂ ನೊಂದ ನೋಡಿ
ಕೋಡಗಕೆ ಮಣಿಯೇಕೆಯೆಂದ ಬೇಡಿ.

ಕಪಿಗೆ ಸಿಂಗರಮೇಕೆ ಗೌರವಂ ಸಲ್ಲುವುದೆ
ಕುಲಬುದ್ಧಿಯಂ ತೋರ್‍ದೆ ಪುಡಿಯ ಗೈದು
ಸಾಲದಾದುದೆ ನಿನಗೆ ನವರತ್ನಹಾರಮಿದು
ಹಣ್ಣೆಂದು ಬಗದೆಯಾ ಹಸಿವ ನೆನೆದು.
ಇದೊ ಶಾಪ ನಿನಗೆಂದು ಕುಪಿತಳಾದಳು ತಾಯಿ
ಹಣ ಚಾಚಿದನು ಪದದಿ ದೇಹಕೆಡೆದು.
ಈ ಮಹಾ ಹಾರದೊಳು ರಾಮನಾಮದ ಸವಿಯ
ಕಾಣದಾಂ ಬಿಸುಡಿದೆನು ಹುರುಳನರಿದು
ನಿಸ್ಸಾರವೀ ಹಾರ ಕ್ಷಮಿಸು ತಾಯಿ
ರಾಮನಾಮದ ರತ್ನ ಸೌಖ್ಯದಾಯಿ
ರಾಮಸನ್ನಿಧಿಯಿರಲು ಬೇರೆ ಬೇಕೆ
ನಿಮ್ಮ ಮಗುವಾಗಿರಲು ಹಾರಮೇಕೆ?
ನಸುನಕ್ಕನಾ ರಾಮ ಸಂತವಿಸಿ ಸೀತೆಯನು
ಅವನ ಕೊಂಡಾಡಿದಳು ನಿಜವನರಿತು.
ರಾಮನಾಮದ ಮಹಿಮೆಯರಿತವನು ಹನುಮಂತ
ರಾಮನೊಲಿದಿಹನವಗೆ ತನ್ನನಿತ್ತು
ಭಕ್ತಿಮರುಳಿಂ ಕುಣಿವ ಹನುಮಂತನೊಡನಿರುವ
ತೊಡಕಾಯ್ತು ರಾಜ್ಯಮಂ ನಡೆಸಲೆನಿತು.
ಅವನು ನೆನೆದಲ್ಲಿರುವ ಅವನ ಪ್ರೇಮಕ ಮಣಿವ
ಅಡವಿಯೇ ಮನೆಯಾಯ್ತು ಕಪಿಯ ಬೆರೆತು.
ರಾಮನಾಮವ ಹಾಡಿ ಕುಣಿಯುತಿಹನು
ಮೈಮರೆತು ದಾಶರಥಿ ನಗುತಲಿಹನು
ರಾಮ ಬಂದುದ ಕಾಣ ಅಳುತಲಿಹನು
ಮಾರುತಿಯ ನುಡಿಸಿದನು ಭರದಿ ತಾನು.

ಹಾಡುತಿರೆ ನೀನಿಲ್ಲಿ ರಾಜಕಾರ್ಯದ ನಾವೆ
ಎಂತು ನಡೆವುದು ಹೇಳು ರಾಜನಿರದೆ.
ಹಾಡು ಹಾಕುತ ಚಿಟಿಕಿ ಶಯನ ಕಾಲದಿ ಬಂದು
ಆಕಳಿಪ ಸಮಯದೊಳು ಎನಲು ನಿಜದೆ.
ತಾಯಿಯೊಡನಿರುವಾಗ ಸೆಜ್ಜೆಯೊಳು ಬಹೆನೆಂತು
ಅಲ್ಲೇಕೆ ಇಲ್ಲಿರುವೆ ಚಿಂತೆಯಿರದೆ.
ಆಗದಾಗದು ಹನುಮ ಅರಮನೆಯ ಬಾಗಿಲೊಳ್
ಇರ್‍ದು ನೀ ಇರುಳಿನೊಳು ನೆನೆದು ಬಿಡದೆ.
ಚಿಟಿಕಿಯಂ ಹಾಕಿದೊಡೆ ಆಕಳಿಸುವೆ
ಎನಲಯೋಧ್ಯಯನೈದಿ ರಾಮ ಸೇವೆ
ಯಲಿ ನಿಂದ ಭಕ್ತಿಯಲಿ ಆಯ್ತು ಮರವೆ
ಚಿಟಿಕಿ ಹಾಕುತ ಕುಣಿದ ಹೇಳಲಳವೆ!
ಬಿಟ್ಟ ಬಾಯ್ ಮುಚ್ಚದಿಹ ಮಲಗಿರುವ ರಘುರಾಮ
ಸೀತೆಗಚ್ಚರಿಯಾಯ್ತು ಭಯದಿ ಬಂದು
ಗುರು ವಸಿಷ್ಠಂಗರುಹೆ ಓಡಿಬಂದರು ಹನುಮ
ನಿರವರಿತು ಅಪ್ಪಿದರು ಕೈಯ ತಂದು.
ರಾಮನಿರವನ್ನೊರೆಯೆ ತಪ್ಪನೊಪ್ಪುತ ಬಂದು
ಅಜನ ಪಟ್ಟವ ಪಡೆದ ಪದದಿ ನಿಂದು.
ಎಲೆ ರಾಮ ನೀ ಸುಲಭ ಮೋಡಿಗಳ ಮಾಡುವೆಯ
ಎನುತ ನಮಿಸಿದ ಕಣ್ಣನೀರ ತಂದು
ಅಚ್ಚರಿಯ ತಾಳಿದಳು ಸೀತೆ ಮನದಿ
ಮಚಿದಳು ಮಾರುತಿಯ ಹಿಗ್ಗಿ ಭರದಿ
ಚಿರಜೀವಿಯಾಗೆಂದು ಹರಸಿ ಹೊಗಳಿ
ಅರೆನಗೆಯ ನಕ್ಕಳಾ ದೇವಿ ಮಗುಳಿ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...