Home / ಕವನ / ಕವಿತೆ / ನಿರೀಕ್ಷೆ

ನಿರೀಕ್ಷೆ

ಮೋಹನ


ಮೂರು ದಿನಗಳು ಜಾರಿದುವು, ಬರಿ-
ದಾರಿ ಕಾಯುತಲಿರುವೆನು.
ಹಾರಯಿಕೆಯಂತಹದು ! ನನ್ನವ
ಬಾರನೇಕೆನುತಿರುವೆನು.
ಬರುವೆನೆನ್ನುವ ಓಲೆಯಿಲ್ಲವ-
ನರುಹಿದೊಸಗೆಗಳಿಲ್ಲ,
ಬರುವನೆನ್ನುತ ಬಗೆಯಿದೇನೋ
ಮೊರೆಯುತಿದೆ ಸುಳ್ಳಲ್ಲ.
ಎಂತಲೇ ದಿನವೆಲ್ಲಾ….
ಎಂತಲೇ ದಿನವೆಲ್ಲ ಹೀಗೆಯೆ
ನಿಂತು ನಿರುಕಿಪೆನಲ್ಲಾ !


ಸದ್ದನಾವುದ ಕೇಳಿದರೆ ಜು-
ಮ್ಮೆದ್ದ ಮೈಮನದಿಂದ
ಎದ್ದು ನೋಡುವೆ ಇನಿಯನೆಂದೇ
ಹೊದ್ದಿದಾತುರದಿಂದ.
ಆತನಲ್ಲದೆ ಇರಲು ಬಯಕೆಯು
ಬೀತು ಬಳಲಿಕೆಯಾಂತು,
ಕಾತರದಿ ಬಂದೊಳಗೆ ಬೀಳುವೆ-
ಕಾಯ್ದ ಸುಯ್ಲಲಿ-ಸೋತು.
ಮತ್ತೆ ಆಶೆಯು ಕೂಗಿ ….
ಮತ್ತೆ ಆಶಯು ಕೂಗಿ ಕರೆಯಲು
ಒತ್ತಿ ಏಳುವೆ ಬೀಗಿ.


ದೂರ ಬರುತಿರಬಹುದು ನನ್ನಾ
ನೀರನೆಂಬ ವಿಚಾರದಿ,
ಏರಿ ನೆಲೆಮನೆ ಹುಬ್ಬಿನೊಳು ಕೈ-
ಯೂರಿ ನಿರುಕಿಪೆ ದೂರದಿ;
‘ಏನಿದಿವಳಾರನ್ನು ನೋಡುವ-
ಳೇನಿದಾತುರ?’ ಎನ್ನುತ
ಆಡುವುದೆ ಜನ ?-ಎಂದು ಸುತ್ತಲು
ನೋಡುವೆನು ನಾನಂಜುತ
ಬರಲಿರುವನವನೆಂದು….
ಬರಲಿರುವನೆಂಬೀ ಬಗೆಯ ಬರಿ-
ಮೊರೆತಕೇನೆನಲಿಂದು ?
* * *

ಮೂರು ದಿನಗಳು ಜಾರಿದುವು ಬರಿ-
ದಾರಿ ಕಾಯುತಲಿರುವೆನು.
ಹಾರಯಿಕೆಯಂತಹದು ? ನಲ್ಲನು
ಬಾರನೇಕೆನುತಿರುವೆನು.
ಮನವನ್ನೇತರೊಳೊ
ಹೆಣೆದವನ ಮರೆಯಲಿಕೆ
ಹಣುಗಿಯೇ ಹಣುಗುವೆನು, ಆದರೇನು !


ಕಿಡಗೇಡಿ ತಂಗಾಳಿ-
ಯೊಡನೆ ಬಂದಾ ನೆನಹು
ಒಡಲ ಜುಽಮ್ಮೆನಿಸಿ ನವಿರೇರಿಸುವುದು.
ಬೆಳುದಿಂಗಳೊಡಗೊಂಡು
ತಿಳಿಯದಂತೈತಂದು
ಕಳವಳವ ಕರುಳಿನೊಳಗೂರಿಸುವುದು.


ತನ್ನವಳ ಜೊತೆಗೂಡಿ
ಹಾಡುತಿಹ ಹಕ್ಕಿಯುಲಿ
ತನ್ನ ಮಟ್ಟಕೆ ಸುಮ್ಮನಿರಬಾರದೆ?
ನನ್ನ ದೇನಿರಲು ಬಹು-
ದನ್ನೆಯವು ! ಅವನ ನೆನ-
ಪನ್ನು ಕಿವಿಗೊತ್ತಿ ಕಾಡುವುದು ಬರಿದೆ.


ಸುಡಲಿ, ಬಂದಿತಿದೇಕೊ
ಜಡಿಯ ಮೋಡದ ಜಿನುಗು !
ಹಿಡಿದು ಬೆಸೆವುದು ಆತನಾಶೆಯೊಡನೆ,
ಇಡಿದ ಕತ್ತಲೆಯಿರುಳು
ಮಿಡುಕುತೊಬ್ಬಳೆ ಮಲಗಿ-
ದೆಡೆಗೆ ಕಳುಹುವುದವನ ಬಯಕೆಯನ್ನೇ.


ಮುಳಿಸು ಹೆಮ್ಮೆಗಳಲ್ಲಿ
ಮಾಡಿದಾ ನಿರ್ಣಯವು
ಗಳಿಗೆಯರೆಗಳಿಗೆಯೂ ನಿಲ್ಲದಿಹುದು.
ನನಗಿರುವ ಆತುರವು
ಇನಿಯಗೇಕಿರದೆಂದು
ಜಿನುಗಿ ನನ್ನೆದೆಯುಸಿರ ಚೆಲ್ಲುತಿಹುದು.


‘ಇನಿತೊಂದು ಹಲುಬಿ ಕಂ-
ಬನಿಯಿಡುವೆನವಗಾಗಿ
‘ನೆನಪಾದರೂ ಇಹುದೆ ನನ್ನದವಗೆ?’
ಎನುವ ಯೋಚನೆ ಬರಲು
ಮುನಿಸು ಮೊಗದೋರಿ ನಾ-
ನೆನುವೆ ‘ಇನಿತೇಕೆ ಮನದಳಲು ನನಗೆ ?’
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...